Pages

Sunday, January 9, 2011

ವೇದ ದೀವಿಗೆ


ವೇದ ದೀವಿಗೆ

ಸೇರು ಸಜ್ಜನರನ್ನು ದೂರಗಳ ಮಿತಿಯಿರದೇ
ಸಾರು ಅವರಿರುವೆಡೆಗೆ ದಾರಿ ಹುಡುಕುತಲಿ
ನಾರು ಹೂವಿನ ಜೊತೆಗೆ ದೇವಮುಡಿಗೈದಂತೆ
ಏರು ಆ ಎತ್ತರಕೆ | ಜಗದಮಿತ್ರ

ಯಾರಿಗೂ ಕಮ್ಮಿಯೇಂ ಎಂಬ ಭಾವವು ಬೇಡ
ದಾರಿಹೋಕರು ನಾವು ತಿಳಿಮೊದಲು ಅದನು
ಹೀರುತ್ತ ಈ ಜಗದ ಅಪವಿತ್ರ ಬಳುವಳಿಯ
ಜಾರುವುದು ತರವಲ್ಲ | ಜಗದಮಿತ್ರ

ಹೇರಿ ನಡೆವುದು ಕತ್ತೆ ಭಾರವನು ದೂರದೆಡೆ
ಯಾರದೋ ವಸ್ತುಗಳು ಅದಕೆ ಅರಿವಿರದೇ
ಊರೂರು ಸುತ್ತುವುದು ಭಾರೀ ಪೆಟ್ಟಿಗೆ ಹೆದರಿ
ಕೇರಿ ಬೇಕಾದ್ದು ಪಡೆ | ಜಗದಮಿತ್ರ

ಸೂರು ಸಂತತಿ ಸಂಪದಭಿವೃದ್ಧಿಯಲಿ ತೊಡಗಿ
ತೇರೆತ್ತರದ ಬಯಕೆ ರಾಶಿಗಳ ನಡುವೆ
ಮೀರುತ್ತ ಕರ್ತವ್ಯ ಮಿತಿಯ ಸ್ವಾರ್ಥಕ್ಕಾಗಿ
ತೂರಿ ಪುನರಪಿ ಬರುವೆ | ಜಗದಮಿತ್ರ

ಯಾರೂ ಹೇಳುವುದಿಲ್ಲ ಬೇರೇ ಮಾರ್ಗವದಿಲ್ಲ
ಪಾರಾಗಲದುವೊಂದೇ ಜ್ಞಾನದ್ಹಾಯ್ದೋಣಿ
ಬೇರು ಎಲ್ಲಿಹುದೆಂದು ಹುಡುಕುತ್ತ ಮುನ್ನಡೆದು
ಭೂರಿ ಆನಂದ ಪಡೆ | ಜಗದಮಿತ್ರ

ಹಾರಿಹೋಗುವ ಮೊದಲು ಅರಿಯುತ್ತ ವೇದಗಳ
ದಾರಿದೀವಿಗೆಯಾಗಿ ಬಳಸು ತತ್ವಗಳ
ಖಾರ-ಉಪ್ಪುಗಳತಿಯ ಹಿಂಸೆಯಿರುವಶನಗಳ
ದೂರವಿಡು ತಿನ್ನದಲೇ | ಜಗದಮಿತ್ರ

ವಾರವಾರಕು ನವ್ಯ ವರುಷವರುಷಕು ದಿವ್ಯ
ಯಾರೋ ಕವಿ-ಸಾಹಿತಿಯ ಸೃಷ್ಟಿಯಂತಲ್ಲ
ನೂರಾರು ಯುಗಗಳನು ದಾಟುತ್ತ ನಡೆತಂದು
ಸೋರಿಕರಗದು ವೇದ |
ಜಗದಮಿತ್ರ


- ನಿಮ್ಮೊಡನೆ ವಿ.ಆರ್.ಭಟ್ ವಿಭಾಗದ ’ಜಗದಮಿತ್ರನ ಕಗ್ಗ ’ ಸಂಕಲನದಿಂದ



3 comments:

  1. ಅದ್ಭುತವಾಗಿದೆ ಭಟ್ ರವರೇ ...ಮೊದಲಬಾರಿಗೆ ಓದುತ್ತಿರುವೆ , ಮಂಕುತಿಮ್ಮನ ಛಾಯೆ ಇದೆ ....ಓದಲು ಸುಲಲಿತವಾಗಿಯೂ , ಅರ್ಥಗರ್ಭಿತವಾಗಿಯೂ ಇದೆ...ನಿಮ್ಮ ಖುಷಿಯನ್ನು ಹಂಚಿಕೊಂಡದ್ದಕ್ಕೆ ವಂದನೆಗಳು ......ಪುಸ್ತಕ ರೂಪದಲ್ಲಿದ್ದರೆ ಕೊಳ್ಳುತ್ತೇನೆ , ಎಲ್ಲಿ ಸಿಗುತ್ತದೆ ಹೇಳುವಿರಾ ? .....

    ReplyDelete
  2. ಧನ್ಯವಾದಗಳು ಜಗದೀಶ್ ಸಾಹೇಬರೇ, ’ಜಗದಮಿತ್ರನ ಕಗ್ಗ’ ಇನ್ನೂ ಲೋಕಾರ್ಪಣೆಗೊಂಡಿಲ್ಲ, ಅದು ಬಿಡುಗಡೆಯಾಗುವಾಗ ತಮ್ಮನ್ನು ನೆನಪಿಟ್ಟು ಆಹ್ವಾನಿಸುತ್ತೇನೆ.

    ReplyDelete