Pages

Wednesday, October 30, 2013

ಹಿಂದುರಾಷ್ಟ್ರ ಎಂದರೆ ಏನು?

ವಿಷವಿಕ್ಕಿದವಗೆ ದಯೆ ತೋರಿಸಿದ ದಯಾನಂದರು!

ಇಂದು ಮಹರ್ಷಿ ದಯಾನಂದರ ಸ್ಮರಣದಿನ!
     ಮಹರ್ಷಿ ದಯಾನಂದ ಸರಸ್ವತಿಯವರದು ಸಹಜ ಸಾವಲ್ಲ. ಕೊಲೆ ಎನ್ನಬಹುದು. ೧೮೮೩ರಲ್ಲಿ ಜೋಧಪುರದ ಮಹಾರಾಜರ ಆಹ್ವಾನದ ಮೇಲೆ ಅವರ ಅತಿಥಿಯಾಗಿ ಹೋಗಿ ಅರಮನೆಯಲ್ಲಿ ತಂಗಿದ್ದರು. ಮಹಾರಾಜನಿಗೆ ಅವರ ಶಿಷ್ಯನಾಗಿ ಉಪದೇಶಗಳನ್ನು ತಿಳಿಯುವ ಆಸಕ್ತಿಯಿತ್ತು. ಒಮ್ಮೆ ದಯಾನಂದರು ಮಹಾರಾಜರ ವಿಶ್ರಾಂತಿ ಕೊಠಡಿಗೆ ಹೋದ ಸಂದರ್ಭದಲ್ಲಿ ಮಹಾರಾಜರು ನನ್ಹಿಜಾನ್ ಎಂಬ ನೃತ್ಯಗಾತಿಯ ಜೊತೆಗೆ ಇದ್ದುದನ್ನು ಕಂಡರು. ದಯಾನಂದರು ತಮ್ಮ ಸ್ವಭಾವಕ್ಕೆ ಅನುಗುಣವಾಗಿ ಧೈರ್ಯವಾಗಿ ಮತ್ತು ನೇರವಾಗಿ ಮಹಾರಾಜರಿಗೆ ಸ್ತ್ರೀ ಸಹವಾಸ ಬಿಡಲು ಮತ್ತು ಒಬ್ಬ ನಿಜವಾದ ಆರ್ಯ(ಸಭ್ಯ)ನಂತೆ ಧರ್ಮ ಪಾಲನೆ ಮಾಡುವಂತೆ ಹೇಳಿದರು. ದಯಾನಂದರ ಸಲಹೆ ಆ ನೃತ್ಯಗಾತಿಯನ್ನು ಕೆರಳಿಸಿತು ಮತ್ತು ಸೇಡಿಗಾಗಿ ಹಪಹಪಿಸುವಂತೆ ಮಾಡಿತು. ಅಡಿಗೆ ಭಟ್ಟನಿಗೆ ಆಕೆ ಲಂಚ ನೀಡಿ ದಯಾನಂದರಿಗೆ ಆಹಾರದಲ್ಲಿ ವಿಷ ಬೆರೆಸಿ ಕೊಡಲು ಒಪ್ಪಿಸಿದಳು. ಅಡಿಗೆ ಭಟ್ಟ ರಾತ್ರಿಯ ಮಲಗುವ ಸಮಯದಲ್ಲಿ ವಿಷ ಮತ್ತು ನುಣ್ಣಗೆ ಪುಡಿ ಮಾಡಿದ ಗಾಜಿನ ಹರಳುಗಳನ್ನು ಸೇರಿಸಿದ ಹಾಲನ್ನು ದಯಾನಂದರಿಗೆ ಕುಡಿಯಲು ಕೊಟ್ಟ. ಹಾಲು ಕುಡಿದು ಮಲಗಿದ ದಯಾನಂದರಿಗೆ ಕೆಲ ಸಮಯದಲ್ಲಿಯೇ ಹೊಟ್ಟೆಯ ಒಳಗೆ ಸುಡುವ ಅನುಭವವಾದಾಗ ಎಚ್ಚರವಾಗಿ ತಮಗೆ ವಿಷ ಉಣಿಸಿದ್ದಾರೆಂದು ಗೊತ್ತಾಗಿ ವಿಷವನ್ನು ಹೊರಹಾಕಲು ಪ್ರಯತ್ನಿಸಿದರು. ಆದರೆ ಅದಾಗಲೇ ತಡವಾಗಿತ್ತು. ವಿಷವಾಗಲೇ ರಕ್ತ ಸೇರಿಬಿಟ್ಟಿತ್ತು. ಅವರು ಹಾಸಿಗೆ ಹಿಡಿದು ಅಸಾಧ್ಯ ನೋವನ್ನು ಸಹಿಸಬೇಕಾಯಿತು. ಅನೇಕ ವೈದ್ಯರುಗಳು ನೀಡಿದ ಚಿಕಿತ್ಸೆ ಫಲಕಾರಿ ಆಗಲಿಲ್ಲ. ಅವರ ದೇಹದಲ್ಲಿ ಎಲ್ಲೆಲ್ಲೂ ರಕ್ತ ಸೋರುವ ಹುಣ್ಣುಗಳಾದವು. ಅವರ ಸ್ಥಿತಿಯನ್ನು ನೋಡಲಾಗದ ಅಡಿಗೆ ಭಟ್ಟ ಕಣ್ಣೀರು ಸುರಿಸುತ್ತಾ ಬಂದು ದಯಾನಂದರಲ್ಲಿ ತನ್ನ ತಪ್ಪು ಒಪ್ಪಿಕೊಂಡ. ಅಂತಹ ಸಾವಿನ ಸಮೀಪದಲ್ಲಿ ಇದ್ದಾಗಲೂ ದಯಾನಂದರು ಆತನನ್ನು ಕ್ಷಮಿಸಿದ್ದಲ್ಲದೆ, ಅವನಿಗೆ ಒಂದು ಥೈಲಿಯಲ್ಲಿ ಹಣ ನೀಡಿ ಆದಷ್ಟು ಬೇಗ ರಾಜ್ಯ ತೊರೆದು ಹೋಗಿ ಮಹಾರಾಜರ ಭಟರಿಂದ ಜೀವ ಉಳಿಸಿಕೊಳ್ಳಲು ಸಲಹೆ ನೀಡಿದ್ದರು. ೩೦-೧೦-೧೯೮೩ರಲ್ಲಿ ಅವರು ದೇಹತ್ಯಾಗ ಮಾಡಿದರು. ಅಂತಹ ಸಾವನ್ನೂ ಸಹ ಅವರು ಆದರದಿಂದ ಬರಮಾಡಿಕೊಂಡಿದ್ದರು. ಮಾರಿಷಸ್ ಸರ್ಕಾರ ಅವರ ನೆನಪಿನಲ್ಲಿ ಹೊರಡಿಸಿದ್ದ ಅಂಚೆ ಚೀಟಿಗಳ ಚಿತ್ರವಿದು.