Pages

Monday, January 16, 2012

ಸಿರಿಭೂವಲಯ ಪರಿಚಯ ಕೃತಿಗಳ ಲೋಕಾರ್ಪಣೆ




ಹಾಸನಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು 
ವೇದಸುಧೆ ಅಂತರ್ಜಾಲ ತಾಣ 
ಸಂಯುಕ್ತಾಶ್ರಯದಲ್ಲಿ 


ಸುಧಾರ್ತಿ,ಹಾಸನ-ಇವರು ರಚಿಸಿರುವ 
ಸಿರಿಭೂವಲಯ ಪರಿಚಯ ಕೃತಿಗಳ ಲೋಕಾರ್ಪಣೆ 


ಸ್ಥಳ: ಈಶಾವಾಸ್ಯಂ, ಹೊಯ್ಸಳನಗರ ಮುಖ್ಯರಸ್ತೆ, ಹೊಯ್ಸಳನಗರ, ಹಾಸನ 

ದಿನಾಂಕ: 20.01.2012 ಶುಕ್ರವಾರ ಬೆಳಿಗ್ಗೆ 10.00ಕ್ಕೆ 


ಅಧ್ಯಕ್ಷತೆ
ಶ್ರೀ ಸಿ.ಎಸ್.ಕೃಷ್ಣಸ್ವಾಮಿ, ಪ್ರಾಂಶುಪಾಲರು
ಶ್ರೀರಾಮಕೃಷ್ಣ ವಿದ್ಯಾಲಯ, ಹಾಸ ನ


ಕೃತಿಗಳ ಲೋಕಾರ್ಪಣೆ:
ಡಾ. ಸುಬ್ಬುಕೃಷ್ಣ
ಸಂಶೋಧನಾಧಿಕಾರಿ.
ಭಾರತೀಯ ಭಾಷಾ ಸಂಸ್ಥಾನ, ಮೈಸೂರು.

ಕೃತಿ ಪರಿಚಯ:
ಪ್ರೊ. ನಾರಾಯಣ ಪ್ರಸಾದ್
ಪ್ರಾಧ್ಯಾಪಕರು, ಸರ್ಕಾರಿ ವಿಜ್ಞಾನ  ಮಹಾವಿದ್ಯಾಲಯ ,ಹಾಸನ 

ಪದ್ಯವಾಚನ:
ಶ್ರೀಮತಿ ಶಾರದಮ್ಮ, ಬೆಂಗಳೂರು

ಮುಖ್ಯ ಅತಿಥಿಗಳು:
ಶ್ರೀ ಮಲ್ಲಿಕಾರ್ಜುನ ಮಳಲಿ,ಎಂ.ಎ.
11111 ವಚನಗಳ ಸರದಾರ 

ಗುರುವಂದನೆ:
ವಿದ್ವಾನ್  ಎಸ.ರಾಮಣ್ಣನವರಿಗೆ

ಲೋಕಾರ್ಪನೆಯಾಗಲಿರುವ ಕೃತಿಗಳು:
                                                    1. ಸಿರಿಭೂವಲಯದ ಒಂದು ಮಿ೦ಚು ನೋಟ
                                                    2. ಸಿರಿಭೂವಲಯದ ಜಯಾಖ್ಯಾನಾಂತರ್ಗತ ಭಗವದ್ಗೀತಾ 
                                                    3. ಸಿರಿಭೂವಲಯ ಕೀ ಏಕ್   ಝಾ೦ಕಿ 
                                                      [ಹಿಂದೀ ಭಾವಾನುವಾದ ವಿದ್ವಾನ್ ಶ್ರೀ ಎಸ.ರಾಮಣ್ಣ ]

ವಿಶ್ವದ ಪ್ರಾಚೀನ ಅ೦ಕ ಕಾವ್ಯ
ಸಿರಿಭೂವಲಯದ ಪರಿಚಯ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ  ವೇದಸುಧೆಯು  ಕೈ ಜೋಡಿಸಿದೆ,
 ಆಸಕ್ತ ರೆಲ್ಲರಿಗೆ ಹಾರ್ದಿಕ ಸ್ವಾಗತವಿದೆ.
----------------------------------------------------------------


ಸಿರಿಭೂವಲಯದ ಬಗೆಗೆ  ಬೇಲೂರಿನ ಡಾ. ಶ್ರೀವತ್ಸ ಎಸ್.ವಟಿ ಯವರೊಡನೆ ನಡೆದ ಸಂಭಾಷಣೆ ಇಲ್ಲಿದೆ.

--














ಶ್ರಾದ್ಧದ ಬಗೆಗೆ ವೇದದಲ್ಲಿ ಏನು ಹೇಳಿದೆ?

ಸುಧಾಕರ ಶರ್ಮರೇ ಹಾಗೆ. ವಿಷಯಗಳನ್ನು ಅತಿ ಸರಳವಾಗಿ ಅತ್ಯಂತ ದೃಢತೆಯಿಂದ ಹೇಳುತ್ತಾರೆ. ಇಂದು ಅವರು ಶ್ರಾದ್ಧ ಕರ್ಮದ ಬಗ್ಗೆ ಮಾತನಾಡಿದ್ದಾರೆ.ಕೇಳಿ. ತಲೆ ತಲಾಂತರದಿಂದ ನಡೆಸಿಕೊಂಡು ಬರುತ್ತಿರುವ ಅನೇಕ ಆಚರಣೆಗಳಿಗೆ ಅರ್ಥ ವಿಲ್ಲವೆಂದು ಗೊತ್ತಾದಾಗ ಸ್ವಲ್ಪ ಗಾಭರಿಯಾಗುತ್ತೆ. ಆದರೆ ನಮ್ಮ ಆರೋಗ್ಯಕರ ಬದುಕಿಗೆ ಅಗತ್ಯವಾದ ಸತ್ಯವಾದ ಸರಳವಾದ ವೇದದ ಮಾರ್ಗವನ್ನು ತೋರಿಸುವಾಗ ನಾವು ವಿಮರ್ಷೆಮಾಡಬೇಕಲ್ಲವೇ?


ವೇದೋಕ್ತ ವಿವಾಹ


ಈ ಲೇಖನವು ಒಂದು ವರ್ಷದ ಹಿಂದೆ ಪ್ರಕಟವಾಗಿತ್ತು. ಓದುಗರು ಈಗಲೂ ಈ ಲೇಖನವನ್ನು ಹುಡುಕಿ  ಓದುತ್ತಿರುವುದರಿಂದ ಪುನ: ಪ್ರಕಟಿಸಲಾಗಿದೆ.
-ಸಂಪಾದಕ 


ಸುಮಾರು ಎರಡು  ವರ್ಷದ ಹಿಂದಿನ ಘಟನೆ. ಅವನ ಹೆಸರು ಸುನಿಲ, ಓರ್ವ ಸ್ಫುರದ್ರೂಪಿ ಹಿಂದೂ ತರುಣ, ಹಾಸನ ಮೂಲದವನು. ಅವಳು ಒಲಿವಿಯ, ಮನಮೋಹಕ ಚೆಲುವಿನ ಕ್ರಿಶ್ಚಿಯನ್ ನವಯುವತಿ, ಮಂಗಳೂರಿನ ಕಡೆಯವಳು. ಇಬ್ಬರಿಗೂ ಪರಿಚಯವಾಯಿತು, ಮಾತುಕಥೆಗಳಾದವು, ಪ್ರೇಮಾಂಕುರವಾಯಿತು. ಮದುವೆಯಾಗಲು ನಿರ್ಧರಿಸಿದರು. ಜಾತಿ ಬೇರೆಯಾದ್ದರಿಂದ ಎರಡೂ ಮನೆಯವರು ಪ್ರಾರಂಭದಲ್ಲಿ ಒಪ್ಪದಿದ್ದರೂ ಅವರ ಧೃಢ ನಿರ್ಧಾರದಿಂದಾಗಿ ಒಪ್ಪಿಗೆ ಸಿಕ್ಕಿತು. ಸುನಿಲನಪೂರ್ಣ ಸರಿಹೊಂದಿಸುಇಚ್ಛೆಯಂತೆ ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಒಲಿವಿಯ ಸಮ್ಮತಿಸಿದಳು.

ವೇದೋಕ್ತ ರೀತಿಯಲ್ಲಿ ಮದುವೆಯಾಗಲು ನಿರ್ಧರಿಸಿ ಬೆಂಗಳೂರಿನ ವೇದಾಧ್ಯಾಯಿ ಸುಧಾಕರ ಶರ್ಮರನ್ನು ಭೇಟಿಯಾದರು. ಅವರು ಒಲಿವಿಯಳನ್ನು ಆಕೆ ಇನ್ನುಮುಂದೆ ಸುನಿಲನಂತೆ ಸಸ್ಯಾಹಾರಿಯಾಗಿರಲು ಸಾಧ್ಯವೇ ಎಂದು ವಿಚಾರಿಸಿದರು. ಆಕೆಗೆ ತಕ್ಷಣಕ್ಕೆ ಉತ್ತರಿಸಲಾಗಲಿಲ್ಲ. ಶರ್ಮರು ಹೇಳಿದರು -"ಆಹಾರ ಪದ್ಧತಿ ಬದಲಾಯಿಸಲು ನನ್ನ ಒತ್ತಾಯವಿಲ್ಲ. ಆದರೆ ಸಸ್ಯಾಹಾರಿಯಾಗಲು ನಿರ್ಧರಿಸಿದರೆ ಮಾತ್ರ ನಾನು ಮದುವೆ ಮಾಡಿಸುವೆ. ಇಲ್ಲದಿದ್ದರೆ ಬೇರೆಯವರ ಮಾರ್ಗದರ್ಶನದಲ್ಲಿ ಮದುವೆಯಾಗಬಹುದು. ನಿರ್ಧಾರವನ್ನು ಈ ಕೂಡಲೇ ತೆಗೆದುಕೊಳ್ಳಬೇಕಿಲ್ಲ. ನಿಧಾನವಾಗಿ ಯೋಚಿಸಿದ ನಂತರದಲ್ಲಿ ತಿಳಿಸಿ". ನಂತರ ತಿಳಿಸುವುದಾಗಿ ಹೋದ ಅವರು ಕೆಲವು ದಿನಗಳ ನಂತರ ಮತ್ತೆ ಬಂದು ಶರ್ಮರನ್ನು ಭೇಟಿ ಮಾಡಿದರು. ಒಲಿವಿಯ ಇನ್ನುಮುಂದೆ ಸಸ್ಯಾಹಾರಿಯಾಗಿರಲು ನಿರ್ಧರಿಸಿದ್ದಳು.  



ಹಾಸನದ ಸುವರ್ಣ ರೀಜೆನ್ಸಿ ಹೋಟೆಲಿನ ಪಾರ್ಟಿಹಾಲಿನಲ್ಲಿ ವೇದೋಕ್ತ ರೀತಿಯಲ್ಲಿ ಮದುವೆಗೆ ವೇದಿಕೆ ಸಜ್ಜಾಯಿತು. ಸಭಾಭವನ ಬಂಧು-ಮಿತ್ರರೊಂದಿಗೆ ತುಂಬಿತ್ತು. ನನಗೆ ಅವರ ಪರಿಚಯವಿಲ್ಲದಿದ್ದರೂ ಶ್ರೀ ಸುಧಾಕರ ಶರ್ಮರವರಿಂದ ವಿಷಯ ತಿಳಿದ ನಾನು ಅಂತರ್ಜಾತೀಯ ಹಾಗೂ ವೇದೋಕ್ತ ರೀತಿಯ ವಿವಾಹ ಹೇಗಿರುತ್ತದೆ ಎಂದು ತಿಳಿಯುವ ಕುತೂಹಲದಿಂದ ಆ ವಿವಾಹಕ್ಕೆ ನಾನೂ ಸಾಕ್ಷಿಯಾದೆ. ಮದುವೆ ಗಂಡು ಸುನಿಲ ಪಂಚೆ-ಶಲ್ಯ ಹೊದ್ದು ಸಿದ್ಧನಾಗಿದ್ದ. ಬಾಬ್ ಕಟ್ಟಿನ ಹುಡುಗಿ ಒಲಿವಿಯ ಸೀರೆಯಲ್ಲಿ ಸುಂದರವಾಗಿ ಕಾಣುತ್ತಿದ್ದಳು. ಅವರ ಜೋಡಿ ಹೇಳಿ ಮಾಡಿಸಿದಂತಿತ್ತು.

ಪ್ರಾರಂಭದಲ್ಲಿ ಶ್ರೀ ಶರ್ಮರು ದೇವರು ಮತ್ತು ಜಾತಿ ಕುರಿತು ನೀಡಿದ ವಿವರಣೆ ಮನ ಮುಟ್ಟುವಂತಿತ್ತು. ದೇವರು ಎಲ್ಲಾ ಜೀವಿಗಳಿಗೂ ಒಬ್ಬನೇ, ಬೇರೆ ಬೇರೆ ಜಾತಿಗಳವರಿಗೆ ಬೇರೆ ಬೇರೆ ದೇವರಿಲ್ಲ, ಅಲ್ಲದೆ ಮನುಷ್ಯರಿಗೆ, ಪ್ರಾಣಿಗಳಿಗೆ, ಗಿಡ-ಮರಗಳಿಗೆ ಪ್ರತ್ಯೇಕ ದೇವರುಗಳಿಲ್ಲವೆಂದ ಅವರು ಜಾತಿಗಳ ಸೃಷ್ಟಿ ಮನುಷ್ಯರು ಮಾಡಿಕೊಂಡದ್ದು ಎಂದರು. ಮದುವೆಯ ನಿಜವಾದ ಅರ್ಥವನ್ನು ವಿವರಿಸಿದ ಅವರು ಮದುವೆ ಅನ್ನುವುದು ಸುಖದಾಂಪತ್ಯ ನಡೆಸಲು ಬೇಕಾದ ದೈಹಿಕ, ಮಾನಸಿಕ, ಆಧ್ಯಾತ್ಮಿಕ ಸಂಸ್ಕಾರ, ಮಾರ್ಗದರ್ಶನ ನೀಡುವ ಸರಳ ಸಮಾರಂಭ ಎಂದರು. ವೇದೋಕ್ತ ರೀತಿಯ ವಿವಾಹ ವಿಧಿಯಲ್ಲಿ ಭಗವಂತನ ಪ್ರಾರ್ಥನೆ, ಪಾಣಿಗ್ರಹಣ, ಯಜ್ಞ, ಪ್ರತಿಜ್ಞಾಮಂತ್ರ ಪಠಣ, ಲಾಜಾಹೋಮ. ಸಪ್ತಪದಿ ಮತ್ತು ಆಶೀರ್ವಾದಗಳು ಒಳಗೊಂಡಿರುತ್ತವೆ ಎಂದರು. ಬೆಂಗಳೂರಿನ ಕೃಷ್ಣಮೂರ್ತಿಯವರು ಪುರೋಹಿತರಾಗಿ ಕಾರ್ಯ ನಿರ್ವಹಿಸಿದರು. ಆ ಪುರೋಹಿತರು ಇತರ ಪುರೋಹಿತರಂತೆ ಇರದೆ, ಪಂಚೆ, ಜುಬ್ಬಾ ಮತ್ತು ಹೆಗಲ ಮೇಲೆ ಒಂದು ವಸ್ತ್ರ ಹಾಕಿಕೊಂಡಿದ್ದರು. ನಾವು ಸಾಮಾನ್ಯವಾಗಿ ನೋಡುವ ಮದುವೆಗಳಲ್ಲಿ ಪುರೋಹಿತರು ಅವರ ಪಾಡಿಗೆ ಅವರು ಮಂತ್ರಗಳನ್ನು ಹೇಳುತ್ತಿದ್ದರೆ ಅದನ್ನು ಬೇರೆಯವರು ಇರಲಿ, ಮದುವೆಯಾಗುವ ಗಂಡೂ-ಹೆಣ್ಣೂ ಸಹ ಅದನ್ನು ಕೇಳುವುದಿಲ್ಲ, ಮಂತ್ರದ ಅರ್ಥವೂ ಅವರಿಗೆ ಗೊತ್ತಿರುವುದಿಲ್ಲ, ಹೇಳುವ ಪುರೋಹಿತರಿಗೂ ತಿಳಿದಿರುತ್ತೋ ಇಲ್ಲವೋ!






ಪುರೋಹಿತರು ಮಂತ್ರಗಳನ್ನು ಹೇಳುತ್ತಿದ್ದರೆ ಅದರ ಅರ್ಥವನ್ನು ಕನ್ನಡದಲ್ಲಿ ಶರ್ಮರವರು ವಿವರಿಸಿ ಹೇಳುತ್ತಿದ್ದರು. ಮದುವೆಯ ವಿಧಿ-ವಿಧಾನಗಳ ನಿಜವಾದ ಪರಿಚಯ ಎಲ್ಲರಿಗೂ ಆದದ್ದು ವಿಶೇಷ. ಒಲಿವಿಯ ಸಸ್ಯಾಹಾರಿಯಾಗಿರಲು ನಿರ್ಧರಿಸಿದ ವಿಷಯ ಘೋಷಿಸಲಾಯಿತು. ವಧೂವರರು ಪೂರ್ಣ ಆಸಕ್ತಿಯಿಂದ ಕಲಾಪದಲ್ಲಿ ಭಾಗಿಯಾದರು, ನಾವೂ ಅಂತಹ ವಿಶೇಷವನ್ನು ಕಂಡು ಸಂತೋಷಿಸಿದೆವು. ವರನಿಂದ "ಜ್ಞಾನಪೂರ್ವಕವಾಗಿ ನಾನು ನಿನ್ನ ಕೈ ಹಿಡಿಯುತ್ತಿದ್ದೇನೆ, ನೀನೂ ಅಷ್ಟೆ. ನಾವಿಬ್ಬರೂ ಪ್ರಸನ್ನರಾಗಿ ಬಾಳೋಣ, ಉತ್ತಮ ಸಂತತಿಯನ್ನು ಪಡೆಯೋಣ. ಮುಪ್ಪಿನ ಕಾಲದವರೆಗೂ ಜೊತೆಯಾಗಿರೋಣ, ಪರಸ್ಪರ ಸುಪ್ರಸನ್ನರೂ, ಪರಸ್ಪರರಲ್ಲೇ ಆಸಕ್ತರೂ ಆಗಿ, ನೂರು ವರ್ಷಗಳ ಕಾಲ ಪ್ರೇಮದಿಂದ, ಆನಂದದಿಂದ, ಪ್ರಿಯವಚನಗಳನ್ನೇ ಆಡುತ್ತಾ ಬಾಳೋಣ" ಎಂಬ ಪ್ರತಿಜ್ಞಾ ವಚನ ಘೋಷಣೆ ಮಾಡಿಸಲಾಯಿತು. ಪ್ರತಿಯಾಗಿ ವಧುವೂ ಉತ್ತರವಾಗಿ ತನ್ನ ಬದ್ಧತೆಯನ್ನು ಘೋಷಿಸಿದಳು.



ಸಪ್ತಪದಿಯ ಮಹತ್ವ ತಿಳಿಸಿ ನೆರವೇರಿಸಲಾಯಿತು. ಅನ್ನಾಹಾರಗಳ, ಇಚ್ಛಾಶಕ್ತಿಗಳ ಸಲುವಾಗಿ ಮೊದಲ ಜೋಡಿಹೆಜ್ಜೆ, ಬಲ, ಆರೋಗ್ಯಗಳ ಸಲುವಾಗಿ ಎರಡನೆಯ ಜೋಡಿಹೆಜ್ಜೆ, ಸಾಧನ-ಸಂಪತ್ತಿನ ಸಲುವಾಗಿ ಮೂರನೆಯ ಜೋಡಿಹೆಜ್ಜೆ, ಸುಖ-ಆನಂದಗಳಿಗಾಗಿ ನಾಲ್ಕನೆಯ ಜೋಡಿಹೆಜ್ಜೆ, ಉತ್ತಮ ಸಂತಾನಕ್ಕಾಗಿ ಐದನೆಯ ಜೋಡಿಹೆಜ್ಜೆ, ನಿಯಮಿತ ಜೀವನಕ್ಕಾಗಿ ಆರನೆಯ ಜೋಡಿಹೆಜ್ಜೆ ಮತ್ತು ಸ್ನೇಹಕ್ಕಾಗಿ ಏಳನೆಯ ಜೋಡಿಹೆಜ್ಜೆಗಳನ್ನಿರಿಸಿದ ನಂತರ ವಧೂವರರು ದಂಪತಿಗಳೆನಿಸಿದರು. ಬಂದವರು ಮನಃಪೂರ್ವಕವಾಗಿ ದಂಪತಿಗಳಿಗೆ ಶುಭ ಹಾರೈಸಿದರು. ಈ ಸಮಾರಂಭ ವೀಕ್ಷಿಸಿದ ನನಗೆ ಎಲ್ಲರೂ ಈರೀತಿ ಅರ್ಥಪೂರ್ಣ ಸಂಸ್ಕಾರ ಪಡೆಯುವ ವಿವಾಹಗಳನ್ನು ನಡೆಸಿದರೆ ಎಷ್ಟು ಚೆನ್ನ ಎಂದು ಅನ್ನಿಸಿತು. ಆ ಸಂದರ್ಭದಲ್ಲಿ ತೆಗೆದಿದ್ದ ಕೆಲವು ಫೋಟೋಗಳನ್ನು ನೋಡುತ್ತಿದ್ದಾಗ ನೆನಪು ಮರುಕಳಿಸಿತು, ಈ ಲೇಖನವಾಗಿ ಹೊರಬಂದಿತು.
*************************
-ಕ.ವೆಂ.ನಾಗರಾಜ್. 

ಶ್ರಾದ್ಧ ....................ಒಂದಷ್ಟು ಹರಟೆ


      ಹುಟ್ಟು ಅಂದಮೇಲೆ  ಸಾವು ನಿಶ್ಚಿತ. ಹುಟ್ಟಿನೊಂದಿಗೆ ಪ್ರಾರಂಭವಾಗುವ ಜೀವನ ಯಾತ್ರೆ  ಮರಣದೊಂದಿಗೆ  ಮುಗಿಯುತ್ತವೆ. ಅಂತ್ಯಸಂಸ್ಕಾರ ನಡೆಯುತ್ತವೆ . ನಂತರದಲ್ಲಿ  ಮೃತ ವ್ಯಕ್ತಿಗೆ ಹಲವಾರು ಸಂಸ್ಕಾರಗಳು ನಡೆಯುತ್ತವೆ. ಸತ್ತ ದಿನದಿಂದ ಹದಿನಾಲ್ಕು ದಿನಗಳವರೆಗೆ ಹಲವಾರು  ರೀತಿಯ ಕರ್ಮಗಳನ್ನು ಅವರವರ ಪದ್ದತಿಗನುಸಾರವಾಗಿ ಮತ್ತು ಸಂಪ್ರದಾಯದಂತೆ ಮಾಡುತ್ತಾರೆ. ಮೃತ ವ್ಯಕ್ತಿಯ ಮಕ್ಕಳು ಸಾಮಾನ್ಯವಾಗಿ ಈ ಕರ್ಮವನ್ನು ಮಾಡುತ್ತಾರೆ.ನಂತರದಲ್ಲಿ ಪ್ರತಿ ವರ್ಷ ಮೃತರ ನೆನಪಿನಲ್ಲಿ ಶ್ರಾದ್ಧ  ಕರ್ಮಅಥವಾ ತಿಥಿ ಎಂಬ  ಹೆಸರಿನಲ್ಲಿ  ಆಚರಣೆ ಮಾಡುವುದು ರೂಡಿಯಲ್ಲಿದೆ.
                                  ಈ ದೇಹಕ್ಕೆ ಅಂತ್ಯ ಸಂಸ್ಕಾರವಾದ ಮೇಲೆ ಶ್ರಾದ್ಧ  ಅಥವಾ ತಿಥಿ ಎನ್ನುವ ಕರ್ಮ ಬೇಕೇ? ಏಕೆ ಬೇಕು? ಅಂತ್ಯವಾದ ಮೇಲೆ ಶ್ರಾದ್ಧ  ಯಾರಿಗೆ? ಇದರ ಅವಶ್ಯಕತೆ ಏನು? ಎಂದು  ಹಲವರು  ಪ್ರಶ್ನೆ ಮಾಡುತ್ತಾರೆ . ಇನ್ನು ಹಲವರು "ವ್ಯಕ್ತಿ ಜೀವಂತ ಇದ್ದಾಗ ಅವರನ್ನು ಚೆನ್ನಾಗಿ ನೋಡಿಕೊಳ್ಳದೆ, ಗೊಳುಹಾಕಿ ಕೊಂಡು ಸತ್ತ ನಂತರ ನೂರಾರು ಜನರಿಗೆ ಊಟ ಹಾಕಿದರೇನು ಬಂತು?  ಇರುವಷ್ಟು ದಿನ ತಂದೆ ತಾಯಿಯನ್ನು ಪ್ರೀತಿಯಿಂದ ನೋಡಿಕೊಂಡು ಅವರ ಬೇಕುಬೇಡಗಳನ್ನು ಒದಗಿಸಿದರೆ ಸಾಕು. ಸತ್ತ ನಂತರ ತಿಥಿ ಮಾಡದಿದ್ದರೂ ಪರವಾಗಿಲ್ಲ." ಎನ್ನುತ್ತಾರೆ. ಮತ್ತೆ ಕೆಲವರು "ನಮ್ಮ ಹಿರಿಯರು ನಡೆಸಿಕೊಂಡು ಬಂದ ಆಚಾರ ವಿಚಾರ, ಸುಮ್ಮನೆ ಮಾಡಿರುವುದಿಲ್ಲ. ಇದನ್ನು ಏಕೆ ತಪ್ಪಿಸಬೇಕು? ಇಂತಹ ಒಂದು ಆಚರಣೆ ಶ್ರಾದ್ಧ .      ಹಿರಿಯರ  ನೆನಪಿನಲ್ಲಿ ಒಂದು ದಿನ ತಿಥಿ ಆಚರಣೆ ಅವಶ್ಯಕ." ಎಂದು ವಾದಿಸುತ್ತಾರೆ.        " ಸಮಾಜದಲ್ಲಿ ಬದುಕಿರುವಾಗ ಕೆಲವು ಆಚರಣೆಗಳು ಅನಿವಾರ್ಯ. ಎಲ್ಲರು ತಿಥಿ ಆಚರಣೆಯನ್ನು ಮಾಡುವಾಗ ನಾವೊಬ್ಬರು ಮಾಡುವುದಿಲ್ಲ ಎನ್ನಲು ಸಾಧ್ಯವೇ? ಆದ್ದರಿಂದ ನಾವು ಮಾಡುತ್ತವೆ." ಎಂದು ಕೆಲವರು ಸಮಜಾಯಿಷಿ ಕೊಡುತ್ತಾರೆ.   ಹೀಗೆ ಹಲವಾರು  ಅಭಿಪ್ರಾಯಗಳು ಇವೆ.
                             ಇನ್ನು ವಾರ್ಷಿಕವಾಗಿ ಮಾಡುವ ತಿಥಿಯ ಸಂದರ್ಭದಲ್ಲಿ ಹಲವಾರು ರೀತಿಯ  ಆಚಾರಗಳು ಇವೆ.  ಕೆಲವಕ್ಕೆ ಅರ್ಥವಿಲ್ಲ, ಕೆಲವು ಅತಿರೇಕ ಮತ್ತೆ ಕೆಲವು  ಸಂಬಂಧವಿಲ್ಲದ ರೀತಿಯಲ್ಲಿ ಇರುತ್ತವೆ.  ಇದಕ್ಕೆ ಯಾವುದೇ ರೀತಿಯ ವಿವರಣೆ ಸ್ಪಷ್ಟವಾಗಿ ಗೊತ್ತಿರುವುದಿಲ್ಲ  ಆದರೂ  ನಮ್ಮ ಹಿರಿಯರು ಮಾಡಿದರು ಎನ್ನುವ ಒಂದೇ ಕಾರಣಕ್ಕೆ ಇವರು ಮಾಡುತ್ತಿರುತ್ತಾರೆ. ಇಂತಹ ವ್ಯಕ್ತಿಗಳಿಗೆ ಮಾಡುವ ಕರ್ಮದಲ್ಲಿ ವಿಶ್ವಾಸ ಮತ್ತು  ಶ್ರದ್ಧೆಗಿಂತ ಭಯ ಜಾಸ್ತಿ ಇರುತ್ತದೆ.  ನಾನು ತಿಥಿ ಮಾಡದಿದ್ದರೆ ಏನೋ ಆಗಿಬಿಡಬಹುದೆಂಬ ಭಯ ಇವರನ್ನು ಕಾಡುತ್ತದೆ. ಒಂದು ಚಿಕ್ಕ ವ್ಯತ್ಯಾಸವನ್ನು ಇವರು ಸಹಿಸುವುದಿಲ್ಲ ಅಥವಾ ಒಪ್ಪಿಕೊಳ್ಳುವುದಿಲ್ಲ. ಹೀಗಾಗಿ ಇಂತಹ  ಕರ್ಮಗಳಲ್ಲಿ ಶ್ರದ್ಧೆಗಿಂತ ಹೆಚ್ಚು ಅಂಧ ವಿಶ್ವಾಸ ಜಾಸ್ತಿಯಾಗಿರುತ್ತದೆ. ಇಂತಹ ಹಿರಿಯರ ತಿಥಿಯ ದಿನವನ್ನು ಕೆಲವು ಸಂಪ್ರದಾಯದಲ್ಲಿ ಹಬ್ಬವನ್ನಾಗಿ ಆಚರಿಸುವುದಿಲ್ಲ  . ಉದಾಹರಣೆಗೆ,  ಅಂದು ಮನೆಯ ಮುಂದೆ ರಂಗೋಲಿ ಇಡದೆ, ಮನೆಯ ಹೆಂಗಸರು ಕುಂಕುಮ ಇಡದೆ ಶ್ರಾದ್ಧ  ಕಾರ್ಯ ಮುಗಿಯುವವರೆಗೂ ಕಾಯುತ್ತಾರೆ. ದೇವರಪೂಜ ಸಮಯದಲ್ಲಿ ಘಂಟಾನಾದವನ್ನು ಕೂಡ ಮಾಡುವುದಿಲ್ಲ.       ಇಂತಹ ಕ್ರಿಯೆಗಳಿಗೆ ಕೊಡುವ ಕಾರಣಗಳು ಅಸಂಬದ್ದವಾಗಿರುತ್ತವೆ.    ಇದು ಏನೇ ಇದ್ದರೂ ಹಿರಿಯರ ನೆನಪಿನಲ್ಲಿ ಮಾಡುವ ತಿಥಿ ಅಥವಾ ಶ್ರಾದ್ಧ  ಮಾತ್ರ ಅನಾದಿಕಾಲದಿಂದಲೂ ನಡೆಯುತ್ತಾ ಬಂದಿದೆ.
                            ಬದುಕಿರುವಾಗ ನಮ್ಮ ಹಿರಿಯರಿಗೆ ತೋರಿಸುವ ಗೌರವ, ನೀಡುವ ಸಹಕಾರ, ಮಾಡುವ ಉಪಚಾರ ಮತ್ತು ನಿರ್ವಹಿಸುವ ಕರ್ತವ್ಯ ಇವೆಲ್ಲವೂ ಬೌತಿಕ ಕ್ರಿಯೆಗಳು. ಈ ಕರ್ತವ್ಯದಿಂದ ನಮ್ಮ ಗುಣಗಳನ್ನು ದೃಢ ಗೊಳಿಸಿಕೊಂಡಾಗ  ವ್ಯಕ್ತಿಗತವಾಗಿ ನಮಗೆ ಸಂತೋಷ,ಸಂತೃಪ್ತಿ ಮತ್ತು  ಸಮಾಧಾನ ಸಿಗುತ್ತದೆ. ಆದರೆ, ಆ ವ್ಯಕ್ತಿ ಮೃತರಾದಾಗ ನಮ್ಮ ದುಃಖವನ್ನು ಸಮಾಧಾನ ಮಾಡಿಕೊಳ್ಳಲು, ಮೃತವ್ಯಕ್ತಿಯ ಸ್ಮರಣೆಯಲ್ಲಿ ಕೃತಜ್ಞತೆಯಿಂದ ಸ್ಮರಿಸುವ ಸಂಸ್ಕಾರಕ್ಕೆ ಶ್ರಾದ್ಧ ಎಂದು ಕರೆಯುತ್ತಾರೆ. ಇಂತಹ ಸಂದರ್ಭದಲ್ಲಿ ಮೃತ ವ್ಯಕ್ತಿಯ ಇಷ್ಟ  ಬಂಧು ಮಿತ್ರರನ್ನು , ಆಹ್ವಾನಿಸಿ ಭೋಜನ ಮತ್ತು ಯಥಾನುಶಕ್ತಿ ದಾನವನ್ನು ಮಾಡುತ್ತಾರೆ. ಈ ಸಂಸ್ಕಾರ ಮಾಡಲು ಸತ್ವಶುದ್ದಿ ಮತ್ತು ಚಿತ್ತಶುದ್ದಿ ಎರಡು ಬೇಕಾಗುತ್ತದೆ. ಈ ಎರಡು ಶುದ್ದಿ ಲಭ್ಯವಾಗಲು ರಜಸ್ತಮೂ ಗುಣದಿಂದ ಸಾತ್ವಿಕ ಗುಣದತ್ತ ಮನಸ್ಸು ಕೊಡಬೇಕಾಗುತ್ತದೆ. ಆಗ ಪ್ರೀತಿ,ಪ್ರೇಮ,ಸತ್ಯ, ಗೌರವ, ಕೃತಜ್ಞತಾ ಭಾವಗಳು ಹತ್ತಿರ ಸುಳಿಯುತ್ತವೆ. ಆಗ ಮನಸ್ಸು ಪುಟವಾಗುತ್ತದೆ. ಪುಟವಾದ ಮನಸ್ಸು ವಿಶಾಲವಾಗಿ ಜಗತ್ತನ್ನು ನೋಡುತ್ತದೆ.
                           "ಶ್ರದ್ಧಯಾ ಇದಂ ಕರ್ಮ ಅನುಷ್ಟೀಯತೆ ಇತಿ ಶ್ರಾದ್ಧಂ."  ಅತ್ಯಂತ ಶ್ರದ್ಧೆಯಿಂದ ಆಚರಿಸುವ ಶ್ರಾದ್ಧ ಕರ್ಮವನ್ನು   ಕರ್ತವ್ಯ ಎಂದು ಹೇಳಲಾಗಿದೆ. ನಮ್ಮ ಜನ್ಮಕ್ಕೆ ಕಾರಣರಾದ, ನಮ್ಮ ಸರ್ವತೋಮುಖ ಬೆಳವಣಿಗೆಗೆ ಮತ್ತು ನಮ್ಮ ಪುರೋಭಿವೃದ್ದಿಗೆ ಕಾರಣಕರ್ತರಾದ ನಮ್ಮ ತಂದೆ ತಾಯಿ,ಹಿರಿಯರು, ಗುರುಗಳು,ಕುಟುಂಬದ ಸದಸ್ಯರು, ಬಂಧು ಬಾಂಧವರು ಮತ್ತು ಸ್ನೇಹಿತರು ಇವರುಗಳನ್ನು ಮರೆಯದೆ ಕೃತಜ್ಞತೆಯಿಂದ ನೆನೆಯುತ್ತ ಪ್ರತಿವರ್ಷವು ಆಚರಿಸುವ ಸಾಂಕೇತಿಕ ಕರ್ಮವೆ ಶ್ರಾದ್ಧ  ಅಥವಾ ತಿಥಿ.  ಶ್ರದ್ಧೆ ಮತ್ತು ಅಚಲ ವಿಶ್ವಾಸ ಇಂತಹ  ಕರ್ಮಕ್ಕೆ ಬೇಕಾದ ಎರಡು ಮುಖ್ಯ ಅಂಶಗಳು. ಈ ಎರಡು ಭಾವನೆ  ಕ್ರಿಯೆಯಲ್ಲಿರಬೇಕಾಗುತ್ತದೆ. ನಮ್ಮ ಅಂತಃಕರಣ ಭಾವನೆಗಳಾದ ಭಕ್ತಿ, ಪ್ರೀತಿ, ಗೌರವ ಮತ್ತು ಕೃತಜ್ಞತೆಗಳನ್ನು  ವ್ಯಕ್ತ ಪಡಿಸುವ ಕ್ರಿಯೆಗಳು ಧನ್ಯತಾ ಭಾವದಿಂದ  ನಡೆಸಿದರೆ ಹೆಚ್ಚು ಪ್ರಯೋಜನ. ಈ ಭಾವನೆಗಳು ಹುಟ್ಟಬೇಕಾದರೆ ನಾವು ಮಾಡುವ ಪ್ರತಿ ಕಾರ್ಯಗಳ ಜೊತೆಗೆ ಹೇಳುವ ಮಾತುಗಳು, ಮಂತ್ರಗಳು, ನಡವಳಿಕೆಗಳು, ಆಚಾರಗಳು ಇತ್ಯಾದಿಗಳ ಅರ್ಥ ತಿಳಿದು ಮಾಡಿದರೆ ಹೆಚ್ಚು ಅರ್ಥಪೂರ್ಣವಾಗಿ ಇರುತ್ತದೆ. ಆಗ ನಮ್ಮ ಭಾವನೆಗಳು ಇನ್ನಷ್ಟು ದೃಢಗೊಳ್ಳುತ್ತವೆ. ಧನ್ಯತೆಯು ಪವಿತ್ರ ಭಾವನೆಗಳಾಗಿ ಕರ್ತೃವಿಗೆ ಅಪೂರ್ವವಾದ ದೈವಿಕಾನಂದ ಸಿಗುತ್ತದೆ.
                            "A well performed ritual is work of art by which even a sceptical spectator will get a kick. it will give a enduring and lingering satisfaction to  both"---Aldous Huxley.      
                             ನಾವು ಮಾಡುವ ಕರ್ಮಗಳ ಅರ್ಥ ತಿಳಿದು ಮಾಡೋಣ. ಹಿರಿಯರು ಕಂಡುಕೊಂಡ ಆದರ್ಶ ಮತ್ತು ಇರಿಸಿದ್ದ ವಿಶ್ವಾಸ ಇವೆರಡನ್ನೂ ಕಾಪಾಡುವ ಸಂಕಲ್ಪ ಮಾಡಿ ನಮ್ಮ ಮುಂದಿನ ಪೀಳಿಗೆಗೆ ಇಂತಹ ಉದಾತ್ತ ವಿಚಾರಗಳನ್ನು ಉಳಿಸಿ ಬೆಳೆಸ ಬೇಕಾದ ಗುರುತರವಾದ ಜವಾಬ್ದಾರಿ ಎಲ್ಲರ ಮೇಲೂ ಇದೆ. ಇದು ನಮ್ಮ ಮನೆಯಿಂದಲೇ ಪ್ರಾರಂಭಗೊಳ್ಳಲಿ.
                               ಸಕಲ ಓದುಗರಿಗೂ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು.

ಹೆಚ್.ಏನ್ ಪ್ರಕಾಶ್ 

  1. ಶ್ರಾದ್ಧದ ವಿಚಾರದಲ್ಲಿ ಅಂಧಾನುಕರಣೆಯೇ ಹೆಚ್ಚು. ಶ್ರಾದ್ಧಕ್ಕೆ ತಿಥಿ,ವೈದೀಕ, ಎಂದೆಲ್ಲಾ ಅದು ಹೇಗೆ ಅರ್ಥೈಸಿದರೋ ಆ ದೇವರೇ ಬಲ್ಲ. ಸತ್ತಾಗ ಪಂಚಭೂತಗಳಲ್ಲಿ ಲೀನ ಮಾಡುವುದಕ್ಕೆ ಸುಡುವುದೇ ಹೆಚ್ಚು ಸೂಕ್ತ. ಕೆಲವರು ಭೂಮಿಯಲ್ಲಿ ಹೂಳುತ್ತಾರೆ. ಹೂಳುವುದರಿಂದ ಮೃತಶರೀರವು ಪಂಚಭೂತಗಳಲ್ಲಿ ಲೀನವಾಗಲು ಬಹುಕಾಲ ಹಿಡಿಯಬಹುದು. ಸತ್ತಾಗ ಮಾಡಬೇಕಾದ್ದು ಇಷ್ಟೆ. ಮೃತಶರೀರವನ್ನು ಸರಿಯಾಗಿ ಅಂತ್ಯ ಸಂಸ್ಕಾರ ಮಾಡದಿದ್ದರೆ ಮೃತಶರೀರವನ್ನು ನಾಯಿ ನರಿ ಕಿತ್ತು ತಿನ್ನುವ ದೃಶ್ಯವನ್ನು ಕೊನೆಯ ಕ್ಷಣದವರೆಗೂ ಜೊತೆಯಲ್ಲಿರುವ ಮಕ್ಕಳಿಗೆ ನೋಡಲು ಸಾಧ್ಯವಿಲ್ಲ. ಮೃತದೇಹವು ಅವರ ಕಣ್ಣೆದುರಿಗೆ ಉರಿದು ಬಸ್ಮ ವಾದರೆ ಸತ್ತ ವ್ಯಕ್ತಿಯ ಅಂತಿಮ ಕರ್ತವ್ಯ ನಿರ್ವಹಿಸಿದ ಸಮಾಧಾನ ಮಕ್ಕಳಿಗಿರುತ್ತದೆ. ಅಷ್ಟೆ. ಮುಂದಿನ ಕರ್ಮಗಳೆಲ್ಲಾ ಹಿಂದಿನವರು ಮಾಡಿದರು. ಇಂದಿನವರು ಮಾಡುತ್ತಿದ್ದಾರೆ. ಇದನ್ನು ನೋಡಿ ಮುಂದಿನವರೂ ಮಾಡುತ್ತಾರೆ. ಸತ್ತವರ ಸ್ಮರಣೆಗಾಗಿ ನಾಲ್ಕು ಜನರಿಗೆ ಊಟ ಹಾಕಬಹುದಷ್ಟೆ. ಉಳಿದದ್ದೆಲ್ಲಾ ಇವತ್ತಿನ ಹುಡುಗರ ಮಾತಿನಲ್ಲಿ ಹೇಳಬೇಕೆಂದರೆ ಬರೀ ವೋಳು.