Pages

Friday, April 29, 2011

ಸಂಪ್ರದಾಯಗಳು ಸಂಕೋಲೆಗಳಾಗದಿರಲಿ

     ಕೈ  ಹಿಡಿದ ಗಂಡ ಗತಿಸಿದರೆ ವಿಧವೆ ಪತ್ನಿ ಕೇಶ ಮುಂಡನ ಮಾಡಿಸಿಕೊಂಡು ಕೆಂಪು ಅಥವಾ ಬಿಳಿ ಸೀರೆ ಉಟ್ಟುಕೊಂಡು ಕೈಗೆ ಬಳೆ ಹಾಕಿಕೊಳ್ಳದೆ ಹಣೆಗೆ ಕುಂಕುಮ ಇಟ್ಟುಕೊಳ್ಳದೆ ಒಂದು ರೀತಿಯ ಒಂಟಿ ಹಾಗೂ ಬಲವಂತದ ವೈರಾಗ್ಯದ ಜೀವನ ನಡೆಸಬೇಕಾಗಿದ್ದ ಕಾಲವಿತ್ತು. ಚಿಕ್ಕ ವಯಸ್ಸಿನಲ್ಲೇ ವಿಧವೆಯಾದವರ ಪಾಡು ಅನುಭವಿಸಿದವರಿಗೇ ಗೊತ್ತು. ಆಕೆಗೆ ಶುಭ ಕಾರ್ಯಗಳಲ್ಲಿ ಆಹ್ವಾನವಿರುತ್ತಿರಲಿಲ್ಲ. ಆಕೆ ಎದುರಿಗೆ ಬಂದರೆ ಅಪಶಕುನವೆಂದು ಭಾವಿಸುವವರಿದ್ದರು. ಹೊಸ ಪೀಳಿಗೆಯವರಿಗೆ ಇಂತಹ ಅನಿಷ್ಟ ಸಂಪ್ರದಾಯದ ಪರಿಚಯ ಇರಲಾರದು. ಪ್ರಾರಂಭದಲ್ಲಿ ಕೇಶಮುಂಡನ ಮಾಡಿಸಿಕೊಳ್ಳುವುದು ನಿಂತರೂ ಕೈಗೆ ಬಳೆ ಹಾಕಿಕೊಳ್ಳಲು, ಹಣೆಗೆ ಕುಂಕುಮ ಇಟ್ಟುಕೊಳ್ಳಲು ಹಿಂಜರಿಯುತ್ತಿದ್ದರು. ಈಗ ಪರಿಸ್ಥಿತಿ ಬದಲಾಗಿದೆ, ಸುಧಾರಣೆಯಾಗಿದೆ. ಕಳೆದ ಎರಡು-ಮೂರು ದಶಕಗಳಿಂದೀಚೆಗೆ ಈ ಸಂಪ್ರದಾಯದ ಆಚರಣೆ ಕಂಡು ಬರುತ್ತಿಲ್ಲ. ಒಂದು ಅನಿಷ್ಟ ಸಂಪ್ರದಾಯದ ಅಂತ್ಯವಾಗಿರುವುದು ಸಮಾಧಾನದ ಸಂಗತಿ.
     ಸಂಪ್ರದಾಯವೆಂದರೆ ತಲೆ ತಲಾಂತರಗಳಿಂದ ಆಚರಿಸಿಕೊಂಡು ಬರಲಾಗುವ ಆಚರಣೆಗಳು, ನಡವಳಿಕೆಗಳು. ಸರಿಯೋ, ತಪ್ಪೋ ವಿಚಾರ ಮಾಡದೆ ಅದನ್ನು ಮುಂದುವರೆಸಿಕೊಂಡು ಬರುವವರನ್ನು ಸಂಪ್ರದಾಯವಾದಿಗಳು ಎನ್ನುತ್ತಾರೆ. ಕೆಲವನ್ನು ಆಚರಿಸಿ ಕೆಲವನ್ನು ಕೈಬಿಡುವ ಅನುಕೂಲ/ಅವಕಾಶವಾದಿಗಳೂ ಇದ್ದಾರೆ. ಅರ್ಥವಿಲ್ಲದ ಸಂಪ್ರದಾಯಗಳನ್ನು ಧಿಕ್ಕರಿಸಿ ನಡೆಯುವವರೂ ಇದ್ದಾರೆ. ಸ್ವತಃ ಸಂಪ್ರದಾಯಗಳನ್ನು ಆಚರಿಸದಿದ್ದರೂ, ಅರ್ಥವಿಲ್ಲವೆಂದು ತಿಳಿದಿದ್ದರೂ, ಇತರರ ಸಲುವಾಗಿ ಅವನ್ನು ಬೆಂಬಲಿಸುವವರ ಸಂಖ್ಯೆ ಸಹ ಗಣನೀಯವಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರನ್ನೂ ಹೊಂದಿಸಿಕೊಂಡು, ಹೊಂದಿಕೊಂಡು ಸಮನ್ವಯ ಮಾಡಿ ಸದ್ವಿಚಾರ ತಿಳಿಸಲು ಹೆಣಗುವವರೂ ಇದ್ದಾರೆ. ಎಲ್ಲಾ ಸಂಪ್ರದಾಯಗಳೂ ಕೆಟ್ಟವಲ್ಲ; ಹಾಗೆಯೇ ಎಲ್ಲವೂ ಒಳ್ಳೆಯವು ಎಂದು ಹೇಳಲಾಗುವುದಿಲ್ಲ. ಯಾವ ಆಚರಣೆಗಳಿಂದ ಯಾರಿಗೂ ತೊಂದರೆಯಿಲ್ಲವೋ, ಯಾವುದರಿಂದ ಮನುಷ್ಯನ ಬೌದ್ಧಿಕ ವಿಕಾಸ, ಅಭಿವೃದ್ಧಿಗೆ ಸಹಕಾರವಾಗುವುದೋ, ಸಂತಸ ಹರಡುವುದೋ, ತಾರತಮ್ಯ ಇಲ್ಲದಿರುವುದೋ ಅಂತಹವುಗಳನ್ನು ಒಳ್ಳೆಯ ಸಂಪ್ರದಾಯಗಳೆನ್ನಬಹುದು. ಇದಕ್ಕೆ ತದ್ವಿರುದ್ಧವಾದ ಸಂಪ್ರದಾಯಗಳನ್ನು ಕೆಟ್ಟವು ಎಂದುಕೊಳ್ಳಬಹುದು. ಒಳ್ಳೆಯದಕ್ಕೋ, ಕೆಟ್ಟದಕ್ಕೋ ಗೊತ್ತಿಲ್ಲ, ಈಗಂತೂ ಹೊಸ ಹೊಸ ಸಂಪ್ರದಾಯಗಳು, ಆಚರಣೆಗಳು ಚಾಲ್ತಿಗೆ ಬರುತ್ತಿವೆ, ಹಿಂದಿನ ಅನುಭವಗಳಿಂದ ಹೇಳುವುದಾದರೆ ಕ್ರಮೇಣ ಅವು ಗಟ್ಟಿಗೊಳ್ಳುತ್ತವೆ.

     ಬಾಲ ಗಂಗಾಧರನಾಥ ತಿಲಕರು ಬ್ರಿಟಿಷರ ವಿರುದ್ಧ ಜನರನ್ನು ಸ್ವಾತಂತ್ರ್ಯ ಸಂಗ್ರಾಮಕ್ಕೆ ಪ್ರೇರೇಪಿಸುವ ಸಲುವಾಗಿ ಹುಟ್ಟುಹಾಕಿದ ಸಾರ್ವಜನಿಕ ಗಣೇಶ ಉತ್ಸವಗಳು ಇಂದು ಯಾವ ಮಟ್ಟಕ್ಕೆ ತಲುಪಿವೆ ಎಂಬುದು ವಿಚಾರ ಮಾಡಬೇಕಾದ ಸಂಗತಿಯಾಗಿದೆ. ಮೊದಲು ಊರಿಗೆ ಒಂದರಂತೆ ಇದ್ದುದು, ಈಗ ಗಲ್ಲಿ ಗಲ್ಲಿಗಳಲ್ಲಿ ಗಣೇಶನ ಮೂರ್ತಿಗಳನ್ನು ಇಟ್ಟು ಅಲ್ಲಿ ನಡೆಸುವ ಕಾರ್ಯಕ್ರಮಗಳು, ಪೈಪೋಟಿ, ವಂತಿಕೆ ವಸೂಲಿ, ವಿಸರ್ಜನೆ ಸಮಯದಲ್ಲಿ ಕುಡಿದು ಕುಣಿಯುವ ಯುವಕರು, ಮತೀಯ ಘರ್ಷಣೆಗಳು, ಇತ್ಯಾದಿಗಳನ್ನು ಗಮನಿಸಿದರೆ ಇವೆಲ್ಲಾ ಯಾವ ಪುರುಷಾರ್ಥಕ್ಕಾಗಿ ಎಂದು ಅನ್ನಿಸದೇ ಇರದು. ಒಳ್ಳೆಯ ರೀತಿಯಲ್ಲಿ ಆಚರಿಸುವವರು ಇದ್ದರೂ ಅಂತಹವರ ಸಂಖ್ಯೆ ಬೆರಳೆಣಿಕೆಯಷ್ಟು. ಗಣೇಶೋತ್ಸವಗಳು ಮುಗಿಯುವವರೆಗೂ ಶಾಂತಿ, ಸುವ್ಯವಸ್ಥೆಗಳಿಗಾಗಿ ಸಂಬಂಧಿಸಿದವರು ಹಗಲೂ ರಾತ್ರಿ ಹೆಣಗುವ, ಇಂತಹ ಉತ್ಸವಗಳು (ಗಣೇಶೋತ್ಸವ ಮಾತ್ರ ಅಲ್ಲ, ಎಲ್ಲಾ ಮತೀಯ/ಧಾರ್ಮಿಕ ಉತ್ಸವಗಳು ಸೇರಿ) ಏಕಾದರೂ ಬರುತ್ತವೋ ಎಂದು ಅಂದುಕೊಳ್ಳುವ ಪರಿಸ್ಥಿತಿ ಇಂದು ಇದೆ. ನಾನು ಗಣೇಶೋತ್ಸವವನ್ನಾಗಲೀ, ಇಂತಹ ಇತರ ಉತ್ಸವಗಳನ್ನಾಗಲೀ ವಿರೋಧಿಸುತ್ತಿಲ್ಲ, ಅದನ್ನು ಆಚರಿಸಲಾಗುತ್ತಿರುವ ರೀತಿಯ ಬಗ್ಗೆ ಮಾತ್ರ ಬೆರಳು ತೋರಿಸುತ್ತಿದ್ದೇನೆ.

     ಸಂಕಷ್ಟಹರ ಗಣಪತಿ ಪೂಜೆಯನ್ನು ಇಂದು ಸಾಮೂಹಿಕ ಸನ್ನಿಯಂತೆ ಆಚರಿಸಲಾಗುತ್ತಿದೆ. ಆದರೆ ಎಷ್ಟು ಜನರು ಇದನ್ನು ಶ್ರದ್ಧೆಯಿಂದ ಆಚರಿಸುತ್ತಿದ್ದಾರೆ? ಹೆಚ್ಚಿನವರು ಸ್ವಸಹಾಯ ಪದ್ಧತಿಯ ಹೋಟೆಲ್ಲಿನಲ್ಲಿ ಹಣ ಕೊಟ್ಟು ಕಾಫಿ ಕುಡಿದಂತೆ ದೇವಸ್ಥಾನಕ್ಕೆ ಹೋಗಿ ಹಣ ಕೊಟ್ಟು ಚೀಟಿ ಬರೆಸಿ ಹೋಗುತ್ತಾರೆ, ಪ್ರಸಾದ ಕೊಡುವ ಸಮಯಕ್ಕೆ ಬಂದು ಕೈಮುಗಿದು ಪ್ರಸಾದ ಪಡೆದು ಹೋಗುತ್ತಾರೆ. ಪೂಜೆಯ ಸಮಯದಲ್ಲಿ ದೇವಸ್ಥಾನದಲ್ಲಿದ್ದವರೂ ಪರಸ್ಪರ ಮಾತುಕತೆಗಳಲ್ಲಿ ತೊಡಗಿರುತ್ತಾರೆ. ಇಂತಹ ಆಚರಣೆಯಿಂದ ಯಾರಿಗೆ ಪ್ರಯೋಜನ? ಯಾರ ಕಷ್ಟಗಳು ಪರಿಹಾರವಾಗುತ್ತದೆ? ಶ್ರದ್ಧೆಯಿಂದ, ಅರ್ಥ ತಿಳಿದುಕೊಂಡು ಮಾಡುವ ಕ್ರಿಯೆಗಳಿಂದ ಮಾತ್ರ ಫಲ ಸಿಗಲು ಸಾಧ್ಯವಲ್ಲವೇ? ಇಲ್ಲದಿದ್ದರೆ ಅವು ತೋರಿಕೆಗೆ ಮಾಡುವ ಆಚರಣೆಗಳು ಅಷ್ಟೆ. ಇಸ್ಲಾಮ್ ಮತ ಪ್ರಾರಂಭವಾದ ಸಂದರ್ಭದಲ್ಲಿ ಧ್ವನಿವರ್ಧಕವಿರಲಿಲ್ಲ. ಆದರೆ ಇಂದು ಎಲ್ಲಾ ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿ ಅಗತ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಧ್ವನಿವರ್ಧಿಸಿ ನಮಾಜು, ಉಪದೇಶಗಳನ್ನು ಮಾಡುತ್ತಿರುವುದು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಅದನ್ನು ಕೇಳಲು ಇಚ್ಛಿಸದವರಿಗೂ ಬಲವಂತವಾಗಿ ಕೇಳುವಂತೆ ಮಾಡುತ್ತಿರುವುದು ಒಂದು ರೀತಿಯ ಶಬ್ದಮಾಲಿನ್ಯವಲ್ಲವೇ?


     ಜಾತ್ರೆ, ಪೂಜೆ, ಇತ್ಯಾದಿಗಳ ಹೆಸರಿನಲ್ಲಿ ದೇವರನ್ನು ಸಂತುಷ್ಟಗೊಳಿಸುವ(?) ಕಾರಣದಿಂದ ಪ್ರಾಣಿಬಲಿ ನೀಡುವ ಸಂಪ್ರದಾಯ ಒಳ್ಳೆಯದೆಂದು ಹೇಳಬಹುದೆ? ಇದನ್ನು ಸಮರ್ಥಿಸುವ ಜನರಿಗೆ ಕಡಿಮೆಯೇನಿಲ್ಲ. ಶಿಕಾರಿಪುರದಲ್ಲಿ ತಾಲ್ಲೂಕು ದಂಡಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಜಾತ್ರೆಯ ಸಮಯದಲ್ಲಿ ಕೋಣಬಲಿ ತಡೆಯಲು ಒಂದು ಗ್ರಾಮದಲ್ಲಿ ಪೋಲಿಸರ ನೆರವಿನೊಂದಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದರೂ, ಗ್ರಾಮಸರಿಗೆ ಕಾನೂನಿನಲ್ಲಿ ಇರುವ ನಿಷೇಧ, ಉಲ್ಲಂಘಿಸಿದರೆ ಆಗುವ ಪರಿಣಾಮಗಳು, ಇತ್ಯಾದಿ ತಿಳುವಳಿಕೆ ಹೇಳಲು ಮುಂಚಿತವಾಗಿ ನಡೆಸಿದ್ದ ಶಾಂತಿ ಸಮಿತಿ ಸಭೆಯಲ್ಲಿ ಪಶುವೈದ್ಯರ ಸಹಾಯದಿಂದ ಸಿರಿಂಜಿನಲ್ಲಿ ಕೋಣನ ರಕ್ತವನ್ನು ತೆಗೆದು ಸಾಂಕೇತಿಕವಾಗಿ ದೇವಿಗೆ ಅರ್ಪಿಸಲು ಗ್ರಾಮದ ಮುಖ್ಯಸರು ಒಪ್ಪಿ ಮುಚ್ಚಳಿಕೆ ಬರೆದುಕೊಟ್ಟಿದ್ದರೂ, ಪೋಲಿಸರ ಕಣ್ಗಾವಲು ಇದ್ದರೂ ಎಲ್ಲರ ಕಣ್ಣುತಪ್ಪಿಸಿ ಕೋಣಬಲಿ ನೀಡಿದ ಪ್ರಸಂಗ ಬೇಸರ, ಮುಜುಗರ ಉಂಟುಮಾಡಿತ್ತು. ಎಲ್ಲಾ ಮಾಧ್ಯಮಗಳಲ್ಲೂ ವಿಷಯ ಅತಿರಂಜಿತವಾಗಿ ಪ್ರಚಾರಗೊಂಡಿತು. ಕೆಲವರ ಮೇಲೆ ಪ್ರಕರಣ ದಾಖಲಿಸಿದರೂ ರಾಜಕೀಯ ನಾಯಕರ ಮಧ್ಯಪ್ರವೇಶ ಪ್ರಕರಣವನ್ನು ದುರ್ಬಲಗೊಳಿಸಿದ್ದು ಸುಳ್ಳಲ್ಲ. ಈ ಪ್ರಕರಣವನ್ನು ರಾಜಕೀಯ ಮಾಡುವ ಸಲುವಾಗಿ ಪರವಾಗಿ ಮತ್ತು ವಿರೋಧವಾಗಿ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಬಳಸಿಕೊಂಡವು. ಅನಿಷ್ಟ ಸಂಪ್ರದಾಯಕ್ಕೆ ವಿರೋಧ ವ್ಯಕ್ತಪಡಿಸಿದವರೂ ಸಾತ್ವಿಕ ಕಾರಣಕ್ಕೆ ವಿರೋಧಿಸದೆ ವಿರೋಧಿಗಳನ್ನು ವಿರೋಧಿಸಲು ಮಾತ್ರ ಬಳಸಿದ್ದು ನೋವಿನ ವಿಷಯ. ಮಾಧ್ಯಮಗಳೂ ಕೆಸರೆರಚಾಟಕ್ಕೆ ಸಾಥ್ ನೀಡಿದವೇ ಹೊರತು, ಅವುಗಳಿಗೆ ಜನರಲ್ಲಿ ತಿಳುವಳಿಕೆ ಹೆಚ್ಚಿಸುವ ಶಕ್ತಿಯಿದ್ದರೂ ಮಾಡಲಿಲ್ಲ. ಇಂತಹ ಉದಾಹರಣೆಗಳನ್ನು ಸಾಕಷ್ಟು ನೋಡಬಹುದು. ಅಂಧ ಸಂಪ್ರದಾಯಗಳ ಕುರಿತು ತಿಳಿಸುವ ಸಲುವಾಗಿ ಕೆಲವನ್ನು ಮಾತ್ರ ಸಾಂಕೇತಿಕವಾಗಿ ಉದಾಹರಿಸಿದ್ದೇನೆ.
     ಸಂಪ್ರದಾಯಗಳನ್ನು ಹೇಗೆ ಆಚರಿಸಬೇಕು ಅನ್ನುವುದಕ್ಕಿಂತ ಕೆಟ್ಟ ಸಂಪ್ರದಾಯಗಳನ್ನು ಗುರುತಿಸಿ ಅವುಗಳಿಂದ ದೂರ ಉಳಿಯಲು ಮತ್ತು ಸಾಧ್ಯವಾದರೆ ತಡೆಯಲು ಪ್ರಯತ್ನಿಸುವುದು ಇಂದಿನ ಅಗತ್ಯ. ಮಠ-ಮಂದಿರಗಳು, ಮಸೀದಿಗಳು, ಚರ್ಚುಗಳು, ಇತ್ಯಾದಿಗಳು ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಶ್ರದ್ಧಾ ಕೇಂದ್ರಗಳಾಗಿವೆ. ಈ ಕೇಂದ್ರಗಳು ವಾಸ್ತವವಾಗಿ ಸತ್ಕರ್ಮಗಳನ್ನು ಪೋಷಿಸುವ, ಜ್ಞಾನ ಪಸರಿಸುವ ಕೆಲಸ ಮಾಡಬೇಕು. ವಿಷಾದದ ಸಂಗತಿಯೆಂದರೆ ಹೆಚ್ಚಿನವು ಋಣಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿವೆ. ಶೈಕ್ಷಣಿಕ, ವೈದ್ಯಕೀಯ ಸಂಸ್ಥೆಗಳನ್ನು, ಕಲ್ಯಾಣ ಮಂದಿರಗಳನ್ನು ಕಟ್ಟಿ ಹಣ ಮಾಡುವ ಕೇಂದ್ರಗಳಾಗಿವೆ. ತಿರಳಿಗಿಂತ ಸಿಪ್ಪೆಗೆ ಹೆಚ್ಚು ಮಾನ್ಯತೆ ಕೊಡಲಾಗುತ್ತಿದೆ. ನಿಜ, ತಿರುಳಿನ ರಕ್ಷಣೆಗೆ ಸಿಪ್ಪೆಯಿರಬೇಕು, ಆದರೆ ಸಿಪ್ಪೆಯೇ ತಿರುಳಾಗಬಾರದು. ಆ ಕಾರಣದಿಂದಾಗಿ ಉತ್ತರಾಧಿಕಾರಕ್ಕಾಗಿ ಕಚ್ಚಾಡುವ, ಒಡೆತನ ಸಾಧಿಸಬಯಸುವವರ ಕೂಟ ಅಲ್ಲಿ ಮನೆ ಮಾಡಿವೆ. ಮೂಲ ಉದ್ದೇಶ ಮರೆತು ಭೌತಿಕ ಆಸ್ತಿ, ಸಂಪತ್ತು ಕ್ರೋಢೀಕರಿಸಲು ನೀಡುವ ಮಹತ್ವವೇ ಇದಕ್ಕೆ ಕಾರಣವೆಂದರೆ ಅದರಲ್ಲಿ ಅತಿಶಯೋಕ್ತಿಯಿಲ್ಲ.

     ನನಗೆ ಬಂದಿದ್ದ ಇ-ಮೇಲ್ ಒಂದರಿಂದ ರೂಢಿಗತ ಸಂಪ್ರದಾಯಗಳಿಗೆ ಹೇಗೆ ಮನಸ್ಸು ಒಗ್ಗಿಕೊಳ್ಳುತ್ತದೆ ಎಂಬುದಕ್ಕೆ ಅತ್ಯತ್ತಮ ಉದಾಹರಣೆ ಸಿಕ್ಕಿತು. ಅದೆಂದರೆ ಬಲಶಾಲಿ ಆನೆಯ ಕಾಲಿಗೆ ಕಬ್ಬಿಣದ ಸರಪಳಿ ಹಾಕಿ ಮರವೊಂದಕ್ಕೆ ಕಟ್ಟಿ ಹಾಕಿದರೆ ಅದು ಬಿಡಿಸಿಕೊಳ್ಳಲು ಪ್ರಯತ್ನವೇ ಮಾಡುವುದಿಲ್ಲ. ಆನೆ ಎಷ್ಟು ಬಲಶಾಲಿಯೆಂದರೆ ಅದಕ್ಕೆ ಆ ಸರಪಳಿ ಮತ್ತು ಮರ ಲೆಕ್ಕವೇ ಅಲ್ಲ. ಅದು ಮನಸ್ಸು ಮಾಡಿದರೆ ಸರಪಳಿ ತುಂಡರಿಸಬಲ್ಲದು ಮತ್ತು ಮರವನ್ನು ಕಿತ್ತು ಬಿಸಾಡಬಲ್ಲದು. ಆದರೂ ಅದು ಮಾಡುವುದಿಲ್ಲ. ಏಕೆಂದರೆ ಆನೆ ಚಿಕ್ಕದಾಗಿದ್ದಾಗ ಅದನ್ನು ಅದೇ ರೀತಿ ಕಟ್ಟಿ ಹಾಕಲಾಗುತ್ತಿತ್ತು. ಚಿಕ್ಕದಾಗಿದ್ದರಿಂದ ಅದರಿಂದ ಬಿಡಿಸಿಕೊಳ್ಳಲು ಅದು ಎಷ್ಟೇ ಪ್ರಯತ್ನಿಸಿದರೂ ಆಗ ಆಗುತ್ತಿರಲಿಲ್ಲ. ಕ್ರಮೇಣ ಅದೇ ಅಭ್ಯಾಸವಾಗಿ ಮರಕ್ಕೆ ಕಟ್ಟಿ ಹಾಕಿದರೆ ಬಿಡಿಸಿಕೊಳ್ಳಲಾಗುವುದಿಲ್ಲವೆಂಬ ಭಾವ ಗಟ್ಟಿಗೊಂಡು ಅದು ದೊಡ್ಡದಾದ ಮೇಲೂ ಹಾಗೆ ಕಟ್ಟಿಹಾಕಿದರೆ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಿರಲೇ ಇರಲಿಲ್ಲ. ನಮ್ಮ ಸ್ಥಿತಿ ಸಹ ಅದೇ ರೀತಿ ಇದೆ. ನಮಗೆ ವಿಚಾರ ಮಾಡುವ ಶಕ್ತಿ ದೇವರು ಕೊಟ್ಟಿದ್ದಾನೆ. ಕೆಲವು ಸಂಪ್ರದಾಯಗಳು ಅರ್ಥಹೀನವೆಂದು ನಮಗೆ ತಿಳಿಯುತ್ತದೆ, ಮನಸ್ಸು ಮಾಡಿದರೆ ಅದನ್ನು ಧಿಕ್ಕರಿಸುವ, ಮುಂದುವರೆಸದಿರುವ ಶಕ್ತಿ ನಮಗಿದೆ, ಆದರೂ ನಾವು ಹಾಗೆ ಮಾಡುವುದಿಲ್ಲವೆಂಬುದು ವಿಷಾದದ ಸಂಗತಿ. 'ಅಪ್ಪ ಹಾಕಿದ ಆಲದಮರವೆಂದು ಅದಕ್ಕೆ ನೇಣು ಹಾಕಿಕೊಳ್ಳಲಾಗುವುದೇ' ಎಂಬ ಪ್ರಚಲಿತ ಗಾದೆ ಮಾತು ತಿಳಿಸುವುದೂ ವಿಚಾರ ಮಾಡಿ ಮುಂದುವರೆಯಿರಿ ಎಂದೇ. ಸಾರಾಸಗಟಾಗಿ ಎಲ್ಲವನ್ನೂ ತಳ್ಳಿಹಾಕಬೇಕಾಗಿಲ್ಲ. ಕುಟುಂಬಕ್ಕೆ, ಸುತ್ತಮುತ್ತಲಿನವರಿಗೆ ಹಿತವೆನಿಸುವ ಒಳ್ಳೆಯ ಸಂಪ್ರದಾಯಗಳನ್ನು ಉಳಿಸಿ ಬೆಳೆಸಬಹುದು, ಆದರೆ ಅನಿಷ್ಠ ಸಂಪ್ರದಾಯಗಳನ್ನು ನಿಲ್ಲಿಸುವ ಮತ್ತು ಸದ್ಯಕ್ಕೆ ಒಳ್ಳೆಯದೆನಿಸಿದರೂ ಕಾಲಾನುಕಾಲಕ್ಕೆ ಅದರ ಆಚರಣೆಯಿಂದ ಆಗುವ ಪರಿಣಾಮಗಳನ್ನೂ ಗಮನಿಸಿ ಯೋಗ್ಯತಾನುಸಾರ ನಿರ್ಣಯಿಸಿ ಅಂತಹವುಗಳನ್ನು ಕೈಬಿಡುವ ಬಗ್ಗೆ ನಿರ್ಧರಿಸುವುದು ಇಂದಿನ ಅಗತ್ಯವಾಗಿದೆ. ಸಂಪ್ರದಾಯಗಳು ನಮ್ಮನ್ನು ಕಟ್ಟಿಹಾಕುವ ಸರಪಳಿಗಳಾಗದಿರಲಿ; ನಮ್ಮನ್ನು ಒಳ್ಳೆಯ ದಾರಿಯಲ್ಲಿ ಮುನ್ನಡೆಸುವ ದಾರಿದೀಪಗಳಾಗಲಿ.
***************
-ಕ.ವೆಂ.ನಾಗರಾಜ್.

4 comments:

  1. ಅಪ್ಪ ಹಾಕಿದ ಆಲದ ಮರದ ಕೆಲಗೆ ನೆರಳು ಪಡೆಯುವ ಬದಲು ನೇಣುಹಾಕಿಕೊಳ್ಳುವ ಉಧಾಹರಣೆಗಳು ಹೆಚ್ಚಾಗಿರುವುದೇ ಆತಂಕಕ್ಕೆ ಕಾರಣವಾಗಿದೆ. ನನ್ನ ಮನದಲ್ಲಿ ಒಂದು ವಿಚಾರ ನಿಚ್ಛಳವಾಗಿ ಕಾಡುತ್ತಿದೆ. ನಮ್ಮ ಸುತ್ತಮುತ್ತಲ, ಆಪ್ತರ, ಬಂಧುಬಳಗದಲ್ಲಿಯಾದರೂ ದೇವರು,ಧರ್ಮ,ಆಚರಣೆಗಳ ಬಗೆಗೆ ಇರುವ ಭಯವನ್ನು ಮೊದಲು ಕಿತ್ತುಹಾಕುವ ಕೆಲಸವಾಗಬೇಕು. ನಮ್ಮ ಎಲ್ಲಾ ಸಂಪ್ರದಾಯಗಳು, ದೈವಿಕ ಆಚರಣೆಗಳು ನಮ್ಮ ಮತ್ತು ನಮ್ಮ ಸಮಾಜದ ಸರ್ವಾಂಗೀಣ ಉನ್ನತಿಗಾಗಿಯೇ ಲಾಭವಾಗಬೇಕು. ಅದಿಲ್ಲದೆ ಕಂದಾಚಾರಕ್ಕಾಗಿ ಮಾಡುವ ಎಲ್ಲವನ್ನೂ ಬಿಡಬೇಕು ಇಲ್ಲವೇ ಬದಲಿಸಿಕೊಳ್ಳ ಬೇಕು. ಮೊನ್ನೆ ನಡೆದ ಒಂದು ಉಧಾಹರಣೆಯು ಅನುಕರಣೀಯವೆಂದು ತಿಳಿಯುತ್ತೇನೆ. ಹಾಸನದಲ್ಲಿ ಒಂದು ಮನೆಯಲ್ಲಿ ಪ್ರತೀ ಮಂಗಳವಾರ ಮತ್ತು ಶುಕ್ರವಾರಗಳು ರಾತ್ರಿ ೮.೩೦ರಿಂದ ೯.೩೦ ರವರಗೆ ಸತ್ಸಂಗ ನಡೆಯುತ್ತದೆ. ಅಲ್ಲಿ ಕೇವಲ ಭಜನೆಗಳು ನಡೆದು ನಂತರ ಎಲ್ಲರಿಗೂ ಆ ಮನೆಯಲ್ಲಿಯೇ ಊಟವಾಗುತ್ತದೆ. ಯಾರಿಂದಲೂ ಒಂದುಪೈಸೆಯನ್ನೂ ನಿರೀಕ್ಷಿಸದೆ ಅವರ ಸಮಾಧಾನಕ್ಕಾಗಿ ನಡೆಸುತ್ತಿರುವ ಅವರು ಬ್ರಹ್ಮಚಾರಿ. ಅವರ ತಂದೆಯವರ ವಾರ್ಷಿಕ ಶ್ರಾದ್ಧ ಮೊನ್ನೆ ನಡೆಯಿತು. ಪ್ರತೀ ವರ್ಷ ಮಾಮೂಲಿನಂತೆ ಎಲ್ಲಾ ಕರ್ಮಗಳನ್ನೂ ಮಾಡುತ್ತಿದ್ದ ಅವರು ಮೊನ್ನೆ ಶ್ರಾದ್ಧವನ್ನು ಮಾಡಿದ ಪರಿ ಅನುಕರಣೀಯ. ಮಾಮೂಲಿನಂತೆ ಇಬ್ಬರು ವೈದಿಕರು[ರೂಢಿಯಲ್ಲಿ ಕರೆಯುವ ಬ್ರಾಹ್ಮಣಾರ್ಥಕ್ಕಾಗಿ ಬಂದವರು] ಬಂದಿದ್ದರು. ಅವರಿಗೆ ಕುಳ್ಳಿರಿಸಿ ಊಟಬಡಿಸಲಾಯ್ತು. ನಂತರಎಲ್ಲರೂ ಒಟ್ಟಿಗೆ ಊಟಮುಗಿಸಿದೆವು.ಅಲ್ಲಿಗೆ ಶ್ರಾದ್ಧ ಮುಗಿಯಿತು. ಅವರ ವಿಚಾರವೆಂದರೆ ಅಪ್ಪ ಸತ್ತ ದಿನ ಅವರನ್ನು ಸ್ಮರಿಸಲು ಎಲ್ಲರೂ ಒಟ್ಟಾಗಿ ಊಟ ಮಾಡಿದರಾಯ್ತು. ಬೇರೆ ಯಾವ ಕರ್ಮಗಳೂ ಬೇಕಾಗಿಲ್ಲ. ಅಲ್ಲಿ ಸೇರಿದ್ದ ಸುಮಾರು ಐವತ್ತು ಜನ ಸತ್ಸಂಗಿಗಳಿಗೆ ಅವರು ಆದರ್ಶವಾದರು. ಇದು ಬದಲಾವಣೆಯಲ್ಲವೇ? ಅವರಿಗೆ ಪ್ರೇರಣೆ ನಮ್ಮ ಚಟುವಟಿಕೆಗಳೇ ಇರಬಹುದು.

    ReplyDelete
  2. ಅಂತಹ ಸಜ್ಜನರಿಗೆ ನನ್ನ ಹೃದಯಪೂರ್ವಕ ನಮನಗಳು.

    ReplyDelete
  3. ನಮ್ಮ ಹಿರಿಯರನ್ನು ಮರೆತಿದ್ದರೆ ಜ್ಞಾಪಿಸಿಕೊಳ್ಳುವ ಪ್ರಶ್ನೆ!
    ಮರೆತಿದ್ದು ವರ್ಷಕ್ಕೊಮ್ಮೆ ಜ್ಞಾಪಿಸಿಕೊಳ್ಳವ ಸ್ಥಿತಿಯಲ್ಲಿರುವ ನಮ್ಮ ಹಿರಿಯರನ್ನು ಮರೆತುಬಿಡುವುದೇ ವಾಸಿ!
    ಜ್ಞಾಪಿಸಿಕೊಳ್ಳಬೇಕಾದ್ದು ಅವರ ಆದರ್ಶ, ಅವರು ಜೀವನದಲ್ಲಿ ಪಾಲಿಸುತ್ತಿದ್ದ ಸತ್ಕಾರ್ಯಗಳು. ಉದ್ದೇಶ ಅವು ನಮ್ಮ ಬಾಳಿಗೆ ಇಳಿಯಲಿ, ಇಳಿದಿರುವುದು Reinforce ಆಗಲಿ ಎಂದು.
    ಹಾಸನದ ಸಜ್ಜನರಿಗೆ ಸನ್ನದೂ ಒಂದು ನಮನ.
    ಕ.ವೆಂ.ನಾಗರಾಜರ ಲೇಖನಕ್ಕೆ ನಿಧಾನವಾಗಿ ಪ್ರತಿಕ್ರಿಯಿಸುವೆ.

    ReplyDelete
  4. ಶರ್ಮಾಜಿಯವರಿಗೆ ವಂದನೆಗಳು. ನಿಮ್ಮ ಪ್ರತಿಕ್ರಿಯೆಗೆ ಕಾಯುವೆ.

    ReplyDelete