Pages

Wednesday, August 10, 2011

ನಾಗರಪಂಚಮಿ - 'ಪರಿಸರ ಪಂಚಮಿ'ಯಾಗಲಿ


     ನಾಗರಪಂಚಮಿಯಂದು ನಾಗರನಿಗೆ ಹಾಲೆರೆದು, ಧೂಪ, ದೀಪ, ನೈವೇದ್ಯಗಳನ್ನು ಅರ್ಪಿಸುವ ಸಂಪ್ರದಾಯ ಚಾಲನೆಯಲ್ಲಿದೆ. ನಾಗರ ಪಂಚಮಿ ಆಚರಣೆ ಪರಂಪರೆಯಿಂದ ಮುಂದುವರೆಯಲು ಹಲವಾರು ಕಾರಣಗಳಿರಬಹುದು, ಅದಕ್ಕಾಗಿ ಹಲವಾರು ಪುರಾಣಕಥೆಗಳು ಇರಬಹುದು, ಹಲವಾರು ಕ್ಷೇತ್ರಗಳು ನಾಗಪೂಜೆಯ ಕಾರಣಕ್ಕೇ ಪ್ರಸಿದ್ಧವಾಗಿರುವುದೂ ಸತ್ಯ. ಎಲ್ಲಾ ಹಾವುಗಳನ್ನು ಪೂಜಿಸದೆ ನಾಗರವನ್ನೇ ಆಯ್ಕೆ ಮಾಡಿಕೊಳ್ಳಲು ಅದರ ಚುರುಕುತನ, ನಯನ ಮನೋಹರ ರೂಪ, ಹೊಂದಿರುವ ಭಯಂಕರ ವಿಷ ಹಾಗೂ ಭಯ ಸಹ ಕಾರಣವಾಗಿರಬಹುದು. ನಾಗರಹಾವನ್ನು ಕಾಮ ಹಾಗೂ ದ್ವೇಷಕ್ಕೆ ಸಂಕೇತವಾಗಿಯೂ ಬಳಸುತ್ತಿರುವುದು ವೇದ್ಯದ ಸಂಗತಿ.
     ನಾಗರಪಂಚಮಿಯ ಹಬ್ಬದಲ್ಲಿ ಕುಟುಂಬದವರು ಹಬ್ಬದ ಅಡಿಗೆ ಮಾಡಿ, ಹೊಸ ಬಟ್ಟೆಯುಟ್ಟು ಸಂಭ್ರಮಿಸುವುದು, ಸೋದರ-ಸೋದರಿಯರು ಬಾಂಧವ್ಯದ ಬೆಸುಗೆ ಗಟ್ಟಿ ಮಾಡಿಕೊಳ್ಳುವುದು ಒಳ್ಳೆಯದೇ. 'ನಾಗದೇವ'ನಿಗೆ ಸಂತುಷ್ಟಗೊಳಿಸಲು, ಅರಿತೋ, ಅರಿಯದೆಯೋ ತಪ್ಪಾಗಿದ್ದಲ್ಲಿ ತಮಗೆ ಕೇಡಾಗದಿರಲಿ ಎಂಬ ಬೇಡಿಕೆಗಾಗಿ, ಮಕ್ಕಳ ಭಾಗ್ಯ(?)ಕ್ಕಾಗಿ ನಾಗಪೂಜೆಯನ್ನು, ಪ್ರಾಯಶ್ಚಿತ್ತಕಾರ್ಯವನ್ನು ಹಬ್ಬದ ದಿನಗಳಲ್ಲದೆ ಇತರ ದಿನಗಳಲ್ಲೂ ಆಚರಿಸುವವರಿದ್ದಾರೆ.
     ಪ್ರಸ್ತುತ ಆಚರಣೆಯಲ್ಲಿರುವ ಹಾಲೆರೆಯುವ ಪದ್ಧತಿಯಿಂದ ನಾಗದೇವ ಸಂತುಷ್ಟಗೊಳ್ಳುವನೇ ಎಂಬ ಕುರಿತು ವಿಚಾರ ಮಾಡುವುದು ಒಳ್ಳೆಯದು. ಬಸವಣ್ಣನವರ ವಚನ "ಕಲ್ಲ ನಾಗರ ಕಂಡರೆ ಹಾಲನೆರೆವರಯ್ಯಾ, ದಿಟದ ನಾಗರ ಕಂಡರೆ ಕೊಲ್ಲು ಕೊಲ್ಲೆಂಬರಯ್ಯಾ" ಎಂಬುದು ಮಾನವನ ಮನಸ್ಥಿತಿಗೆ ಹಿಡಿದ ಕೈಗನ್ನಡಿ. ಹಾವು ಹಾಲು ಕುಡಿಯುವುದೇ, ಒಂದು ವೇಳೆ ಕುಡಿದರೂ ಅದು ಇಷ್ಟವಾದ ಆಹಾರವೇ ಎಂಬುದು ಸಂದೇಹಾಸ್ಪದ. ಒಂದು ವೇಳೆ ಹಾಲು ಅದಕ್ಕೆ ಇಷ್ಟವಾದ ಆಹಾರವೆಂದೇ ಇಟ್ಟುಕೊಂಡರೂ ಹುತ್ತಕ್ಕೆ ಹಾಲೆರೆದರೆ ಉದ್ದೇಶ ಈಡೇರುವುದೇ? ಎರೆಯುವುದಾದರೆ ಹಾವಿಗೇ ಎರೆಯಲಿ. ವರ್ಷಕ್ಕೊಮ್ಮೆ ಹಾಲೆರೆದರೆ ಉಳಿದ ೩೬೪ ದಿನಗಳಲ್ಲಿ ಅದಕ್ಕೆ ಹಾಲು ಎಲ್ಲಿ ಸಿಗುತ್ತದೆ? ಯೋಚಿಸಬೇಕಾದ ವಿಷಯವಿದಲ್ಲವೇ? ಹಾಲನೆರೆಯುವ ಶೇ. ೯೫ಕ್ಕೂ ಹೆಚ್ಚು ಜನರು ಹಬ್ಬದ ದಿನದಂದು ಹುತ್ತವನ್ನು ಹುಡುಕಿಕೊಂಡು ಹೋಗಿ ಹಾಲು ಎರೆಯುವವರು. ಹುತ್ತಕ್ಕೆ ಹಾಲು ಹಾಕುವುದರಿಂದ ಹುತ್ತಕ್ಕೆ ಹಾನಿಯಾಗುತ್ತದೆ, ಅಲ್ಲಿರಬಹುದಾದ ಹಾವಿನ ಏಕಾಂತಕ್ಕೆ ಭಂಗವಾಗುತ್ತದೆ, ಹಿಂಸೆಯಾಗುತ್ತದೆ, ತೊಂದರೆ ಅನುಭವಿಸುತ್ತದೆಯಲ್ಲವೇ? ಹೀಗೆ ತೊಂದರೆ ಕೊಟ್ಟು 'ನಾಗದೇವ' ಸಂತುಷ್ಟನಾದನೆಂದು ಭಾವಿಸುವುದು ಎಷ್ಟರ ಮಟ್ಟಿಗೆ ಸರಿ? ಸಂಪ್ರದಾಯವಾದಿಗಳು 'ಎಷ್ಟೋ ಪ್ರಶ್ನೆಗಳಿಗೆ ಸಮಂಜಸ ಉತ್ತರ ಸಿಗಲಾರದು ಮತ್ತು ಎಷ್ಟೋ ವಿಷಯಗಳು ತರ್ಕಕ್ಕೆ ನಿಲುಕಲಾರವು' ಎಂದು ಹೇಳುತ್ತಾರಾದರೂ, ಇಂತಹ ಆಚರಣೆ ಕುರಿತು ಪ್ರಶ್ನೆ ಮಾಡಬಾರದು, ತರ್ಕ ಮಾಡಬಾರದು ಎಂಬ ಅವರ ವಾದ ಸರಿಯೆಂದು ತೋರುವುದಿಲ್ಲ. ಅಪ್ಪ ಹಾಕಿದ ಆಲದಮರವೆಂದು ನೇಣು ಹಾಕಿಕೊಳ್ಳಲು ಹೋಗದೆ ಅದರ ನೆರಳಿನಲ್ಲಿ ಬಾಳಬಹುದು.
      ಉದ್ದೇಶ 'ನಾಗದೇವ'ನಿಗೆ ಸಂತುಷ್ಟಗೊಳಿಸಬೇಕು, ಆತನಿಂದ ತೊಂದರೆಯಾಗಬಾರದು ಎಂಬುದೇ ಆಗಿದ್ದಲ್ಲಿ ಹಬ್ಬವನ್ನು ಈರೀತಿ ಆಚರಿಸಬಹುದಲ್ಲವೇ?
೧. ಉರಗಗಳು ನೆಮ್ಮದಿಯಿಂದ ಬಾಳಲು ಅವಕಾಶ ಮಾಡಿಕೊಡಬೇಕು.
೨. ತಮಗೆ ತೊಂದರೆಯಾದಾಗ ಮತ್ತು ಭಯವಾದಾಗ ಮಾತ್ರ ಹಾವುಗಳು ಕಚ್ಚುತ್ತವೆ. ಇಲ್ಲದಿದ್ದಲ್ಲಿ ಅವುಗಳಿಂದ ತೊಂದರೆಯಿಲ್ಲ. ಇಲಿಗಳು, ಕೀಟಗಳನ್ನು ಭಕ್ಷಿಸುವ ಅವು ರೈತಮಿತ್ರರು. ಜನರಲ್ಲಿ ಉರಗಗಳ ಕುರಿತು ಜಾಗೃತಿ ಮೂಡಿಸುವುದಲ್ಲದೆ ಪರಿಸರ ಸಂರಕ್ಷಣೆಯ ಕಡೆಗೆ ಗಮನ ಕೊಡಬೇಕು.
೩. ಹುತ್ತಕ್ಕೆ ಹಾಲೆರೆಯುವ ಬದಲು ಕೆಲವು ವಿಚಾರವಂತ ಮಠಾಧೀಶರು ಮಾಡುತ್ತಿರುವಂತೆ ಮಕ್ಕಳಿಗೆ ಹಾಲು ಹಂಚಬಹುದು.
೪. ಹಾವು ಅಥವ ಪ್ರಾಣಿಗಳ ಚರ್ಮ ಸುಲಿದು ತಯಾರಿಸುವ ಬೆಲ್ಟು, ಇತ್ಯಾದಿಗಳನ್ನು ಕೊಳ್ಳಬಾರದು. ಹಾವು ಬದುಕಿದ್ದಂತೆಯೇ ಹಾವಿನ ಚರ್ಮ ಸುಲಿದು, ಒದ್ದಾಡುತ್ತಿರುವ ಹಾವಿನ ದೇಹವನ್ನು ಎಸೆದು ಹೋಗುವ ಕ್ರೂರಿಗಳ ಕಾರ್ಯಕ್ಕೆ ಇದರಿಂದ ಕಡಿವಾಣ ಹಾಕಬಹುದು.
೫. ಇಂತಹ ಇತರ ಸೂಕ್ತವೆನಿಸುವ ಕಾರ್ಯಗಳನ್ನು ಕೈಗೊಳ್ಳಬಹುದು.
ಇನ್ನು ಮುಂದಾದರೂ ನಾಗರ ಪಂಚಮಿಯನ್ನು 'ಪರಿಸರ ಪಂಚಮಿ'ಯಾಗಿ ಆಚರಿಸಲಿ ಎಂಬುದು ಈ 'ನಾಗರಾಜ'ನ ಆಶಯ!
*************

ಜಿಜ್ಞಾಸೆ

ವೇದಸುಧೆಯ ಆತ್ಮೀಯ ಅಭಿಮಾನಿಗಳೇ,
ಕಥೆ ಕಾದಂಬರಿಗಳನ್ನಾದರೆ ಸಲೀಸಾಗಿ ಓದಿಕೊಂಡು ಹೋಗಿಬಿಡಬಹುದು ,ಆದರೆ ಆತ್ಮಜ್ಞಾನದ ವಿಚಾರ ಹಾಗಲ್ಲ. ಅರ್ಥಮಾಡಿಕೊಂಡು ಓದಲು ಸ್ವಲ್ಪ ತಾಳ್ಮೆಯೂ ಬೇಕು. ಆದರೆ ತಾಳ್ಮೆಯಿಂದ ಅರ್ಥಮಾಡಿಕೊಂಡು ಓದಿದರೆ ಅದರಲ್ಲಿ ಸಿಗುವ ಸಂತೋಷಕ್ಕೆ ಪಾರವಿರುವುದಿಲ್ಲ. ಶ್ರೀ ಸುಧಾಕರ ಶರ್ಮರು ವೇದದ ಹಲವಾರು ಮಂತ್ರಗಳನ್ನು ನಮ್ಮ ನೆಮ್ಮದಿಯಬದುಕಿಗಾಗಿ ನಮ್ಮ ಮನಮುಟ್ಟುವಂತೆ ಮಾಡಿರುವ ಪ್ರವಚನಗಳ ಆಡಿಯೋ ಶರ್ಮರ ಪುಟದಲ್ಲಿದೆ. ಕಳೆದ ಕೆಲವು ದಿನಗಳಿಂದ ಶ್ರೀ ಸುಬ್ರಹ್ಮಣ್ಯರು ಶ್ರೀ ಶಂಕರಾಚಾರ್ಯರ ವಿವೇಕ ಚೂಡಾಮಣಿಬಗ್ಗೆ ಬರೆಯುತ್ತಿದ್ದಾರೆ. ಶಂಕರರ ಕೃತಿಗಳಲ್ಲಿ ಆತ್ಮತತ್ವದ ಬಗ್ಗೆ ಸರಳವಾದ ನಿರೂಪಣೆಯನ್ನು ಕಾಣಬಹುದು. ನಮ್ಮ ಸಮಚಿತ್ತದ ಜೀವನಕ್ಕೆ ಸಹಕಾರಿಯಾಗಬಲ್ಲ ಶಂಕರರ ಕೃತಿಗಳನ್ನು ಓದುವುದು ಮತ್ತು ಅದರ ಬಗ್ಗೆ ಜಿಜ್ಞಾಸೆ ನಡೆಸುವುದು ನಮ್ಮ ನೆಮ್ಮದಿಯ ಜೀವನಕ್ಕೆ ಸಹಕಾರಿಯಾಗಬಲ್ಲದು. ಬನ್ನಿ ಬಗ್ಗೆ ಜಿಜ್ಞಾಸೆ ನಡೆಸೋಣ. ಶ್ರೀ ಸುಧಾಕರ ಶರ್ಮರ ಆರೋಗ್ಯ ಇನ್ನೂ ಉತ್ತಮ ಗೊಳ್ಳಬೇಕಿದೆ. ಶರ್ಮರ ಆರೋಗ್ಯವು ಸುಧಾರಣೆ ಯಾದಮೇಲೆ ಶರ್ಮರು ನಮ್ಮೊಡನೆ ಚರ್ಚೆಗೆ ಸೇರುತ್ತಾರೆ. ಅವರಿಂದ ಉತ್ತಮ ಮಾರ್ಗದರ್ಶನ ದೊರೆಯಬಲ್ಲದು. ಈಗ ನಿಮ್ಮ ಸರದಿ.....