Pages

Wednesday, March 5, 2014

ಜೀವನ ವೇದ -3

ಸಮಾಜಿಕ ಮತ್ತು ಪರಿಸರ ಜಾಗೃತಿ ಮೂಡಿಸುವ ತಂದೆತಾಯಿಯರು ನಾವಾಗೋಣ
ಒಂದು ನೆಮ್ಮದಿಯ ಕುಟುಂಬದಲ್ಲಿನ ಯಜಮಾನನ ಅರ್ಹತೆಗಳ  ಬಗ್ಗೆ ಅಥರ್ವಣ  ವೇದದ ೭ನೇ ಕಾಂಡದ ೬೦ನೇ ಸೂಕ್ತದ ೧ನೇ ಮಂತ್ರದ ಆಧಾರದಲ್ಲಿ  ವಿಚಾರ ಮಾಡುತ್ತಿದ್ದೆವು. ಕಳೆದ ವಾರ ಮೊದಲ ಸಾಲಿನ ಎರಡು  ಶಬ್ಧಗಳ ಬಗ್ಗೆ ಚರ್ಚಿಸಿದ್ದೇವೆ.  ಇಂದು ಮುಂದಿನ ಭಾಗದ ಬಗ್ಗೆ ವಿಚಾರವನ್ನು ಮಾಡೋಣ. ಇಂದು ವಿಮರ್ಶೆಮಾಡಬೇಕಾದ ಮಂತ್ರ ಭಾಗವೆಂದರೆ. . . . . . .
ಸುಮೇಧಾ:
ಮೇಧಾವಂತನಾಗಿರಬೇಕು. ಎಲ್ಲಿ ಮೇಧಾ ಅಂದರೆ ಜ್ಞಾನವಿರುತ್ತದೆಯೋ ಅಲ್ಲಿ ಅಂಧವಿಶ್ವಾಸ ಗಳಿರುವುದಿಲ್ಲ.ಯಾವುದು ಧರ್ಮ ಯಾವುದು ಅಧರ್ಮ, ಎಂಬ ಅರಿವಿರುತ್ತದೆ. ಧರ್ಮಾಧರ್ಮಗಳ ವಿವೇಕವಿದ್ದಾಗ ಜೀವನವು ನಿರ್ಭಯದಿಂದ ಸಾಗುತ್ತದೆ. ಅವನು ಯಾವುದೇ ವ್ಯಾಮೋಹಕ್ಕೆ ಒಳ   ಗಾಗುವುದಿಲ್ಲ. ಮನೆಯ ಸದಸ್ಯರಲ್ಲಿ ವ್ಯಾಮೋಹ ಹೊಂದದೆ ಪ್ರೀತಿ,ವಾತ್ಸಲ್ಯ, ಮಮಕಾರಗಳನ್ನು ಹೊಂದಿರುತ್ತಾನೆ. ಮನೆಯ ಹಿರಿಯನ ಈ ಗುಣಗಳು ಕಿರಿಯರ ಅಭ್ಯುದಯಕ್ಕೆ ಆಸ್ಪದ ನೀಡುತ್ತವೆ.
ಮನೆಯ ಯಜಮಾನನಿಗಿರಬೇಕಾದ ಮತ್ತೊಂದು ಅರ್ಹತೆ ಎಂದರೆ..
ಅಘೋರೇಣ ಚಕ್ಷುಷಾಮಿತ್ರಿಯೇಣ|
ಶಾಂತವಾದ,ಸ್ನೇಹಪೂರ್ವಕ ದೃಷ್ಟಿಕೋನ ಹೊಂದಿದ ನಡೆಯುಳ್ಳವನು, ಎಂದು ಈ ಮಂತ್ರಭಾಗದ ಅರ್ಥ.
ಕೆಲವು ಮಕ್ಕಳು ತಮ್ಮ ಅಹವಾಲನ್ನು ತಾಯಿಯೊಡನೆ ಮಾತ್ರವೇ ಹೇಳಿಕೊಳ್ಳುತ್ತಾರೆ. ಇದಕ್ಕೆ ಕಾರಣ ಅಪ್ಪ ಎಲ್ಲಿ ಬೈದುಬಿಡುತ್ತಾರೋ! ಎಂಬ ಭಯ. ತಂದೆಯ ಬಗ್ಗೆ  ಇಂತಹ ಭಯವು ಸರ್ವತಾ ಇರಕೂಡದು. ಇಲ್ಲಿ ತಪ್ಪು ಮಕ್ಕಳದ್ದಲ್ಲ ತಂದೆಯದು. ವೇದವು ಹೇಳುತ್ತದೆ  ಮಕ್ಕಳನ್ನು ಸ್ನೇಹದಿಂದ ನೋಡು ಎಂದು. ಒಬ್ಬ ತಂದೆ ತನ್ನ ಮಕ್ಕಳನ್ನು ಭಯದಿಂದ ಇಟ್ಟುಕೊಂಡಿದ್ದಾನೆಂದರೆ ಅವನು ವೇದಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾನೆಂದೇ ಅರ್ಥ. ಮಕ್ಕಳ ಮನಸ್ಸನ್ನು ಪ್ರೀತಿಯಿಂದ ಗೆದ್ದು ವಿಶ್ವಾಸದಿಂದ  ಅವರನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯಬೇಕೇ ಹೊರತೂ ಭಯದಿಂದಲ್ಲ.
ಮನೆಯ ಯಜಮಾನನ ಮತ್ತೊಂದು ಅರ್ಹತೆ ಎಂದರೆ.. . . .
ಸುಮನಾ: -
ಸುಮನಾ ಎಂದರೆ ಉತ್ತಮ ಮನಸ್ಸುಳ್ಳವನು ಎಂದರ್ಥ. ಒಬ್ಬ ಆದರ್ಶ ತಂದೆಯ ಮನಸ್ಸು ಉತ್ತಮವಾಗಿರಬೇಕಾದರೆ ಅವನು ಪವಿತ್ರಕಾಮದಿಂದ ಪೂರ್ಣವಾಗಿರಬೇಕು, ಪಾಪಮಯ ವಾಸನೆಯು ಹತ್ತಿರವೂ ಸುಳಿಯ ಕೂಡದು.ಪಾಪಮಯ ವಾಸನೆಗೆ ಬಲಿಯಾದದ್ದೇ ಆದರೆ ಅವನ ಮನಸ್ಸು ಉತ್ತಮ ಸ್ಥಿತಿಯಲ್ಲಿರಲು ಸಾಧ್ಯವಿಲ್ಲ.
ಯಜಮಾನನಿಗಿರಬೇಕಾದ ಮತ್ತೊಂದು ಅರ್ಹತೆ ಎಂದರೆ. . . . .
ವಂದಮಾನ:- ಎಲ್ಲರಿಂದಲೂ ಗೌರವಕ್ಕೆ ಪಾತ್ರನಾಗಿರಬೇಕು. ಅಂದರೆ ಅವನಲ್ಲಿ ಹುಡುಕಿದರೂ ದೋಷ ಸಿಗಬಾರದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು.ಯಾರೊಡನೆಯೂ ಅತೀ ಸಲಿಗೆಯೂ ಇರಬಾರದು, ವೈರವೂ ಇರಬಾರದು. ಅನಗತ್ಯವಾದ ವಾದ ವಿವಾದಗಳು ವೈರತ್ವಕ್ಕೆ ಕಾರಣವಾಗುತ್ತದೆ.
ಹಲವು ಭಾರಿ ಬೇಡದ ವಿಷಯಗಳಿಗೆ ಚರ್ಚೆ ಆರಂಭವಾಗಿ ಅದು ಬೇರೆಯದೇ ಹಾದಿ ಹಿಡಿದುಬಿಡುತ್ತದೆ. ಯಾರೊಡನೆಯೂ ಅನಗತ್ಯವಾಗಿ ವಾದ ಮಾಡಬಾರದೆಂದು ತೀರ್ಮಾನಿಸಿದ್ದರೂ ಹಲವು ವೇಳೆ ನಮಗರಿವಿಲ್ಲದಂತೆ ನಮ್ಮ ಸುಮಧುರ ಮಾತುಗಳೂ ಕೂಡ ವಾದದತ್ತ ಹೊರಳಿರುತ್ತದೆ. ನಮಗೆ ಸತ್ಯವೆನಿಸಿದ್ದನ್ನು ನಾವು ಹೇಳುತ್ತಿದ್ದರೂ ಅದು ಎದುರು ಪಕ್ಷದವನಿಗೆ ರುಚಿಸದಾಗ ಮಾತು ವಾದದತ್ತ ನಮಗರಿವಿಲ್ಲದೆ ಹೊರಳುತ್ತದೆ. ಎದುರಾಳಿಯು ವಿತ್ತಂಡವಾದ ಮಾಡಲೆಂದೇ ಬಂದಿದ್ದರಂತೂ ನಮ್ಮ ಕಥೆ ಮುಗಿದಂತೆಯೇ. ಆದ್ದರಿಂದ ನಿಮ್ಮ ಮಾತನ್ನು ಒಪ್ಪದ ವ್ಯಕ್ತಿಯನ್ನು ಒಪ್ಪಿಸುವ ಪ್ರಯತ್ನ ಮಾಡದಿರುವುದೇ ಕ್ಷೇಮ. ಅದರಿಂದ ನಿಮಗೇನೂ ಪ್ರಯೋಜನವಿಲ್ಲ. ಒಂದು ಉತ್ತಮ ವಿಚಾರವನ್ನು ತನ್ನ ವಿತ್ತಂಡವಾದದಿಂದ ಸೋಲಿಸಬೇಕೆಂದು ನಿರ್ಧರಿಸಿರುವ ವ್ಯಕ್ತಿಗೆ ನಷ್ಟವಾಗುತ್ತದೆಯೇ ಹೊರತೂ ನಿಮಗೇನೂ ನಷ್ಟವಿಲ್ಲ. ಅಲ್ಲವೇ? ಆದ್ದರಿಂದ ಎಲ್ಲರ ಪ್ರಶಂಸೆಗೆ ಪಾತ್ರನಾಗಬೇಕೆಂದರೆ ಅನಗತ್ಯ ವಾದ-ವಿವಾದ ಮಾಡಲೇ ಕೂಡದು
ಅಹಂಕಾರವು ಮನುಷ್ಯನ ದೊಡ್ದ ಶತ್ರುವಾಗಿದ್ದು, ಅಹಂಕಾರವು ಇವನ ಎಲ್ಲಾ ಸದ್ಗುಣಗಳನ್ನೂ ಮೆಟ್ಟಿ ಇವನನ್ನು ಅವನತಿಯತ್ತ ತಳ್ಳುತ್ತದೆ. ಆದ್ದರಿಂದ ಅಹಂಕಾರವು ಸುಳಿಯದಂತೆ ಎಚ್ಚರವಹಿಸಬೇಕು. ಹೀಗೆ ಒಬ್ಬ ಆದರ್ಶ ತಂದೆಯಾಗಿರಬೇಕಾದರೆ ಮೇಲಿನ ಆರು ಗುಣಗಳನ್ನು ಹೊಂದಿರಬೇಕು.
ಋಗ್ವೇದದ ಇನ್ನೊಂದು  ಮಂತ್ರವು ತಂದೆ-ತಾಯಿಯ ಕರ್ತವ್ಯದ ಬಗ್ಗೆ ಸೊಗಸಾಗಿ ಹೇಳುತ್ತದೆ.ಆ ಮಂತ್ರದ ಬಗ್ಗೆ ವಿಚಾರ ಮಾಡೋಣ.

ತೇ ಸೂನವ: ಸ್ವಪಸ: ಸುದಂಸಸೋ ಮಹೀ ಜಜ್ಞುರ್ಮಾತರಾ ಪೂರ್ವ ಚಿತ್ತಯೇ |
ಸ್ಥಾತುಶ್ಚ ಸತ್ಯಂ ಜಗತಶ್ಚ ಧರ್ಮಾಣಿ ಪುತ್ರಸ್ಯ ಪಾಥ: ಪದಮದ್ವಯಾವಿನ: || [ಋಗ್ವೇದ ಮಂಡಲ -೧ ಸೂಕ್ತ- ೧೫೯ ಮಂತ್ರ - ೩]
ಪದಾರ್ಥ:-
ಸ್ವಪಸ: = ಉತ್ತಮ ಕರ್ಮಗಳು
ಸುದಂಸಸ: = ಅವುಗಳನ್ನು ಉತ್ತಮ ರೀತಿಯಲ್ಲಿ ಆಚರಣೆಗೆ ತರುವವರು
ಪೂರ್ವ ಚಿತ್ತಯೇ = ಅದಕ್ಕೆ ಅಗತ್ಯವಾದ ಸಿದ್ಧತೆಯನ್ನು ಮುಂಚಿತವಾಗಿ ಯೋಚಿಸುವವರು
ಜಗ್ನ್ಯು: = ಪ್ರಸಿದ್ಧರಾಗಿರುತ್ತಾರೆಯೋ
ತೇ = ಅವರು
ಮಹಿ = ಹಿರಿದಾದ
ಮಾತರ = ತಾಯಿಯನ್ನು
ಸ್ಥಾತು: = ಸ್ಥಿರ ಧರ್ಮವನ್ನಾಚರಿಸುವವನು
ಚ = ಮತ್ತು
ಜಗತ: = ಜಗತ್ತಿಗೆ
ಧರ್ಮಾಣಿ = ಸಾಧಾರಣ ಧರ್ಮಗಳಲ್ಲಿ
ಅದ್ವಯಾವಿನ: = ಏಕರೂಪದಲ್ಲಿರುವ
ಪುತ್ರಸ್ಯ = ಮಗನಿಗೆ
ಸತ್ಯ ಪದಂ = ಸ್ಥಿರವಾದ ಸ್ಥಾನವನ್ನು ಪಡೆಯುವಂತಹ
ಪಾಥ: ಮಾರ್ಗವನ್ನು
ಸೂನವ: = ಅವರ ಸಂತಾನಗಳು ನಿರಂತರ ಕೈಗೊಳ್ಳಬೇಕು
ಭಾವಾರ್ಥ :-
ಭೂಮಿ ಮತ್ತು ಸೂರ್ಯರು ಸ್ಥಿರ ಮತ್ತು ಜಂಗಮರೂಪವಾದ ಎಲ್ಲಾ ಜೀವಿಗಳನ್ನು ಹೇಗೆ ಪಾಲನೆ ಮಾಡುತ್ತಾರೋ, ಎಲ್ಲಾ ಜೀವಿಗಳಿಗೂ ಸಮಾನಧರ್ಮವನ್ನು ಹೇಗೆ ಅನ್ವಯಿಸುವಂತೆ ಮಾಡುತ್ತಾರೋ ಅದನ್ನು ಅರಿಯಬೇಕು. ತಂದೆತಾಯಿಯರು ಈ ವಿಸ್ಮಯ ಜಗತ್ತಿನ ರಹಸ್ಯವನ್ನು ಮಕ್ಕಳಿಗೆ ಹೇಳಿಕೊಟ್ಟು ಅವರೂ ಸಹ ಈ ಜಗತ್ತಿನಲ್ಲಿ ಕೃತಾರ್ಥರಾಗುವಂತೆ ಮಾಡಬೇಕು.

ಈ ಮಂತ್ರದ ಭಾವಾರ್ಥದ ಬಗ್ಗೆ ವಿಚಾರಮಾಡುವಾಗ ಪ್ರಕೃತಿಯ ಚಿತ್ರಣ ನಮ್ಮ ಕಣ್ಮುಂದೆ ಬರಬೇಕು. ಈ ಸೃಷ್ಟಿಯ ರಹಸ್ಯವು ಸಾಮಾನ್ಯರಾದ ನಮಗೆ ಅರ್ಥವಾಗುವುದು ಅಷ್ಟು ಸುಲಭವೇನಲ್ಲ. ಆದರೆ ಭಗವಂತನು ನಮಗೆ ಕೊಟ್ಟಿರುವ ಗಾಳಿ,ಬೆಳಕು,ನೀರಿನ ಬಗ್ಗೆ ನಾವೇನಾದರೂ ಕಿಂಚಿತ್ ಯೋಚಿಸಿದ್ದೇವೆಯೇ? ನಾವು ಬದುಕಲು ಬೇಕಾದ ಇಷ್ಟನ್ನೂ ನಮಗೆ ಭಗವಂತನು ಉಚಿತವಾಗಿ ನೀಡಿದ್ದಾನಲ್ಲಾ! ಅಷ್ಟೇ ಅಲ್ಲ, ಇವನು ಒಳ್ಳೆಯವ, ಇವನು ಕೆಟ್ಟವ, ಇವನು ನಮ್ಮವ, ಇವನು ಬೇರೆಯವನೆಂದು ಭೇದ ಮಾಡಲೇ  ಇಲ್ಲವಲ್ಲಾ!
ಈ ಮಂತ್ರವು ಹೇಳುತ್ತದೆ ಈ ಭೂಮಿ-ಸೂರ್ಯರ ಧರ್ಮವನ್ನು ತಂದೆತಾಯಿಯಾದವರು ತಮ್ಮ ಮಕ್ಕಳಿಗೆ ಹೇಳಿಕೊಡಿ. ಅಬ್ಭಾ! ಒಂದು ವೇಳೆ ಭಗವಂತನ ಈ ಸಮಾನ ಧರ್ಮವನ್ನು ಸರಿಯಾಗಿ ಅರಿತುಕೊಂಡಿದ್ದೇ ಆದರೆ ನಾವು ಪ್ರಕೃತಿಯ ನಾಶಕ್ಕೆ ಕಾರಣ ವಾಗುತ್ತಿರಲಿಲ್ಲ. ನಮ್ಮ ದುರಾಸೆಯ ಪರಿಣಾಮವಾಗಿ ನಾವು ಕಾಡನ್ನೂ ಬಿಡಲಿಲ್ಲ, ಕೆರೆಗಳನ್ನೂ ಬಿಡಲಿಲ್ಲ. ಕಾಡನ್ನು ನಾಶಮಾಡಿ ಕೈಗಾರಿಕೆಗಳನ್ನು ಸ್ಥಾಪಿಸಿದೆವು. ಕೆರೆಗಳನ್ನು ನಾಶಮಾಡಿ ಮನೆ ಕಟ್ಟಿದೆವು! ಪರಿಣಾಮ ಕಾಡಿನಲ್ಲಿರಬೇಕಾದ ಮೃಗಗಳೆಲ್ಲಾ ಆಶ್ರಯವಿಲ್ಲದೆ ನಾಡಿಗೆ ನುಗ್ಗುತ್ತಿವೆ! ಕೆರೆಗಳನ್ನು ನಾಶಮಾಡಿದ ನಾವು ಅಂತರ್ಜಲ ಕುಸಿತವಾಗಿ ನೀರಿಗೆ ಹಾಹಾಕಾರ  ಪಡುವಂತಾಗಿದೆ. ವೇದವಾದರೋ ನಮ್ಮನ್ನು ಸದಾಕಾಲ ಎಚ್ಚರಿಸುತ್ತಲೇ ಇದೆ, ಆದರೆ ವೇದದ ಮಾತು ನಮ್ಮ ಕಿವಿಗೆ ಬೀಳಬೇಕಷ್ಟೆ.
ಕುಟುಂಬದಲ್ಲಿ ತಂದೆಯ ಕರ್ತವ್ಯಗಳಂತೆಯೇ ಉಳಿದ ಸದಸ್ಯರ ಕರ್ತವ್ಯಗಳೂ ಇವೆ.
ನಿಜವಾದ ಮಗನು ಯಾರು?
ಋಗ್ವೇದದ ಒಂದು ಮಂತ್ರವನ್ನು ನೋಡಿ...
ಸ ವಹ್ನಿ: ಪುತ್ರ: ಪಿತ್ರೋ:  ಪವಿತ್ರವಾನ್ ಪುನಾತಿ ಧೀರೋ ಭುವನಾನಿ ಮಾಯಯಾ|
[ಋಗ್ವೇದ ೧ ನೇ ಮಂಡಲ ೧೬೦ ನೇ ಸೂಕ್ತ ೩ನೇ ಮಂತ್ರ]
ಪಿತ್ರೋ: = ಮಾತಾಪಿತೃಗಳ ಸೇವೆಯಿಂದ
ವಹ್ನಿ: = ಎತ್ತಿಹಿಡಿಯುವವನೇ
ಪುತ್ರ: = ನಿಜವಾದ ಪುತ್ರನು
ಸ ಧೀರ: = ಆ ಧೀರನಾದ ಮಗನೇ
ಮಾಯಯಾ = ತನ್ನ ಪ್ರಜ್ಞೆಯಿಂದ
ಪವಿತ್ರವಾನ್ = ಪವಿತ್ರಶಕ್ತಿಯುಕ್ತನಾಗಿ
ಭುವನಾನಿ  ಪುನಾತಿ = ಲೋಕಗಳನ್ನು  ಪವಿತ್ರಗೊಳಿಸುತ್ತಾನೆ

ಈ ಮಂತ್ರದ ಭಾವಾರ್ಥವೆಂದರೆ ಮಾತಾ ಪಿತೃಗಳ ಸೇವೆಯನ್ನು ಮಾಡುವ ಮಗನೇ ನಿಜವಾದ ಮಗನು.ಅವನು ತನ್ನ ಪ್ರಜ್ಞೆಯಿಂದ ಪವಿತ್ರನಾಗಿ ಲೋಕಗಳನ್ನು ಪವಿತ್ರಗೊಳಿಸುತ್ತಾನೆ. ಅಂದರೆ ಮಾತಪಿತೃಗಳ ಸೇವೆ ಮಾಡದ ಮಗ ನಿಜವಾದ ಮಗನಲ್ಲ. ಅವನು ಕೃತಘ್ನ. ಅವನಲ್ಲಿ ಪವಿತ್ರ ಭಾವನೆಗಳು ಉದ್ಭವಿಸುವುದಿಲ್ಲ. ಇನ್ನು ಅವನಿಂದ ಯಾವ ಲೋಕ ಪವಿತ್ರಗೊಳ್ಳಬೇಕು!
ಒಬ್ಬ ಮಗನು ತನ್ನ ಪ್ರಜ್ಞೆಯಿಂದ ಪವಿತ್ರನಾಗಿ ಲೋಕಗಳನ್ನು ಪವಿತ್ರಗೊಳಿಸಬೇಕಾದರೆ ಅವನ ತಂದೆತಾಯಿಯರಿಗೆ ನಿಜವಾದ ಸಾಮಾಜಿಕ ಮತ್ತು ಪರಿಸರ  ಪ್ರಜ್ಞೆ  ಇರಬೇಕು. ಆಗ  ಮಕ್ಕಳಲ್ಲಿಯೂ ಸಾಮಾಜಿಕ ಜಾಗೃತಿ, ಪರಿಸರ ಜಾಗೃತಿ ಮಾಡಿಸಿಯಾರು. ಇಂತಹಾ ಆದರ್ಶ ತಂದೆತಾಯಿಯರು   ನಾವಾಗಬೇಕಲ್ಲವೇ?

No comments:

Post a Comment