Pages

Wednesday, September 5, 2012

ಭಕ್ತಿ - ಒಂದು ನೋಟ



     ಮಾನವನಿಗೂ ಪಶು-ಪಕ್ಷಿ-ಕ್ರಿಮಿ-ಕೀಟಗಳಿಗೂ ಒಂದು ಮೂಲಭೂತ ವ್ಯತ್ಯಾಸ ಗಮನಿಸಬಹುದಾದುದೆಂದರೆ ಮಾನವನಿಗೆ ಇರುವ ವಿವೇಚನೆ ಮಾಡುವ ಶಕ್ತಿ. ಆತ ಮಾಡಬಲ್ಲ, ಮಾಡದಿರಲೂ ಬಲ್ಲ, ಬೇರೆಯದನ್ನೇ ಮಾಡಬಲ್ಲ. ಆತ ಕೇವಲ ಸ್ವಾಭಾವಿಕ ಜ್ಞಾನದಿಂದ ತೃಪ್ತನಾಗುವುದಿಲ್ಲ. ಏಕೆಂದರೆ ಅವನ ಮನಸ್ಸು ಏಕೆ?, ಹೇಗೆ? ಎಂಬ ಪ್ರಶ್ನೆಗಳನ್ನು ಕೇಳುವ ವಿಕಾಸದ ಸ್ಥಿತಿಯನ್ನು ಮುಟ್ಟಿರುತ್ತದೆ. ಪ್ರಶ್ನೆ ಕೇಳುವ ಭಾಗ್ಯ ಮತ್ತು ಅದಕ್ಕೆ ಉತ್ತರ ಹುಡುಕುವ ಅಭಿಲಾಷೆ ಮಾನವನ ಸಂಪತ್ತು. ಸ್ವಾಭಾವಿಕ ಜ್ಞಾನದಲ್ಲೇ ತೃಪ್ತರಾಗಿ ನೈಮಿತ್ತಿಕ ಜ್ಞಾನ ಬಯಸದವರ ಮಾನಸಿಕ ಬೆಳವಣಿಗೆ ಕುಂಠಿತವಾಗಿ ಆಕಾರದಲ್ಲಿ ಮಾತ್ರ ಮಾನವರಾಗಿರುತ್ತಾರೆ. ಮಾನವನ ಪರಿಪೂರ್ಣ ವಿಕಾಸಕ್ಕೆ ಇಂದ್ರಿಯ ಗಮ್ಯವಾದ ಭೌತಿಕ ವಿಷಯಗಳ ಜ್ಞಾನದೊಂದಿಗೆ, ಅತೀಂದ್ರಿಯ ವಿಷಯಗಳಾದ ಪರಮಾತ್ಮ, ಜೀವಾತ್ಮ, ಬಂಧ, ಮೋಕ್ಷ, ಧರ್ಮ, ಇತ್ಯಾದಿಗಳ ಕುರಿತು ಜಿಜ್ಞಾಸೆ ಸಹ ಇರಬೇಕಾಗುತ್ತದೆ. ಹೆಚ್ಚು ಹೆಚ್ಚು ಅಂತರ್ಮುಖಿಗಳಾದಾಗ, ಶ್ರವಣ, ಮನನ, ಮಥನ, ಮಂಥನಗಳನ್ನು ನಡೆಸಿದಷ್ಟೂ ಅವನ ತಿಳಿವಳಿಕೆ ಹೆಚ್ಚುತ್ತಾ ಹೋಗುತ್ತದೆ. ಎಷ್ಟೋ ಸಂಗತಿಗಳನ್ನು ಅರಿಯಲಾಗುವುದಿಲ್ಲ, ಆದರೆ ಅನುಭವಿಸಬಹುದಾಗಿದೆ. ನಮಗೆ ಗೊತ್ತಿಲ್ಲದ ಸಂಗತಿಗಳನ್ನು ಗೊತ್ತು ಮಾಡಿಕೊಳ್ಳುವುದು ಗುರಿ ಎಂದಿಟ್ಟುಕೊಂಡರೆ, ಅದನ್ನು ತಲುಪಲು ಪಡೆದುಕೊಳ್ಳುವ ಸಹಾಯವನ್ನು ಸಾಧನ ಮತ್ತು ಗುರಿ ತಲುಪಿದರೆ ಸಾಧನೆ ಎನ್ನಬಹುದು. ಈ ಪ್ರಯತ್ನದಲ್ಲಿರುವವರು ಸಾಧಕರು. ಗುರಿ ತಲುಪಿದಾಗ ಆಗುವ ಆನಂದವನ್ನು ಮೋಕ್ಷ ಅನ್ನಬಹುದು, ಬೇರೆ ಯಾವುದೇ ಪದದಿಂದ ಗುರುತಿಸಬಹುದು. ಇಂತಹ ಸಾಧ್ಯ(ಗುರಿ), ಸಾಧನೆ, ಸಾಧನ, ಸಾಧಕರ ಮಧ್ಯದಲ್ಲಿ ಉದ್ಭವವಾಗುವುದೇ ಭಕ್ತಿ! ಬ್ರಹ್ಮಾಂಡವನ್ನು, ಅಖಿಲ ಜಗತ್ತನ್ನು ನಿಯಂತ್ರಿಸುವ ಶಕ್ತಿಯನ್ನು ಪರಮಾತ್ಮ ಅಥವ ವಿಶ್ವ ಚೇತನ ಎಂದಿಟ್ಟುಕೊಂಡರೆ ಆ ಶಕ್ತಿಯನ್ನು ಅರಿಯುವ ಪ್ರಯತ್ನವನ್ನು ಭಕ್ತ ಮಾಡುತ್ತಾನೆ. ಆ ಪ್ರಯತ್ನವನ್ನೇ ಭಕ್ತಿ ಎನ್ನಬಹುದು. ಆ ಭಕ್ತಿ ಭಕ್ತನ ಶಕ್ತ್ಯಾನುಸಾರ ಇರುತ್ತದೆ.
     ಭಕ್ತಿಯಲ್ಲಿ ಕೃತಜ್ಞತೆ, ಪ್ರೀತಿ, ಭಯ, ಕೋಪ, ವಾತ್ಸಲ್ಯ, ಬೇಸರ, ಮಮತೆ, ರೋಷ, ಅನುನಯ, ಆನಂದ, ದುಃಖ, ಇತ್ಯಾದಿ ಭಾವಗಳನ್ನು ಕಾಣಬಹುದು. ಈ ಅಖಂಡ ಜಗತ್ತನ್ನು ಸೃಷ್ಟಿಸಿ ಅದನ್ನು ಅನುಭವಿಸಲು ಅವಕಾಶ ಮಾಡಿಕೊಟ್ಟ ಭಗವಂತನನ್ನು ಕೃತಜ್ಞತಾ ಭಾವದಿಂದ ಸ್ಮರಿಸಬಹುದು. ಅವನ ಕರುಣೆಯನ್ನು ನೆನೆದು ಅವನನ್ನು ಪ್ರೀತಿಸಬಹುದು. ಇಷ್ಟೊಂದು ಅಗಾಧ ಶಕ್ತಿಯನ್ನು, ಸೃಷ್ಟಿಯ ಬೃಹತ್ತತೆಯನ್ನು ಕಂಡು ಬೆರಗಾಗಿ ಭಯ ಪಡಲೂಬಹುದು, ಇತರರಿಗೆ ಕೊಟ್ಟ ಅವಕಾಶವನ್ನು ತನಗೆ ಕೊಡದ ಬಗ್ಗೆ ಕೋಪಿಸಿಕೊಳ್ಳಲೂಬಹುದು, ಅವನನ್ನು ಓಲೈಸಿ ಒಳಿತನ್ನು ಬೇಡಲೂಬಹುದು,. . . . ., ಹೀಗೆ ಪಟ್ಟಿ ಬೆಳೆಸುತ್ತಾ ಹೋಗಬಹುದು. ಇಂತಹ ಭಾವಗಳು ಭಕ್ತರ ಮನೋಭಾವವನ್ನು -ಅವರವರ ಭಕುತಿಗೆ- ಅವಲಂಬಿಸಿರುತ್ತದೆ. ಭಕ್ತರಲ್ಲಿ ನಾಲ್ಕು ರೀತಿಯ ಭಕ್ತರಿದ್ದಾರೆಂದು - ಆರ್ತ, ಅರ್ಥಾರ್ಥಿ, ಜಿಜ್ಞಾಸು, ಜ್ಞಾನಿ- ಭಗವದ್ಗೀತೆ ಹೇಳುತ್ತದೆ. ತನಗೆ ಇರುವ ತೊಂದರೆಯನ್ನು ಪರಿಹರಿಸಲು ಪ್ರಾರ್ಥಿಸುವವನು ಆರ್ತ, ಸಂಪತ್ತು, ಐಶ್ವರ್ಯ, ಇತ್ಯಾದಿ ಅನುಕೂಲಗಳನ್ನು ಬಯಸುವವನು ಅರ್ಥಾರ್ಥಿ, ಜ್ಞಾನ ಬಯಸುವವನು ಜಿಜ್ಞಾಸು ಮತ್ತು ಪ್ರತಿಯಾಗಿ ಏನನ್ನೂ ಬಯಸದೆ, ಅವನನ್ನು ಹೊಂದುವ ಪ್ರಯತ್ನದಲ್ಲೇ ಆನಂದ ಕಾಣುವವನು ಜ್ಞಾನಿ. ನಾರದ ಭಕ್ತಿ ಸೂತ್ರದಲ್ಲಿ ಭಕ್ತಿಯ ವಿವಿಧ ಮಜಲುಗಳನ್ನು ಹೇಳಲಾಗಿದೆ. (ಭಗವಂತನ ವಿಚಾರಗಳ ಕುರಿತು) ಶ್ರವಣಾಸಕ್ತಿ, ಅವನನ್ನು ಭಜಿಸುವ ಕೀರ್ತನಾಸಕ್ತಿ, ರೂಪಾಸಕ್ತಿ, ಪೂಜಾಸಕ್ತಿ, ದಾಸ್ಯಾಸಕ್ತಿ, ಸಖ್ಯಾಸಕ್ತಿ, ಆತ್ಮನಿವೇದನೆ, ಸಖ್ಯಭಾವ, ವಾತ್ಸಲ್ಯಭಾವ, ತನ್ಮಯಭಾವ, ವಿರಹಭಾವ, ಇತ್ಯಾದಿಗಳನ್ನು ಅಲ್ಲಿ ವಿವರಿಸಿದೆ. ಇರಲಿ, ಇವುಗಳನ್ನೆಲ್ಲಾ ವಿವರಿಸುತ್ತಾ ಹೋದರೆ ದೀರ್ಘ ಬರಹವಾಗುವುದು. ಲೋಕದ ಕಣ್ಣಿನಲ್ಲಿ ಹುಚ್ಚರಂತೆ ಕಂಡು ಬರುವ ಕೆಲವು ಅವಧೂತರು, ಸಾಧು-ಸಂತರ ಭಕ್ತಿಯನ್ನು ವಿವರಿಸಲು ಸಾಧ್ಯವೇ? ರಾಮಕೃಷ್ಣ ಪರಮ ಹಂಸರನ್ನೂ ಹುಚ್ಚರೆಂದು ಜರಿದವರಿಗೇನೂ ಕಡಿಮೆಯಿರಲಿಲ್ಲ.
     ಒಂದೆರಡು ಸರಳ ಉದಾಹರಣೆಗಳನ್ನು ಕೊಟ್ಟು ಭಕ್ತಿಯಲ್ಲಿ ರಾಗ-ದ್ವೇಷಗಳೂ ಇವೆ, ನವರಸಗಳೂ ಇವೆ ಎಂದು ಮುಕ್ತಾಯ ಹಾಡುವೆ. ಪರಮಾತ್ಮನನ್ನು ದ್ವೇಷಿಸುವ ಹಿರಣ್ಯಕಶಿಪು ಮುಂತಾದ ಅಸುರರನ್ನು ದ್ವೇಷ ಭಕ್ತಿಗೆ ಉದಾಹರಣೆಯಾಗಿ ಕೊಡಬಹುದು. ಪ್ರಾಸಂಗಿಕವಾಗಿ ಒಂದು ಕಥೆ ಹೇಳುವೆ. ಒಬ್ಬ ವಿಷ್ಣು ಭಕ್ತ ಪ್ರವಾಸ ಮಾಡುತ್ತಾ ಹೋಗುತ್ತಿದ್ದಾಗ ದಾರಿಯಲ್ಲಿ ಹರಿಹರನ ವಿಗ್ರಹವಿರುವ ಒಂದು ದೇವಸ್ಥಾನ ಕಂಡ. ವಿಷ್ಣು-ಶಿವರಿಬ್ಬರೂ ಇರುವ ವಿಗ್ರಹಕ್ಕೆ ಪೂಜೆ ಮಾಡಲು ಅವನ ಮನಸ್ಸು ಒಪ್ಪಲಿಲ್ಲ. ಸರಿ, ತಾನು ಮಾಡುವ ಪೂಜೆಯನ್ನು ಶಿವ ನೋಡಬಾರದೆಂದು ಅವನ ಕಣ್ಣನ್ನು ಮುಚ್ಚಿದ, ಧೂಪದ ವಾಸನೆಯನ್ನು ಶಿವನ ನಾಸಿಕ ಗ್ರಹಿಸಬಾರದೆಂದು ಆ ಮೂಗಿನ ಹೊಳ್ಳೆಗೆ ಹತ್ತಿಯಿಟ್ಟ, ನೈವೇದ್ಯ ಸಿಗದಿರಲೆಂದು ಶಿವನ ಬಾಯಿಯ ಭಾಗ ಮುಚ್ಚಿದ, ಶಿವನ ಕಿವಿ ತನ್ನ ಪೂಜಾ ಮಂತ್ರ ಕೇಳಬಾರದೆಂದು ಕಿವಿಗೂ ಹತ್ತಿ ತುರುಕಿದ. ಹೀಗೆಲ್ಲಾ ಮಾಡಿ ಪೂಜೆ ಮುಗಿಸಿದಾಗ ಭಕ್ತನ ಎದುರು ಶಿವ ಪ್ರತ್ಯಕ್ಷನಾದ. ಭಕ್ತ ಅವನನ್ನು ಕುರಿತು, "ನೀನೇಕೆ ಬಂದೆ? ನಾನು ಪ್ರಾರ್ಥಿಸಿದ್ದು ವಿಷ್ಣುವನ್ನು" ಅಂದ. ಶಿವ ಹೇಳಿದ, "ಭಕ್ತಾ, ನೀನು ನಿನ್ನ ಪೂಜೆಯುದ್ದಕ್ಕೂ ವಿಷ್ಣುವನ್ನು ನೆನೆಸಲೇ ಇಲ್ಲ. ಬದಲಾಗಿ ನನಗೆಲ್ಲಿ ನಿನ್ನ ಪೂಜೆ ತಲುಪೀತೋ ಅಂತಲೇ ನನ್ನನ್ನೇ ನೆನೆಸುತ್ತಿದ್ದೆ. ನನ್ನನ್ನೇ ನೀನು ನೆನೆಯುತ್ತಿದ್ದರಿಂದ ನಾನು ಬಂದೆ."
     ಗ್ರಾಮಗಳ ದೇವಸ್ಥಾನಗಳಲ್ಲಿ ದೇವರಿಗೆ ಪೂಜೆ ಮಾಡಿ ಪ್ರಸಾದ ಕೇಳಿ (ಮನದಲ್ಲೇ ನೆನಸಿಕೊಂಡು ದೇವರ ವಿಗ್ರಹವನ್ನೇ ನೋಡುತ್ತಾ ಹೂವಿನ ಪ್ರಸಾದ ಕೇಳುವ ಪದ್ಧತಿಯಿದೆ. ಬಲಗಡೆ ಹೂವು ಬಿದ್ದರೆ ಶುಭ, ಎಡಗಡೆ ಬಿದ್ದರೆ ಅಶುಭ ಎಂದುಕೊಳ್ಳುತ್ತಾರೆ. ಇದರ ವೈಜ್ಞಾನಿಕ ವಿಶ್ಲೇಷಣೆ ಇಲ್ಲಿ ಅಪ್ರಾಸಂಗಿಕ) ಕುಳಿತ ಭಕ್ತ/ಭಕ್ತೆಯರನ್ನು ಗಮನಿಸಿದ್ದೀರಾ? ಕೆಲವರು "ಏಕಪ್ಪಾ/ ಏಕಮ್ಮಾ ಇಷ್ಟೊಂದು ಸತಾಯಿಸುತ್ತಿಯಾ? ಆಗುವುದಾದರೆ ಪ್ರಸಾದ ಕೊಡು, ಆಗಲ್ಲಾ ಅಂತಲಾದರೂ ಹೇಳಿಬಿಡು" ಅಂತ ವಿಗ್ರಹದೊಂದಿಗೆ ಸಂಭಾಷಣೆಯನ್ನೂ ಮಾಡುತ್ತಿರುತ್ತಾರೆ. ಬರಬಾರದ ಕಷ್ಟ-ನಷ್ಟಗಳಾದಾಗ, 'ಈ ದೇವರು ಅನ್ನುವವನು ಇದ್ದಿದ್ದರೆ ನನಗೆ ಹೀಗೆ ತೊಂದರೆ ಕೊಡುತ್ತಿರಲಿಲ್ಲ. ಇನ್ನು ಅವನನ್ನು ಪೂಜೆ ಮಾಡುವುದಿಲ್ಲ' ಎಂದು ಘೋಷಿಸುವವರನ್ನೂ ನಾವು ಕಾಣುತ್ತಿರುತ್ತೇವೆ. ನಾವು ಮಾಡುವ ಕರ್ಮಗಳಿಗೆ ನಾವೇ ಹೊಣೆ, ಮಾಡಿದ್ದುಣ್ಣೋ ಮಹರಾಯ ಅನ್ನುವಂತೆ ನಮ್ಮ ಕರ್ಮಫಲಗಳನ್ನು ನಾವೇ ಅನುಭವಿಸಬೇಕು ಎಂದು ತಿಳಿದು ನಡೆಯುವ ನಿರ್ಲಿಪ್ತ ಭಕ್ತರನ್ನೂ ಕಾಣುತ್ತೇವೆ. ಕೆಡುಕನ್ನು ಯಾರಿಗೂ ಬಯಸದೆ, ಸಾಧ್ಯವಾದಷ್ಟೂ ಎಲ್ಲರ ಹಿತ/ಒಳಿತನ್ನೇ ಬಯಸುವ, ಪ್ರತಿಫಲ ಬಯಸದ ಭಕ್ತರ ಭಕ್ತಿ ಶ್ರೇಷ್ಠವಾದುದು ಎಂಬುದರಲ್ಲಿ ಎರಡು ಮಾತಿರಲಿಕ್ಕಿಲ್ಲ. 
-ಕ.ವೆಂ.ನಾಗರಾಜ್.

3 comments:

  1. ಶಿವ ಪ್ರತ್ಯಕ್ಷನಾಗಿದ್ದು ಅದ್ಭುತವಾಗಿದೆ!!
    ನನಗೆ ಕೂಡಲೇ ನೆನಪಾದದ್ದು ನಾವು ದ್ವೇಶಿಸುವ ಜನರ ಬಗ್ಗೆ. ನೋಡೀ,ತುಂಬಾ ಪ್ರೀತಿಸುವ ವ್ಯಕ್ತಿ ಜೊತೆಗೇ ಇದ್ದು ಬಿಡುತ್ತಾರೆ.ಅವರನ್ನು ಮರೆತೇ ಬಿಡುತ್ತೇವೆ.ಅಂದರೆ ಸದಾಕಾಲ ಅವರೊಡನೆ ಮಾತನಾಡುವುದೂ ಇಲ್ಲ, ಜೊತೆಯಲ್ಲೇ ಆ ವ್ಯಕ್ತಿ ಇದ್ದಮೇಲೆ ಮನದಲ್ಲಿ ಅವನ ಬಗ್ಗೆ ಯೋಚಿಸಲೂ ಅಗತ್ಯಕಾಣುವುದಿಲ್ಲ. ಹಾಗೆಯೇ ಬಹಳಷ್ಟು ಜನ ಮಿತ್ರರನ್ನು ನಾವು ನೋಡದಿದ್ದರೂ ನಿತ್ಯವೂ ಸ್ಮರಣೆ ಏನೂ ಮಾಡುವುದಿಲ್ಲ. ಆದರೆ ಯಾರ ಗುಣ ಸ್ವಭಾವ ನಮಗೆ ಒಪ್ಪಿಗೆ ಯಾಗಿರುವುದಿಲ್ಲವೋ ಅವರನ್ನು ಒಂದಲ್ಲಾ ಒಂದು ಕಾರಣಕ್ಕೆ ಪದೇ ಪದೇ ನೆನಪು ಮಾಡಿಕೊಂದು ಅವನ/ಳ ಬಗ್ಗೆ ಆಪ್ತರಲ್ಲಿ ಅವನ/ಳ ದುರ್ಬುದ್ಧಿ ಬಗ್ಗೆ ಹೇಳಿಕೊಳ್ಳುತ್ತೇವೆ. ಅದರಲ್ಲಿ ನಮಗೇನು ಸಿಗುತ್ತೋ ಗೊತ್ತಿಲ್ಲ. ಆದರೆ ಒಂದಂತೂ ಸತ್ಯ, ಅವರು ಸದಾ ಸ್ಮರಣೆಯಲ್ಲಿ ಉಳಿಯುತ್ತಾರೆ. ನೆನಪಿರಲಿ! ತುಂಬಾ ಸಜ್ಜನ ಮಿತ್ರರ ಹೆಸರೂ ಕೂಡ ಮರೆತಿರುತ್ತೇವೆ, ಆದರೆ ನಾವು ದ್ವೇಶಿಸುವ ವ್ಯಕ್ತಿಯ ಹೆಸರಷ್ಟೇ ಅಲ್ಲ, ಅವನ ಜಾತಕ, ಅವನ ಆರೋಗ್ಯ ಪರಿಸ್ಥಿತಿ ಎಲ್ಲಾ ನಮಗೆ ಗೊತ್ತಿರುತ್ತೆ. ಕೆಲವರ ಬಾಯಲ್ಲಿ ಈ ಮಾತನ್ನು ಕೇಳಿದ್ದೇನೆ....ಅವನು ಹಾವು ಕಡಿದು ಸಾಯ ಬಾರದೇ? [ಅವನು ಯಾರು ,ಸದಾಸ್ಮರಣೆಯಲ್ಲಿರುವ ಅವನು ನಮ್ಮ ಧ್ವೇಶಿ]

    ReplyDelete
  2. ಭಕ್ತಿಯ ಬಗ್ಗೆ ತುಂಬಾ ವಿವರಗಳನ್ನು ನೀಡಿದ್ದಿರಿ....ಉಪಯುಕ್ತ ಲೇಖನ ಸರ್...ಧನ್ಯವಾದಗಳು...

    ReplyDelete
  3. ವಂದನೆಗಳು, ಅಶೋಕ ಕೊಡ್ಲಾಡಿಯವರೇ.

    ReplyDelete