Pages

Thursday, January 3, 2013

ಸಾಧಕ ಶ್ರೀ ನ.ಕೃಷ್ಣಪ್ಪ






ಹಿರಿಯ ಆರೆಸ್ಸೆಸ್ ಪ್ರಚಾರಕರಾದ ನ ಕೃಷ್ಣಪ್ಪನವರ ಕುರಿತು ಕಿರುತೆರೆ ನಿರ್ದೇಶಕ ಟಿ .ಎನ್ ಸೀತಾರಾಂ ಲೇಖನ
Na Krishnappa, Senior RSS Pracharak, (A noted Cancer Survivor in Karnataka)


ಕ್ಯಾನ್ಸರ್ ಎಂಬ ಭಯಾನಕ ವ್ಯಾಧಿಯನ್ನು ಯಶಸ್ವಿಯಾಗಿ ಎದುರಿಸಿ ಅರೋಗ್ಯ ಪೂರ್ಣ ಜೀವನ ಸಾಗಿಸುತ್ತಿರುವ ಸಾಧಕರ ಜೀವನ-ಸಾಧನೆಯ ಕುರಿತು ಬೆಳಕು ಚೆಲ್ಲುವ ಪುಸ್ತಕವೇ ಮೃತ್ಯು ಮಿತ್ರ . ಬೆಂಗಳೂರಿನ ಜಿ ಎಸ ಭಟ್ ಬರೆದಿರುವ ಈ ಪುಸ್ತಕವನ್ನು ಪ್ರಕಟಿಸಿದವರು ಗೋವರ್ಧನ್ ಅಂಕೋಲೆಕರ್. ಕ್ರಿಕೆಟಿಗ ಯುವರಾಜ್ ಸಿಂಗ್, ಕಲಾವಿದ ಎನ್ ಮುರಳೀಧರ್ ಕಷಿಕರ್, ಅಲೆಕ್ಸಾಂಡರ್, ರಮಿ  ಸೇಥ್, ಬ್ಯಾಂಕ್ ಮ್ಯಾನೇಜರ್ ಶ್ರೀಕಾಂತ್ , ಮಾಯಾ ತಿವಾರಿ ಸೇರಿದಂತೆ ಅನೇಕರ ಜೀವನಗಾಥೆಯನ್ನು ಓದುಗರಿಗೆ ಪರಿಚಯಿಸುತ್ತದೆ ಮೃತ್ಯು ಮಿತ್ರ .  ಕ್ಯಾನ್ಸರ್ ನ್ನು ತಮ್ಮ ಶಿಸ್ತು ಬದ್ಧ ಜೀವನ ಶೈಲಿಯ ಮೂಲಕ ಬಹು ವರ್ಷದ ಹಿಂದೆಯೇ ಗೆದ್ದು ಸಂತೃಪ್ತಿಯ ಜೀವನ ನಡೆಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್)ದ ಹಿರಿಯ ಪ್ರಚಾರಕರಾದ ನ ಕೃಷ್ಣಪ್ಪನವರ ಬದುಕನ್ನೂ ಓದುಗರಿಗೆ ತೆರೆದಿಡುತ್ತದೆ ಈ ಪುಸ್ತಕ. ಕೃಷ್ಣಪ್ಪನವರ ಕುರಿತು ಕಿರುತೆರೆ ನಿರ್ದೇಶಕ, ಕಲಾವಿದ ಟಿ .ಎನ್  ಸೀತಾರಾಂ ಬರೆದಿರುವ ಲೇಖನವನ್ನು ಇಲ್ಲಿ ನೀಡಲಾಗಿದೆ.- ಸಂ

TN Seetharam, Noted TV Serial Director, Actor
(ಮೃತ್ಯು ಮಿತ್ರ ಪುಸ್ತಕಕ್ಕೆ ಬರೆದ ಮುನ್ನಡಿಯಿಂದ)

ನೆಚ್ಚಿನ ಕೃಷ್ಣಪ್ಪನವರಿಗೆ ಪ್ರಣಾಮಗಳು.

ನೆನಪಿದೆಯಾ? ಕೃಷ್ಣಪ್ಪನವರೆ ಹೀಗೆ ಪತ್ರ ಶುರು ಮಾಡುವುದನ್ನು ನೀವೇ ನನಗೆ ಕಲಿಸಿಕೊಟ್ಟಿದ್ದು. 1932[1952]ರಲ್ಲಿ ನಾನಿನ್ನೂಚಿಕ್ಕ ಹುಡುಗ.ಮಿಡ್ಲ್‌ಸ್ಕೂಲ್‌ನಲ್ಲಿಓದುತ್ತಿದ್ದೆನೆಂದು ನೆನಪು.ಯಾವುದೋಅನಾರೋಗ್ಯಕ್ಕೆ ನನ್ನನ್ನು ಚಿಕ್ಕಬಳ್ಳಾಪುರದ ಮಿಷನ್ ಆಸ್ಪತ್ರೆಗೆ ಸೇರಿಸಿದ್ದರು.ಅಲ್ಲಿ ನನ್ನ ವಿಳಾಸಕ್ಕೆ ನೀವು ನೆಚ್ಚಿನರಾಜ, ಅಕ್ಕರೆಯ ನೆನಪುಗಳು ಎಂದು ರುಜು ಮಾಡಿ 9 ಪುಟಗಳ ಒಂದು ಪತ್ರ ಬರೆದಿದ್ದಿರಿ (ಮನೆಯಲ್ಲಿ ನನ್ನನ್ನುರಾಜಎಂದುಕರೆಯುತ್ತಿದ್ದರು). ನನ್ನನ್ನುಅದಕ್ಕೆ ಮುಂಚೆ ನೀವು 5-6 ಬಾರಿ ನಮ್ಮ ಮನೆಯ ಹತ್ತಿರವಿದ್ದ ಮೈದಾನದಲ್ಲಿ ನೋಡಿದ್ದೀರಿ ಅಷ್ಟೆ. ಆದರೆ ನಾನು ಯಾತನೆಯಿಂದ ಮನಸ್ಸೆಲ್ಲ ಮಂಕಾಗಿ ಮಲಗಿದ್ದಾಗ – ಒಬ್ಬ 10 ವರ್ಷದ ಚಿಕ್ಕ ಹುಡುಗನಿಗೆಅಂತಃಕರಣ, ವಿಶ್ವಾಸ ಮತ್ತು ಭರವಸೆತುಂಬಿದ ೯ ಪುಟದ ಪತ್ರ ಬರೆದಿದ್ದಿರಿ. ಖಾಯಿಲೆ ಬಿದ್ದಿರುವಚಿಕ್ಕಅಪರಿಚಿತ ಹುಡುಗನ ಮೇಲೆ ಯಾರುತೋರಿಸುತ್ತಾರೆಅಂಥ ವಿಶ್ವಾಸ ಈ ಕಾಲದಲ್ಲಿ? ಆ ಪತ್ರ ಬಂದಾಗ ಖಾಯಿಲೆಯಿಂದ ಮಲಗಿದ್ದ ನಾನು ಅಪರೂಪದ ಸಂಭ್ರಮ ಪಟ್ಟಿದ್ದೆ. ನನಗೆ ಮೊದಲ ಪತ್ರವಿರಬೇಕು. ಪತ್ರದ ತುಂಬಾ ಅಂತಃಕರಣ, ಸುಂದರ ಅಕ್ಷರಗಳು, ಸ್ವಚ್ಛ ಭಾಷೆ. ಅಂಥ ಪತ್ರವನ್ನು ನಾನು ಮುಂಚೆ ನೋಡಿಯೂ ಇರಲಿಲ್ಲ. ಆಮೇಲೆ ನಮ್ಮ ಮನೆಯಲ್ಲಿ ಎಷ್ಟೋ ವರ್ಷ ನಿಮ್ಮ ಪತ್ರದ್ದೇ ಮಾತು. ಪತ್ರಬರೆದರೆಕೃಷ್ಣಪ್ಪನವರಥರ ಬರೆಯಬೇಕು ಎಂದು ಎಲ್ಲರೂ ಅಂದುಕೊಳ್ಳುವಷ್ಟು ಸುಂದರವಾಗಿತ್ತು ನಿಮ್ಮ ಪತ್ರ.ಪಾಯಶಃ ನಿಮ್ಮ ಪತ್ರದ ಭಾಷೆ ಮತ್ತು ಅಂತರ್ಗತ ಭಾವ ಕೋಶತೆ ನನ್ನನ್ನು ಸಾಹಿತ್ಯ ಮತ್ತು ಕಲೆಯಕಡೆ ಸೆಳೆದವು ಎಂದು ನನ್ನ ಭಾವನೆ.

ನಿಮಗೇ ಗೊತ್ತು ನಮ್ಮತಂದೆಕಾಂಗ್ರೆಸ್‌ನವರು.ತುಂಬಾ ಶಿಸ್ತಿನ ಮನುಷ್ಯರು. ಹಳೆಯ ಕಾಂಗ್ರೆಸ್‌ನವರಿಗೆ ಸಂಘದವರನ್ನು ಕಂಡರೆ ಕೋಪವಿರುತ್ತಿದ್ದ ದಿನಗಳು. ಅಂಥಾ ನಮ್ಮ ಮನೆಯಲ್ಲಿಕೂಡ ನಿಮ್ಮನ್ನುಕಂಡೆ ನಮ್ಮ ಮನೆಯಎಲ್ಲರಿಗೂ ಎಷ್ಟು ಪ್ರೀತಿ ವಿಶ್ವಾಸ. ನೆನಪಿದೆಯಾ?ಅಷ್ಟು ವಿಶ್ವಾಸ, ಅಂತಃಕರಣತಮ್ಮಲ್ಲಿಕಾಣುತ್ತಿದ್ದೆವು ನಾವು.

ನಾನು ಹೈಸ್ಕೂಲ್‌ನಲ್ಲಿ ಓದುತ್ತಿದ್ದಾಗ ಕರ್ಮಠ ವಾತಾವರಣದಲ್ಲಿ ಬೆಳೆದ ಹುಡುಗ.ಮತ ಮತ್ತು ಧರ್ಮಗಳು ಒಂದೇಎಂದು ನಂಬಿದ ವಾತಾವರಣ ಅದು. ಬೇರೆ ಜಾತಿಯವರ ಮನೆಯಲ್ಲಿ ನೀರು ಕುಡಿಯಲೂ ಕೂಡ ಬೇಡವೆನ್ನುತ್ತಿದ್ದ ಸಂಪ್ರದಾಯ. ನೀವು ಕಾರ್ಯಾಲಯದಲ್ಲಿ ವಾಸಮಾಡುತ್ತಿದ್ದಿರಿ. ಊಟಕ್ಕೆ ಯಾರದಾದರೂ ಮನೆಗೆ ಹೋಗುತ್ತಿದ್ದಿರಿ. ನೀವು ಜಾತಿ ಆಧಾರದ ವಿಂಗಡಣೆಯನ್ನುಎತ್ತಿ ಹಿಡಿಯುವ ಸಂಘಟನೆಗೆ ಸೇರಿದವರೆಂದು ನಮ್ಮ ಬೀದಿಯಲ್ಲಿಎಲ್ಲರೂ ಮಾತನಾಡಿಕೊಳ್ಳುತ್ತಿದ್ದರು. ಆದರೆ ಅತ್ಯಂತ ಕೆಳಜಾತಿಗೆ ಸೇರಿದ ಹುಡುಗನೊಬ್ಬನ ಗುಡಿಸಲಿಗೆ ಆಗಾಗ ನೀವು ಊಟಕ್ಕೆ ಹೋಗುತ್ತಿದ್ದುದನ್ನು ನಾನು ನೋಡಿ ಗಾಬರಿಗೊಳ್ಳುತ್ತಿದ್ದೆ. ಮಂಕಾಗುತ್ತಿದ್ದ ನನಗೆ ಜಾತಿಯ ತಾರತಮ್ಯ ಎಷ್ಟು ಅರ್ಥಹೀನ ಎಂಬುದನ್ನು ನನ್ನಚಿಕ್ಕ ವಯಸ್ಸಿನ ಬುದ್ಧಿಗೆ ಅರ್ಥವಾಗುವ ರೀತಿಯಲ್ಲಿ ಹೇಳುತ್ತಿದ್ದಿರಿ. ನೋಡು ರಾಜ, ನಮ್ಮ ಮನೆಯಲ್ಲೂ ಬಾವಿಯಿಂದ ನೀರು ತರುತ್ತಾರೆ,  ಅವರ ಮನೆಯಲ್ಲಿಯೂ ಬಾವಿಯಿಂದ ನೀರು ತರುತ್ತಾರೆ. ಅಲ್ಲಿಗೆ ನೀರು ಒಂದೇ….. ಭೂಮಿಯಲ್ಲಿ ಬೆಳೆದ ಭತ್ತದಿಂದ ಅಕ್ಕಿಯಾಗುತ್ತಷ್ಟೆ. ಅಕ್ಕಿಗೆ ಅಕ್ಕಿ ಒಂದೇ. ಬೆಂಕಿಗೆ ಮೈಲಿಗೆ ಇಲ್ಲ. ಅಲ್ಲಿಗೆ ಅವರ ಮನೆಯಲ್ಲಿ ಮಾಡುವ ಅನ್ನಕ್ಕೂ ನಮ್ಮರೀತಿಯಲ್ಲಿ ಮಾಡುವ ಅನ್ನಕ್ಕೂ ಏನು ವ್ಯತ್ಯಾಸ?ಎರಡೂ ಒಂದೇ ಅಲ್ಲವೆ ಎಂದು ನಗುತ್ತಾ ನನ್ನನ್ನು ಸಮಾಧಾನ ಮಾಡುತ್ತಿದ್ದಿರಿ. ನಾನು ನಂತರ ಎಷ್ಟೋ ವರ್ಷ ಕಾಲೇಜಿನ ಬಾಳುಗಳಲ್ಲಿ ಜಾತಿಯ ಒಂದು ಮಾತು ಬಂದರೆ ಅದೇ ಉದಾಹರಣೆಕೊಟ್ಟು ಎಲ್ಲರನ್ನು ಬೆರಗುಗೊಳಿಸುತ್ತಿದ್ದೆ. ನಿಜವಾಗಿಯೂ ನಿರ್ಮಲ ಮನಸ್ಸಿನ ಜಾತ್ಯಾತೀತ ವ್ಯಕ್ತಿ ನೀವು.

ನೀವು ನಂಬಿದ ಸಂಘಟನೆಯ ಸೈದ್ಧಾಂತಿಕ ತತ್ವಗಳಿಗೆ ನಾನು ಬಹುದೂರ ಹೋಗಿ ಸಮಾಜವಾದಿ ಪಕ್ಷಕ್ಕೆ ಸೇರಿದಾಗಲೂ ನಿಮ್ಮ ಬಗೆಗಿನ ವೈಯಕ್ತಿಕಗೌರವ ನನಗೆ ಕಿಂಚಿತ್ತೂ ಕಡಿಮೆಯಾಗಲಿಲ್ಲ. ಅಂಥದೊಡ್ಡ ವ್ಯಕ್ತಿ ನೀವು. ಆಗ ನಿಮಗೆ 28-30 ವಯಸ್ಸು ಅನಿಸುತ್ತೆ.ದೇಹದ ಮತ್ತು ಬದುಕಿನಆಕರ್ಷಣೆಯ ವಿರುದ್ಧ ಹೋರಾಟ ಮಾಡುವುದು ಸುಲಭದ ಮಾತಲ್ಲ. ಆದರೆ ಆ ವಯಸ್ಸಿನಲ್ಲಿ ನೀವು ಎಂಥ ನಿಸ್ಪೃಹ ಬದುಕು ಬದುಕುತ್ತಿದ್ದಿರಿಎಂದು ಅನೇಕ ವರ್ಷಗಳ ನಂತರ ನನಗೆ ಅರಿವಾಗತೊಡಗಿತು. ಈ ಸಮಾಜಕ್ಕೆ ನನ್ನ ಬದುಕುಅರ್ಪಣೆ ಎಂದುಆತ್ಮವಿಶ್ವಾಸದ ನಗೆ ಬೀರುತ್ತಾ ಹೇಳುತ್ತಿದ್ದಿರಿ. ನಿಮ್ಮಔಷಧಿಗಾಗಿ ಕೊಂಡುಕೊಂಡ ಒಂದು ಆಗಿನ ಮೂರು ಪೈಸೆಯ ನಿಂಬೆಹಣ್ಣಿನ ಲೆಕ್ಕ ಕೂಡ ಬರೆದುಕೊಳ್ಳುತ್ತಿದ್ದಿರಿ. ಅದನ್ನು ನಿಮ್ಮಕೇಂದ್ರ ಶಾಖೆಗೆ ಕಳುಹಿಸುತ್ತಿದ್ದರೋ ಏನೋ ಗೊತ್ತಿಲ್ಲ. ಅಷ್ಟು ನಿಸ್ಪೃಹ ಮನುಷ್ಯರು ನೀವು. ನಾನು ಮೆಚ್ಚುವ ಗಾಂಧಿಯಂತಅತ್ಯಂತ ಸರಳ ಬದುಕನ್ನು ಬದುಕಿದ ಮನುಷ್ಯ ನೀವು.ಕೃಷ್ಣಪ್ಪನವರೆ ನಿಮ್ಮ ಬುದ್ಧಿಶಕ್ತಿಗೆ, ನಿಮ್ಮ ವಿದ್ಯಾಭ್ಯಾಸಕ್ಕೆ ನಿಮ್ಮ ಚಮಕಿಗೆ ನೀವು ಸುಲಭವಾಗಿಐಎಎಸ್ ಮಾಡಿದೊಡ್ಡಅಧಿಕಾರಿಯಾಗಬಹುದಿತ್ತು.ಏನು ಬೇಕಾದರೂ ಆಗಬಹುದಿತ್ತು.ಆದರೆ ನೀವು ಅದೆಲ್ಲವನ್ನು ಧಿಕ್ಕರಿಸಿ ಸಂಘಟನೆಗೆ ನಿಮ್ಮನ್ನು ಸಮರ್ಪಿಸಿಕೊಂಡಿರಿ.

ನಿಮ್ಮ ಸಂಘಟನೆಯ ಬಗ್ಗೆ ನನ್ನದೇಆದ ವಿರೋಧವಿದೆ.ಭಾರತವನ್ನುಅಮೆರಿಕಾದ ಮಡಿಲಲ್ಲಿ ಇಡಲುಕಾರಣವಾದ ಸಂಘಟನೆ ಎಂಬ ಆಳದ ಸಿಟ್ಟು ಇದೆ.ಆರ್ಥಿಕ ಸಮಾನತೆಯ ಬಗ್ಗೆ ಚಕಾರವೆತ್ತದೆ ಧರ್ಮದ ವಿಚಾರದಲ್ಲಿ ಮಾತ್ರಉದ್ವಿಗ್ನರಾಗುವವರು ಎಂಬ ಆಕ್ಷೇಪಣೆ ನನ್ನದು. ನಾನು ಸೈದ್ಧಾಂತಿಕವಾಗಿ ಬೇರೆದಾರಿ ಹಿಡಿದರೂಕೂಡ ಇಂದಿಗೂ ನನ್ನ ಮನಸ್ಸಿನಲ್ಲಿ ಮತ್ತು ಹೃದಯಲ್ಲಿಅತ್ಯಂತಆತ್ಮೀಯಗುರುವಿನಂತೆ ನಿಂತವರಲ್ಲಿ ನೀವು ಮೊದಲಿಗರು.ನಾನು ದೂರ ಹೋದೆನೆಂದುಕೋಪಗೊಂಡವರು ನೀವಲ್ಲ. ಬದಲಿಗೆ ಎಷ್ಟೋ ವರ್ಷಗಳ ನಂತರ ಮಾಯಾಮೃಗತೆಗೆದದ್ದು ನಾನೇ ಎಂದುಗೊತ್ತಾದಾಗ ನನ್ನನ್ನು ಹುಡುಕಿಕೊಂಡು ಬಂದುಆತ್ಮೀಯವಾಗಿಅಪ್ಪಿಕೊಂಡು ಹೆಮ್ಮೆಪಟ್ಟ ಬಂಧು ನೀವು.

ನಾನು  ಜೀವನದಲ್ಲಿ ಮೊದಲು ಓದಿದಕಾದಂಬರಿ ಭೈರಪ್ಪನವರ ’ಧರ್ಮಶ್ರೀ’ಯನ್ನು ನಾನು ಹೈಸ್ಕೂಲಿನಲ್ಲಿದ್ದಾಗ ಓದಿಸಿದವರು ನೀವು. ಶಿವರಾಮ ಕಾರಂತರಕಾದಂಬರಿ ಓದಿಸಿದವರು ನೀವು.ಜೆ.ಪಿ.ಯವರ ಪುಸ್ತಕ ’ಕಮ್ಯುನಿಸಂ ನಿಂದ ಸೋಷಿಲಿಸಂವರೆಗೆ’ ಎಂಬ ಪುಸ್ತಕ ಓದಿಸಿ ರಾಜಕೀಯ ಚಿಂತನೆಯನ್ನು ನನ್ನಲ್ಲಿ ಶುರು ಮಾಡಿದವರು ನೀವು.ನಿಮ್ಮ ಬಗ್ಗೆ ನನಗೆ ತೀರಿಸಲಾಗದಋಣವಿದೆ.

ಅಂತಹ ನೀವು ಕ್ಯಾನ್ಸರ್‌ ರೋಗಕ್ಕೆತುತ್ತಾಗಿರುವಿರೆಂದು ಗೊತ್ತಾದಾಗ ನಾನು ತುಂಬಾ ನೋವು ಅನುಭವಿಸಿದ್ದೆ. ಆದರೆ ಆ ಕ್ಯಾನ್ಸರನ್ನು ನಿಮ್ಮದೇ ಇಚ್ಛಾ ಶಕ್ತಿಯಿಂದ ನಗುನಗುತ್ತಾಗೆದ್ದವರು ನೀವು. ನೀವು ಕ್ಯಾನ್ಸರನ್ನುಗೆದ್ದ ಬಗ್ಗೆ ಓದುತ್ತಿದ್ದಾಗ ಬದುಕಿನಲ್ಲಿ ಹೊಸ ಭರವಸೆ ಮೂಡಿಸುತ್ತಿದ್ದೀರಿ. ಸಣ್ಣಪುಟ್ಟ ಕಷ್ಟಗಳಿಗೆ ಹೆದರಿ ಹಿಂಜರಿಯುವ ನಮ್ಮಂಥವರಿಗೆ ನೀವು ದಾರಿ ದೀಪವಾಗಿ ನಿಂತಿದ್ದೀರಿ. ನೀವು ಬರಿಯ ನಿಮ್ಮ ಖಾಯಿಲೆ ವಾಸಿ ಮಾಡಿಕೊಳ್ಳುತ್ತಾ ಆತ್ಮಕೇಂದ್ರಿತವಾಗಿ ಕಾಲವನ್ನು ಕಳೆಯಲಿಲ್ಲ. ಬದಲಿಗೆ ಹೀಗೆ ಕ್ಯಾನ್ಸರ್‌ನಿಂದ ಸೋತಿರುವ ಸಾವಿರಾರು ಮಾದರಿಯಜನರನ್ನು ಭೇಟಿ ಮಾಡುತ್ತಾಅವರಿಗೆ ಬದುಕಿನಲ್ಲಿ ಭರವಸೆ ಮತ್ತುಜೀವೋತ್ಸಾಹವನ್ನುತುಂಬಿದ್ದೀರಿ.ಇದಕ್ಕಿಂತ ಸಾರ್ಥಕವಾದದ್ದುಇನ್ನೇನಿದೆ?

ನನ್ನಅಮ್ಮ ಸಾವಿನ ಅಂತ್ಯದಲ್ಲಿ ನರಳುತ್ತಾ ಮಲಗಿದ್ದಾಗ ನೀವು ಅವರನ್ನು ಭೇಟಿ ಮಾಡಿ ಮನೆಯವರಿಗೆಧೈರ್ಯಕೊಟ್ಟಿದ್ದೀರಿ.

ಇಡೀ ಬದುಕಿನಲ್ಲಿಇಷ್ಟೊಂದು ಮಾನವೀಯತೆಯನ್ನು, ಆತ್ಮೀಯತೆಯನ್ನುಇಟ್ಟುಕೊಂಡ ಮನುಷ್ಯರನ್ನು ನಾನು ನೋಡಿದ್ದುಕಡಿಮೆ.ನೀವು, ನಿಮ್ಮ ಬದುಕು ಸಹೃದಯರಿಗೆಒಂದು ಪಠ್ಯ ಪುಸ್ತಕ.

ನಿಮ್ಮ ಈಗಿನ ಪುಸ್ತಕ ಓದುತ್ತಾ ಹೋದಂತೆ ನನ್ನಲ್ಲಿ ಈ ನೆನಪುಗಳೆಲ್ಲಾ ಬಂದವು. ಅಂಥಎಲ್ಲ ಸಂತೋಷಕರ ನೆನಪುಗಳಿಗಾಗಿ ನಿಮಗೆ ನನ್ನ ಅನಂತಾನಂತ ಕೃತಜ್ಞತೆಗಳು.

ಟಿ.ಎನ್. ಸೀತಾರಾಮ್

ಕಿರುತೆರೆ ಕಲಾವಿದರು ಮತ್ತು ನಿರ್ದೇಶಕರು

(ಮೃತ್ಯು ಮಿತ್ರ ಪುಸ್ತಕಕ್ಕೆ ಬರೆದ ಮುನ್ನಡಿಯಿಂದ)

ಕೃಪೆ: ವಿಶ್ವ ಸಂವಾದ,ಕರ್ನಾಟಕ
--

Tuesday, January 1, 2013

ಟಿ.ವಿ.ದಾರಾವಾಹಿ ಮತ್ತು ನಾವು

‎4-5 ವರ್ಷದ ಹೆಣ್ಣು ಮಗುವನ್ನು ಹೇಗೆ ಸಾಯಿಸಬೇಕು, ಯಾವ ರೀತಿ ಯೋಜನೆಗಳನ್ನು ಹಾಕಬೇಕು, ಅವಳಿಗೆ ಹಾವು ಕಚ್ಚಿದರೆ ಒಳ್ಳೆಯ ಚಿಕಿತ್ಸೆ ಕೊಡದೆ ಸಾಯಿಸಬೇಕೆಂದು ಡಾಕ್ಟರರಿಗೆ ಲಂಚ ಕೊಡಬೇಕೇ? ಅಲಮೈರಾದಲ್ಲಿ ತುರುಕಿ ಬೀಗ ಹಾಕಿ ಉಸಿರುಗಟ್ಟಿಸಿ ಸಾಯಿಸಬೇಕೇ? ಕಣ್ಣಾಮುಚ್ಚೆ ಆಟ ಆಡುವ ನೆಪದಲ್ಲಿ ಮಗುವಿಗೆ ಕಣ್ಣಿಗೆ ಬಟ್ಟೆ ಕಟ್ಟಿ ನೀರಿನ ಸಂಪಿನೊಳಗೆ ಮುಳುಗಿಸಬೇಕೇ? ಮಹಡಿಯ ಮೇಲಿನಿಂದ ದೂಕಬೇಕೇ?, , , , , ಇತ್ಯಾದಿ ಹಲವಾರು ಪ್ಲಾನುಗಳು ನಿಮಗೆ ಬೇಕೇ? ಸಾಯಿಸಿದರೂ ಅನುಮಾನ ಬರದಂತೆ ಹೇಗೆ ಸಾಯಿಸಬಹುದು? ಅದರಲ್ಲೂ ಮಗುವಿನ ಅಜ್ಜಿ, ಚಿಕ್ಕಪ್ಪ, ಅತ್ತೆ, ಹತ್ತಿರದ ಸಂಬಂಧಿಗಳು ಮಗುವನ್ನು ಸಾಯಿಸುವ ಯೋಚನೆಯಲ್ಲೇ ಸದಾ ಇರುವುದನ್ನು ಕಾಣಬೇಕೇ? ಹಾಗಾದರೆ ಸುವರ್ಣ ಚಾನೆಲ್ಲಿನಲ್ಲಿ ಪ್ರಸಾರವಾಗುತ್ತಿರುವ 'ಪಲ್ಲವಿ ಅನುಪಲ್ಲವಿ' ಧಾರಾವಾಹಿ ತಪ್ಪದೆ ನೋಡಿ. ನಿಮಗೂ ಇಂತಹ ಹಲವಾರು ಮನೆಹಾಳು ಐಡಿಯಾಗಳು ಬರಬಹುದು. ಈ ಧಾರಾವಾಹಿ ನಿಮಗೆ ಇಷ್ಟವಾದರೆ ಅದರ ಲೇಖಕರು, ಪಾತ್ರಧಾರಿಗಳು, ಚಾನೆಲ್ ಮಾಲಿಕರು, ಕಾರ್ಯಕ್ರಮ ನಿರ್ವಾಹಕರು, ಪ್ರಾಯೋಜಕರು,... ಎಲ್ಲರನ್ನೂ ಅಭಿನಂದಿಸಿರಿ. ಇದು ವಿಕೃತರ ಸೃಷ್ಟಿ ಎನ್ನಿಸಿದರೆ ಸಂಬಂಧಿಸಿದವರಿಗೆ ಧಿಕ್ಕಾರ-ಗಟ್ಟಿಧ್ವನಿಯ ಧಿಕ್ಕಾರ ಹೇಳಲು ಮರೆಯದಿರಿ.

-Kavi Nagaraj

ಕವಿನಾಗರಾಜರು ಫೇಸ್ ಬುಕ್ ನಲ್ಲಿ ತಮ್ಮ ಸಂಕಟವನ್ನು ತೋಡಿಕೊಂಡಿರುವುದನ್ನು ಇಲ್ಲಿ ಹಾಗೆಯೇ ಪ್ರಕಟಿಸಿರುವೆ.

ನನಗ್ಯಾಕೋ  ನಮ್ಮ ತಾಯಂದಿರಮೇಲೆ ಬಲು ಬೇಸರವಾಗುತ್ತಿದೆ. ನಿಮಗೆ ಸಿಟ್ಟು ಬರುತ್ತೆ, ಅಲ್ವಾ? ನಾನಂತೂ ಹತ್ತಾರು ಮನೆಗಳಲ್ಲಿ ತಾಯಂದಿರನ್ನು ನೋಡಿ ಬಲು ನೊಂದುಕೊಂಡಿದ್ದೇನೆ. ದಿನಕ್ಕೆ ನಾಲ್ಕಾರು ದಾರಾವಾಹಿಗಳನ್ನು ಅವರು ನೋಡಲೇ ಬೇಕು. ಅದೇ ದಾರವಾಹಿಯ ಸಮಯದಲ್ಲಿ ಯಾವುದಾದರೂ ಮುಖ್ಯ ಸಮಾಚಾರಗಳು ಪ್ರಕಟವಾಗುತ್ತಿದ್ದರೂ ಸುದ್ಧಿ ನೋಡಲು ಅವಕಾಶವಿಲ್ಲ. ಒಂದು ವೇಳೆ ಸುದ್ಧಿ ನೋಡಬೇಕೆಂದು ನೀವು ಚಾನಲ್ ಬದಲಿಸದರೆ ಕಥೆ ಮುಗಿದಂತೆಯೇ! 
"ಏನೋ ಬೇಜಾರು, ಅಂತಾ ದಾರಾವಾಹಿ ನೋಡ್ತಾರೆ, ಅವರಿಗ್ಯಾಕ್ರೀ ತೊಂದರೆ ಕೊಡ್ತೀರಿ? "......ದಾರಾವಾಹಿಯನ್ನು ನೋಡುವ ತಾಯಂದಿರ ಹೆಣ್ಣುಮಕ್ಕಳಿರ್ತಾರಲ್ಲಾ ಅಥವಾ ಸೊಸೆ ಇರ್ತಾರಲ್ಲಾ, ಅವರು  ಅವರ ಪತಿಗೆ ಹೇಳುವ ಮಾತಿದು.
ಎಷ್ಟೋ ಮನೆಯಲ್ಲಿ  ಈ ದಾರಾವಾಹಿಯನ್ನು ನೋಡಲು ಅವಕಾಶವಿಲ್ಲವೆಂದು  ಎಲ್ಲಿ ದಾರಾವಾಹಿಯನ್ನು ನೋ   ಡಲು     ಯಾರೂ ಅಡ್ಡಿಮಾಡುವುದಿಲ್ಲವೋ ಅಂತಹಾ ಮಕ್ಕಳ ಮನೆಗೆ ಅವರ ತಾಯಂದಿರು ಹೋಗಿಬಿಡ್ತಾರೆ!!
ಹೌದು, ವಯಸ್ಸು ಅರವತ್ತು-ಎಪ್ಪತ್ತು ಆಗಿರುವ ತಾಯಂದಿರ ಕಥೆ ಇದು.
ಹೋಗಲೀ ನೋಡುವ ದಾರಾವಾಹಿಯ ಕಥೆ ಏನು ಗೊತ್ತಾ?  ಗಂಡನಿಗೆ ಮೋಸ ಮಾಡಿ ಪ್ರಿಯಕರನ ಜೊತೆ ಮೋಜು ಮಾಡುವ ಹೆಣ್ಣಿನ ದೃಶ್ಯ! ಪ್ರಿಯಕರನಿಗಾಗಿ ಗಂಡನನ್ನು ಕೊಲೆಮಾಲು ಸಂಚು ರೂಪಿಸುವ ದೃಶ್ಯ!  ತಮ್ಮ ಕಛೇರಿಯಲ್ಲಿ  ಕೆಲಸಮಾಡುವ ಹುಡುಗಿರ ಜೊತೆ ಚೆಲ್ಲಾಟ‘ವಾಡುವ ಗೃಹಸ್ಥ   ಭೂಪರು! 
ಹುಡುಗಿಯರ ರೌಢಿಸಮ್ !!

ಅಬ್ಭಬ್ಭಾ!! ನಿಜವಾಗಿ ಹೇಳ್ರೀ ನೀವು ನೋಡುವ ದಾರಾವಾಹಿಗಳಲ್ಲಿ ಮೇಲಿನ ಯಾವುದಾದರೊಂದು ದೃಶ್ಯ ಇಲ್ಲದೆ ದಾರಾವಾಹಿ ನಡೆಯುತ್ತದೆಯೇ? ಇಂತಹಾ ದಾರಾವಾಹಿಗಳನ್ನು ನೋಡುತ್ತಾ ಬಹುಪಾಲು ಕಾಲಕಳೆಯುವ ನಮ್ಮ ತಾಯಂದಿರನ್ನು ನೋಡಿದಾಗ ಅವರ ಇಂತಹ   ಸ್ಥಿತಿ ಕಂಡು ಮರುಕ ಹುಟ್ಟುವುದಿಲ್ಲವೇ?

ಟಿ.ವಿ ಯಲ್ಲಿ ಮನಸ್ಸಿಗೆ ಮುದ ನೀಡುವ ಕಾರ್ಯಕ್ರಮಗಳು  ನಡೆಯುವುದಿಲ್ಲವೇ? ಹತ್ತಾರು ಚಾನಲ್ ಗಳಲ್ಲಿ  ನಿಮ್ಮ  ಮನಸ್ಸಿಗೆ ಮುದನೀಡುವ, ನಿಮ್ಮ ಅರಿವನ್ನು ಹೆಚ್ಚಿಸುವ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು     ಅನುಕೂಲವಾಗಬಲ್ಲ ಕಾರ್ಯಕ್ರಮಗಳು ಪ್ರಸಾರವಾಗುತ್ತವೆ. ಆದರೆ ಅವೆಲ್ಲಾ ಇಂತಹ ದಾರಾವಾಹಿಗಳನ್ನು ನೋಡುವವರಿಗೆ ಹಿಡಿಸದು, ಅಷ್ಟೇಕೆ, ಮಕ್ಕಳು  ನೋಡಬಹುದಾದ ಕಾರ್ಯಕ್ರಮಗಳನ್ನು ಮಕ್ಕಳು          ನೋಡುತ್ತಿದ್ದರೆ,  ನಿಮಗೇನೂ ಕೆಲಸ ವಿಲ್ಲವೇನ್ರೋ, ಓದಿಕೊಳ್ಳಿ, ಎಂದು ಮಕ್ಕಳನ್ನು ಬೈದು, ಈ ತಾಯಂದಿರು ಮಾಡುವ ಕೆಲಸವೇನು ಗೊತ್ತಾ? ಮನೆಹಾಳುಮಾಡುವ ದಾರಾವಾಹಿಗಳನ್ನು ನೋಡುವುದೇ ಆಗಿದೆ. ಅಸಭ್ಯ ದೃಶ್ಯಗಳನ್ನು ನೋಡುವವರಲ್ಲಿ  ಅತಿ ಹೆಚ್ಚಿನವರು ಅರವತ್ತು ಎಪ್ಪತ್ತು ವರ್ಷದ ತಾಯಂದಿರು, ಎಂಬ ನಾನು ಕಂಡ   ಸತ್ಯವನ್ನು ಅತ್ಯಂತ ನೋವಿನಿಂದ ಹೇಳ ಬಯಸುತ್ತೇನೆ, ಅಲ್ಲದೆ  ವಿಚಾರ ಮಾಡಲು ಸಮರ್ಥರಾದವರು  ಅವರ ವಯಸ್ಸು ಎಷ್ಟೇ ಇರಲಿ, ಕೆಟ್ಟ  ದಾರಾವಾಹಿಗಳನ್ನು ನೋಡುವವರಿಗೆ ಅವರು ಹಿರಿಯರಾದರೂ ಚಿಂತೆಇಲ್ಲ  ತಿಳಿ ಹೇಳಲೇ ಬೇಕು. ದೂರ ದರ್ಶನ ನೋಲು ಒಂದು ನೀತಿ ಸಂಹಿತೆಯನ್ನು ರೂಪಿಸಿಕೊಳ್ಳುವುದು ಅತ್ಯಂತ ಅನಿವಾರ್ಯವಾಗಿದೆ.
ನನ್ನ ಮಾತಿಗೆ ಹಲವರು ಆಕ್ಷೇಪಣೆ ಮಾಡುತ್ತಾರೆಂಬ ಅರಿವು ನನಗಿದೆ." ಕೇವಲ ಹೆಂಗಸರು ನಿಮ್ಮ ಕಣ್ಣಿಗೆ ಬಿದ್ರಾ? ಗಂಡಸರು  ನೋಡುವುದಿಲ್ಲವೇ? ಅನ್ನೋ ಮಾತು ಬಂದೇ ಬರುತ್ತೆ. ಹೌದು, ಗಂಡಸರು ನೋಡಿದರೆ ಅದೂ ತಪ್ಪೇ. ಆದರೆ ನನ್ನ ಕಣ್ಣಿಗೆ  ತಾಯಂದಿರ ಸಂಖ್ಯೆ ಹೆಚ್ಚು  ಕಂಡಿದೆ. ಅವರಲ್ಲಿ ಕ್ಷಮೆ ಕೋರುತ್ತಾ " ಅಮ್ಮಾ, ನೀವು  ಒಂದು ಮನೆಯ ಹಿರಿಯರು, ಮನೆಯಲ್ಲಿ ಕೆಲವರಿಗೆ ತಾಯಿ, ಕೆಲವರಿಗೆ ಅತ್ತೆ, ಕೆಲವರಿಗೆ ಅಜ್ಜಿ.....ಆದರೆ ನೀವು ಎಲ್ಲರಿಗೂ ದೇವರು. ನೀವು ಸಮಾಜವನ್ನು  ತಿದ್ದಬಲ್ಲಿರಿ, ನಿಮ್ಮನ್ನು ತಿದ್ದುವ ಹೀನ ಸ್ಥಿತಿ ಈ ಸಮಾಜಕ್ಕೆ ಬಾರದಿರಲೆಂದೇ ಭಗವಂತನಲ್ಲಿ  ನನ್ನ ಪ್ರಾರ್ಥನೆ.

Saturday, December 22, 2012

ಗಾರೆಗೋಡೆಯ ಚಿತ್ರ ಸಾಲು ಪರಿಷತ್ತಿನಲಿ

ಚಿತ್ರಋಣ: ಅಂತರ್ಜಾಲ

ತಮ್ಮದೇ ಹಳ್ಳಿಮನೆಯ ಗೋಡೆಯಮೇಲಿನ ಚಿತ್ರಪಟಗಳನ್ನು ನೋಡುತ್ತಾ ಕುಳಿತಿದ್ದ ತನಗೆ ಒಂದು ಫೋಟೋ ನೋಡುತ್ತಿದ್ದಂತೇ ಏಕಾಏಕಿ ಕಣ್ಣುಗಳು ಮಂಜಾದವು, ಮರುಕ್ಷಣದಲ್ಲಿ ಪರಿವೆಯೇ ಇಲ್ಲದೇ ಕಣ್ಣ ಹನಿಗಳು ತೊಟ್ಟಿಕ್ಕತೊಡಗಿದವು. ಕುಟುಂಬದ ಹಿರಿಯರ ಚಿತ್ರಪಟಗಳನ್ನು ಅಣ್ಣ ಅಂದವಾಗಿ ಜೋಡಿಸಿದ್ದ. ಸಂಪ್ರದಾಯಸ್ಥರ ಮನೆಯ ಸೊಸೆಯಾಗಿ ಬಂದ ಸಾಧ್ವಿ ಅತ್ತಿಗೆ ದಿನವೂ ಅವುಗಳನ್ನು ಒರೆಸಿ ಹೂವಿಟ್ಟು ನಮಸ್ಕರಿಸುತ್ತಿದ್ದಳು. ಮುಪ್ಪಡರಿದ ದಿನಗಳಲ್ಲಿ ತೆಗೆಸಿದ ಕಪ್ಪು-ಬಿಳುಪು ಭಾವಚಿತ್ರ ಅದಾಗಿದ್ದರೂ ಆ ಮುಖವನ್ನು ತಾನು ಮರೆಯಲೊಲ್ಲೆ. ಮರೆಯಲಾರದಂತೇ ಮಾಡಿ ಮನದಲ್ಲಿ ಉಳಿದುಹೋದ ಸಾಲುಗಳು ಇಂತಿದ್ದವು:

ಗಾರೆಗೋಡೆಯ ಚಿತ್ರ ಸಾಲು ಪರಿಷತ್ತಿನಲಿ
ಒಬ್ಬೊಬ್ಬರದೂ ಒಂದು ಜೀವ
ನನಗೆ ಎಡೆಯಿರಬಹುದು ಅವರಿರುವ ಸಾಲಿನಲಿ
ಮನವ ತುಂಬಿದ್ದುಂಟು ನಮ್ರಭಾವ

ಅಮ್ಮ ಕಟ್ಟಿಟ್ಟ ಅದೇನೋ ಮಡಿಗಂಟನ್ನು ತಾನು ಬಿಚ್ಚಿದಾಗ ಸಿಕ್ಕಿದ್ದು ಕೆಲವು ಪುಸ್ತಕಗಳು, ಮತ್ತು ಜಪದಸರ. ಓದಿದ ಪುಸ್ತಕದ ಓದಿದಭಾಗದ ಗುರುತುಹಾಕಿಕೊಳ್ಳಲಿಕ್ಕಾಗಿ ಇದ್ದ ಒಂದು ದಪ್ಪನೆಯ ಕಾಗದ ಮತ್ತು ಅದರಮೇಲೆ ಬರೆದಿದ್ದವು ಈ ಮೇಲಿನ ಸಾಲುಗಳು. ನರಸಿಂಹಸ್ವಾಮಿಯವರ ಕವಿತೆಯೊಂದರ ಈ ಭಾಗವನ್ನು ಅಮ್ಮ ಅದೆಷ್ಟು ಮೆಚ್ಚಿರಬೇಕು ಎಂದುಕೊಂಡ; ಅವರ ಹಾಡುಗಳೇ ಹಾಗಲ್ಲವೇ? ಯಾರಾದರೂ ಅತಿ ಸಹಜವಾಗಿ ಮೆಚ್ಚಬಹುದಾದ ಮೃದು-ಮಧುರ ಭಾವಗಳ ಸಾಲುಗಳಿರುತ್ತವೆ ಎಂದುಕೊಂಡ. ಮನದ ತುಂಬ ಹೇಳಲಾಗದ ದುಗುಡ ತುಂಬಿತ್ತು, ವಿಷಾದ ತುಂಬಿತ್ತು. ಭೋ ಎಂದು ಅತ್ತುಬಿಡುವ ಮನಸ್ಸಾಗುತ್ತಿತ್ತು-ಆದರೆ ವಯಸ್ಸಿಗ ತಾನು ಹಾಗೆ ಎಲ್ಲರೆದುರು ಅಳಲಾರ.

ಎಳವೆಯಲ್ಲಿಯೇ ಅಪ್ಪನ ಮುಖ ನೋಡಿರದ ಮಕ್ಕಳನ್ನು ಅಮ್ಮ ಸಲಹಿ ಬೆಳೆಸಿದ್ದಳು. ಯಾವುದೇ ಸರಿಯಾದ ಆದಾಯಮೂಲವಿರದ ಮನೆಯಲ್ಲಿ ಹೇಗೆ ತನ್ನನ್ನೂ, ಅಣ್ಣನನ್ನೂ ಮತ್ತು ಅಕ್ಕನನ್ನೂ ಬೆಳೆಸಿದಳೋ ಎಂಬುದೇ ಆಶ್ಚರ್ಯವಾಗಿತ್ತು. ಹೇಳಿಕೇಳಿ ಪುರೋಹಿತರ ಮನೆ. ನಾಲ್ಕು ಜನರಲ್ಲಿ ಬೇಡುವ ಹಾಗಿಲ್ಲ, ಮರ್ಯಾದೆಗೆಡುಕು ಕೆಲಸ ಮಾಡುವ ಹಾಗಿಲ್ಲ. ಗಂಡಸತ್ತವಳೆಂಬ ’ಬಿರುದು’ ಅದಾಗಲೇ ಪ್ರಾಪ್ತವಾಗಿಬಿಟ್ಟಿತ್ತು. ಮುತ್ತೈದೆಯರು ಧರಿಸುವ ಮಂಗಳ ಚಿನ್ಹೆಗಳನ್ನು ಕಳೆದಾಗಿತ್ತು. ಕೇಶಮುಂಡನವೊಂದನ್ನು ಮಾಡಿರಲಿಲ್ಲ ಯಾಕೆಂದರೆ ಸಮಾಜ ಸ್ವಲ್ಪ ಸುಧಾರಿಸಲ್ಪಟ್ಟಿದ್ದರಿಂದ ಅದು ಅನಿವಾರ್ಯವೆಂದೆನಿಸಲಿಲ್ಲ. ಕೇಶಮುಂಡನ ಮಾಡಿಸದೆಯೂ ಮನದಲ್ಲಿ ಸಂನ್ಯಾಸಿನಿಯಂತೇ ವ್ರತ ನಡೆಸಿದರೆ ದೇವರು ಮೆಚ್ಚುತ್ತಾನೆ ಎಂಬ ಭರವಸೆಯಿತ್ತು. ಅಪ್ಪ ಸತ್ತಾಗ ಹರೆಯದ ಹೆಣ್ಣಾಗಿದ್ದ ತಾಯಿಯ ಬಾಕಿ ಉಳಿದ ಆಸೆಗಳು-ಭರವಸೆಗಳು ಮಣ್ಣುಗೂಡಿಹೋಗಿದ್ದವು. ಜೀವನವೊಂದು ಗಾಳಿಗೋಪುರದಂತೇ ಭಾಸವಾಗುತ್ತಿದ್ದ ಆ ದಿನಗಳಲ್ಲಿ ಹರೆಯದ ಗಂಡಸರು ಬೇಡದ ಮಾತುಗಳನ್ನೇ ಆಡುತ್ತಿದ್ದರಂತೆ. ಆದರೂ ಅಮ್ಮ ತನ್ನತನವನ್ನು ಕಳೆದುಕೊಳ್ಳಲಿಲ್ಲ; ಕಾಮಕ್ಕೆ ಬಲಿಯಾಗಲಿಲ್ಲ. ಪರಪುರುಷರ ನೆಳಲೂ ಸೋಕದಂತೇ ಬದುಕಬೇಕೆಂದರೆ ಊರು ಬಿಟ್ಟು ಎಲ್ಲಾದರೂ ಹೋಗಬೇಕು, ಅದೂ ಹೆಣ್ಣೆಂಬ ಹೆಣ್ಣು ಸಂನ್ಯಾಸಿನಿಯಂತೇ ಇದ್ದರೂ ಪರವೂರುಗಳಲ್ಲೋ ಪರಸ್ಥಳಗಳಲ್ಲೋ ಅಲ್ಲಿನ ಗಂಡಸರು ಹಾಗೆ ಇರಗೊಟ್ಟಾರೆಯೇ?  ತುಂಬಿಹರಿವ ಕಾಮುಕರ ಕಾಮಪ್ರವಾಹದ ವಿರುದ್ಧ ನೈತಿಕ ನಾವೆಯನ್ನು ಮುನ್ನಡೆಸುತ್ತಾ ಸಾಗುವುದು ಸುಲಭದ ಮಾತಾಗಿರಲಿಲ್ಲ. ಇನ್ನೂ ಅರಿಯದ ಮಕ್ಕಳನ್ನು ಕಟ್ಟಿಕೊಂಡು ಹೋಗುವುದಾದರೂ ಎಲ್ಲಿಗೆ? ಮಕ್ಕಳ ಉಳಿವಿಗಾಗಿ ಏಳ್ಗೆಗಾಗಿ ತನಗೆ ತವರಲ್ಲಿ ಅಂದು ಕೊಟ್ಟಿದ್ದ ಬಂಗಾರವನ್ನೆಲ್ಲಾ ಮಾರಿಬಿಟ್ಟಳು ಆಕೆ.

ಕುಳಿತು ಉಂಡರೆ ಕುಡಿಕೆ ಹೊನ್ನು ಸಾಲದು ಎಂಬುದು ಅಮ್ಮನಿಗೂ ಗೊತ್ತಿತ್ತು. ಆದರೂ ತಂದೆಯ ವಿಯೋಗದ ದುಃಖ ತುಸುವಾದರೂ ದಮನವಾಗುವವರೆಗೆ ಆಕೆಗೆ ಇನ್ನೇನೂ ದಾರಿಯಿರಲಿಲ್ಲ. ತವರಿನಲ್ಲಿ ಈಗ ಯಾರೂ ಉಳಿದಿರಲಿಲ್ಲ; ಇದ್ದರೂ ಅವರ ಸಹಾಯವನ್ನು ಯಾಚಿಸುವುದು ಧರ್ಮವಲ್ಲ. ವರ್ಷದ ನಂತರ ಯಾವುದೋ ಒಂದು ದಾರಿ ಕಂಡುಬಂತು. ನೆರೆಕೆರೆಯ ಹೆಂಗಸರಿಗೆ ಭಜನೆ-ದೇವರನಾಮಗಳನ್ನೂ ಸಂಕೀರ್ತನೆ-ಸಂಗೀತವನ್ನೂ ಕಲಿಸಿಕೊಡುವುದೆಂದು ನಿರ್ಧರಿಸಿ, ದೇವಸ್ಥಾನದಲ್ಲಿದ್ದ ಅರ್ಚಕರ ಮುಂದೆ ನಿವೇದಿಸಿಕೊಂಡಳು. ತನ್ನ ಪತಿ ಮೊದಲು ಅದೇ ದೇವಸ್ಥಾನದಲ್ಲಿ ಅರ್ಚಕರಾಗಿದ್ದುದರಿಂದ ಈಗಿರುವ ಅರ್ಚಕರಿಗೆ ಕೆಲದಿನ ಪಾಠಗಳನ್ನೂ ಮಾಡಿದ್ದರಿಂದ ಆ ಅರ್ಚಕರು ಮಗನಂತೇ ಇದ್ದರು. ಗ್ರಾಮದ ಕೆಲಮನೆಗಳ ಜನ ಗುಡಿಗೆ ಬಂದಾಗ ಆ ಅರ್ಚಕರು ಹೀಗೆ ಭಜನೆ-ಸಂಕೀರ್ತನೆ-ಸಂಗೀತಗಳನ್ನು ಹೇಳಿಕೊಡುವ ಅಮ್ಮನ ಕುರಿತು ಪ್ರಸ್ತಾವಿಸಿದರು. ಒಂದಷ್ಟು ಹೆಂಗಳೆಯರು ಬಂದು ಕಲಿಯತೊಡಗಿದರು, ಆಧರವೇ ಇಲ್ಲದ ಅಮ್ಮನಿಗೆ ಕಾಸು-ಕವಡೆ ಅಂತ ಅಷ್ಟಿಷ್ಟು ಕೊಡುತ್ತಿದ್ದರು. ಇಂಥಾ ಕಷ್ಟದ ದಿನಗಳಲ್ಲಿ ತಮ್ಮನ್ನು ತಾಯಿ ಪೊರೆದದ್ದನ್ನು ಆತ ಕೇಳಿಬಲ್ಲ. ಆತನ ಮನ ಮತ್ತೆ ಮಡುಗಟ್ಟಿತು; ದುಃಖದ ಕಡಲು ಭುಗಿಲೆದ್ದಿತು.

ಮತ್ತೆ ತನಗೆ ತಾನೇ ಸಮಾಧಾನಿಸಿಕೊಂಡ ಆತನಿಗೆ ಈಗಿನ ತನ್ನಿರವಿಗೆ ಕಾರಣಳಾದ ಅಮ್ಮನ ದಯೆ, ತ್ಯಾಗ, ವಾತ್ಸಲ್ಯ ಇವುಗಳೆಲ್ಲದರ ಬಗ್ಗೆ ಮತ್ತೆ ಮತ್ತೆ ನೆನಪಾಗುತ್ತಲೇ ಇತ್ತು. ತನ್ನ ಬದುಕಿಗೆ ಮಕ್ಕಳು ಆಧಾರವಾಗಬೇಕೆಂದು ಅಮ್ಮ ಎಂದೂ ಬಯಸಿರಲಿಲ್ಲ. ಆದರೆ ಅವಳ ಕರ್ತವ್ಯವನ್ನು ಆಕೆ ನಡೆಸಿದ್ದಳು. ಕಷ್ಟಾರ್ಜಿತದಲ್ಲಿ ಹೊಟ್ಟೆಬಟ್ಟೆ ಕಟ್ಟಿ ತನ್ನನ್ನು ಓದಿಸಿದಳು. ನಿತ್ಯವೂ ಪಂಚತಂತ್ರ, ರಾಮಾಯಣ-ಮಹಾಭಾರತದ ಕಥೆಗಳನ್ನು ಹೇಳಿ ನೀತಿವಂತನಾಗಿ ಬಾಳುವಂತೇ ಬೋಧಿಸುತ್ತಿದ್ದಳು. "ದೇವರು ದಯೆತೋರುತ್ತಾನೆ, ನಿಮ್ಮೆಲ್ಲರನ್ನೂ ಸಲಹುತ್ತಾನೆ ಧೈರ್ಯಗೆಡಬೇಡ ಮಗಾ ನೀನು ಬಹುದೊಡ್ಡ ವ್ಯಕ್ತಿಯಾಗುತ್ತೀಯಾ" ಎಂದು ಹುರಿದುಂಬಿಸುತ್ತಿದ್ದಳು. ಓದಿನಲ್ಲಿ ತರಗತಿಗೆ ಪ್ರಥಮಸ್ಥಾನವನ್ನು ಗಳಿಸುತ್ತಾ ತಾನೇನೋ ಮುಂದೆ ಹೋಗುತ್ತಿದ್ದೆ. ವಿಧಿಲೀಲೆ ಮತ್ತು ಅಮ್ಮನ ಪುಣ್ಯವೆಂಬಂತೇ ಬೋಧನಾ ಶುಲ್ಕ ತೆಗೆದುಕೊಳ್ಳದೇ ಕೆಲವು ಶಾಲೆಗಳಲ್ಲಿ ಬೋಧನೆ ನಡೆಯಿತು; ತಗಲುವ ವೆಚ್ಚವನ್ನು ಶಿಕ್ಷಕರೇ ಭರಿಸಿದರು. ಶಿಕ್ಷಕರೊಬ್ಬರ ಮಾರ್ಗದರ್ಶನದಿಂದ ಹೆಚ್ಚಿನ ಅಂಕ ಪಡೆದಿದ್ದಕ್ಕಾಗಿ ವಿದ್ಯಾರ್ಥಿವೇತನ ದೊರೆಯಿತು. ಬಡವರು ಯಾರೆಲ್ಲಾ ಬಯಸಿದರೂ ಆಗುವುದು ಕಷ್ಟವೋ ಅಂಥಾ ಎಂಜಿನೀಯರಿಂಗ್ ಓದಿ ಅಲ್ಲಿಯೂ ಬಂಗಾರದ ಪದಕ ಪಡೆದೆ. ಕಂಪನಿಯೊಂದು ಕೈಬೀಸಿ ಕರೆದು ಉದ್ಯೋಗ ನೀಡಿತು. ಅಮ್ಮನ ಹರುಷಕ್ಕೆ ಪಾರವೇ ಇರಲಿಲ್ಲ. ಅಣ್ಣ ನನಗಿಂತಾ ಮೊದಲೇ ಓದಿದ್ದು ವೇದಪಾಠಗಳನ್ನು, ಆತ ತಂದೆಯಂತೇ ಅರ್ಚಕನಾಗಿ ಅಮ್ಮನ ಜೊತೆ ಅದೇ ಮನೆಯಲ್ಲಿ ಇದ್ದ. ತಾನುಮಾತ್ರ ಬೆಂಗಳೂರಿನ ದಾರಿ ಹಿಡಿದೆ; ಕಂಪನಿ ಸೇರಿದೆ. 

ಕಂಪನಿಗೆ ಹೊಸದಾಗಿ ಸೇರಿದಾಗ ತನಗೆ ಉದ್ಯೋಗದ ಪರಿಪೂರ್ಣ ಮಾಹಿತಿ ಇರಲಿಲ್ಲ. ಹಿರಿಯ ಸಹೋದ್ಯೋಗಿಗಳ ಕೃಪೆಯಿಂದ ಹಂತಹಂತವಾಗಿ ಕೆಲಸವನ್ನು ಕಲಿತುಕೊಂಡೆ. ವರ್ಷಗಳ ತರುವಾಯ ಕೆಲಸ ಸಲೀಸಾಯ್ತು. ಕೆಲಸ ಪಕ್ಕಾ ಬರುತ್ತದೆ ಎಂದಾದಾಗ ಗಣಕತಜ್ಞನಾದ ತನಗೆ ಟೀಮ್ ಲೀಡರ್ ಆಗಿ ಭಡ್ತಿಯಾಯ್ತು. ಗುಂಪಿನ ಮುಂದಾಳುವಾಗಿ ಕೆಲಸನಡೆಸುತ್ತಿರುವಾಗ ಬಹಳ ಹೊತ್ತು ತೊಡಗಿಕೊಳ್ಳಬೇಕಾಗುತ್ತಿತ್ತು. ಕೆಲಸ ಸಮಯಕ್ಕೆ ಮುಗಿಯದೇ ಇದ್ದರೆ ಮೇಲಧಿಕಾರಿಗಳಿಂದ ಹೇಳಿಸಿಕೊಳ್ಳಬೇಕಾದ ಪ್ರಮೇಯವಿತ್ತು. ಪೂರೈಸಲಾಗದ ಒತ್ತಡದಲ್ಲಿ ಸಹಾಯಕ್ಕೆ ಬಂದವಳು ಸಹೋದ್ಯೋಗಿ ಸುಲತಾ. ತನ್ನ ಕಾರ್ಯಬಾಹುಳ್ಯಗಳನ್ನರಿತು ಪ್ರತೀ ಹಂತದಲ್ಲೂ ತನಗೆ ನೆರವಾಗುತ್ತಿದ್ದಳು. ಅದ್ಯಾಕೋ ಅರಿಯೆ ಆಕೆಯನ್ನು ಕಂಡರೆ ಏಕೋ ಇಷ್ಟವೆನಿಸುತ್ತಿತ್ತು; ಆಕೆಗೂ ಅದೇ ಅನಿಸಿಕೆ ಇತ್ತು ಎಂಬುದು ಆಮೇಲೆ ತಿಳಿದುಬಂದ ವಿಷಯ. ಆಡಲಾಗದೇ ಉಳಿದ ಮಾತು ಒಂದುದಿನ ಆಡಿಯೇಹೋಯ್ತು; ಪರಸ್ಪರ ಇಷ್ಟಪಡುವುದಾಗಿ ತಾವು ಹೇಳಿಕೊಂಡೆವು. ನಂತರದ ದಿನಗಳಲ್ಲಿ ಹತ್ತಿರಹತ್ತಿರವಾಗುತ್ತಾ ನಡೆದದ್ದೇ ಅದೆಲ್ಲಾ....ಇಲ್ಲಿ ಬೇಡಬಿಡಿ. ಆ ಹಂತದಲ್ಲಿ ಅಮ್ಮನನ್ನೂ ಕೇಳದೇ ಮದುವೆಯಾಗಿಬಿಟ್ಟೆ. ಗೊತ್ತಾದಾಗ ಅಮ್ಮ ಅತ್ತಳು. ಆದರೂ ಮಗನನ್ನು ಕಡೆಗಣಿಸಲೊಲ್ಲಳು.

ಅಣ್ಣ ಅರ್ಚಕನಾಗಿ-ಪುರೋಹಿತನಾಗಿ ಕಷ್ಟಾರ್ಜಿತದಲ್ಲಿ ಬದುಕು ಸಾಗಿಸುತ್ತಾ ಅಮ್ಮನನ್ನೂ-ಅಕ್ಕನನ್ನೂ ತನ್ನ ಕುಟುಂಬವನ್ನೂ ಸಲಹುತ್ತಿದ್ದ. ಅಣ್ಣ-ಅಮ್ಮ ಕಷ್ಟದಲ್ಲೇ ಅಂತೂ ಅಕ್ಕನನ್ನು ಮದುವೆಮಾಡಿದರು. ಅಕ್ಕ ಮದುವೆಯಾಗಿ ಒಳ್ಳೆಯ ಮನೆಯನ್ನು ಸೇರಿದ್ದು ಅಮ್ಮನಿಗೆ ಬಹುಪಾಲಿನ ಭಾರವನ್ನು ಕಳೆದುಕೊಂಡ ಹಾಗಿತ್ತು. ಅಕ್ಕನ ಮದುವೆಗೆ ಸಹಾಯಮಾಡಲು ಮುಂದಾದಾಗ ಪೈಸೆಯನ್ನೂ ಬಿಚ್ಚದಂತೇ ಸುಲತಾ ತಡೆದಿದ್ದಳು. ಅಣ್ಣ ಹಣಕಾಸಿನ ಬಗ್ಗೆ ಎಂದೂ ನನ್ನಲ್ಲಿ ಕೈ ಒಡ್ಡಲಿಲ್ಲ. ಜೀವನಪೂರ್ತಿ ನೊಂದ ಅಮ್ಮ ಕೆಲದಿನ ’ಜಸ್ಟ್ ಫಾರ್ ಏ ಚೇಂಜ್’ ಗಾಗಿ ತಮ್ಮ ಜೊತೆಗಿರಲಿ ಎಂದು ಯಾಕೋ ಅನ್ನಿಸಿತು. ಒಮ್ಮೆ ಅಮ್ಮನಿಗೂ-ಅಣ್ಣನಿಗೂ ವಿಷಯ ತಿಳಿಸಿದೆ. ಅಮ್ಮ ಬೆಂಗಳೂರಿಗೆ ಒತ್ತಾಯದಿಂದ ಬಂದಿಳಿದಳು. ಬಸ್ಸಿನಿಂದಿಳಿದ ಅಮ್ಮನನ್ನೂ ಅಣ್ಣನನ್ನೂ ಕಾರಿನಲ್ಲಿ ಕೂರಿಸಿಕೊಂಡಾಗ ಅವರಿಗಾದ ಆನಂದ ಹೇಳತೀರದು! ಬುರ್ರನೆ ಹೊರಟು ಮನೆಸೇರಿಕೊಂಡೆವು. ಅಮ್ಮ-ಅಣ್ಣ ವಿಶಾಲವಾದ ತನ್ನ ಮನೆಯನ್ನು ನೋಡಿದರು. ಅವರಿಗೆ ಸುಲತಾಳನ್ನು ಪರಿಚಯಿಸಿದೆ. ಅಮ್ಮ-ಅಣ್ಣ ಬಂದಿದ್ದು ಸುಲತಾಳಿಗೆ ಹಿಡಿಸಿದ ಹಾಗೆ ಕಾಣಲಿಲ್ಲ; ತೋರಿಕೆಗೆ ನಕ್ಕಹಾಗಿತ್ತು. ಅಣ್ಣ ಒಂದೇ ದಿನ ತಮ್ಮ ಮನೆಯಲ್ಲಿದ್ದು ಮಾರನೇ ದಿನ ಊರಿಗೆ ಪಯಣಿಸಿಬಿಟ್ಟ. ಅಮ್ಮ ಇಲ್ಲೇ ಇದ್ದರು. ಮನೆಯೆಲ್ಲಾ ಓಡಾಡುತ್ತಿದ್ದ ಅಮ್ಮನನ್ನು ಕಂಡರೆ ಕ್ರಮೇಣ ನಾಗಿಣಿಯಂತಾಗುತ್ತಿದ್ದವಳು ಸುಲತಾ. ಸ್ನಾನ, ಶುಚಿತ್ವ, ಮಡಿ, ಕೊಳೆ-ಮುಸುರೆ ಎಲ್ಲದರಲ್ಲೂ ಅಮ್ಮನಿಗೆ ಅವಳ ಅದೇ ರಿವಾಜು. ಊರಿಂದ ಬರುವಾಗ ಚೀಲದಲ್ಲಿ ಅದೇನೋ ಒಂದು ಮಡಿಗಂಟನ್ನು ತಂದಿದ್ದಳು. ಎರಡು ಮಣ್ಣಿನ ಬೋಗುಣಿಗಳನ್ನೂ ಒಡೆಯದಂತೇ ಬಟ್ಟೆಗಳಲ್ಲಿ ಸುತ್ತಿಕೊಂಡು ಜೋಪಾನವಾಗಿ ತಂದಿದ್ದಳು. "ಮಗಾ ಈ ಬೋಗುಣಿಗಳನ್ನು ತಂದಿದೀನಿ ಕಣೋ, ಮಾಡಿದ ಆಸೆಗಳೂ ರುಚಿಕಟ್ಟಾಗಿರುತ್ತವೆ, ಆರೋಗ್ಯಕ್ಕೂ ಒಳ್ಳೇದು, ಬಳಸಲು ಹೇಳು" ಎಂದು ಅಮ್ಮ ಅವುಗಳನ್ನು ಕೈಗೆತ್ತಿಕೊಟ್ಟಾಗ ಮನೆತುಂಬಾ ಟಪ್ಪರ್ ವೇರ್ ಪಾತ್ರೆಗಳನ್ನೂ ಬಾಟಲುಗಳನ್ನೂ ಹೊಂದಿರುವ ಸುಲತಾ ಇದನ್ನು ಸ್ವೀಕರಿಸುತ್ತಾಳೆ ಎಂಬ ಭರವಸೆಯಿರಲಿಲ್ಲ. ಅಂತೂ ಆ ದಿನ ಅಮ್ಮ ಸುಸ್ತಾಗಿದ್ದರೋ ಏನೋ ಮಲಗಿ ನಿದ್ದೆಹೋದರು ಎಂದುಕೊಂಡೆ. ತಾವಿಬ್ಬರೂ ತಮ್ಮ ಕೋಣೆಗೆ ಸೇರಿಕೊಂಡೆವು. ಅಮ್ಮನಿಗೆ ಗೆಸ್ಟ್ ರೂಮಿನಲ್ಲಿ ಹಾಸಿಗೆ ತೋರಿಸಿದೆ. 

ಮಾರನೇ ಬೆಳಿಗ್ಗೆ ಎದ್ದು ಲಿವಿಂಗ್ ರೂಮಿಗೆ ಬಂದರೆ ಅಮ್ಮ ಬೋಗುಣಿಗಳನ್ನು ಇಟ್ಟುಕೊಂಡು ನೀವುತ್ತಿದ್ದಳು. ಹಿಂದೆಯೇ ಎದ್ದುಬಂದ ಸುಲತಾ ಅವುಗಳನ್ನು ನೋಡಿದ್ದೇ ನೋಡಿದ್ದು "ಥೂ ಹಳ್ಳೀ ಗುಗ್ಗುಗಳು ಉಪಯೋಗಿಸುವ ಪಾತ್ರೆಗಳು ನಮಗೇಕೆ? ಎಲ್ಲಾದರೂ ಬಿಸಾಕಿ" ಎಂದುಬಿಟ್ಟಳು. ಅಮ್ಮನ ಮುಖದಲ್ಲಿ ಕಾಣಿಸಿದ ನೋವಿನ ಛಾಯೆಯನ್ನು ಅಕ್ಷರಗಳಲ್ಲಿ ಹೇಗೆ ಹೇಳಲಿ? ಬಚ್ಚಲುಮನೆಯಲ್ಲಿ ನಲ್ಲಿಯನ್ನು ಬಿಗಿಯಾಗಿ ಕಟ್ಟಿದ್ದಕ್ಕೆ ವಾಚಾಮಗೋಚರವಾಗಿ ಅಮ್ಮನನ್ನು ಸುಲತಾ ಬೈದುಕೊಂಡಿದ್ದು ಕೇಳಿಸಿತ್ತು. ತುತ್ತು ಕೊಟ್ಟವಳ ಮತ್ತು ಮುತ್ತುಕೊಟ್ಟವಳ ನಡುವೆ ಸಿಕ್ಕ ತನ್ನ ಸ್ಥಿತಿ ಅಡಕತ್ತರಿಯಲ್ಲಿ ಸಿಕ್ಕ ಅಡಕೆಯಂತೇ ಆಗಿತ್ತು. ನಿತ್ಯ ಸ್ನಾನಾನಂತರ ಅಮ್ಮ ಮಡಿಯುಟ್ಟು, ಮಡಿಗಂಟನ್ನು ಬಿಚ್ಚಿ ಅದೇನೋ ಪುಸ್ತಕಗಳನ್ನು ಓದುತ್ತಿದ್ದಳು. ದೇವರ ನಾಮಗಳನ್ನು ಸಣ್ಣಗೆ ಗುನುಗುತ್ತಿದ್ದಳು-ದೊಡ್ಡದಾಗಿ ರಾಗವಾಗಿ ಹಾಡಲು ಪರವಾನಗಿ ದೊರೆಯದೆಂಬ ಅನಿಸಿಕೆ ಅಮ್ಮನಿಗಿದ್ದಿರಬೇಕು. ಹಾಗಂತ ದೇವರಕೋಣೆ ಎಂದೇನೂ ಪ್ರತ್ಯೇಕ ಇರಲಿಲ್ಲ, ಇರುವ ಕೋಣೆಯಲ್ಲೇ ಒಂದು ಕಡೆ ಕೂತು ಆ ಕಾರ್ಯ ನಡೆಸುತ್ತಿದ್ದಳು. ಒಂದೆರಡು ದಿನ ಸುಲತಾ ಈ ಕೆಲಸದಲ್ಲಿದ್ದ ಅಮ್ಮನನ್ನು ಕೆಂಗಣ್ಣಿನಿಂದಲೇ ಕಂಡಳು. ದಿನಗಳೆಯುತ್ತಾ "ವಾಸನೆಬೀರುವ ಮಡಿಗಂಟು, ಮಡಿಗಂಟಂತೆ ಮಡಿಗಂಟು, ಎತ್ತಿ ಎಲ್ಲಾದರೂ ಎಸೀತೀನಿ ಗಬ್ಬುನಾತ" ಎಂದೆಲ್ಲಾ ರಂಪಮಾಡಿದಳು. ಅಮ್ಮನ ಕಣ್ಣುಗಳಲ್ಲಿ ನೀರನ್ನು ಕಂಡೆ; ಕಂಡೂ ಕಂಡೂ ಅಸಹಾಯಕನಾದೆ. ಮಾತಾಡಿದರೆ ಸುಲತಾ ತನ್ನನ್ನೇ ಬಿಟ್ಟುಹೋಗುವಳೆಂಬ ಹೆದರಿಕೆ, ಆಡದಿದ್ದರೆ ಅಮ್ಮನಿಗೆ ಹೇಗನಿಸಿರಬೇಡ ಎಂಬ ಆತಂಕ. ವಾಸ್ತವವಾಗಿ ಮಡಿಗಂಟು ಶ್ರೀಗಂಧ-ಧೂಪ-ಗುಗ್ಗುಳಗಳ ಪರಿಮಳವನ್ನು ಬೀರುತ್ತಿತ್ತು, ಸ್ವಚ್ಛ-ಶುಭ್ರ ರೇಷ್ಮೆಬಟ್ಟೆಯದಾಗಿತ್ತು, ಆದರೂ ಸುಲತಾಳ ಮೂಗಿಗೆ ಮಾತ್ರ ಇಲ್ಲದ ವಾಸನೆ ಬಡಿಯುತ್ತಿತ್ತು! 

ವಾರದಲ್ಲೇ ಅಮ್ಮ ಸಾವರಿಸಿಕೊಂಡ ಗಾಯಾಳುವಿನಂತೇ ಹೊರಟುನಿಂತಳು. ಬೇಡಾ ಎಂದರೂ ಕೇಳಲೇ ಇಲ್ಲ."ಒಮ್ಮೆ  ಹೀಗೆ ಬಾ ಮಗಾ" ಎಂದು ಕರೆದು ಅಪ್ಪಿಕೊಂಡು ತನ್ನಗಂಟಿನಲ್ಲಿದ್ದ ಚಿಲ್ಲರೆ ನಾಣ್ಯ-ನೋಟುಗಳನ್ನೆಲ್ಲಾ ಕೈಗೆ ಹಾಕಿ "ಒಳ್ಳೇದಾಗಿರಿ ಕಂದಾ, ಮಕ್ಕಳು ಮರಿಗಳು ಜನಿಸಿ ಮನೆತುಂಬಿ ನೂರ್ಕಾಲ ಸುಖವಾಗಿರಿ" ಎಂದು ಮನದುಂಬಿ ಹರಸಿ ಕಂಬನಿಗರೆದಳು. ಅಷ್ಟಕ್ಕೂ ಅಮ್ಮನ ಮಡಿಗಂಟಿನಲ್ಲಿದ್ದ ಪುಸ್ತಕಗಳನ್ನು ತಾನು ನೋಡಿರಲಿಲ್ಲ; ನೋಡಬೇಕು ಎನ್ನಿಸಲೂ ಇಲ್ಲ. ಅದೇನೋ ಆ ಹಳೇ ಕಾಲದ್ದು, ಸಾಫ್ಟ್ ವೇರ್ ನವರಾದ ತಮಗೆಲ್ಲಾ ಅದೇನು ಪ್ರಯೋಜನಕ್ಕೆ ಬಂದೀತು ಎಂಬ ಭಾವನೆ ಮನದಲ್ಲಿತ್ತು. ಅಮ್ಮನನ್ನು ಅಷ್ಟು ಶೀಘ್ರ ಊರಿಗೆ ಕಳುಹಿಸಿಕೊಡುವ ಮನಸ್ಸಿರಲಿಲ್ಲ. ಆದರೆ ಅಮ್ಮ ನಿಲ್ಲಬೇಕಲ್ಲಾ? ಹೊರಟುನಿಂತ ಅಮ್ಮನನ್ನು ತಾನೇ ಹೋಗಿ ಊರಿಗೆ ಕಳುಹಿಸಿ ಅದೇ ದಿನ ರಾತ್ರಿ ಮರಳಿ ಬಂದೆ. ಹೃದಯ ಭಾರವಾಗಿತ್ತು, ಮಾತು ಬಾರದಾಗಿತ್ತು. ಮರಳಿದ ತನ್ನನ್ನು ಸುಲತಾ ಬಾಗಿಲಲ್ಲೇ ತಡೆದಳು " ಹಲೋ ಇನ್ಮೇಲೆ ನಿಮ್ಮಮ್ಮನೋ ಅಣ್ಣನೋ ಈ ಕಡೆ ತಲೆಹಾಕಿದ್ರೆ ನಾನಂತೂ ಒಂದು ದಿನ ಇರಲಾರೆ. ನಿಂಗೆ ಬೇಕಾದ್ರೆ ನಂಜೊತೆ ಇರು ಇಲ್ಲವಾದ್ರೆ ಡೈವೋರ್ಸ್ ತಗೊಳ್ಳೋಣ" ಎಂದುಬಿಟ್ಟಳು.

ಅಮ್ಮನ ನೆನಪಿನಲ್ಲಿ ಮುಸುಕು ಮುಚ್ಚಿ ಮಲಗಿದಲ್ಲೇ ಅತ್ತೆ; ತಲೆಕೆಳಗಿನ ದಿಂಬು ನೆನೆದಿದ್ದು ನನಗೆಮಾತ್ರ ತಿಳಿದಿತ್ತು, ಬಿಸಿಯಾದ ತಲೆಯ ಆ ಕಾವಿಗೆ ಒದ್ದೆಯಾದ ದಿಂಬಿನ ಆ ಭಾಗ ಮತ್ತೆ ಒಣಗಿಹೋಗಿತ್ತು. ಮಕ್ಕಳನ್ನು ಹೆತ್ತು ಸುಖವಾಗಿರಿ ಎಂದು ಹರಸಿದ ತಾಯಿಯೇ ಕಣ್ಣೆದುರು ಸದಾ ಕಾಣುತ್ತಿದ್ದಳು. ಯಾರಲ್ಲಿಯೂ ಹೇಳಿಕೊಳ್ಳಲು ತನಗೆ ಯಾರಿದ್ದಾರೆ? ಬಚ್ಚಲುಮನೆಯಲ್ಲಿ, ಕಕ್ಕಸು ಕೋಣೆಯಲ್ಲಿ ನೆನಪಿಸಿಕೊಂಡು ಅಳುತ್ತಿದ್ದೆ, ಹೊರಗೆ ಅತ್ತರೆ ಆಕೆ ನೋಡಿದರೆ ಎಂಬ ಭಯ ಕಾಡುತ್ತಿತ್ತು. ಯಾಕೋ ಮನಸ್ಸು ಬಹಳ ಉದ್ವಿಗ್ನ ಗೊಂಡಿತ್ತು. ಅಮ್ಮ ಬಂದುಹೋದಮೇಲೆ ಸುಲತಾ ಬದಲಾಗಿಹೋಗಿದ್ದಳು. ಸರಿಯಾಗಿ ಮಾತನಾಡುತ್ತಿರಲಿಲ್ಲ,  ಬೇಕು-ಬೇಡಗಳಲ್ಲಿ ಆಸಕ್ತಿ ಕಮ್ಮಿಯಾಗಿತ್ತು. ಮನೆಗೆ ಬರ-ಹೋಗುವ ಸಮಯವೂ ಬದಲಾಗತೊಡಗಿತ್ತು. ಆಡಳಿತ ಮಂಡಳಿಗೆ ಹೇಳಿ ಬೇರೇ ಗುಂಪಿಗೆ ಸೇರಿಕೊಂಡಳು. ಅಲ್ಲಿ ಅದೇನು ನಡೆಯಿತೋ ತಿಳಿಯದು. ರಾಹುಲ್ ಎಂಬ ಆ ಗುಂಪಿನಲ್ಲಿದ್ದೊಬ್ಬಾತ ಸಲುಗೆಯಿಂದಿರುವುದು ಕಾಣಿಸಿತು. ಕೇಳುವ-ಹೇಳುವ ಕಥೆಯೇ ಇಲ್ಲ. ಕೇಳಿದರೆ ಆ ಕ್ಷಣದಲ್ಲೇ ಡೈವೋರ್ಸ್, ಕೇಳದಿದ್ದರೆ ಏನಾಗಬಹುದೆಂದು ಊಹಿಸಲೂ ಆಗಲಿಲ್ಲ. 

ನೊಂದಮನಸ್ಸಿಗೆ ಸಾಂತ್ವನ ಹುಡುಕುತ್ತ, ಶಾಂತಿ ಹುಡುಕುತ್ತಿದ್ದಾಗ ಯಾರೋ ಹೇಳಿದರು-ಅಮೇರಿಕಾದಿಂದ ಯಾರೋ ಬಂದಿದ್ದಾನಂತೆ, ಅವನ ಉಪನ್ಯಾಸಗಳು ತುಂಬಾ ಪರಿಣಾಮಕಾರಿಯಂತೆ. ಜೀವನದ ಜಿಗುಪ್ಸೆಯನ್ನು ಕಳೆಯಲು ಅವು ಸಹಕಾರಿಯಂತೆ ಎಂದುಅ. ಆನ್ ಲೈನ್ ನಲ್ಲಿ ಮಾಹಿತಿಪಡೆದು ಟಿಕೆಟ್ ಖರೀದಿಸಿದೆ. ಉಪನ್ಯಾಸಕ್ಕೂ ಹೋಗಿಬಂದೆ. ಉಪನ್ಯಾಸ ಆಫ್ ಕೋರ್ಸ್ ಆಂಗ್ಲಭಾಷೆಯಲ್ಲಿ ನಡೆಯಿತು. ರಾಬಿನ್ ಮ್ಯಾಥ್ಯೂ ಎಂಬಾತ ಉಪನ್ಯಾಸ ನೀಡಿದ-ಆತ ಜಗತ್ಪ್ರಸಿದ್ಧ, ಆತನ  ಬಗ್ಗೆ ನಿಮಗೂ ತಿಳಿದಿರಲಿಕ್ಕೆ ಸಾಕು. ರಾಬಿನ್ ಮ್ಯಾಥ್ಯೂಗೆ ಭಾರತವೆಂದರೆ ಬಹಳ ಅಚ್ಚುಮೆಚ್ಚಂತೆ. ಆತ ಇಲ್ಲಿನ ರಾಮಾಯಣ-ಮಹಾಭಾರತ ಮತ್ತು ವೇದ-ಉಪನಿಷತ್ತುಗಳು ಅಲ್ಲದೇ ಭಗವದ್ಗೀತೆಯನ್ನೂ ಚೆನ್ನಾಗಿ ಓದಿ ತಿಳಿದುಕೊಂಡಿದ್ದಾನಂತೆ. "ದೆರ್ ಆರ್ ಸಚ್ ಇನ್ ವ್ಯಾಲ್ಯೂಯೇಬಲ್ ಡೈಮಂಡ್ಸ್ ಇನ್ ಇಂಡಿಯಾ" ಅಂದ. ಉಪನ್ಯಾಸಕ್ಕೆ ಸುಮಾರು ೫೦೦ ಜನ ಸೇರಿದ್ದರು. ಎಲ್ಲರಿಗೂ ಒಂದಲ್ಲಾ ಒಂದು ಸಮಸ್ಯೆಯೇ. ಎಲ್ಲರಿಗೂ ಸಾಂಸಾರಿಕ ಅಥವಾ ವ್ಯಾವಹಾರಿಕ ಸಮಸ್ಯೆಗಳೇ. ಕೃಷ್ಣನನ್ನು ಮ್ಯಾನೇಜ್ ಮೆಂಟ್ ಗುರು ಎಂದೂ ಗೀತೆ ಜಗತ್ತಿನಲ್ಲಿಯೇ ತಾನು ನೋಡಿದ ಅತಿಶ್ರೇಷ್ಠ ಗ್ರಂಥವೆಂದೂ ರಾಬಿನ್ ಮ್ಯಾಥ್ಯೂ ಹೇಳಿದ. ಉಪನ್ಯಾಸ ಮುಗಿದು ಹೊರಡುವಾಗ ಆತ ಎಲ್ಲರಿಗೂ ಒಂದು ಪುಸ್ತಕ ಶಿಫಾರಸ್ಸುಮಾಡಿದ. ಅದು ಅದೇ ಭಗವದ್ಗೀತೆ. "ಯು ಕ್ಯಾನ್ ಗೆಟ್ ಇಟ್ ಇನ್ ಯುವರ್ ಓನ್ ಲ್ಯಾಂಗ್ವೇಜ್ ಐ ಹೋಪ್, ಆಲ್ ದಿ ಬೆಸ್ಟ್" ಎಂದು ಎಲ್ಲರನ್ನೂ ಬೀಳ್ಕೊಟ್ಟ.

ನಿಜಕ್ಕೂ ಆತ ಹೇಳಿದ್ದು ಸರಿಯೇ ಎಂಬುದು ಗೀತೆಯನ್ನು ಅಂದಿನಿಂದ ಓದಲು ಆರಂಭಿಸಿದ ತನಗೆ ವೇದ್ಯವಾಯ್ತು. ನೋವಿನಲ್ಲೂ ನಲಿವಿನಲ್ಲೂ, ಸುಖ-ದುಃಖಗಳೆರಡರಲ್ಲೂ ಮನಸ್ಸನ್ನು ನಿರಾಳವಾಗಿ ಇರಿಸಿಕೊಂಡು ನಿರುಮ್ಮಳವಾಗಿರುವುದು ಹೇಗೆ ಎಂಬುದನ್ನು ತಿಳಿಯಲು ಗೀತೆಯನ್ನೋದಬೇಕು. ಗೀತೆ ಒಂದು ಧರ್ಮಗ್ರಂಥವಲ್ಲ, ಅದು ಮಾನವ ಜೀವನಧರ್ಮವನ್ನು ತಿಳಿಸುತ್ತದೆ. ಗೀತೆಯನ್ನು ಓದುತ್ತಾ ಓದುತ್ತಾ ಗೀತೆಯಲ್ಲಿ ಪಳಗಿಬಿಟ್ಟೆ. ಇಡೀ ಗೀತೆ ಕಂಠಪಾಠವಾಗಿ ಗೀತೆಯ ಕುರಿತಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದೆ. ವರ್ಷವೊಂದರ ಹಿಂದೆ ಡೈವೋರ್ಸ ನೋಟೀಸ್ ಕೊಟ್ಟ ಸುಲತಾ ಇನ್ನೂ ಇತ್ಯರ್ಥವಾಗದ್ದರಿಂದ ಬೇರೇ ಮನೆಯಲ್ಲಿದ್ದಳು. ಗೀತೆಯ ಕುರಿತಾದ ಪ್ರವಚನ ಕಾರ್ಯಕ್ರಮದಲ್ಲಿ ಪ್ರವಚನ ನಡೆಸುತ್ತಿದ್ದಾಗ ಕಣ್ಣು ಅಕಸ್ಮಾತ್ ಎದುರಿಗೆ ಕೂತ ವ್ಯಕ್ತಿಯಮೇಲೆ ಹರಿಯಿತು: ಹೌದು ಅವಳೇ ಸುಲತಾ. ಮನಸ್ಸಿಗೆ ನೆಮ್ಮದಿ ಕಳೆದುಕೊಂಡು ಹಾಗೆ ಬಂದಿದ್ದಾಳೆ ಎಂದು ಬೇರೇ ಹೇಳಬೇಕೇ? ಪ್ರವಚನ ಮುಗಿದು ಹೊರಟಾಗ "ರೀ" ಎಂಬ ಕರೆ! ಸುಲತಾ ಬೆಂಬತ್ತಿ ಬಂದಳು. ತಾನಿನ್ನೆಂದೂ ಹಾಗೆ ನಡೆದುಕೊಳ್ಳುವುದಿಲ್ಲವೆಂತಲೂ, ಕೆಲಸ ಒತ್ತಡಗಳು ಮತ್ತು ಮಿಥ್ಯಾ ಲೋಕದ ಬಡಿವಾರದ ಜೀವನದಲ್ಲಿ ತೊಡಗಿಕೊಂಡ ತನಗೆ ಈಗ ನಿಜದ ಅರಿವಾಗಿದೆಯೆಂದೂ ಹೇಳಿದಳು.    

ಅಣ್ಣ ಮನೆಗೆ ಫೋನು ಹಾಕಿಸಿ ವರ್ಷಗಳೇ ಕಳೆದವು. ತನ್ನ ಸ್ವಂತ ದುಡಿಮೆಯಲ್ಲೇ ಅಣ್ಣ ಎಲ್ಲಾ ಖರ್ಚನ್ನೂ ನಿಭಾಯಿಸುತ್ತಾನೆ; ಹಣ ಕಳುಹಿಸಲೇರ್ ಎಂದರೆ ಬೇಡವೆಂಬ ಅಣ್ಣಂದಿರೂ ಇರುತ್ತಾರ್ಯೇ? ಇರುತ್ತಾರೆ ಎಂಬುದು ತನ್ನಣ್ಣನನ್ನು ನೋಡಿದರೆ ತಿಳಿಯುತ್ತದೆ! ಅಣ್ಣ ಕರೆಮಾಡಿದ್ದ. ವರ್ಷದ ಹಿಂದೆ ಅಮ್ಮ ಭಗವಂತನ ಪಾದ ಸೇರ್ರಿಕೊಂಡು ಈಗ ವರ್ಷಾಂತಕ ಕಾರ್ಯ ಬಂದುಬಿಟ್ಟಿದೆ ಎಂಬುದು ನೆನಪಿಗೆ ಬಂದಿದ್ದೇ ಆಗ. ಬೆಳಗಾದರೆ ನಗರದ ಕೆಲಸಗಳ ಒತ್ತಡದಲ್ಲಿ ತಮ್ಮನ್ನೇ ಮರೆತಿರುವಾಗ ಇನ್ನೆಲ್ಲಿಯ ಅಪ್ಪ-ಅಮ್ಮನ ನೆನಪು ಅಲ್ಲವೇ? ಅಮ್ಮ ತೀರಿಕೊಂಡಾಗ ತಾನೊಬ್ಬನೇ ಹೋಗಿದ್ದೆ-ಆಗ ಸುಲತಾ ದೂರವಾಗಿದ್ದಳು. ಅಣ್ಣ-ತಮ್ಮ ಪರಸ್ಪರ ಸಂತೈಸಿಕೊಂಡೆವಾದರೂ ಅಮ್ಮನ ಮಡಿಲಿನ ಆ ಪ್ರೀತಿ ಇನ್ನೆಲ್ಲಿ ಸಿಕ್ಕೀತು, ಇನ್ನೆಲ್ಲಿ ದಕ್ಕೀತು? ಈ ಸರ್ತಿ ತಮ್ಮ ದುಃಖದಲ್ಲಿ ಇನ್ನೊಬ್ಬಳು ಸಹಭಾಗಿ-ಅವಳೇ ಅರ್ಧಾಂಗಿ ಸುಲತಾ. ಜೊತೆಗೆ ಸಮಾಧಾನಿಸಿಕೊಳ್ಳಲು ಭಗವದ್ಗೀತೆಯ ತತ್ವಗಳು, ಕಿರುಹೊತ್ತಗೆಗಳು.

ಅಮ್ಮ ತೀರಿಕೊಂಡ ಗಡಿಬಿಡಿಯಲ್ಲಿ ಆಗ ಅಮ್ಮನ ಮಡಿಗಂಟನ್ನು ಬಿಚ್ಚಿ ನೋಡಿರಲಿಲ್ಲ. ಅಣ್ಣ ಅದನ್ನು ಎಲ್ಲೋ ಹಾಗೇ ಬಿಟ್ಟಿರಬೇಕೆಂದುಕೊಂಡಿದ್ದೆ. ಇಲ್ಲಾ ಇಲ್ಲಾ...ಅದು ಇನ್ನೂ ಮನೆಯಲ್ಲೇ ಇದೆ! ಅದನ್ನು ಅಣ್ಣ ಅಮ್ಮನಂತೇ ನಿತ್ಯವೂ ಬಳಸುವುದು ಈಗಿನ ವಾಡಿಕೆಯಂತೆ. ಅಂದಹಾಗೇ ಆ ಮಡಿಗಂಟನ್ನು ಕುತೂಹಲದಿಂದ ಬಿಚ್ಚಿದೆ. ಅದರಲ್ಲಿ ಪ್ರಥಮವಾಗಿ ಕಂಡ ಪುಸ್ತಕದ ಹೆಸರು "ಭಗವದ್ಗೀತೆ." ಅದರೊಟ್ಟಿಗೆ ಭರ್ತೃಹರಿಯ ನೀತಿ ಶತಕಗಳು, ರಾಮಾಯಣ ಮತ್ತು ಮಹಾಭಾರತಗಳಿವೆ. ಭಗವದ್ಗೀತೆಯ ನಡುವೆ ಆಗ ಹೇಳಿದೆನಲ್ಲಾ ದಪ್ಪನೆಯ ಗುರ್ತಿನ ಕಾಗದವಿದೆ. ಮತ್ತು ಅದರಮೇಲೆ ಹೀಗೆ ಬರೆದಿದೆ:

ಗಾರೆಗೋಡೆಯ ಚಿತ್ರ ಸಾಲು ಪರಿಷತ್ತಿನಲಿ
ಒಬ್ಬೊಬ್ಬರದೂ ಒಂದು ಜೀವ
ನನಗೆ ಎಡೆಯಿರಬಹುದು ಅವರಿರುವ ಸಾಲಿನಲಿ
ಮನವ ತುಂಬಿದ್ದುಂಟು ನಮ್ರಭಾವ

ಹಳ್ಳಿಮನೆಯ ಗೋಡೆಯಮೇಲಿರುವ ತಾನು ಗಮನಿಸುತ್ತಿರುವ ಆ ಚಿತ್ರಪಟದಲ್ಲಿರುವುದು ಅಮ್ಮನ ಭಾವಚಿತ್ರ. ಅಮ್ಮನ ಕಷ್ಟಕಾಲದಲ್ಲಿ ’ಗೀತೆ’ ಅಮ್ಮನಿಗೆ ಅಮ್ಮನಾದಳು, ಅಮ್ಮ ಹೊರಟುಹೋದಳು-ಗೀತೆಯನ್ನೇ ಅಮ್ಮನ ಜಾಗದಲ್ಲಿ ನಮ್ಮ ಹತ್ತಿರಬಿಟ್ಟು ಹೋದಳು. 
                                      --V.R.Bhat

Friday, December 14, 2012

ವಾನಪ್ರಸ್ಥ - ಹೀಗೊಂದು ಚಿಂತನೆ



      'ಊರು ಹೋಗು ಎನ್ನುತ್ತಿದೆ, ಕಾಡು ಬಾ ಎನ್ನುತ್ತಿದೆ' ಅನ್ನುವ ಮಾತನ್ನು ವಯಸ್ಸಾದವರು ಹೇಳುವುದನ್ನು ಕೇಳುತ್ತಿರುತ್ತೇವೆ. ಆದರೆ ಹೋಗು ಎಂದರೂ ಹೋಗಲೊಲ್ಲದವರೇ ಹೆಚ್ಚು. ಅಷ್ಟಕ್ಕೂ ಒಂದು ವೇಳೆ ಹೋಗಬೇಕೆಂದರೂ ಈಗ ಕಾಡಾದರೂ ಎಲ್ಲಿದೆ? ಇರುವ ಕಾಡುಗಳನ್ನೆಲ್ಲಾ ಮನುಷ್ಯನೇ ಆಕ್ರಮಿಸಿಕೊಂಡು ಕಾಡಿನ ಪ್ರಾಣಿಗಳಿಗೇ ಇರಲು ಜಾಗವಿಲ್ಲದಾಗಿದೆ. ವಿಧಿಯಿಲ್ಲದೆ ನಾಡಿಗೆ ಬರುತ್ತಿರುವ ಆ ಕಾಡುಪ್ರಾಣಿಗಳೂ ಈಗ ನಾಶದ ಅಂಚಿಗೆ ಬರುತ್ತಿವೆ. ಏಕೋ ಏನೋ ಇತ್ತೀಚೆಗೆ ನನ್ನ ಮನಸ್ಸು ವಾನಪ್ರಸ್ಥದ ಕುರಿತು ತಲೆ ಕೆಡಿಸಿಕೊಂಡಿದೆ. ಪ್ರಾಯಶಃ ವಯೋಸಹಜವಿರಬಹುದು. ನನ್ನ 6 ವರ್ಷದ ಮೊಮ್ಮಗಳೊಡನೆ ಆಟವಾಡುತ್ತಾ ನನ್ನಷ್ಟಕ್ಕೆ ನಾನೇ ಸ್ವಗತವೆಂಬಂತೆ ಮಾತನಾಡಿಕೊಳ್ಳುತ್ತಾ, 'ನನಗೆ ಸಾಕಾಗಿದೆ ಕಣಮ್ಮಾ, ವಾನಪ್ರಸ್ಥಕ್ಕೆ ಹೋಗಿಬಿಡ್ತೀನಿ' ಅಂದಿದ್ದೆ. ಪಾಪ, ಅವಳಿಗೆ ವಾನಪ್ರಸ್ಥ ಅಂದರೆ ಏನು ಅರ್ಥವಾದೀತು? ಅವಳು ಆಟ ಆಡುವುದನ್ನು ನಿಲ್ಲಿಸಿ, "ತಾತಾ, ಪ್ಲೀಸ್, ವಾನಾಸ್ಪತ್ರೆಗೆ ಹೋಗಬೇಡ, ಪ್ಲೀಸ್, ಪ್ಲೀಸ್" ಎಂದು ಗೋಗರೆದಿದ್ದಳು. ವಾನಪ್ರಸ್ಥ ಅವಳ ಬಾಯಲ್ಲಿ ವಾನಾಸ್ಪತ್ರೆ ಆಗಿತ್ತು. 'ಹೂಂ, ಆಯಿತು, ಹೋಗಲ್ಲ' ಅಂದ ಮೇಲೆಯೇ ನಮ್ಮ ಆಟ ಮುಂದುವರೆದಿದ್ದು.   ವಾನಪ್ರಸ್ಥ(ವನಪ್ರಸ್ಥ)ವೆಂದರೆ ಕಾಡಿನೆಡೆಗೆ ತೆರಳುವುದು ಎಂಬ ಅರ್ಥವೂ ಇದೆ. ಕಾಡುಗಳು ನಾಶವಾಗಿರುವ, ಆಗುತ್ತಿರುವ ಇಂದಿನ ದಿನಗಳಲ್ಲಿ ಇದು ಅರ್ಥ ಕಳೆದುಕೊಂಡಿದೆ. ಮಾನವಸಹಜ ಆಸೆ, ಆಕಾಂಕ್ಷೆಗಳಿಗೆ ಕಡಿವಾಣ ಹಾಕಿಕೊಂಡು ಪ್ರಾಪಂಚಿಕತೆಯಿಂದ ಕ್ರಮೇಣ ದೂರ ಸರಿಯುವ, ಲೋಕಹಿತ ಬಯಸುವ ಎಡೆಗೆ ಕಾಲಿಡುವುದು ವಾನಪ್ರಸ್ಥದ ಆರಂಭಿಕ ನಡೆರಬಹುದು. ಗೃಹಸ್ಥರಿಗೆ ಈ ಕಾಲ ಕೌಟುಂಬಿಕ ಜವಾಬ್ದಾರಿಗಳನ್ನು ನಿರ್ವಹಿಸಿದ ನಂತರ ಬರುತ್ತದೆ. ಚತುರಾಶ್ರಮಗಳಲ್ಲಿ ಎರಡನೆಯದಾದ ಬ್ರಹ್ಮಚರ್ಯದ ನಂತರವೂ ನೇರವಾಗಿ ಈ ಆಶ್ರಮಕ್ಕೆ ಸಾಗಬಹುದಾಗಿದೆ, ಸಾಗಿದವರಿದ್ದಾರೆ. 
     ಮಾನವನ ಆಯಸ್ಸನ್ನು ಒಂದು ನೂರು ವರ್ಷಗಳು ಎಂದಿಟ್ಟುಕೊಂಡರೆ ಮೊದಲ 25 ವರ್ಷಗಳು ಬ್ರಹ್ಮಚರ್ಯ, ನಂತರದ 25 ವರ್ಷಗಳನ್ನು ಗೃಹಸ್ಥರಾಗಿ ಕಳೆದು, ನಂತರದ 51 ರಿಂದ 75 ವರ್ಷಗಳು ವಾನಪ್ರಸ್ಥದ ಕಾಲ. ಅದರ ನಂತರ ಸಂನ್ಯಾಸಾಶ್ರಮ. ಇರುವ ಬಂಧಗಳು, ಬಂಧನಗಳನ್ನು ಕಳೆದುಕೊಂಡು ಜೀವಿಸಲು ಅತಿ ಅಗತ್ಯವಾದಷ್ಟನ್ನು ಮಾತ್ರ ಹೊಂದಿ ಆಧ್ಯಾತ್ಮಿಕ ಸಾಧನೆಗೆ ತೊಡಗುವ ಕಾಲವೇ ವಾನಪ್ರಸ್ಥವೆನಿಸುವುದು. ಇದು ಪರಿವರ್ತನಾ ಕಾಲ. 
     ಗೃಹಸ್ಥನಿಗೆ ವಯಸ್ಸಾದ ನಂತರ ಅವನ ಚರ್ಮ ಸುಕ್ಕುಗಟ್ಟುತ್ತದೆ, ತಲೆಯ ಕೂದಲು ಬೆಳ್ಳಗಾಗುತ್ತದೆ ಅಥವ ಉದುರಿ ಬೋಳಾಗುತ್ತದೆ. ಮೊಮ್ಮಕ್ಕಳು ಜನಿಸಿರುತ್ತಾರೆ. ಆಗ ವಾನಪ್ರಸ್ಥಕ್ಕೆ ತೆರಳಲು ಸಮಯ ಪ್ರಶಸ್ತವಾಗಿರುತ್ತದೆ. ಕೌಟುಂಬಿಕ ಬಂಧನಗಳನ್ನು ಕಳಚಿಕೊಂಡು ಈ ಹಾದಿಯಲ್ಲಿ ಕ್ರಮಿಸುವ ಸಮಯದಲ್ಲಿ ಪತ್ನಿ ಬಯಸಿದರೆ ಅವನ ಜೊತೆಗೆ ಹೋಗಬಹುದು, ಆದರೆ ಸಹಚಾರಿಣಿಯಾಗಿ ಮತ್ತು ಸಹಸಾಧಕಿಯಾಗಿ ಮಾತ್ರ. ಹಾಗೆ ಹೊರಡುವಾಗ ಮನಸ್ಸು ಶಾಂತವಿರಬೇಕು. ಅತಿ ಕಡಿಮೆ ವಸ್ತ್ರಗಳನ್ನು ಧರಿಸುವುದು, ಕಾಡಿನಲ್ಲಿ ದೊರೆಯುವ ಸೊಪ್ಪು-ಸದೆಗಳು, ಗೆಡ್ಡೆ-ಗೆಣಸುಗಳನ್ನು  ಜೀವಾಧಾರಕ್ಕೆ ಸೇವಿಸುವುದು, ದೈಹಿಕ ಕಾಮನೆಗಳಿಂದ ದೂರವಿರುವುದು ಹಿಂದೆ ವಾನಪ್ರಸ್ಥಿಗಳು ಅನುಸರಿಸುತ್ತಿದ್ದ ಕ್ರಮವೆಂದು ಕೇಳಿದ್ದೇವೆ. ಪುಣ್ಯಕ್ಷೇತ್ರಗಳಿಗೆ ಪ್ರವಾಸವನ್ನೂ ಸಹ ಸಾಧನೆಯ ಅಂಗವಾಗಿ ಮಾಡುತ್ತಾರೆಂದು ಹೇಳುತ್ತಾರೆ. ಈಗಲೂ ಹಿಮಾಲಯದ ತಪ್ಪಲಿನಲ್ಲಿ ಇಂತಹವರು ಸಿಗಬಹುದು. ಆತ್ಮಾನುಸಂಧಾನ, ಆತ್ಮಚಿಂತನೆಗಳನ್ನು ನಡೆಸುತ್ತಾ ಕೊನೆಗೊಮ್ಮೆ ಅವರು ಸಂನ್ಯಾಸಿಯ ಅರ್ಹತೆ ಪಡೆಯುವರು. 
     ವಾನಪ್ರಸ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಕೆಲವು ನಿಬಂಧನೆಗಳೂ ಇವೆಯೆನ್ನುತ್ತಾರೆ. ಭೂಮಿಯನ್ನು ಉತ್ತಿ. ಬಿತ್ತಿ ಬೆಳೆದ ಧಾನ್ಯಗಳು, ಪೂರ್ಣ ಕಳಿಯದ ಹಣ್ಣುಗಳು ಮತ್ತು ಬೇಯಿಸಿದ ಪದಾರ್ಥಗಳನ್ನು ಅವರು ಸೇವಿಸಬಾರದೆನ್ನುತ್ತಾರೆ. ತಿನ್ನುವ ಪದಾರ್ಥಗಳನ್ನು ಸಂಗ್ರಹಿಸಿಡಬಾರದು. ಸಮಯ, ಸ್ಥಳ ಮತ್ತು ತನ್ನ ಶಕ್ತಿ ಅನುಸರಿಸಿ ಜೀವಾಧಾರಕ್ಕೆ ಅವಶ್ಯಕ ಸಂಗತಿಗಳನ್ನು ಮಾತ್ರ ಪಡೆಯಬೇಕು. ಯಾವ ಕಾರಣಕ್ಕೂ ಅಗತ್ಯಕ್ಕಿಂತ ಹೆಚ್ಚು ತೆಗೆದುಕೊಳ್ಳಬಾರದು. ಬಿಸಿಲಿನಲ್ಲಿ ಪೂರ್ಣವಾಗಿ ಮಾಗಿದ ಫಲಗಳನ್ನು ಮಾತ್ರ ಸೇವಿಸಬೇಕು. ಒಂದು ಗುಡಿಸಲು ನಿರ್ಮಿಸಿಕೊಂಡು ಅಲ್ಲಿ ಅಥವ ಬೆಟ್ಟದ ಗುಹೆಯಲ್ಲಿ ವಾಸವಿದ್ದು ಪವಿತ್ರಾಗ್ನಿಯನ್ನು ರಕ್ಷಿಸಬೇಕು. ಗಾಳಿ, ಬೆಂಕಿ, ಮಳೆ, ಬಿಸಿಲು, ಹಿಮ, ಇತ್ಯಾದಿಗಳನ್ನು ಸಹಿಸುವುದನ್ನು ರೂಢಿ ಮಾಡಿಕೊಳ್ಳಬೇಕು. ಇದಕ್ಕಾಗಿ ಸುಡುಬೇಸಿಗೆಯಲ್ಲಿ ಸುತ್ತಲೂ ಬೆಂಕಿ ಉರಿಸಿ ಮಧ್ಯದಲ್ಲಿ ಕುಳಿತು ಧ್ಯಾನ(ತಪಸ್ಸು) ಮಾಡಬೇಕು. ಮಳೆಗಾಲದಲ್ಲಿ ಸುರಿಯುವ ಮಳೆಯಲ್ಲಿ ಅದರ ಆರ್ಭಟವನ್ನು ಸಹಿಸಿ ಹೊರಗೆ ಇದ್ದು, ಚಳಿಗಾಲದಲ್ಲಿ ಕೊರೆಯುವ ಹೆಪ್ಪುಗಟ್ಟಿದ ನೀರಿನಲ್ಲಿ ಕತ್ತಿನವರೆಗೆ ನೀರಿನಲ್ಲಿ ಮುಳುಗಿದ್ದು ಧ್ಯಾನಸ್ಥರಾಗಬೇಕು. ಕೂದಲು, ಮೀಸೆ, ಉಗುರುಗಳನ್ನು ಕತ್ತರಿಸಬಾರದು, ಜಟೆಗಟ್ಟಿದ ಕೂದಲನ್ನು ತಲೆಯ ಮೇಲೆ ಎತ್ತಿಕಟ್ಟಬೇಕು. ಅಕಾಲಿಕವಾಗಿ ಮಲ, ಮೂತ್ರ ವಿಸರ್ಜಿಸಬಾರದು. ಮಲಿನವಾದ ಶರೀರದ ಶುದ್ಧತೆ ಬಗ್ಗೆ ಚಿಂತಿಸಬಾರದು. ದಿನಕ್ಕೆ 3 ಸಲ ಸ್ನಾನ ಮಾಡುವುದರಿಂದ ತೃಪ್ತನಾಗಬೇಕು. ನೆಲದ ಮೇಲೆ ಮಲಗಬೇಕು. ಒಂದು ಕುಡಿಯುವ ನೀರಿನ ಮಡಿಕೆ ಮತ್ತು ಒಂದು ದಂಡ ಹಿಡಿದಿರಬೇಕು. ವಾನಪ್ರಸ್ಥಿ 12 ವರ್ಷಗಳು ಅಥವ 8 ವರ್ಷಗಳು ಅಥವ 4 ವರ್ಷಗಳು ಅಥವ 2 ವರ್ಷಗಳು ಅಥವ ಕನಿಷ್ಠ 1 ವರ್ಷವಾದರೂ ಕಾಡಿನಲ್ಲಿ ವಾಸಿಸಬೇಕೆನ್ನುತ್ತಾರೆ. ಅತಿ ಸರಳವಾಗಿ ತೋರಿದರೂ ಕಠಿಣವಾದ ನಿಯಮಗಳಿಂದ ವಿಚಲಿತನಾಗಬಾರದು. ಸಾಮಯಿಕವಾಗಿ ಅಕ್ಕಿ ಅಥವ ಕಾಡಿನಲ್ಲಿ ದೊರೆತ ಧಾನ್ಯಗಳನ್ನು ಅರ್ಪಿಸಿ ಹೋಮ, ಹವನ, ಅಗ್ನಿಹೋತ್ರ ಮಾಡಬೇಕು. ಯಾವ ಕಾರಣಕ್ಕೂ ಪ್ರಾಣಿಬಲಿ ಕೊಡಬಾರದು.  
     ವಯಾಧಿಕ್ಯದಿಂದ ಅಥವ ಕಾಯಿಲೆಗಳಿಂದ ಅನುಷ್ಠಾನ ಕಷ್ಟವೆನಿಸಿದಾಗ ಆಹಾರ ಸೇವಿಸದೆ ಉಪವಾಸವಿರುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಅಂತಹ ಸಂದರ್ಭದಲ್ಲಿ ನಡುಗುವ ಶರೀರದ ಕಾರಣದಿಂದ ಅನುಷ್ಠಾನ ಮಾಡಲಾಗದವರು, ಶರೀರಧಾರಣೆ ಕಷ್ಟವಾದಾಗ ಅಗ್ನಿಯನ್ನು ಧ್ಯಾನದ ಮೂಲಕ ಹೃದಯಸ್ಥ ಮಾಡಿಕೊಂಡು ಅದರೊಳಗೆ ಪ್ರವೇಶಿಸಿ ಶರೀರ ತ್ಯಾಗ ಮಾಡುವರು. ಕೆಲವು ಸಂತ ವಾನಪ್ರಸ್ಥಿಗಳು ಕಠಿಣ ವ್ರತಗಳನ್ನು ಆಚರಿಸುತ್ತಾ ಸೊರಗಿ ಕೇವಲ ಚರ್ಮ ಮತ್ತು ಮೂಳೆಗಳ ಹಂದರದಂತೆ ತೋರುತ್ತಾರೆ. ಇಂತಹ ಕಠಿಣ ಮತ್ತು ದೀರ್ಘವಾದ ಸಾಧನೆ ಮಾಡಿ ಮೋಕ್ಷಕ್ಕೆ ಹಂಬಲಿಸುವ ಬದಲು, ಪ್ರಾಪಂಚಿಕ ಸಂಗತಿಗಳನ್ನು ಪಡೆಯಲು ಹಂಬಲಿಸುವವರು ದೊಡ್ಡ ಮೂರ್ಖರೇ ಸರಿ. ಅಸುರರು ದೀರ್ಘ ತಪಸ್ಸು ಮಾಡಿ ಪಡೆದರೆಂದು ಹೇಳಲಾಗುವ ಅಸುರೀ ಸಾಧನೆಗಳನ್ನು ಈ ಸಾಲಿಗೆ ಸೇರಿಸಬಹುದು. ತಾನು ಯಾವುದಕ್ಕಾಗಿ ಸಾಧನೆ ಮಾಡುತ್ತಿದ್ದಾನೋ ಅದರ ಫಲವನ್ನೂ ಬಯಸದ ಸ್ಥಿತಿ ತಲುಪಿದಾಗ, ಅಂದರೆ ಮನಸ್ಸಿನ ಹಿಡಿತದಿಂದ ಪೂರ್ಣವಾಗಿ ಹೊರಬಂದಾಗ ಸಂನ್ಯಾಸಾಶ್ರಮಕ್ಕೆ ಕಾಲಿಡಬಹುದಾಗಿದೆ. ವಾನಪ್ರಸ್ಥಿ ತನ್ನತನದ ಹಿರಿಮೆಯಿಂದ ಹೊರಬಂದು ವಿನೀತಭಾವ ಹೊಂದಲು ಇತರರ ಕರುಣೆಯಿಂದ, ದೀನ ರೀತಿಯಲ್ಲಿ ಪಡೆದ ಧಾನ್ಯದಿಂದ ಜೀವಿಸುತ್ತಾನೆ. ವಾನಪ್ರಸ್ಥದ ಕುರಿತ ಈ ಕೆಲವು ವಿವರಗಳನ್ನು ಶ್ರೀಮದ್ಭಾಗವತದಲ್ಲಿ ಇರುವ ಅಂಶಗಳನ್ನು ಆಧರಿಸಿ ಬರೆದಿರುವೆ.
     ವೇದದ ನಾಲ್ಕು ಅಂಗಗಳಾದ ಬ್ರಾಹ್ಮಣ, ಸಂಹಿತಾ, ಅರಣ್ಯಕ ಮತ್ತು ಉಪನಿಷತ್ತುಗಳಲ್ಲಿ ಅರಣ್ಯಕವು ವಾನಪ್ರಸ್ಥಕ್ಕೆ ಸಂಬಂಧಿಸಿದೆ. ವಾನಪ್ರಸ್ಥ ಮತ್ತು ಸಂನ್ಯಾಸಗಳು ಎರಡೂ ವೈರಾಗ್ಯ ಪ್ರಾಧಾನ್ಯ ಆಶ್ರಮಗಳು. ವಾನಪ್ರಸ್ಥಿ ಸಮಾಜದ ಸೇವೆ ಮಾಡುತ್ತಾ ಮುಕ್ತಿ ಹೊಂದುವ ಸಿದ್ಧತೆ ಮಾಡಿಕೊಳ್ಳಬೇಕು. ಧರ್ಮ, ಅರ್ಥ, ಕಾಮ, ಮೋಕ್ಷಗಳು ಬ್ರಹ್ಮಚರ್ಯ, ಗಾರ್ಹಸ್ಥ್ಯ, ವಾನಪ್ರಸ್ಥ, ಸಂನ್ಯಾಸಗಳಲ್ಲಿ ಹಾಸುಹೊಕ್ಕಾಗಿವೆ. ಸಂನ್ಯಾಸಿಯು ಬ್ರಹ್ಮಚಾರಿ, ಗೃಹಸ್ಥ ಅಥವ ವಾನಪ್ರಸ್ಥಿಯಿಂದ ಹೊರತಾದವನಲ್ಲ/ ಬೇರ್ಪಟ್ಟವನಲ್ಲ. ಬ್ರಹ್ಮಚರ್ಯವು ಬೀಜರೂಪವಾಗಿದ್ದು ಗೃಹಸ್ಥಾಶ್ರಮದ ವಾಸ್ತವಿಕ ಅನುಭವವಾಗಿ ಬೆಳೆಯುತ್ತದೆ ಮತ್ತು ಅದು ವಾನಪ್ರಸ್ಥದ ವೈರಾಗ್ಯವಾಗಿ ಮುಂದುವರೆಯುತ್ತದೆ. ಹಾಗೂ, ಅದು ಮುಂದುವರೆದು ಸಂನ್ಯಾಸದ ಸಾರವಾಗಿ ಫಲಿತಗೊಳ್ಳುತ್ತದೆ.
     ಸನಾತನ ಧರ್ಮದ ಮಹತ್ವ ಅರಿವಾಗುವುದು ಈ ಆಶ್ರಮಗಳ ಸರಿಯಾದ ಅನುಷ್ಠಾನದಿಂದ. ಬ್ರಹ್ಮಚರ್ಯದಲ್ಲಿ ಒಬ್ಬ ಬಾಲಕ/ಬಾಲಿಕೆ ಗುರುಕುಲಕ್ಕೆ ಸೇರಿ ತನಗೆ ಬೇಕೆನಿಸಿದ ಜ್ಞಾನದ ಅರಿವನ್ನು ತಾನು ಯಾವ ಸಮಾಜಕ್ಕೆ ಸೇರಿದ್ದಾನೋ ಆ ಸಮಾಜದ ಹಿತವನ್ನು ಗಮನದಲ್ಲಿರಿಸಿ ಪಡೆಯುತ್ತಾನೆ/ಳೆ. ಈ ಹಂತದಲ್ಲಿ ಪಡೆಯುವ ಜ್ಞಾನ ಮುಂದಿನ ಗೃಹಸ್ಥ, ವಾನಪ್ರಸ್ಥ ಮತ್ತು ಸಂನ್ಯಾಸಾಶ್ರಮಗಳಿಗೆ ತಳಹದಿಯಂತಿರುತ್ತದೆ. ವಾನಪ್ರಸ್ತವು ಪ್ರಾಪಂಚಿಕ ಆಕರ್ಷಣೆಗಳಿಂದ ದೂರವಿರಲು ಮಾಡುವ ಸಾಧನೆಯ ಅವಧಿಯೆನ್ನಬಹುದು. 
     ಗೃಹಸ್ಥಾಶ್ರಮವು ಸಮಾಜದ ತಳಪಾಯವಿದ್ದಂತೆ. ಇತರ ಮೂರು ಆಶ್ರಮಗಳಿಗೆ ತಾಯಿಬೇರು ಇದೇ ಆಗಿದೆ. ಮಕ್ಕಳು ಬ್ರಹ್ಮಚಾರಿಗಳಾಗುತ್ತಾರೆ, ಪೋಷಕರು ವಾನಪ್ರಸ್ಥಕ್ಕೆ ಪ್ರವೇಶಿಸುತ್ತಾರೆ ಮತ್ತು ಅವರು ಲೋಕಹಿತ ಬಯಸುವ ಸಂನ್ಯಾಸಿಗಳಿಗೆ ಆಶ್ರಯ ಕೊಡುವವರೂ ಆಗಿರುತ್ತಾರೆ. ವಾನಪ್ರಸ್ಥದ ಅವಧಿಯಲ್ಲಿ ಮಕ್ಕಳು ಬೆಳೆದವರಾಗಿರುತ್ತಾರೆ ಮತ್ತು ಕೌಟುಂಬಿಕ ಜವಾಬ್ದಾರಿ ಕಡಿಮೆಯಾಗುತ್ತದೆ. ಸಾಮಾಜಿಕ ಹಿತದ ಕೆಲಸಗಳನ್ನು ಮಾಡಲು ಅವಕಾಶವಿರುತ್ತದೆ. ಈ ಅವದಿಯು ಕಿರಿಯರಿಗೆ, ಗೃಹಸ್ಥರಿಗೆ ಮತ್ತು ಸಂನ್ಯಾಸಿಗಳಿಗೆ ಬಲವಾದ ಆಧಾರರೂಪಿಯಾಗಿರಲು ಸೂಕ್ತವಾಗಿರುತ್ತದೆ. ಜ್ಞಾನವನ್ನು ಸಂಪಾದಿಸಿ ದೇಶಕ್ಕೆ, ಸಮಾಜಕ್ಕೆ ಉಪಕಾರಿಯಾಗಿರಬೇಕಾದ ಹಂತವಿದು. ಕೆಲವರು ನೇರವಾಗಿ ಸಂನ್ಯಾಸಾಶ್ರಮಕ್ಕೆ ಪ್ರವೇಶಿಸಿ ನಂತರದಲ್ಲಿ ಪ್ರಾಪಂಚಿಕ ಆಕರ್ಷಣೆಗಳಿಗೆ ಒಳಗಾಗಿ ಕೆಳಗೆ ಬಿದ್ದಿರುವುದನ್ನೂ ಕಂಡಿದ್ದೇವೆ. ಹಾಗಾಗಿ ಗೃಹಸ್ಥ, ವಾನಪ್ರಸ್ಥದ ಅವಧಿಯನ್ನು ಪೂರ್ಣಗೊಳಿಸಿ ಪ್ರಾಪಂಚಿಕ ಆಕರ್ಷಣೆಗಳಿಂದ ಮುಕ್ತರಾದ ನಂತರವೇ ಸಂನ್ಯಾಸಿಗಳಾಗುವುದು ಸಮಾಜದ ಮತ್ತು ಸ್ವಂತದ ಹಿತದಿಂದ ಒಳ್ಳೆಯದು. ವಾನಪ್ರಸ್ಥಕ್ಕೆ ತೆರಳುವವರಿಂದ ಇನ್ನೊಂದು ಲಾಭವೂ ಇದೆ. ವೃದ್ಧರ ನಿವೃತ್ತಿಯಿಂದ ಯುವಕರಿಗೆ ಸಹಜವಾಗಿ ಅಧಿಕಾರ, ಸಾಧನ ಸೌಲಭ್ಯಗಳು ಸಿಗುತ್ತವೆ. ಅಥರ್ವ ವೇದದ ಈ ಮಂತ್ರ ಹೀಗೆ ಹೇಳುತ್ತದೆ:
ಆ ನಯೈತಮಾ ರಭಸ್ಯ ಸುಕೃತಾಂ ಲೋಕಮಪಿ ಗಚ್ಛತು ಪ್ರಜಾನನ್ |
ತೀರ್ತ್ವಾ ತಮಾಂಸಿ ಬಹುಧಾ ಮಹಾಂತ್ಯಜೋ ನಾಕಮಾ ಕ್ರಮತಾಂ ತೃತೀಯಮ್ || (ಅಥರ್ವ.೯.೫.೧.)
     ಅರ್ಥ: ಓ ಗೃಹಸ್ಥ! ಈ ನಿನ್ನ ಆತ್ಮನನ್ನು ಮುನ್ನಡೆಸು. ಸಾಧನೆಯನ್ನಾರಂಭಿಸು. ನಿನ್ನ ಆತ್ಮನು, ಚೆನ್ನಾಗಿ ಜ್ಞಾನ ಗಳಿಸಿ, ಪುಣ್ಯವಂತರ ಸ್ಥಿತಿಯನ್ನು ಮುಟ್ಟಲಿ. ಆಜನ್ಮನಾದ, ನಿತ್ಯನಾದ ನಿನ್ನ ಅತ್ಮನು ಅನ್ಯ ಸಾಧನೆಗಳಿಂದ, ಮಹಾ ಅಂಧಕಾರಗಳನ್ನು ದಾಟಿ, ಮೂರನೆಯದಾದ ವಾನಪ್ರಸ್ಥದ ಸುಖಮಯ ಆಶ್ರಮವನ್ನು ಆಕ್ರಮಿಸಲಿ.
     ಎಲ್ಲಾ ವಯೋವೃದ್ಧರಿಗೂ ಜೀವನದ ಅಂತಿಮ ದಿನಗಳನ್ನು ಪ್ರಾಪಂಚಿಕ ಆಕರ್ಷಣೆಗಳಿಂದ ದೂರವಾಗಿ ಕಳೆಯುವ ಮನಸ್ಸು ಬರಲಾರದು. ಒಂದು ಹಾಸ್ಯಪ್ರಸಂಗ ಇಲ್ಲಿ ನೆನಪಾಗುತ್ತಿದೆ. ಒಬ್ಬ ವ್ಯಾಪಾರಿ ಇನ್ನೇನು ಆಗಲೋ, ಈಗಲೋ ಎಂಬಂತೆ ಸಾಯುವ ಸ್ಥಿತಿಯಲ್ಲಿದ್ದಾಗ, ಅವನ ಹತ್ತಿರವಿರಲು ಮಗ ಮನೆಗೆ ಧಾವಿಸಿಬರುತ್ತಾನೆ. ಅವನಿಗೆ ಏನೋ ಹೇಳಬೇಕೆಂದು ಆ ವ್ಯಾಪಾರಿ ಬಯಸಿದರೂ ಗಂಟಲಿನಿಂದ ಸ್ವರ ಹೊರಡದೆ ಗೊರಗೊರ ಶಬ್ದ ಬರುತ್ತಿದೆ. ವೈದ್ಯರ ಶತಪ್ರಯತ್ನದಿಂದ ಕೊನೆಗೆ ಮಾತನಾಡಿದ ಅವನು ಮಗನಿಗೆ "ಇಷ್ಟು ಬೇಗ ಏಕೆ ಅಂಗಡಿ ಬಾಗಿಲು ಹಾಕಿದೆ?" ಎಂದು ಕೇಳಿದ್ದೇ ಅವನ ಜೀವನದ ಕೊನೆಯ ಮಾತಾಗಿತ್ತು! ಗೋಂದಾವಲೀ ಮಹಾರಾಜರು ಉಪನ್ಯಾಸವೊಂದರಲ್ಲಿ ಹೇಳಿದ ಪ್ರಸಂಗ (ಧ್ವನಿಮುದ್ರಿಕೆಯಲ್ಲಿ ಕೇಳಿದ್ದು) ಇಲ್ಲಿ ಉಲ್ಲೇಖಿಸಬಹುದು. ಒಬ್ಬ ಭಕ್ತರ ಮನೆಗೆ ಅವರು ಹೋಗಿದ್ದಾಗ ಆ ಮನೆಯಲ್ಲಿದ್ದ 90 ವರ್ಷ ದಾಟಿದ್ದ ವೃದ್ಧೆಯೊಬ್ಬರು ಅವರನ್ನು ಉದ್ದೇಶಿಸಿ, "ಸ್ವಾಮಿ, ನನಗೆ ಇನ್ನು ಯಾವ ಆಸೆಯೂ ಇಲ್ಲ. ನಿಮ್ಮ ಪಾದದ ಕೆಳಗೆ ತಲೆಯಿಟ್ಟು ಈ ಜೀವನ ಮುಗಿಸಬೇಕು ಎಂಬುದೊಂದೇ ಆಸೆ" ಎಂದಳು. ಅದಕ್ಕೆ ಅವರು, "ಆಗಲಿ, ಅದಕ್ಕೇನಂತೆ? ಹಾಗೇ ಮಾಡಿ" ಎಂದು ಚಕ್ಕಳ ಮಕ್ಕಳ ಹಾಕಿಕೊಂಡು ಕುಳಿತಾಗ ಗಾಬರಿಯಾದ ಆ ವೃದ್ಧೆ, "ಅಯ್ಯೋ, ಸ್ವಾಮಿ, ಈಗಲೇ ಅಲ್ಲ. ನನ್ನ ಮೊಮ್ಮಗಳ ಮದುವೆ ಆಗಬೇಕು. ಅವಳ ಮಗುವನ್ನು ಎತ್ತಿ ಮುದ್ದಾಡಬೇಕು. ನಾಮಕರಣ ಆಗಬೇಕು. ನಂತರ ನನ್ನ ಈ ಆಸೆ ಈಡೇರಿಸಿಕೊಳ್ಳುತ್ತೇನೆ" ಅಂದಳಂತೆ! ಸಾಯುವ ಕೊನೆಯ ಕ್ಷಣದವರೆಗೂ ರಾಜಕೀಯ ಮಾಡುತ್ತಾ ಅಧಿಕಾರಕ್ಕಾಗಿ ಹಪಹಪಿಸುವ ಇಂದಿನ ರಾಜಕಾರಣಿಗಳೂ ಇದೇ ವರ್ಗಕ್ಕೆ ಸೇರಿದವರು. ಹಾಗಾಗಿ ಏನು ಬದಲಾವಣೆ ನಿರೀಕ್ಷಿಸಲಾದೀತು? ಇರಲಿ ಬಿಡಿ, ವಾನಪ್ರಸ್ಥ ಬಯಸದವರ ಮಾತನ್ನು ಮುಂದುವರೆಸುವುದಿಲ್ಲ. 
     ಇಂದಿನ ಕಾಲಮಾನದ ಪರಿಸ್ಥಿತಿಯಲ್ಲಿ ವಾನಪ್ರಸ್ಥದ ಮೂಲ ಪರಿಕಲ್ಪನೆಯನ್ನು ಸೂಕ್ತವಾಗಿ ಪರಿವರ್ತಿಸಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. 45-50ರ ವಯಸ್ಸಿನಲ್ಲಿ ಇರುವವರು ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಮುಂಚಿತವಾಗಿ ಯೋಜನೆ ಮಾಡಿಕೊಂಡು, ಮಾನಸಿಕವಾಗಿ ಸಿದ್ಧರಾಗಿದ್ದಲ್ಲಿ ನಿವೃತ್ತರಾದ ಕೂಡಲೇ ಉಂಟಾಗಬಹುದಾದ ಶೂನ್ಯಭಾವದಿಂದ ಹೊರಬರಬಹುದು. ನಿವೃತ್ತ ಜೀವನವನ್ನು ಒಳ್ಳೆಯ ರೀತಿಯಲ್ಲಿ ಕಳೆಯುವ ಸಾಧನವಾಗಿ ಮಾಡಿಕೊಳ್ಳುವುದನ್ನು ವಾನಪ್ರಸ್ಥವೆನ್ನೋಣ. ಪ್ರತಿಯೊಂದರಲ್ಲಿ, ಪ್ರತಿಯೊಬ್ಬರಲ್ಲಿ ಒಳಿತನ್ನು ಕಾಣುವ ಮನೋಭಾವ ಬೆಳೆಸಿಕೊಂಡು, ಅಂತರಂಗ, ಬಹಿರಂಗಗಳಲ್ಲಿ ಸಾಮ್ಯತೆ ಸಾಧಿಸುವ ಕ್ರಿಯೆಯಲ್ಲಿ ತೊಡಗುವುದು ಕಡಿಮೆ ಸಾಧನೆಯಲ್ಲ. ಪ್ರಾಪಂಚಿಕ ಆಕರ್ಷಣೆಗಳಿಂದ ವಿಮುಕ್ತರಾಗಿ ಸರಳ ವಸ್ತ್ರಗಳನ್ನು ಧರಿಸಿ, ಸರಳ ಜೀವನವನ್ನು ನಡೆಸಿ ಆತ್ಮಚಿಂತನೆಯಲ್ಲಿ ತೊಡಗಬಹುದಾಗಿದೆ. ತನ್ನ ಚಿಂತನೆ, ಜ್ಞಾನಾಭಿವೃದ್ಧಿಗಳಿಗೆ ಪೂರಕವಾಗುವ ಸತ್ಸಂಗಗಳಲ್ಲಿ ಪಾಲುಗೊಳ್ಳುವುದು, ಅಂತಹ ಆದರ್ಶದ ಜೀವನ ಸಾಗಿಸುತ್ತಿರುವ ಧೀಮಂತರ ಮಾರ್ಗದರ್ಶನ ಪಡೆಯುವುದು ಸಹಕಾರಿಯಾಗುತ್ತದೆ. ಇಂತಹವರು ಸಹಜವಾಗಿ ದೇಶಾತೀತ, ಭಾಷಾತೀತ, ಜನಾಂಗಾತೀತ, ಮತಾತೀತ ಮಾನವರಾಗುತ್ತಾರೆ. ಕೌಟುಂಬಿಕ ಜವಾಬ್ದಾರಿಗಳನ್ನು ಮಕ್ಕಳಿಗೆ ವಹಿಸಿ ನಿರ್ಲಿಪ್ತ, ನಿಶ್ಚಿಂತರಾಗುವುದು ಮೊದಲ ಕ್ರಮವಾಗಬೇಕು. ನಂತರದಲ್ಲಿ ಸಾಧ್ಯವಾದಷ್ಟು ಪ್ರಶಾಂತ ಕೊಠಡಿ ಅಥವ ಸ್ಥಳದಲ್ಲಿ ಇರಬೇಕು. ಕುಟುಂಬದವರು ಕೌಟುಂಬಿಕ ಸಮಸ್ಯೆ ಅಥವ ವಿಚಾರಗಳಿಗೆ ಸಲಹೆ, ಸಹಕಾರ ಬಯಸಿದಲ್ಲಿ ಕೊಡಬೇಕು. ಆದರೆ ಅವುಗಳಲ್ಲಿ ವ್ಯಸ್ತರಾಗಬಾರದು. ಕೌಟುಂಬಿಕ ಸಾಮರಸ್ಯ, ಬಂಧುಗಳ ಸಾಮರಸ್ಯ, ಜನಾಂಗದ ಸಾಮರಸ್ಯ, ಸಕಲ ಜೀವಕೋಟಿಯ ಸಾಮರಸ್ಯದ ಗುರಿಯಿರಬೇಕು. ಈ ದಿಸೆಯಲ್ಲಿ ಎಷ್ಟು ಸಾಧಿಸಲು ಸಾಧ್ಯ, ಸಾಧಿಸಿದೆವು ಎಂಬುದು ಮಹತ್ವದ್ದಲ್ಲ. ಒಂದು ಗಾದೆಯಿದೆ, ಸಾವಿರ ಮೈಲುಗಳ ಪಯಣ ಪ್ರಾರಂಭವಾಗುವುದು ಒಂದು ಹೆಜ್ಜೆ ಮುಂದಿಡುವುದರಿಂದ. ಸಣ್ಣ ಕೌಟುಂಬಿಕ ವ್ಯಾಪ್ತಿಯಿಂದ ಹೊರಬಂದು ವಿಶ್ವವೇ ಒಂದು ಕುಟುಂಬವಾಗಿದ್ದು ತಾನು ಅದರ ಭಾಗವೆಂದು ಭಾವಿಸುವ ಮನೋವೃತ್ತಿ ಬೆಳೆಸಿಕೊಳ್ಳಬೇಕು. ಸರ್ವರ ಹಿತ ಬಯಸುವ ಕೆಲಸ, ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು, ಬೆಂಬಲಿಸಬೇಕು. ಮನೋವಿಕಾರಗಳನ್ನು ನಿಯಂತ್ರಿಸಲು ಸಾಧನೆ ನಡೆಸಬೇಕು. ದುಷ್ಟ ವಿಚಾರಗಳಿಂದ ದೂರವಿದ್ದು, ಸದ್ವಿಚಾರಗಳ ಅನುಸರಣೆ, ಪ್ರಸರಣೆಗೆ ಗಮನ ಕೊಡಬೇಕು. ಒಳಿತನ್ನು, ಒಳ್ಳೆಯ ಸಂಗತಿಗಳನ್ನು ಗುರುತಿಸಿ ಗೌರವಿಸಬೇಕು. ಸಾಧ್ಯವಾದಷ್ಟೂ ಇತರರಿಗೆ ಹೊರೆಯಾಗದಂತೆ ಬಾಳಬೇಕು. 
     ಸಾಮಾನ್ಯವಾಗಿ ಒಬ್ಬೊಬ್ಬರಿಗೆ ಒಂದೊಂದು ವೃತ್ತಿ, ಪ್ರವೃತ್ತಿ, ಹವ್ಯಾಸಗಳು ತೃಪ್ತಿ, ಸಂತೋಷ ಕೊಡುವ ಸಂಗತಿಯಾಗಿರುತ್ತದೆ. ನಿವೃತ್ತಿಯೆಂದರೆ ಅಂತಹ ಹವ್ಯಾಸಗಳನ್ನು ನಿಲ್ಲಿಸುವುದಲ್ಲ. ಬದಲಾಗಿ ಅವುಗಳನ್ನು ಇತರರ ಹಿತಕ್ಕಾಗಿ ಬಳಸುವುದು. ಆದರೆ ಅದು ಹಣಗಳಿಕೆಯ ಸಾಧನವಾಗಬಾರದಷ್ಟೆ. ಒಬ್ಬ ನಿವೃತ್ತ ಶಿಕ್ಷಕ ಬಡ ಮಕ್ಕಳಿಗೆ ಉಚಿತವಾಗಿ ಪಾಠ ಹೇಳಬಹುದು, ಸಂಗೀತಗಾರ ತನ್ನ ಸಾಧನೆಯನ್ನು ಉತ್ತುಂಗಕ್ಕೇರಿಸುವುದರ ಜೊತೆಗೆ ಇತರರಿಗೆ ಸಂಗೀತ ಹೇಳಿಕೊಡಬಹುದು, ಬರಹಗಾರ ತನ್ನ ಅನುಭವದ ಸಾರಗಳನ್ನು ಬರಹದ ಮೂಲಕ ಅಭಿವ್ಯಕ್ತಿಸಬಹುದು ಮತ್ತು ಆ ಮೂಲಕ ಪರಿಣಾಮ ಬೀರಬಹುದು. ಇವೆಲ್ಲಾ ಉದಾಹರಣೆಗಳಷ್ಟೆ. ಕೇವಲ ಆತ್ಮತೃಪ್ತಿ ಮತ್ತು ಇತರರಿಗೆ ಮಾರ್ಗದರ್ಶಿಯಾಗಿರಲು ಮಾತ್ರ ಇವುಗಳ ಬಳಕೆಯಾಗಬೇಕು. ಪಡೆಯುವುದಕ್ಕಿಂತ ಕೊಡುವುದಕ್ಕೆ ಆದ್ಯತೆಯಿರಬೇಕು. ಅಷ್ಟಕ್ಕೂ ನಮ್ಮಲ್ಲಿರುವುದೆಲ್ಲಾ ನಾವು ಪಡೆದಿದ್ದೇ ಅಲ್ಲವೇ? ಬದುಕಿನ ಜಂಜಾಟದಲ್ಲಿ ತನ್ನತನಕ್ಕೆ ಅದುವರೆಗೆ ಸಿಕ್ಕದ ಆದ್ಯತೆಯನ್ನು ಜೀವನದ ಅಂತಿಮ ಘಟ್ಟದಲ್ಲಾದರೂ ಸಿಕ್ಕುವಂತೆ ನೋಡಿಕೊಂಡು 'ತಾನು ತಾನಾಗಿರಬೇಕು', ಅರ್ಥಾತ್ 'ತನಗಾಗಿ' ಬಾಳಬೇಕು. 'ತನಗಾಗಿ' ಬಾಳುವ ಈ ರೀತಿಯ ಬಾಳುವಿಕೆಯಲ್ಲಿ ಸ್ವಾರ್ಥವಿರಲಾರದು. ಏಕೆಂದರೆ, ಅದು ಆತ್ಮತೃಪ್ತಿಯ, ಆತ್ಮ ಚಿಂತನೆಯ, ಆತ್ಮಾನುಸಂಧಾನದ ಮಾರ್ಗ. ಒಂದು ರೀತಿಯಲ್ಲಿ ಅದು ಹಿಂದೆ ಮಾಡಿರಬಹುದಾದ ತಪ್ಪುಗಳಿಗೆ ಪ್ರಾಯಶ್ಚಿತ್ತವೂ ಆದೀತು. ಇಂತಹ ಚಿಂತನೆಗಳನ್ನು ಹೊಂದಿದವರ ಭಾವನೆಯನ್ನು ಗೌರವಿಸಿ ಸಹಕರಿಸುವ ಕುಟುಂಬದ ಇತರ ಸದಸ್ಯರೂ ಅಭಿನಂದನಾರ್ಹರಾಗುತ್ತಾರೆ. ಇಂತಹ ಕ್ರಿಯೆಯಿಂದ ಯುವಕರಿಗೆ ಸಹಜವಾಗಿ ನಾಯಕತ್ವ ಸಿಗುವುದಲ್ಲದೇ, ಅವರಿಗೆ ಸುಯೋಗ್ಯ ಮಾರ್ಗದರ್ಶನ ಸಹ ನೀಡಿದಂತಾಗುತ್ತದೆ. 'ಯಾರಂತೆ ಅಂದರೆ ಊರಂತೆ' ಎಂದುಕೊಂಡು ಅದುವರೆಗೆ ಹೇಗೆ ಹೇಗೋ ಸಾಗಿಸಿದ ಜೀವನವನ್ನು ಮರೆತು, ಮೌಲ್ಯಗಳನ್ನು ಕಡೆಗಣಿಸಿ ಬಾಳಿದ ಹಿಂದಿನ ದಿನಗಳನ್ನು ಮರೆತು, ಕಷ್ಟವಾದರೂ ಸರಿ, ಜೀವನದ ಉಳಿದ ಕೊನೆಯ ದಿನಗಳಲ್ಲಿ ಮೌಲ್ಯಗಳಿಗೆ ಅಂಟಿಕೊಂಡು ಬಾಳಿದರೆ ಅದು ಜೀವಕೋಟಿಗೆ ನೀಡುವ, ಭಗವಂತ ಮೆಚ್ಚುವ ಅತಿ ದೊಡ್ಡ ಕಾಣಿಕೆಯಾಗುತ್ತದೆ.
-ಕ.ವೆಂ.ನಾಗರಾಜ್.
[ಚಿತ್ರಗಳನ್ನು ಅಂತರ್ಜಾಲದಿಂದ ಹೆಕ್ಕಿ ಬಳಸಿರುವೆ. ಇವು ರಾಯಲ್ಟಿ ಮುಕ್ತ ಚಿತ್ರಗಳು.]

Wednesday, December 12, 2012

ಮಾಗಲಿ ಬಿಡು

ಮೌನ ವ್ರತ ಅಷ್ಟು ಸುಲಭವಲ್ಲಾ ಗೆಳೆಯ
ನಮಗರಿವಿದ್ದೋ ಇಲ್ಲದೆಯೋ
ನಮ್ಮೊಳಗೆ ತುಂಬಿರುವ
ಕಲ್ಮಶಗಳ ಅಲ್ಲೇ ಇಟ್ಟು
ಕಣ್ಮುಚ್ಚಿದರೆ
ಫಲಸಿಗದು ಗೆಳೆಯ
ಮೊದಲು ಮಾತಾಡು
ಮನಬಿಚ್ಚಿ ಮಾತಾಡು
ಎಲ್ಲರೊಡನೆ ಮಾತಾಡು
ಅಳುವುದಾದರೆ ಅತ್ತು ಬಿಡು
ನಗುವುದಾದರೆ ನಕ್ಕು ಬಿಡು
ಮನದೊಳಗೆ ಹುದುಗಿರುವ
ಮಾತುಗಳ ಹೊರಹಾಕು
ತಪ್ಪು ಯಾರದಾದರೇನು?
ಒಪ್ಪುವವರು ಯಾರಿಲ್ಲ
ಎಲ್ಲರೊಳು ಹುದುಗಿಹುದು
ನಾನೆಂಬ ಮಂತ್ರ
ಇರಲಿ ಬಿಡು
ನಮ್ಮೊಳಗೆ ಇರುವವನೇ
ಅವನಲ್ಲೂ ತಾನೇ?
ಹೊಗಳಿಕೆಗೆ ತೆಗಳಿಕೆಗೆ ಕಿವಿಗೊಡದೆ
ಒದರಿಬಿಡು ನಿನ್ನೊಳಗಿನ ಮಾತು
ಖಾಲಿ ಮಾಡಲು ಅದೆಷ್ಟು ವರ್ಷಗಳು ಬೇಕೋ
ಈಗೆಲ್ಲಿ ಮೌನ?
ಮುಗಿಯಲಿ ಬಿಡು
ಮಾಗಲಿ ಬಿಡು
-ಹರಿಹರಪುರಶ್ರೀಧರ್