Pages

Tuesday, March 11, 2014

ಗೋಗ್ರಾಸ ನೀಡುವಿರಾ?

     ಮೈಸೂರು ಜಿಲ್ಲೆ ಕೆ.ಆರ್.ನಗರ ತಾ. ಹಂಪಾಪುರದಲ್ಲಿರುವ ಶ್ರೀಮತಿ ಸ್ವರೂಪರಾಣಿ ಮತ್ತು ಶ್ರೀ ಮದುಸೂದನ್ ದಂಪತಿಗಳು ತಮ್ಮ ಮಗನ ಸ್ಮರಣೆಯಲ್ಲಿ  ಸುಭಾಷ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ಸುಮಾರು 35 ಗೋವುಗಳಿವೆ. ಗೋವುಗಳ ಮೇವಿಗಾಗಿ ಪ್ರತಿ ದಿನ ಸುಮಾರು ರೂ. 2500/- ವೆಚ್ಚ ಬರುತ್ತದೆ. ಈ ಗೋಶಾಲೆಯ ನಿರ್ವಹಣೆಗೆ ಗೋಪ್ರೇಮಿಗಳು ಸಹಕರಿಸದಿದ್ದರೆ ಗೋವುಗಳ ನಿರ್ವಹಣೆ ಕಷ್ಟಕರವೆಂಬುದು ಪ್ರತ್ಯಕ್ಷವಾಗಿ ಭೇಟಿ ನೀಡಿರುವ ವೇದಭಾರತಿಯ ಸದಸ್ಯರ ಗಮನಕ್ಕೆ ಬಂದಿದೆ. ಕೆಲವು ದಿನಗಳಿಗಾಗಿವಷ್ಟಾದರೂ ಗೋಗ್ರಾಸಕ್ಕೆ ಆರ್ಥಿಕ ಸಹಕಾರ ನೀಡಬೇಕೆಂಬ ಅನಿಸಿಕೆಗೆ ತಕ್ಷಣ ಸ್ಪಂದಿಸಿ ಇವರುಗಳು ತಲಾ ರೂ. 2500/- ಅನ್ನು ಕೊಟ್ಟಿದ್ದಾರೆ:
ಶ್ರೀಯುತರಾದ: 1. ಕ.ವೆಂ.ನಾಗರಾಜ್, 2. ಹರಿಹರಪುರ ಶ್ರೀಧರ್, 3. ಅಶೋಕ್, 4. ಸಣ್ಣಸ್ವಾಮಿಶೆಟ್ಟಿ.
10-20 ದಿನಗಳಿಗಾಗುವಷ್ಟಾದರೂ ಸಂಗ್ರಹಿಸಿಕೊಡೋಣ. ಆಸಕ್ತರು, ಗೋಪ್ರೇಮಿಗಳು ಕೈಜೋಡಿಸುವಿರಾ?
-ವೇದಭಾರತಿಯ ಸದಸ್ಯರು.




Sunday, March 9, 2014

ದೇವನ ನೆನೆಯುವೆ

ಬೆಳಗಾಗಿ ನಾನೆದ್ದು ದೇವನ ನೆನೆಯುವೆ
ಪರಮಸಂಪದದೊಡೆಯ ತೇಜಸ್ವಿಯ |
ಭೂತಾಯಿಯಂತೆ ಮತ್ತೆ ಆಗಸದಂತೆ
ಎಲ್ಲೆಲ್ಲೂ ಇರುವವಗೆ ಶರಣೆನ್ನುವೆ || ೧ ||

ಬುದ್ಧಿಗೊಡೆಯ ಜಗದೀಶನ ನೆನೆಯುವೆ
ಕರ್ಮಫಲದಾತ ಜ್ಯೋತಿರ್ಮಯನ |
ಮಂಗಳಮಯ ಸಕಲ ಲೋಕಪ್ರಿಯ
ದೇವಾಧಿದೇವನಿಗೆ ಶರಣೆನ್ನುವೆ || ೨ ||

ನಿತ್ಯವಿಜಯಿಯಾದ ಒಡೆಯನ ನೆನೆಯುವೆ 
ಸಕಲ ಲೋಕಾಧಾರ ತೇಜಸ್ವಿಯ |
ಪಾತಕಿಕಂಟಕ ಸತ್‌ಪ್ರಕಾಶ ಈಶ
ಸರ್ವಜ್ಞ ದೇವನಿಗೆ ಶರಣೆನ್ನುವೆ || ೩ ||

ಮನೋಧಿನಾಯಕ ದೇವನ ಬೇಡುವೆ
ಕೊಡು ಮತಿಯ ಕೊಡು ಸಕಲ ಸಂಪತ್ತಿಯ |
ಮಾಡೆನ್ನ ಸತ್ಪ್ರಜೆಯ ಬೆಳೆಸುತಲಿ ಸಜ್ಜನರ
ಸತ್ಯಕ್ಕಾಧೀಶ ದೇವ ಶರಣೆನ್ನುವೆ || ೪ ||

ಪರಮ ಬೆಳಕಿನೊಡೆಯ ದೇವನ ಬೇಡುವೆ
ಕರುಣಿಸು ರಕ್ಷೆ ಮೇಣ್ ಸಕಲಸುಖವ |
ಸಜ್ಜನರ ಸುಮತಿಯ ಪಾಲಿಸುವ ಮನವ
ನೀಡೆಂದು ಬೇಡುತ ಶರಣೆನ್ನುವೆ || ೫ ||

ಜಗದಂತರಾತ್ಮನೆ ವಿದ್ವಜ್ಜನರ ಬೇಡುವೆ
ನಿಮ್ಮಂತೆ ಎಮಗೂ ಸಿಗಲಿ ಸದ್ಬುದ್ಧಿ |
ಸಕಲಜಗವು ನಿನ್ನ ಹಾಡಿ ಹೊಗಳುತಲಿರಲು
ದಾರಿ ತೋರೈ ಪ್ರಭುವೆ ಶರಣೆನ್ನುವೆ || ೬ ||
-ಕ.ವೆಂ.ನಾ.
************** 
ಆಧಾರ:
ಓಂ ಪ್ರಾತರಗ್ನಿಂ ಪ್ರಾತರಿಂದ್ರಂ ಹವಾಮಹೇ ಪ್ರಾತರ್ಮಿತ್ರಾವರುಣಾ ಪ್ರಾತರಶ್ವಿನಾ |
ಪ್ರಾತರ್ಭಗಂ ಪೂಷಣಂ ಬ್ರಹ್ಮಣಸ್ಪತಿಂ ಪ್ರಾತಃ ಸೋಮಮುತ ರುದ್ರಂ ಹುವೇಮ || (ಋಕ್.೭.೪೧.೧.)

ಓಂ ಪ್ರಾತರ್ಜಿತಂ ಭಗಮುಗ್ರಂ ಹುವೇಮ ವಯಂ ಪುತ್ರಮದಿತೇರ್ಯೋ ವಿಧರ್ತಾಃ |
ಆಧ್ರಶ್ಚಿದ್ ಯಂ ಮನ್ಯಮಾನಸ್ತುರಶ್ಚಿದ್ ರಾಜಾ ಚಿದ್ ಯಂ ಭಗಂ ಭಕ್ಷೀತ್ಯಾಹ || (ಋಕ್.೭.೪೧.೨.)

ಓಂ ಭಗ ಪ್ರಣತೇರ್ಭಗ ಸತ್ಯರಾಧೋ ಭಗೇಮಾಂ ಧಿಯಮುದವಾ ದದನ್ನಃ |
ಭಗ ಪ್ರ ಣೋ ಜನಯ ಗೋಭರಶ್ವೈರ್ಭಗ ಪ್ರ ನೃಭಿರ್ನೃವಂತಃ ಸ್ಯಾಮ || (ಋಕ್.೭.೪೧.೩.)

ಓಂ ಉತೇದಾನೀಂ ಭಗವಂತಃ ಸ್ಯಾಮೋತ ಪ್ರಪಿತ್ವ ಉತ ಮಧ್ಯೇ ಅಹ್ನಾಂ |
ಉತೋದಿತಾ ಮಘವನ್ ತ್ಸೂರ್ಯಸ್ಯ ವಯಂ ದೇವಾನಾಂ ಸುಮತೌ ಸ್ಯಾಮ || (ಋಕ್.೭.೪೧.೪.)

ಓಂ ಭಗ ಏವ ಭಗವಾನ್ ಅಸ್ತು ದೇವಸ್ತೇನ ವಯಂ ಭಗವಂತಃ ಸ್ಯಾಮ |
ತಂ ತ್ವಾ ಭಗ ಸರ್ವ ಇಜ್ಜೋಹವೀ ತಿ ಸ ನೋ ಭಗ ಪುರಏತಾ ಭವೇಹಃ || (ಋಕ್.೭.೪೧.೫.)


ಚಿತ್ರ: ಅಂತರ್ಜಾಲದಿಂದ ಹೆಕ್ಕಿದ ರಾಯಲ್ಟಿ ಮುಕ್ತ ಚಿತ್ರ (dreamstine.com)

Friday, March 7, 2014

ಮೌನರಾಗ

ಚರ್ಚೆ...ಚರ್ಚೆ...ಚರ್ಚೆ...ಎಲ್ಲಿಯ ವರಗೆ ?
ಜೇನುನೊಣವು ಹೂವಿನ ಮೇಲೆ ಕುಳಿತು ಅದರ ಮಕರಂದದ ಸವಿಯನ್ನು ತಿಳಿಯುವ ವರಗೆ ಶಬ್ಧವನ್ನು ಮಾಡುತ್ತಿರುತ್ತದೆ.ಮಕರಂದದ ಸವಿಯ ಅನುಭವವಾಗುತ್ತಿದ್ದಂತೆ  ಶಬ್ಧವನ್ನು ನಿಲ್ಲಿಸುತ್ತದೆ. ಮನುಷ್ಯನೂ ಅಷ್ಟೆ  ಅಧ್ಯಾತ್ಮವು ಅರ್ಥವಾಗುವವರೆಗೂ ವಾದ  ಮಾಡುತ್ತಿರುತ್ತಾನೆ. ಒಮ್ಮೆ ಅದರ ಸವಿ ತಿಳಿದರೆ ಅದನ್ನು ಅನುಭವಿಸುತ್ತಾ ಮಾತು ಕಡಿಮೆ ಮಾಡುತ್ತಾನೆ.

           ವೇದವು ಪ್ರಶ್ನೆ ಮಾಡಿ ತಿಳಿದುಕೋ ಎನ್ನುತ್ತ್ತದಲ್ಲಾ! ಹೌದು ತಿಳಿದವರನ್ನು ಕೇಳಿ ನಮಗೆ ಗೊತ್ತಿರದ ವಿಷಯವನ್ನು ತಿಳಿದುಕೊಳ್ಳಬೇಕು. ಆದರೆ ನಮ್ಮ ಅರೆ ಬರೆ ತಿಳುವಳಿಕೆಯಿಂದ ವಾದ ಮಾಡಿ ಗೆಲ್ಲಬೇಕೆಂಬ ವಿಚಾರವಿರಬಾರದು.ವಾದದಲ್ಲಿ ಶಕ್ತಿಯ ಅಪವ್ಯಯವಾಗುತ್ತದೆ. ವಿಚಾರವನ್ನು ಆಲಿಸುವುದರಿಂದ ಶಕ್ತಿಯು ಹೆಚ್ಚುತ್ತದೆ.ನಮ್ಮ ಸಂದೇಹಗಳನ್ನೆಲ್ಲಾ ನಮಗಿಂತ ಹೆಚ್ಚು ತಿಳಿದವರಲ್ಲಿ ಕೇಳಿ ಪರಿಹರಿಸಿಕೊಳ್ಳಬೇಕು. ಆದರೆ ಜೀವನ ಪೂರ್ಣ ಅವರು ಹೇಳುವುದಕ್ಕೆ, ನಾನು ಕೇಳುವುದಕ್ಕೆ ,ಎನ್ನುವಂತಾಗಬಾರದು. ನಾನೂ ಹೇಳುವ ಹಂತಕ್ಕೆ ಬೆಳೆಯಬೇಕು. ಆದರೆ ಬೇರೆಯವರು ಕೇಳುವ ವರೆಗೂ ನಾವಾಗಿಯೇ  ಹೇಳುತ್ತಾ ವಲ್ಲದವರಿಗೆ ಹೇರುವ ದುಸ್ಸಾಹಸ ಮಾಡಬಾರದು.ಕೊನೆಗಾದರೂ ಮೌನದಿಂದಲೇ ಶಕ್ತಿಯ ಸಂಚಯನ, ಆಧ್ಯಾತ್ಮಿಕ ಉನ್ನತಿ ಎಂಬ ಅರಿವಿರಬೇಕು.

Thursday, March 6, 2014

ಸಾಧನಾ ಪಥ

ಹಿಡಿದ ಗುರಿಯನು ಸಾಧಿಸುವವರೆಗೆ
ಮುಂದಿಟ್ಟ ಹೆಜ್ಜೆಯನು  ಹಿಂದಕ್ಕೆ ಇಡದೆ |
ಆವೇಶ ಉತ್ಸಾಹ ನರನಾಡಿಯಲಿರಿಸೆ
ಯಶವರಸಿ ಹರಸದಿಹುದೆ ಮೂಢ || 
     ಹೇಗೋ ಜೀವಿಸಬೇಕೆನ್ನುವವರು ಕಷ್ಟಪಡುವುದಿಲ್ಲ. ಅವರು ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಂಡು, ಸರಿ-ತಪ್ಪುಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಬಾಳುತ್ತಾರೆ. ಆದರೆ ಹೀಗೆಯೇ ಜೀವಿಸಬೇಕೆಂದುಕೊಂಡವರಿಗೆ ಅಡ್ಡಿ, ಅಡಚಣೆಗಳು, ಕಷ್ಟಗಳ ಸರಮಾಲೆಯೇ ಎದುರಾಗುತ್ತದೆ. ಆದರೆ ಅವರು ಅವೆಲ್ಲವನ್ನೂ ಎದುರಿಸಿ, ಅಗತ್ಯ ಬಿದ್ದರೆ ಪ್ರಾಣವನ್ನೂ ಪಣಕ್ಕಿಟ್ಟು ತಾವಂದುಕೊಂಡಂತೆಯೇ ಬದುಕುತ್ತಾರೆ. ಹಾಗೆ ಯಶಸ್ವಿಯಾಗಿ ಬದುಕುವವರನ್ನು ಸಾಧಕರೆನ್ನುತ್ತಾರೆ. ಅಂತಹ ಸಾಧಕರನ್ನು ಜಗತ್ತು ಗೌರವಿಸುತ್ತದೆ. ಹೇಗೋ ಬದುಕುವವರೂ ಸಹ  ಸಾಧಕರನ್ನು ಮೆಚ್ಚುಗೆಯಿಂದ, ಗೌರವದಿಂದ ಕಾಣುತ್ತಾರೆ. ಸಾಧಕರನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವುದೂ ಅಪರೂಪವಲ್ಲ. ಆದರೆ, ಸಾಧಕರ ಸಾಧನೆಯ ಹಿಂದಿನ ದಿವ್ಯ ಸಂದೇಶವನ್ನು ಎಲ್ಲರೂ ಮರೆತುಬಿಡುತ್ತೇವೆ. ಅದೆಂದರೆ, 'ಅಂತಹ ಸಾಧನೆಯನ್ನು ಯಾರು ಬೇಕಾದರೂ ಮಾಡಬಹುದು' ಎಂಬುದೇ! ಸಾಧನೆ ಮಾಡಲು ಹಿಂಜರಿಯುವ ಸಾಮಾನ್ಯರಿಗೆ, 'ಅವರು ದೇವಾಂಶ ಸಂಭೂತರು, ಮಹಾಮಹಿಮರು. ಅವರೆಲ್ಲಿ, ನಾವೆಲ್ಲಿ', 'ಉಂಟೇ, ಉಂಟೇ, ಏನು ಹೇಳುತ್ತಿದ್ದೀರಿ? ಅವರೊಡನೆ ನಮ್ಮನ್ನು ಹೋಲಿಸುವುದೇ!' ಎಂಬಂತಹ ಕುಂಟು ನೆಪಗಳೂ ನೆರವಿಗೆ ಬರುತ್ತದೆ. ಆದರೆ ನಿಜವಾದ ಕಾರಣವೆಂದರೆ, ಅವರಿಗೆ ಕಷ್ಟಪಡುವುದು ಬೇಕಿರುವುದಿಲ್ಲ ಮತ್ತು ಮೌಲ್ಯಗಳು, ನೀತಿ-ನಿಯಮಗಳು ಎಂದುಕೊಂಡು ಬೇಕಿಲ್ಲದ ತೊಂದರೆಗಳನ್ನು ಮೈಮೇಲೆ ಏಕೆ ಎಳೆದುಕೊಳ್ಳಬೇಕು ಎಂಬ ಮನೋಭಾವ. ಹೇಗೋ ಜೀವಿಸುವವರಿಗೆ ಸ್ವಾರ್ಥ ಪ್ರಮುಖವಾಗಿರುತ್ತದೆ. ಅದಕ್ಕಾಗಿ ಸಮಾಜದ ಹಿತ ಅವರಿಗೆ ಗೌಣವೆನಿಸುತ್ತದೆ. ಈ ಮನೋಭಾವವೇ ಸಮಾಜ ಇಂದು ಎದುರಿಸುತ್ತಿರುವ ಹಲವಾರು ಸಮಸ್ಯೆಗಳಿಗೆ ಮೂಲವೆಂಬುದು ಆಳವಾಗಿ ಚಿಂತಿಸಿದರೆ ಅರ್ಥವಾದೀತು. ಒಂದಂತೂ ಸತ್ಯ, ನೀತಿ-ನಿಯಮ, ಮೌಲ್ಯಗಳಿಗೆ ಬೆಲೆ ಕೊಡುವವರ, ಅದಕ್ಕಾಗಿ ಸ್ವಂತದ ಹಿತ ತ್ಯಾಗ ಮಾಡುವ ಸಾಧಕರಿಂದ ಸಮಾಜ ಲಾಭ ಪಡೆಯುತ್ತದೆ. ಈ ಕಾರಣಕ್ಕಾಗಿಯೇ ಸಮಾಜ ಸಾಧಕರನ್ನು ಗೌರವದಿಂದ ಕಾಣುತ್ತದೆ, ಕಾಣಲೇಬೇಕು.
ಸೋತೆನೆಂದೆನಬೇಡ ಸೋಲು ನೀನರಿತೆ
ಬಿದ್ದೆನೆಂದೆನಬೇಡ ನೋವು ನೀನರಿತೆ |
ಸೋಲರಿತು ನೋವರಿತು ಹಸಿವರಿತು
ಜಗವರಿಯೆ ನೀನೇ ಗೆಲುವೆ ಮೂಢ ||
     ಸಾಧಕರು ಇದ್ದಕ್ಕಿದ್ದಂತೆ ಮೂಡಿಬರುವುದಿಲ್ಲ. ಅವಿರತ ಶ್ರಮ ಅವರ ಸಾಧನೆಯ ಬೆನ್ನಿಗಿರುತ್ತದೆ. 'ಸರ್ವಜ್ಞನೆಂಬುವನು ಗರ್ವದಿಂದಾದವನೆ, ಹಲವಂ ಬಲ್ಲವರಿಂದ ಕಲಿತು . . ವಿದ್ಯೆಯ ಪರ್ವತವೆ ಆದ ಸರ್ವಜ್ಞ' ಎಂಬ ತ್ರಿಪದಿ ಸರ್ವಜ್ಞನ ಸಾಧನೆಯ ಹಾದಿಯ ಕಿರುನೋಟ ಬೀರುತ್ತದೆ. ಸಾಧಕರ ಜೀವನವನ್ನು ಅವಲೋಕಿಸಿದರೆ ಕಂಡು ಬರುವ ವಿಚಾರಗಳು ಸಾಧನೆಯ ಹಾದಿಯಲ್ಲಿರುವವರ ಕಣ್ತೆರೆಸುವಂತಹವು. ತನ್ನನ್ನು ತಾನು ಅರಿತುಕೊಳ್ಳುವುದು ಸಾಧನಾಪಥದ ಮೊದಲ ಹೆಜ್ಜೆಯಾದರೆ, ಸತತ ಪರಿಶ್ರಮ, ಬರುವ ಕಷ್ಟಗಳು, ನೋವುಗಳನ್ನು ಸಹಿಸಿಕೊಳ್ಳುವ ಶಕ್ತಿ, ಯಾವುದೇ ಸಂದರ್ಭಗಳಲ್ಲಿ ನಂಬಿದ ತತ್ವಕ್ಕೆ ಚ್ಯುತಿ ಬಾರದಂತೆ ನೋಡಿಕೊಳ್ಳುವುದು ಸಾಮಾನ್ಯವಾಗಿ ಸಾಧಕರಲ್ಲಿ ಕಂಡು ಬರುವ ಗುಣಗಳು. ಸೋಲುಗಳು, ಎಡರು-ತೊಡರುಗಳು ಅವರ ಧೃತಿಗೆಡಿಸುವ ಬದಲಾಗಿ ಜಗತ್ತನ್ನು ಅರಿಯುವ ಅವರ ಹಸಿವನ್ನು, ಪಟ್ಟು ಬಿಡದೆ ಮತ್ತೆ ಮುಂದುವರೆಯುವ ಛಲವನ್ನು ಹೆಚ್ಚಿಸುತ್ತಾ ಹೋಗುತ್ತದೆ. ಸಹಜವೆಂಬಂತೆ ಸಾಧಕ ದುಷ್ಕರ್ಮಗಳಿಂದ ದೂರವಿದ್ದು, ಸತ್ಕರ್ಮಗಳನ್ನು ಮಾಡುತ್ತಾ ಹೋಗುತ್ತಾನೆ. 
ಮೊಂಡುವಾದಗಳಿಲ್ಲ ಗರ್ವ ಮೊದಲೇ ಇಲ್ಲ
ಧನ ಪದವಿ ಕೀರ್ತಿ ಮೆಚ್ಚುಗೆಯು ಬೇಕಿಲ್ಲ |
ಸೋಲು ಗೆಲವುಗಳ ಸಮದಿ ಕಾಣಲುಬಲ್ಲ
ಧೀರನವನೆ ನಿಜನಾಯಕನು ಮೂಢ ||
     'ಅಲ್ಪ ವಿದ್ಯಾವಂತ ಮಹಾಗರ್ವಿ, ಮಹಾವಿದ್ಯಾವಂತ ಘನಪಂಡಿತ' ಎಂಬ ಲೋಕೋಕ್ತಿಗೆ ತಕ್ಕಂತೆ ಸಾಧಕನಿಗೆ ತಾನೇ ದೊಡ್ಡವನು, ಎಲ್ಲವನ್ನೂ ತಿಳಿದವನು ಎಂಬ ದರ್ಪ,  ಅಹಂಕಾರವಿರುವುದಿಲ್ಲ. ತನ್ನ ಮಾತನ್ನು ಇತರರು ಕೇಳದಿದ್ದರೆ, ಅವಗಣಿಸಿದರೆ ಆತನಿಗೆ ಸಿಟ್ಟು ಬರುವುದಿಲ್ಲ. ಮೆಚ್ಚಿ ಹೊಗಳಿದರೂ ಅವನಿಗೆ ಲೆಕ್ಕಕ್ಕಿಲ್ಲ. ಇತರರು ಏನೆಂದುಕೊಂಡಾರೋ ಎಂಬ ಅಳುಕು, ಅಂಜಿಕೆ, ಲಜ್ಜೆಗಳಿಲ್ಲದೆ ನಿರ್ಲಿಪ್ತತೆಯಿಂದ ತನ್ನ ಕಾರ್ಯ ತಾನು ಮಾಡುತ್ತಿರುತ್ತಾನೆ. ಅವನಿಗೆ ಬಿಸಿಲು, ಮಳೆ, ಚಳಿ, ಗಾಳಿ, ಇತ್ಯಾದಿ ವೈಪರೀತ್ಯಗಳು ಅಡ್ಡಿಯೆನಿಸುವುದಿಲ್ಲ. ಕಾರ್ಯಕ್ಕೆ ಬೇಕಾದ ಅವಶ್ಯಕತೆಗಳು ಸಮೃದ್ಧಿಯಾಗಿರಲಿ, ಕೊರತೆಯಿರಲಿ ಬಾಧಕವೆನಿಸದು. ಒಬ್ಬ ಯಶಸ್ವಿ ವ್ಯಕ್ತಿ ತನ್ನ ಸಾಮರ್ಥ್ಯವನ್ನು ಅರಿತು ಕೆಲಸವನ್ನು ಕೈಗೆತ್ತಿಕೊಳ್ಳುತ್ತಾನೆ. ಅದನ್ನು ವ್ಯವಸ್ಥಿತವಾಗಿ ಮಾಡುತ್ತಾನೆ. ಹಾಗೆ ಮಾಡುವಾಗ ಯಾವುದೊಂದನ್ನೂ ಸಣ್ಣದೆಂಬ ಭಾವನೆಯಿಂದ ಕಡೆಗಣಿಸುವುದಿಲ್ಲ. ಮಾಡಬಲ್ಲೆನೆಂಬ ಧೃಢ ವಿಶ್ವಾಸವಿದ್ದು, ಹಿಡಿದ ಕೆಲಸವನ್ನು ಮಧ್ಯೆ ನಿಲ್ಲಿಸುವುದಿಲ್ಲ. ವ್ಯರ್ಥವಾಗಿ ಕಾಲಹರಣ ಮಾಡುವುದಿಲ್ಲ. ಚಂಚಲತೆಯಿಂದ ದೂರವಿದ್ದು, ಕೆಲಸವನ್ನು ವಿಚಲಿತಗೊಳಿಸುವ ಸಂಗತಿಗಳಿಂದ ದೂರವಿದ್ದುಬಿಡುತ್ತಾನೆ. ಸಿಗಲು ಸಾಧ್ಯವಿಲ್ಲವೆಂಬುದನ್ನು ಬಯಸದೆ, ಕಳೆದುಹೋದದ್ದರ ಬಗ್ಗೆ ಚಿಂತಿಸದೆ, ಆತಂಕದ ಸ್ಥಿತಿಯಲ್ಲೂ ಧೃತಿ ಕಳೆದುಕೊಳ್ಳದಿರುವವನು ನಾಯಕನೆನಿಸಿಕೊಳ್ಳುತ್ತಾನೆ.
ಪರರು ನಮಿಪುವ ತೇಜವಿರುವವನು
ಕೆಡುಕ ಸೈರಿಸಿ  ಕ್ಷಮಿಪ ಗುಣದವನು |
ನಾನತ್ವ ದೂರ ನಡೆನುಡಿಯು ನೇರ
ಸಾತ್ವಿಕನು ಸಾಧಕನು ಅವನೆ ಮೂಢ || 
     ಸಾಮಾನ್ಯರಲ್ಲಿ ಕಾಣುವ ಮತ್ಸರ ಸಾಧಕರಿಂದ ದೂರವಿರುತ್ತದೆ. ಈ ಮತ್ಸರ ಸಾಮಾನ್ಯರಿರಲಿ, ಅಪ್ರತಿಮರೆನಿಸಿಕೊಂಡವರನ್ನೂ ಕಾಡುತ್ತದೆ. ರಾಜಕಾರಣಿಗಳಲ್ಲಿ, ಅಧಿಕಾರಿಗಳಲ್ಲಿ, ಸಾಹಿತಿಗಳಲ್ಲಿ, ವೈಚಾರಿಕವಾಗಿ ಪ್ರಬುದ್ಧರೆನಿಸಿದವರಲ್ಲಿ, ಅಷ್ಟೇ ಏಕೆ ಜೀವನದ ಎಲ್ಲಾ ರಂಗಗಳಲ್ಲಿ ತಾನು ಎಲ್ಲರಿಗಿಂತ ಶ್ರೇಷ್ಠರೆನಿಸಬೇಕು, ತನಗಿಂತ ಹೆಚ್ಚು ಗೌರವ ಇತರರಿಗೆ ಸಿಗಬಾರದು ಎನ್ನುವ ಹಪಾಹಪಿತನ ಒಂದಲ್ಲಾ ಒಂದು ಹಂತದಲ್ಲಿ ತನ್ನ ಅವತಾರವನ್ನು ತೋರಿಸಿಬಿಡುತ್ತದೆ. ಕನ್ನಡದ ಉನ್ನತ ಪ್ರಶಸ್ತಿಯನ್ನು ಪಡೆದವರೊಬ್ಬರು ತಾನು ಸದಾ ಮುಂಚೂಣಿಯಲ್ಲಿ ಕಾಣಿಸಿಕೊಳ್ಳಬೇಕೆಂಬ ತವಕದಿಂದ ವೈಚಾರಿಕ ಪ್ರಜ್ಞೆಯನ್ನೇ ಕಳೆದುಕೊಂಡು ಅಪದ್ಧವಾಗಿ ಮಾತನಾಡುವುದನ್ನು ಕಂಡಿದ್ದೇವೆ. ಆದರೆ ನಿಜವಾದ ಸಾಧಕ ನಾನತ್ವದಿಂದ ದೂರವೇ ಉಳಿದಿರುತ್ತಾನೆ. ಶ್ರೇಷ್ಠ ವಿಚಾರವನ್ನು ಚೆನ್ನಾಗಿ ಮಂಡಿಸುವವರನ್ನು, ಶ್ರೇಯಸ್ಕರವಾದ ಕಾರ್ಯವನ್ನು ಯಾರೇ ಮಾಡಿದರೂ ಕಂಡು ಸಂತೋಷಿಸಿ ಅವರ ಬೆನ್ನು ತಟ್ಟುತ್ತಾನೆಯೇ ಹೊರತು ಕರುಬುವುದಿಲ್ಲ. ಸಾಧಕರಿಗೆ ಸಿಗುವ ಜನಮನ್ನಣೆಯನ್ನು ಕಂಡು ಕರುಬುವವರು ಸಾಧಕರಿಗೆ ಕೇಡು ಬಗೆಯಲು ಪ್ರಯತ್ನಿಸಿದರೂ, ಅದನ್ನು ನಿರ್ಲಕ್ಷಿಸುವ ಅಸಾಮಾನ್ಯ ಗುಣ ಸಾಧಕರಿಗೆ ಮಾತ್ರ ಒಲಿದಿರುತ್ತದೆ.
ನುಡಿದಂತೆ ನಡೆದು ಮಾದರಿಯು ತಾನಾಗೆ
ಪರರ ಮನವರಿತು ನಡೆವ ಕರುಣೆಯಿರಲಾಗೆ |
ಕರಗತವು ತಾನಾಗೆ ಕೆಲಸ ಮಾಡಿಪ ಕಲೆಯು 
ನಾಯಕನು ಉದಯಿಸುವ ಕಾಣು ಮೂಢ ||
     ಈ ಘಟನೆಯ ಬಗ್ಗೆ ನೀವೂ ಕೇಳಿರಬಹುದು ಅಥವ ಓದಿರಬಹುದು. ಒಮ್ಮೆ ರಾಮಕೃಷ್ಣ ಪರಮಹಂಸರ ಹತ್ತಿರ ಒಬ್ಬ ತಾಯಿ ತನ್ನ ಮಗನನ್ನು ಕರೆದುಕೊಂಡು ಬಂದು, "ಪೂಜ್ಯರೇ, ನನ್ನ ಮಗನಿಗೆ ಜಿಲೇಬಿ ತಿನ್ನುವ ಚಪಲ ಜಾಸ್ತಿ. ಎಷ್ಟು ಕೊಟ್ಟರೂ ತಿನ್ನುತ್ತಾನೆ, ಮತ್ತೆ ಮತ್ತೆ ಕೇಳುತ್ತಾನೆ. ಅಷ್ಟೊಂದು ತಿಂದರೆ ಅವನ ಆರೋಗ್ಯ ಏನಾಗಬೇಕು? ನೀವು ಸ್ವಲ್ಪ ಬುದ್ಧಿ ಹೇಳಿ ಪೂಜ್ಯರೇ" ಎಂದು ಕೇಳಿಕೊಳ್ಳುತ್ತಾಳೆ. ರಾಮಕೃಷ್ಣರು ಆ ತಾಯಿಗೆ ಒಂದು ವಾರ ಬಿಟ್ಟು ಬರಲು ಹೇಳುತ್ತಾರೆ. ಒಂದು ವಾರದ ನಂತರದಲ್ಲಿ ಮತ್ತೆ ಕೆಲವು ದಿನಗಳು ಬಿಟ್ಟು ಬರಲು ಹೇಳುತ್ತಾರೆ. ಇದು ನಾಲ್ಕು-ಐದು ಸಲ ಮುಂದುವರೆಯುತ್ತದೆ. ಕೊನೆಗೆ ಒಂದು ದಿನ ರಾಮಕೃಷ್ಣರು ಮಗುವನ್ನು ಹತ್ತಿರ ಕರೆದು ಪ್ರೀತಿಯಿಂದ ತಲೆ ನೇವರಿಸುತ್ತಾ, "ಮಗು ತುಂಬಾ ಜಿಲೇಬಿ ತಿನ್ನುವುದು ಒಳ್ಳೆಯದಲ್ಲ. ಅಪರೂಪಕ್ಕೆ ಸ್ವಲ್ಪ ತಿನ್ನು. ಜಾಸ್ತಿ ತಿನ್ನಬೇಡ" ಎನ್ನುತ್ತಾರೆ. ಮಗುವಿಗೆ ಅವರು ಹೇಳಿದ ರೀತಿ ಒಪ್ಪಿಗೆಯಾಗುತ್ತದೆ. ಅದರಂತೆ ಪಾಲಿಸುತ್ತದೆ ಕೂಡಾ! ಆ ತಾಯಿಗೆ ಆಶ್ಚರ್ಯವಾಗುತ್ತದೆ. ಈ ಮಾತನ್ನು ಅವರು ಮೊದಲ ದಿನವೇ ಹೇಳಬಹುದಿತ್ತಲ್ಲಾ ಎಂದು ಮನಸ್ಸಿನಲ್ಲಿ ಅಂದುಕೊಂಡರೂ ಆಗ  ವಿಚಾರಿಸದೆ ಇನ್ನೊಂದು ದಿನ ತಾನೊಬ್ಬಳೇ ಬಂದಾಗ ಈ ಪ್ರಶ್ನೆ ಕೇಳಿಯೇಬಿಡುತ್ತಾಳೆ. ರಾಮಕೃಷ್ಣರು ನಗುತ್ತಾ ಹೇಳುತ್ತಾರೆ, "ತಾಯಿ, ನನಗೂ ಜಿಲೇಬಿ ಅಂದರೆ ಬಹಳ ಇಷ್ಟ. ಅದನ್ನು ತಿನ್ನಬೇಕೆಂಬ ಚಪಲದಿಂದ ಬಿಡಿಸಿಕೊಳ್ಳಲು ನನಗೆ ಅಷ್ಟು ಸಮಯ ಬೇಕಾಯಿತು." ದೊಡ್ಡವರ ರೀತಿಯೇ ಹಾಗೆ! ಇನ್ನೊಬ್ಬರಿಗೆ ಹೇಳುವ ಮುನ್ನ ಅದನ್ನು ತಾವು ಅನುಸರಿಸಿರಬೇಕು. ಅವರ ಅಂತರಂಗ ಮತ್ತು ಬಹಿರಂಗಗಳಲ್ಲಿ ಭಿನ್ನತೆ ಇಲ್ಲ. ಹೇಳುವುದೊಂದು ಮಾಡುವುದು ಮತ್ತೊಂದು ಅನ್ನುವುದು ಇಲ್ಲವೇ ಇಲ್ಲ. ಅಂತಹವರ ಮಾತಿನಲ್ಲಿ ಶಕ್ತಿ ಇರುತ್ತದೆ. ಆ ಶಕ್ತಿ ಹೊರಗಿನದಲ್ಲ. ಒಳಗಿನಿಂದ ಬಂದುದು. ಆ ಮಾತುಗಳನ್ನು ಕೇಳಿದವರು ಮಂತ್ರಮುಗ್ಧರಂತೆ ಅನುಸರಿಸುವುದಕ್ಕೆ ಇರುವ ವಿಶೇಷ ಕಾರಣವೇ ಇದಾಗಿದೆ. 
ದ್ವೇಷವದು ದೂರ ಸರ್ವರಲಿ ಸಮಭಾವ
ಎಲ್ಲರಲು ಅಕ್ಕರೆ ಕರುಣೆಯಲಿ ಸಾಗರ |
ಮಮಕಾರವಿಲ್ಲ ಗರ್ವವದು ಮೊದಲಿಲ್ಲ
ಸಮಚಿತ್ತದವನೆ ನಿಜ ಸಾಧಕನು ಮೂಢ || 
     ಆದಿ ಶಂಕರಾಚಾರ್ಯ ವಿರಚಿತ ಸಾಧನಾಪಂಚಕ ಒಬ್ಬ ಸಾಧಕ ಹೇಗೆ ಇರಬೇಕೆಂಬುದನ್ನು ತಿಳಿಸುವ ಒಂದು ಅಪೂರ್ವ ರಚನೆ. ನಿತ್ಯ ವೇದಾಧ್ಯಯನ, ಮಾಡುವ ಕೆಲಸಗಳನ್ನು ಭಗವಂತ ಆರಾಧನೆ ಎಂದು ಭಾವಿಸಿ ಮಾಡುವುದು, ಅಂತರಂಗದ ಕೊಳೆಯನ್ನು ತೊಡೆದು ಹಾಕುವುದು, ಮೋಹದ ಸಂಕೋಲೆಯಿಂದ ಹೊರಬರುವುದು, ಜ್ಞಾನಿಗಳ ಸತ್ಸಂಗ, ಯೋಗ್ಯ ಗುರುಗಳ ಆಶ್ರಯ, ವಿತಂಡ ವಾದಗಳಿಂದ ದೂರವಿರುವುದು, ಸಮಚಿತ್ತ ಹೊಂದುವುದು, ಇತ್ಯಾದಿಗಳು ಸಾಧಕನಿಗೆ ಇರಬೇಕೆಂದು ಅದು ಹೇಳುತ್ತದೆ. 
ಹೊರಶುಚಿಯೊಡನೆ ಒಳಶುಚಿಯು ಇರಲು
ಮಾನಾಪಮಾನದಲುದಾಸೀನನಾಗಿರಲು |
ನಿರ್ಭಯತೆ ಮೇಳವಿಸೆನಿಸೆ ಸಮರ್ಥ
ದೇವಪ್ರಿಯನವನಲ್ಲದಿನ್ಯಾರು ಮೂಢ ||
     'ಅಬ್ಬಬ್ಬಾ, ಸಾಧಕರಾಗುವುದು ಇಷ್ಟೊಂದು ಕಷ್ಟವೇ! ಇನ್ನೂ ಏನಾದರೂ ಇದೆಯೋ?' ಎಂಬ ಪ್ರಶ್ನೆ ಮೂಡುತ್ತದೆ. 'ಹೌದು, ಇನ್ನೂ ಇದೆ' ಎಂಬುದು ಸಾಧಕರ ನಡೆ-ನುಡಿಗಳನ್ನು ಕಂಡವರಿಗೆ ಅರಿವಾಗದೇ ಇರದು. ಅವರು 'ತಾನೇ ಸರಿ, ತನ್ನದೇ ಸರಿ' ಅನ್ನುವುದಿಲ್ಲ. ಒಂದು ಪುಟ್ಟ ಮಗುವೂ ಏನನ್ನೋ ಹೇಳುತ್ತಿದ್ದರೂ ಅದನ್ನೂ ಬೆರಗಾಗಿ ಕಣ್ಣರಳಿಸಿ ಕೇಳುವ ಆ ತನ್ಮಯತೆ ಸಾಧಕರಿಗಲ್ಲದೆ ಬೇರೆ ಯಾರಿಗೆ ಬಂದೀತು! ಎಲ್ಲವನ್ನೂ 'ಕೇಳುವ' ಆ ಗುಣ ಅನನ್ಯ. ಅವರು ಮೇಲು, ಇವರು ಕೀಳು, ಅವನು ಬಡವ, ಇವನು ಶ್ರೀಮಂತ, ಇತ್ಯಾದಿ ತಾರತಮ್ಯ ಮಾಡುವುದಿಲ್ಲ. ಎಂತಹ ಸ್ಥಿತಿಯಲ್ಲೂ ಆನಂದ ಕಾಣುವ ಗುಣ, ಆಸೆ, ಆಮಿಷಗಳಿಂದ ಮೈಮರೆತು ದಾರಿ ತಪ್ಪದ ನಡತೆ, ಅಪಾಯವನ್ನೆದುರಿಸುವ ಗಟ್ಟಿತನ, ಹೀನ-ದೀನರ ಸೇವೆಯನ್ನು ದೇವರ ಪೂಜೆಯೆಂದು ಭಾವಿಸುವ ಉದಾತ್ತತೆ, ಸರಳತೆ, ನಿಷ್ಕಾಮ ಕರ್ಮ, ಅಚಲ ವಿಶ್ವಾಸ, ಹೊರಮನದ ಕೋರಿಕೆಗಳನ್ನು ಅಲ್ಲಗಳೆದು ಒಳಮನದ ಕರೆಯನ್ನು ಆಲಿಸಿ ಅದರಂತೆ ಜೀವಿಸುವ ಕಲೆ ಸಾಧಕರ ಅಮೂಲ್ಯ ಸಂಪತ್ತು. ಇಷ್ಟೆಲ್ಲಾ ಇದ್ದ ಮೇಲೆ, ಅವರು ದೇವರೇ ಸರಿ, ಸಾಮಾನ್ಯ ಮನುಷ್ಯರಲ್ಲವೇ ಅಲ್ಲ, ಸಾಮಾನ್ಯರು ಹೀಗಿರಲು ಸಾಧ್ಯವೇ ಇಲ್ಲ ಎಂದು ನಿರ್ಧರಿಸಿ ಅವರನ್ನು ಆರಾಧಿಸಲು ಪ್ರಾರಂಭಿಸಿಬಿಡುತ್ತೇವೆ. ಇಂದು ಅನೇಕ ಸಾಧು-ಸಂತ-ಮಹಾಂತರ ಗುಡಿಗಳನ್ನು ಕಟ್ಟಿ ನಿತ್ಯ ಪೂಜೆ ಮಾಡುವುದು ಸಾಮಾನ್ಯವಾಗಿಬಿಟ್ಟಿದೆ. ಹಾಗೆ ಪೂಜಿಸುವವರದೇ ಒಂದು ಪಂಥವಾಗಿ ಬಿಡುತ್ತದೆ. ಹೊಸ ಹೊಸ ರೀತಿ-ನೀತಿಗಳು, ಕಟ್ಟಳೆಗಳು, ಸಂಪ್ರದಾಯಗಳು ರೂಢಿಗೆ ಬಂದುಬಿಡುತ್ತವೆ. ಅವರನ್ನು ಆರಾಧಿಸುವುದು ತಪ್ಪೇ, ಪೂಜಿಸಬಾರದೇ ಎಂದು ಸಿಟ್ಟಾಗದಿರಿ. ನಮಗೆ ಯೋಗ್ಯ ಮಾರ್ಗದರ್ಶನ ಮಾಡಿದವರನ್ನು, ಮಾಡುವವರನ್ನು ಆರಾಧಿಸುವುದು ತಪ್ಪಲ್ಲವೇ ಅಲ್ಲ. ಅದರೆ ಅದರಲ್ಲಿ ಒಂದು ಅಪಾಯವಿದೆ. ಅಂತಹ 'ಪೂಜ್ಯ'ರುಗಳನ್ನು 'ಹೊರಗೆ' ಇಟ್ಟುಬಿಡುವುದೇ ಆ ಅಪಾಯ. ಸಾಷ್ಟಾಂಗ ನಮಸ್ಕಾರ ಮಾಡಿ, ಆರತಿ ಬೆಳಗಿ, ತೀರ್ಥ-ಪ್ರಸಾದಗಳನ್ನು ಪಡೆದು ಕೃತಕೃತ್ಯರಾದೆವೆಂದು ಅಂದುಕೊಂಡುಬಿಡುತ್ತೇವೆ. ವಿಚಾರ ಮಾಡೋಣ. ಹೃದಯ ಮಂದಿರಗಳಲ್ಲಿ ಅವರನ್ನು ಪ್ರತಿಷ್ಠಾಪಿಸಿ ಮಾಡುವ ಪೂಜೆಯೇ ನಿಜವಾದ ಪೂಜೆ. ಅವರು ತೋರಿದ ಹಾದಿಯಲ್ಲಿ ನಡೆಯುವುದೇ ಅವರಿಗೆ ಸಲ್ಲಿಸಬಹುದಾದ ಯೋಗ್ಯ ಗುರುಕಾಣಿಕೆ. ಹಾಗೆ ನಡೆದು ಸಾಧಿಸುವುದೇ ನಮಗೆ ಸಿಗುವ ಪೂಜಾಫಲ ಎಂಬುದನ್ನು ಅರಿಯೋಣ.
-ಕ.ವೆಂ.ನಾಗರಾಜ್.
[ಬಳಸಿರುವ ಚಿತ್ರ ಅಂತರ್ಜಾಲದಿಂದ ಹೆಕ್ಕಿದುದು]
[24-02-2014ರ 'ಜನಮಿತ್ರ' ಪತ್ರಿಕೆಯಲ್ಲಿ ಪ್ರಕಟಿತ 'ಚಿಂತನ']

Wednesday, March 5, 2014

ಜೀವನ ವೇದ - 6

ಮನುಷ್ಯನ ಜೀವನಕ್ಕೆ ಉತ್ಸಾಹ ತುಂಬುವ ಒಂದು ವೇದ ಮಂತ್ರದ ಬಗ್ಗೆ ಇಂದು ವಿಚಾರ ಮಾಡೋಣ.
ಶುಕ್ರೋsಸಿ ಭ್ರಾಜೋsಸಿ ಸ್ವರಸಿ ಜ್ಯೋತಿರಸಿ|
ಆಪ್ನುಹಿ ಶ್ರೇಯಾಂಸಮತಿ ಸಮಂ ಕ್ರಾಮ||
[ಅಥರ್ವ: ೨-೧೧-೫]
ಅರ್ಥ:
ಶುಕ್ರ: ಅಸಿ= ಓ ಮಾನವ ನೀನು ನಿರ್ಮಲ ನಾಗಿದ್ದೀಯೇ
ಭ್ರಾಜ: ಅಸಿ = ನೀನು ತೇಜಸ್ವಿಯಾಗಿದ್ದೀಯೇ
ಸ್ವ: ಅಸಿ = ಸ್ವಸಾಮರ್ಥ್ಯಶಾಲಿಯಾಗಿದ್ದೀಯೇ
ಜ್ಯೋತಿ: ಅಸಿ = ಜ್ಞಾನ ಪ್ರಕಾಶದಿಂದ ಬೆಳಗುವನಾಗಿದ್ದೀಯೇ
ಶ್ರೇಯಾಂಸಂ ಆಪ್ನುಹಿ = ಶ್ರೇಯಸ್ಸನ್ನು ಸಾಧಿಸಿಕೋ
ಸಮಂ ಅತಿಕ್ರಾಮ = ಸಮನಾದವನನ್ನು ಮೀರಿಸಿ ಮುಂದೆ ನಡೆ
ಈ ಮಂತ್ರದ ಹಿರಿಮೆ ನೋಡಿ, ಹೇಗಿದೆ! ಮನುಷ್ಯನನ್ನು “ನೀನು ಪಾಪಿ” ಎನಲಿಲ್ಲ. ಬದಲಿಗೆ ನೀನು ನಿರ್ಮಲನಾಗಿದ್ದೀಯೆ, ನೀನು ಪ್ರಕಾಶಮಾನವಾಗಿದ್ದೀಯೇ, ನೀನು ತೇಜಸ್ವಿಯಾಗಿದ್ದೀಯೇ,ನೀನು ಸ್ವಸಾಮರ್ಥ್ಯಶಾಲಿಯಾಗಿದ್ದೀಯೇ,ನೀನು ಜ್ಞಾನ ಪ್ರಕಾಶದಿಂದ ಬೆಳಗುವನಾಗಿದ್ದೀಯೇ,  ಶ್ರೇಯಸ್ಸನ್ನು ನೀನೇ ಸ್ವತ: ಸಾಧಿಸಿ ಅಧ್ಯಾತ್ಮ ಮಾರ್ಗದಲ್ಲಿ ನಿನ್ನ ಸಮ ಇರುವವರನ್ನು ಮೀರಿಸಿ ಮುಂದೆ ನಡೆ. ವೇದದ ಈ ಮಂತ್ರವನ್ನು ಅರ್ಥಮಾಡಿಕೊಳ್ಳುವಾಗ ಒಮ್ಮೆ ನನ್ನ ಮೈ ಝುಮ್ ಎಂದಿತು. ಮಂತ್ರದ ಅರ್ಥವನ್ನು ಮನಸ್ಸಿಟ್ಟು ಓದಿ ,ನಿಮಗೂ ಹಾಗನ್ನಿಸದೆ ಇರದು.
ಈ ಮಂತ್ರವು ಯಾವುದೋ ಒಂದು ಜಾತಿಗಾಗಿ ಹೇಳಿದೆಯೇ? ವೇದ ಮಂತ್ರಗಳು ಸಕಲ ಮಾನವನ ಅಭ್ಯುದಯಕ್ಕಾಗಿ ಇರುವ  ಮಾರ್ಗದರ್ಶನ. ಒಂದು ವೇಳೆ ಒಬ್ಬ ಮನುಷ್ಯನು ಇನ್ನೊಬ್ಬನಿಗಿಂತ     ಅವನು ಕೆಳಗಿದ್ದೀನಿ, ಎಂದು ಕೀಳರಿಮೆ ಹೊಂದಿದ್ದರೆ, ಅವನಿಗೆ ಎಂತಾ ಆತ್ಮವಿಶ್ವಾಸವನ್ನು ತುಂಬುತ್ತದೆಂದರೆ ನಿನ್ನಲ್ಲಿ ಚೈತನ್ಯವಿದೆ, ನೀನು ಸಾಮರ್ಥ್ಯವನ್ನು ಹೊಂದಿದ್ದೀಯ, ಮುನ್ನಡೆ  ಎಂದು ಹುರಿದುಂಬಿಸುತ್ತದೆ.
ನೀನು ಪಾಪಿ! ನಿನಗೆ ಪುಣ್ಯ  ಸಿಗಬೇಕಾದರೆ ಇಂತಾ ದೇವರನ್ನು ನಂಬು, ಈ ಗ್ರಂಥವನ್ನು ಓದು, ಈ ಪ್ರವಾದಿಯನ್ನು ನಂಬು ಎಂದು ಹೇಳುವ, ಮನುಷ್ಯನನ್ನು ಭೀತಿಯಲ್ಲಿ ತಳ್ಳುವ ಮತಗಳ ಬಗ್ಗೆ ನಮಗೆ ಅರಿವಿದೆ. ಆದರೆ ಹಾಗೆ   ವೇದವು  ಹೇಳಲೇ ಇಲ್ಲ. ವೇದವನ್ನು ನಂಬು ಎಂದೂ ಕೂಡ ವೇದವು ಹೇಳಲಿಲ್ಲ. ಮನುಷ್ಯನು ಯಾವ ಮಾರ್ಗದಲ್ಲಿ ನಡೆಯಬೇಕೆಂಬುದನ್ನು ವೇದಮಂತ್ರ ಒಂದು ಹೇಳುತ್ತದೆ ಯಾವುದು ಪ್ರಾಚೀನದಿಂದ ಬಂದಿದೆಯೋ, ಯಾವುದು ಇಂದಿನ ನವೀನ ಜ್ಞಾನವಿದೆಯೋ, ಯಾವುದು ಶಾಸ್ತ್ರಗಳಲ್ಲಿ ಹೇಳಿದೆಯೋ, ಯಾವುದು ನಿನ್ನ ಅಂತರಂಗದಲ್ಲಿ ಹುಟ್ಟುತ್ತದೋ, ಎಲ್ಲವಕ್ಕೂ ಕಿವಿಗೊಡು, ಆದರೆ ಯಾವುದು ನಿನ್ನನ್ನು  ಕಲ್ಯಾಣಮಾರ್ಗದಲ್ಲಿ ಕರೆದುಕೊಂಡು ಹೋಗಬಲ್ಲದೆಂದು ನಿನ್ನ ವಿವೇಕ ಹೇಳುತ್ತದೆಯೋ, ಆ ಮಾರ್ಗದಲ್ಲಿ ನಿನ್ನ ಜೀವನರಥ ಸಾಗಲಿ ಈ ಮಂತ್ರದ ಬಗ್ಗೆ ಪ್ರತ್ಯೇಕವಾಗಿಯೇ ವಿಚಾರ ಮಾಡೋಣ. ಆದರೆ ಸಧ್ಯಕ್ಕೆ ಇಷ್ಟನ್ನು ನಾವು ಅರ್ಥ ಮಾಡಿಕೊಳ್ಳಬಹುದು. ವೇದದಲ್ಲಿ ನಮ್ಮ ಬದುಕಿಗೆ ಅಗತ್ಯವಾದ ಎಲ್ಲಾ ಮಾರ್ಗದರ್ಶನ ಲಭ್ಯವಿದ್ದರೂ ವೇದವು ತನ್ನನ್ನೇ ನಂಬಿ ಎಂದು ಎಲ್ಲೂ ಹೇಳಿಲ್ಲ.
ಮನುಷ್ಯನಿಗೆ ಉನ್ನತಿಹೊಂದಲು ಇದಕ್ಕಿಂತ ಇನ್ನೇನು ಬೇಕು? ಇಂತಹಾ ಆತ್ಮಸ್ಥೈರ್ಯವನ್ನು ತುಂಬುವಂತಹ ವೇದಮಂತ್ರವನ್ನು ಬದಿಗಿಟ್ಟು ಅದನ್ನು ಪಂಡಿತರ ಮಡಿವಂತ ಪಟ್ಟಿಗೆ ಸೇರಿಸಿ ಅದರಿಂದ ದೂರವಿದ್ದೀವಲ್ಲಾ! ಇದಕ್ಕಿಂತ ದೌರ್ಭಾಗ್ಯ ಮತ್ತೊಂದಿದೆಯೇ?
ಈ ಮಂತ್ರವನ್ನು ಅರ್ಥಮಾಡಿಕೊಳ್ಳುವಾಗ ನಮ್ಮ ಶಾಲೆಗಳಲ್ಲಿ ಮಕ್ಕಳಿಗೆ ನಮ್ಮ ಟೀಚರ್ ಗಳು ಪಾಠಮಾಡುವ ಚಿತ್ರವು ನನ್ನ  ಕಣ್ಮುಂದೆ ಬಂತು.ಎಲ್ಲರಿಗೂ ಈ ವಿಚಾರ ಗೊತ್ತಿದೆಯಾದರೂ ಈ ಸಂದರ್ಭದಲ್ಲಿ ನಾನು ನನ್ನೆಲ್ಲಾ ಮಿತ್ರರ ಗಮನವನ್ನು ಇತ್ತ ಸೆಳೆಯಲು ಬಯಸುತ್ತೇನೆ.
ನಮ್ಮ ಪ್ರೈಮರಿ ಶಾಲೆಗಳಿಗೆ ಹೋಗಿ ನೋಡಿ[ಕೆಲವು ಶಾಲೆಗಳು ಅಪವಾದ ವಿರಬಹುದು] ಅಲ್ಲಿನ ಟೀಚರ್‌ಗಳ ಬಾಯಲ್ಲಿ ಬರುವ ಮಾತುಗಳನ್ನು ಕೇಳಿ ಇನ್ನು ಹತ್ತು ಜನ್ಮ ಎತ್ತಿ ಬಂದರೂ ನಿನಗೆ ಬುದ್ಧಿ ಬರುಲ್ಲಾ  ಅಂತಾ  ದಡ್ಡಾ ನೀನು. ಅವನನ್ನು ನೋಡು ಎಷ್ಟು ಸೊಗಸಾಗಿ ಇಂಗ್ಳೀಶಲ್ಲಿ ಮಾತನಾಡುತ್ತಾನೆ! ಎಷ್ಟು ಶಿಸ್ತಾಗಿ ಅವರ ಮನೆಯಲ್ಲಿ ಬೆಳೆಸಿದ್ದಾರೆ, ನೋಡು! ನೀನು ಇದೀಯ ಮಂಕು ಮುಂಡೇದು!!
ವೇದವು ಹೇಳುತ್ತಿದೆ  ನೀನು ಸಮರ್ಥ, ನೀನು ತೇಜಸ್ವೀ, ನೀನು ಪರಿಶುದ್ಧ
ಆದರೆ ನಮ್ಮ ಶಾಲೆಯ ಟೀಚರ್ ಗಳು ಹೇಳುತ್ತಾರೆ  ನೀನು ದಡ್ಡ, ನೀನು ಪೆದ್ದ, ನೀನು ನಿಶ್ಪ್ರಯೋಜಕ ನೋಡಿ ಗ್ರಹಚಾರ ಹೇಗಿದೆ? ಟೀಚರ್ ಗಳ ಹತ್ತಿರ ಛೀಮಾರಿ  ಹಾಕಿಸಿಕೊಳ್ಳುವ ವಿದ್ಯಾರ್ಥಿಯ ಮಾತಾ ಪಿತೃಗಳು ಆ ಶಾಲೆಯ ಭವ್ಯವಾದ ಕಟ್ಟಡ, ಫುಲ್‌ಸೂಟ್ ಹಾಕಿರುವ ಪ್ರಿನ್ಸಿಪಾಲ್ [ನಮ್ಮ ಕಾಲದಲ್ಲಿ ಕಾಲೇಜುಗಳಲ್ಲಿ ಮಾತ್ರ ಪ್ರಿನ್ಸಿಪಾಲರಿರುತ್ತಿದ್ದರು. ಹೈಸ್ಕೂಲ್‌ಗಳಿಗೆ ಇರುತ್ತಿದ್ದವರೂ ಹೆಡ್ ಮಾಸ್ಟರ್ ಮಾತ್ರವೇ. ಈಗೆಲ್ಲಾ ಪ್ರೈಮರಿ ಶಾಲೆಗೂ ಪ್ರಿನ್ಸಿಪಾಲರಿರುತ್ತಾರೆ] ಶಾಲೆಯ ಗೇಟ್‌ನಲ್ಲೊಬ್ಬ ಮಿಲಿಟರಿ ಉಡುಪು ಧರಿಸಿರುವ  ಗಾರ್ಡ್,ಇವೆಲ್ಲಾ ಚಿತ್ರಣವನ್ನು ನೋಡಿ ಕೇಳಿದಷ್ಟು ಡೊನೇಶನ್ ಕೊಟ್ಟು ಮಕ್ಕಳನ್ನು ಶಾಲೆಗೆ ಸೇರಿಸಿ ನಂತರ ಟೀಚರ್ ಗಳಿಂದ ಮಕ್ಕಳಿಗೆ ಮಾನಸಿಕ ಹಿಂಸೆ ಕೊಡುವಂತಹ ಕೆಟ್ಟ ಶಿಸ್ತನ್ನು ಹೇರಿಸಿಕೊಳ್ಳುವುದು!! ಇದು  ಬೇಕಿತ್ತಾ? ಯಾವಾಗ ನಮ್ಮ ಪೋಷಕರುಗಳಿಗೆ ಬುದ್ಧಿ ಬರುತ್ತೋ ಗೊತ್ತಿಲ್ಲ.
ಮಕ್ಕಳನ್ನು ಅಯೋಗ್ಯರೆಂದು ಯಾರಾದರೂ ಟೀಚರ್ ಹೇಳಿದರೆ ಅಂತವರು ಈ ಸುಭಾಷಿತವನ್ನು ಮೊದಲು ಅರ್ಥಮಾಡಿಕೊಳ್ಳ  ಬೇಕು.

ಅಮಂತ್ರಂ ಅಕ್ಷರಮ್ ನಾಸ್ತಿ  ನಾಸ್ತಿ ಮೂಲ ಮನೌಷಧಮ್|
ಅಯೋಗ್ಯ: ಪುರುಷೋ ನಾಸ್ತಿ  ಯೋಜಕಸ್ತತ್ರ ದುರ್ಲಭ: ||
ಎಷ್ಟು ಸರಳವಾಗಿದೆ ಅರ್ಥ! ಮಂತ್ರವಾಗದ ಅಕ್ಷರವಿಲ್ಲ. ಔಷಧಿಯಾಗದ ಗಿಡಮೂಲಿಕೆಗಳಿಲ್ಲ.ಯಾವ ವ್ಯಕ್ತಿಯೂ ಅಯೋಗ್ಯನಲ್ಲ. ಆದರೆ ಯೋಜನೆ ಮಾಡುವವರು ವಿರಳ. ಸ್ವಾಮಿ ವಿವೇಕಾನಂದರು ಹೇಳುತ್ತಿದ್ದರು ಮನುಷ್ಯನ ಜನ್ಮವಾಗುವಾಗ ಭಗವಂತನು ಎಲ್ಲರಲ್ಲಿ ಚೈತನ್ಯದ ಮೂಟಯನ್ನೇ ಇಟ್ಟು ಕಳಿಸಿದ್ದಾನೆ, ಕೆಲವರು ಮೂಟೆಯ ಬಾಯ್ಬಿಚ್ಚಿ ತೆರೆದು ಚೈತನ್ಯವನ್ನು ಜಾಗೃತಗೊಳಿಸಿಕೊಂಡು ಪ್ರಭಾವಶಾಲಿಗಳಾಗುತ್ತಾರೆ. ಕೆಲವರು ಮೂಟೆಯ ಬಾಯನ್ನೇ ತೆರೆಯುವುದಿಲ್ಲ. ಒಳಗಿರುವ ಚೈತನ್ಯದ ಜಾಗೃತಿ ಮಾಡಬೇಕಾದವರು ಯಾರು? ಮನೆಯಲ್ಲಿ ಅಪ್ಪ-ಅಮ್ಮ, ಶಾಲೆಯಲ್ಲಿ ಟೀಚರ್. ಆದರೆ ಮಗುವಿನ ಅಂತ:ಶಕ್ತಿಯನ್ನು ಜಾಗೃತ ಗೊಳಿಸುವ ಕೆಲಸ ಆಗುತ್ತಿದೆಯೇ? ನಮ್ಮ ಕಣ್ಮುಂದಿರುವ ದಾರಿ ಯಾವುದು?
ನಮ್ಮ ಮಕ್ಕಳು ಸಾಫ್ಟ್ ವೇರ್ ಇಂಜಿನಿಯರಾಗಬಾರದೆಂದಲ್ಲ, ವೈದ್ಯರುಗಳಾಗಬಾರದೆಂದಲ್ಲ. ಆದರೆ ಮೊದಲು ಮಾನವೀಯತೆಯ ಶಿಕ್ಷಣ , ನೈತಿಕ ಮೌಲ್ಯಗಳ ಶಿಕ್ಷಣ, ಪ್ರೀತಿ,ಪ್ರೇಮ, ವಾತ್ಸಲ್ಯಗಳಂತಹ ಗುಣಗಳನ್ನು ಅರಳಿಸುವ ಸಂಸ್ಕಾರ ಕೊಡಬೇಡವೇ? ವೇದ ಮಂತ್ರವು ಹೇಳುವಂತೆ   ನೀನು ಪುಣ್ಯವಂತ, ನೀನು ಭಾಗ್ಯಶಾಲಿ, ನೀನು ಶಕ್ತಿವಂತ, ನೀನು ಸಮರ್ಥ. . . . .ಎಂಬ ಮಾತುಗಳನ್ನು ಮಕ್ಕಳ ಮುಂದೆ ಹೇಳುತ್ತಿರಿ, ಅವರು ಸಮರ್ಥರೇ ಆಗುತ್ತಾರೆ. ಆದರೆ ಹೊರಗಿನ ವೇಷಭೂಷಣ, ಹೇರಿಕೆಯ ಶಿಸ್ತು,  ಈ ನೆಲಕ್ಕೆ ಒಗ್ಗದ ನಮ್ಮದಲ್ಲದ ಸಂಸ್ಕೃತಿಯ ಅಂಧಾನುಕರಣೆ, ಇವೆಲ್ಲವೂ ಮಕ್ಕಳ ಆತ್ಮವಿಕಾಸ ಮಾಡಲಾರದು.
ಮಕ್ಕಳು ಕೇವಲ ಬುದ್ಧಿವಂತರಾದರೆ ಸಾಕೇ? ಹೌದೆನ್ನುತ್ತಾರೆ ಇಂದಿನ ಹಲವಾರು ಪೋಷಕರು. ಆದರೆ ಮಕ್ಕಳ ಬುದ್ಧಿವಂತಿಕೆಯ ಜೊತೆಗೇ ಮನಸ್ಸನ್ನುಅರಳಿಸುವ, ಸದ್ಗುಣಗಳನ್ನು  ಬೆಳೆಸುವ ಶಿಕ್ಷಣವು ಇಂದು ಎಲ್ಲಾ ದಿನಗಳಿಗಿಂತಲೂ ಹೆಚ್ಚು ಅನಿವಾರ್ಯವಾಗಿದೆ. ಕಾರಣ ಮೌಲ್ಯಾಧಾರಿತ ಶಿಕ್ಷಣದ ಕೊರತೆಯಿಂದ ಮಕ್ಕಳಲ್ಲಿ ನೈತಿಕ ಮೌಲ್ಯದ ಕೊರತೆ ಎದ್ದು ಕಾಣುತ್ತಿದೆ. ಆತ್ಮ ವಿಶ್ವಾಸದ ಕೊರತೆಯಿಂದ ಹಲವು ಮಕ್ಕಳು ಆತ್ಮಹತ್ಯೆಗೆ ಒಳಗಾಗಿರುವ ಉಧಾಹರಣೆಗಳನ್ನು   ಕಾಣುತ್ತೇವೆ. ನಿಮ್ಮ ಮಕ್ಕಳಿಗೆ ವೇದಮಂತ್ರದಲ್ಲಿ ತಿಳಿಸಿರುವಂತೆ ನೀನು ಸಮರ್ಥನಾಗಿದ್ದೀಯೇ, ನೀನು ಒಳ್ಳೆಯವ, ನೀನು ಶಕ್ತಿಶಾಲಿ,ನೀನು ಮೇಧಾವಂತ, ನೀನು ಗುಣವಂತ  ಎಂದು ಇಂದಿನಿಂದಲೇ ಹೇಳುತ್ತಾ ಬನ್ನಿ, ಅವರು ಹಾಗೆಯೇ ಆಗುತ್ತಾರೆ. ಒಳ್ಳೆಯ ಮಾತಿಗೇಕೇ ದಾರಿದ್ರ್ಯ?

ಜೀವನ ವೇದ - 5


ಸದಾ ಮಿತ್ರರಾಗಿ ಬಾಳೋಣ            
ನಾವು ಸಾಮಾನ್ಯವಾಗಿ ಹೇಳುವ ಒಂದು ಮಂತ್ರದ ಬಗ್ಗೆ ಇಂದು ವಿಚಾರ ಮಾಡೋಣ

ಓಂ ಸಹ ನಾವವತು ಸಹ ನೌ ಭುನಕ್ತು
ಸಹ ವೀರ್ಯಂ ಕರವಾವಹೈ |
ತೇಜಸ್ವಿ ನಾವಧೀತಮಸ್ತು ಮಾ ವಿದ್ವಿಷಾವಹೈ||
ಓಂ ಶಾಂತಿ: ಶಾಂತಿ: ಶಾಂತಿ: ||

ಅರ್ಥ :
ಸಹನಾ ವವತು = ಎಲ್ಲರೂ ಪರಸ್ಪರ ಒಬ್ಬರು ಇನ್ನೊಬ್ಬರ ರಕ್ಷಣೆಯನ್ನು  ಮಾಡೋಣ
ಸಹ ನೌ ಭುನಕ್ತು = ಎಲ್ಲರೂ ಪರಮ ಪ್ರೀತಿಯಿಂದ ಆನಂದವನ್ನು ಅನುಭವಿಸೋಣ
ಸಹ ವೀರ್ಯಂ ಕರವಾವಹೈ = ನಾವೆಲ್ಲರೂ ಪುರುಷಾರ್ಥದಿಂದ ಎಲ್ಲರ ಸಾಮರ್ಥ್ಯವನ್ನು ವರ್ಧಿಸೋಣ
ತೇಜಸ್ವಿ ನೌ ಅಧೀತಮಸ್ತು = ನಮ್ಮೆಲ್ಲರ ತೇಜಸ್ಸು ವರ್ಧಿಸಲಿ
ಮಾ ವಿದ್ವಿಷಾವಹೈ = ನಾವೆಲ್ಲರೂ ಪರಸ್ಪರ ವಿರೋಧವನ್ನು ಎಂದಿಗೂ ಮಾಡದಂತೆ,
ಮಿತ್ರರಾಗಿ ಸದಾ ಇರುವಂತೆ ಮಾಡು

ಭಾವಾರ್ಥ:

ನಾವೆಲ್ಲರೂ ಪರಸ್ಪರ ರಕ್ಷಣೆ ಮಾಡಿಕೊಳ್ಳೋಣ. ಎಲ್ಲರೂ ಪರಸ್ಪರ ಪ್ರೀತಿಯಿಂದ ಆನಂದವನ್ನು ಅನುಭವಿಸುವಂತಾಗಲಿ. ನಮ್ಮೆಲ್ಲರ ತೇಜಸ್ಸು ವರ್ಧಿಸಲಿ. ನಾವೆಲ್ಲರೂ ಪರಸ್ಪರ ವಿರೋಧವನ್ನು ಎಂದಿಗೂ ಮಾಡದಂತೆ, ಮಿತ್ರರಾಗಿ ಸದಾ ಇರುವಂತಾಗಲಿ.

ಈ ಮಂತ್ರದ ಅರ್ಥವು ಎಷ್ಟು ಸೊಗಸಾಗಿದೆ! ಭಗವಂತಾ, ನನ್ನನ್ನು ಕಾಪಾಡು ಎಂದು ಕೇಳಲಿಲ್ಲ, ಬದಲಿಗೆ ನಮ್ಮನ್ನು ಪರಸ್ಪರ ರಕ್ಷಣೆ ಮಾಡಿಕೊಳ್ಳೋಣವೆಂಬ ಸಂಕಲ್ಪ.ಇಲ್ಲಿ ಸ್ವಾರ್ಥದ ಸುಳಿವೂ ಇಲ್ಲ. ಎಲ್ಲರೂ ಒಟ್ಟಿಗೆ ಆನಂದವನ್ನು ಅನುಭವಿಸೋಣ. ನಮ್ಮೆಲ್ಲರ ತೇಜಸ್ಸು ವರ್ಧಿಸಲಿ. ಅಬ್ಭಾ! ಪ್ರಾರ್ಥನೆಯಲ್ಲಿ ಎಂತಹ ವಿಶಾಲ ಮನೋಭಾವ! ನನ್ನೊಬ್ಬನ ತೇಜಸ್ಸನ್ನು ವರ್ಧಿಸೆಂದು ಕೇಳ  ಲಿಲ್ಲ, ಬದಲಿಗೆ ನಮ್ಮೆಲ್ಲರ ತೇಜಸ್ಸು ವರ್ಧಿಸಲಿ!  ನಮ್ಮ ಮಧ್ಯೆ ವಿರೋಧವು ಎಂದಿಗೂ ಬಾರದಿರಲಿ!ನಾವೆಲ್ಲಾ ಸದಾ ಮಿತ್ರರಾಗಿ ಇರುವಂತೆ ಮಾಡು. ಒಂದೊಂದು ಮಾತೂ ಅದ್ಭುತ!

ಈ ಮಂತ್ರಕ್ಕೂ ಭೋಜನಕ್ಕೂ ಏನೂ ಸಂಬಂಧವಿಲ್ಲ. ಆದರೂ ಊಟಮಾಡುವಾಗ ಹೇಳುವ ಪದ್ದತಿ ಬೆಳೆದು ಬಂದಿದೆ. ತಪ್ಪೇನಿಲ್ಲ. ಊಟದ ಸಮಯದಲ್ಲಿ ಶಾಂತವಾಗಿ ಕುಳಿತಿರುತ್ತಾರೆ, ಆ ಸಮಯದಲ್ಲಿ ಈ ಮಂತ್ರವನ್ನು ಹೇಳುವುದರಿಂದ ಜನರಿಗೆ ಒಳ್ಳೆಯ ಸಂದೇಶ ಕೊಟ್ಟಂತಾಗುತ್ತದೆ ಎಂದು ರೂಢಿಗೆ ಬಂದಿರಬಹುದು. ಆದರೆ ಎಷ್ಟುಜನ ಈ ಮಂತ್ರದ ಅರ್ಥವನ್ನು ತಿಳಿದು ಹೇಳುತ್ತಾರೆ?
ಈ ಮಂತ್ರದ ಅರ್ಥವನ್ನು ತಿಳಿದು ಹೇಳಿದ್ದೇ ಆದರೆ ನಾವು ಅದರಂತೆ ನಮ್ಮ ಬದುಕನ್ನು ರೂಪಿಸಿಕೊಳ್ಳುವುದು ಕಷ್ಟವೇನಲ್ಲ. ಅರ್ಥವನ್ನು ತಿಳಿದು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನವನ್ನು ಮಾಡಿದಾಗ ಮಂತ್ರವು ಸಾರ್ಥಕವಾಗುತ್ತದೆ.

ಅನ್ನದಾತನನ್ನು ರಕ್ಷಿಸು
ಭೋಜನ ಸಮಯಕ್ಕೆಂದೇ ನಮ್ಮ ಋಷಿಮುನಿಗಳು ಮಾಡಿರುವ ಯಜುರ್ವೇದದ ಮಂತ್ರ ಒಂದಿದೆ. ಆ ಮಂತ್ರದ ಬಗ್ಗೆಯೂ ತಿಳಿಯೋಣ.

ಅನ್ನಪತೇನ್ನಸ್ಯ ನೋ ದೇಹ್ಯನಮೀವಸ್ಯ ಶುಷ್ಮಿಣ: |
ಪ್ರಪ್ರ ದಾತಾರಂ ತಾರಿಷಊರ್ಜಂ ನೋ ಧೇಹಿ ದ್ವಿಪದೇ ಚತುಶ್ಪದೇ ||
[ಯಜು-ಅಧ್ಯಾಯ-೧೧ ಮಂತ್ರ-೮೩]

 ಅರ್ಥ:
ಅನ್ನಪತೇ = ಅನ್ನಗಳ ರಕ್ಷಕನಾದ ಯಜಮಾನನೇ
ಅನ್ನಸ್ಯ = ಅನ್ನವನ್ನು
ನ: = ನಮಗೆ
ದೇಹಿ = ಕೊಡು
ಅನಮೀವಸ್ಯ = ರೋಗವನ್ನುಂಟುಮಾಡದಿರುವುದೂ, ಸುಖಕರವೂ ಆದ
ಶುಷ್ಮಿಣ: = ಹೆಚ್ಚು ಬಲಕಾರವೂ ಆದ ಅನ್ನವನ್ನು [ನಮಗೆ ಕೊಡು]
ಪ್ರ ಪ್ರ = ಶ್ರೇಷ್ಠವಾದ [ಅನ್ನವನ್ನು ನಮಗೆ ಕೊಡು]
ದಾತಾರಮ್ = ಅನ್ನದಾತನನ್ನು
ತಾರಿಷ: = ಸಂರಕ್ಷಿಸು
ಊರ್ಜಮ್ = ಪರಾಕ್ರಮವನ್ನು
ನ: = ನಮಗೆ
ಧೇಹಿ = ಉಂಟುಮಾಡಿಕೊಡು
ದ್ವಿಪದೇ = ಎರಡು ಕಾಲಿನ ಪ್ರಾಣಿಗಳಿಗೆ   [ಮನುಷ್ಯರಿಗೆ ಬಲವನ್ನು ಉಂಟುಮಾಡು]
ದ್ವಿಪದೇ = ನಾಲ್ಕು ಕಾಲಿನ ಪ್ರಾಣಿಗಳಿಗೆ [ಬಲವನ್ನು ಉಂಟುಮಾಡು]
ಭಾವಾರ್ಥ:
ಹೇ ಭಗವಂತಾ, ಹೆಚ್ಚು ಬಲಕಾರವೂ, ಸುಖಕರವೂ, ರೋಗವನ್ನುಂಟುಮಾಡದಿರುವ ಶ್ರೇಷ್ಠವಾದ ಅನ್ನವನ್ನು ನಮಗೆ ನೀಡು. ಪ್ರಾಣಿಗಳಿಗೂ, ಮನುಷ್ಯರಿಗೂ ಶ್ರೇಷ್ಠವಾದ ಹಾಗೂ ಪರಾಕ್ರಮವನ್ನು ಉಂಟುಮಾಡುವ  ಅನ್ನವನ್ನು[ಆಹಾರವನ್ನು] ನೀಡುತ್ತಿರುವ ಅನ್ನದಾತನನ್ನು ಸಂರಕ್ಷಿಸು.
ನಿಜವಾಗಿ ನಾವು ಊಟಮಾಡುವಾಗ ನಮ್ಮ ಮನಸ್ಸಿನಲ್ಲಿ ಉದ್ಭವಿಸಬೇಕಾದ ವಿಚಾರಗಳು ಏನೆಂಬುದನ್ನು ಈ ಮಂತ್ರವು ಎಷ್ಟು ಸೊಗಸಾಗಿ ವರ್ಣಿಸಿದೆ ಎಂದರೆ ,ಈ ಮಂತ್ರಗಳ ಶಬ್ಧದಲ್ಲಿ     ಅಡಗಿರುವ  ಅಂತರಾರ್ಥವನ್ನು ಗಮನಿಸ ಬೇಕು. ನಮಗೆ ಎಂತಹ ಆಹಾರಬೇಕೆಂದು ಭಗವಂತನಲ್ಲಿ ನಮ್ಮ ಪ್ರಾರ್ಥನೆ ಇದೆ? ಹೆಚ್ಚು ಬಲಕಾರವೂ, ಸುಖಕರವೂ, ರೋಗವನ್ನುಂಟುಮಾಡದಿರುವ ಶ್ರೇಷ್ಠವಾದ ಅನ್ನವನ್ನು ಕೊಡು, ಎಂಬುದು ಭಗವಂತನಲ್ಲಿ ನಮ್ಮ ಪ್ರಾರ್ಥನೆ. ಭಗವಂತನು ನಮಗೆ ಪರಿಶುದ್ಧವಾದ, ಪುಷ್ಠಿದಾಯಕವಾದ ಆಹಾರವನ್ನೇ ಕೊಟ್ಟಿದ್ದಾನೆ. ರೈತ ಬೆಳೆದಾಗ ಎಲ್ಲವೂ ಚೆನ್ನಾಗಿಯೇ ಇರುತ್ತದೆ. ಆದರೆ ಆನಂತರ ನಾವೇನು ಮಾಡುತ್ತೇವೆ? ಅನ್ನವು ಬೆಳ್ಳಗಿರಬೇಕೆಂದು ಹೆಚ್ಚು ಪಾಲೀಶ್ ಮಾಡಿದ ಅಕ್ಕಿಯಲ್ಲಿ ಅನ್ನ ಮಾಡುತ್ತೇವೆ. ಅಕ್ಕಿಯ ಪೌಷ್ಠಿಕಾಂಶವೆಲ್ಲವೂ ಪಾಲೀಶ್ ಮಾಡಿದಾಗ ಹೊಟ್ಟಿನ ಪಾಲಾಗಿರುತ್ತದೆ [ ಅದನ್ನು ಹಸುಗಳಿಗೆ ಆಹಾರವಾಗಿ ಬಳಸಿದರೂ ಪರವಾಗಿಲ್ಲವೆನ್ನಿ] ಇನ್ನು ಅಕ್ಕಿಯಲ್ಲಿ ಉಳಿದದ್ದೇನು? ಅನ್ನ ಮಾತ್ರ ಬೆಳ್ಳಗಿರುತ್ತದೆ ಹೊರತೂ ಅದರಲ್ಲಿ ಪೌಷ್ಟಿಕಾಂಶವಿರುವುದಿಲ್ಲ.
ಕುಕ್ಕರ್ ನಲ್ಲಿ ಬೇಯಿಸಿದ ಅಡುಗೆಯ ಬಗ್ಗೆ ದಿ|| ರಾಜೀವ್ ದೀಕ್ಷಿತ ಅವರ ಮಾತುಗಳನ್ನು ಕೇಳಿ.   ಒಂದು ಮಗುವಿನ ಜನ್ಮ ವಾಗಲು ತಾಯಿಯ ಗರ್ಭದಲ್ಲಿ ಒಂಬತ್ತು ತಿಂಗಳು ಇರಬೇಕಲ್ಲವೇ? ಒಂದು ಬೆಳೆ ಸರಿಯಾಗಿ ಬರಲು ಅದಕ್ಕೆ ಅಗತ್ಯವಾದ ಮೂರ್ನಾಲ್ಕು ತಿಂಗಳು ಬೇಕಲ್ಲವೇ? ಹಾಗೆಯೇ ಒಂದು ಉತ್ತಮವಾದ ಕಾಳು ಬೇಳೆ,ಅಕ್ಕಿ ಬೇಯಲು ಅದಕ್ಕೆ ನಿರ್ಧಿಷ್ಠ ಸಮಯ, ಹಿತವಾದ ಶಾಖ, ಗಾಳಿ, ಬೆಳಕು, ಎಲ್ಲವೂ ಇದ್ದರೆ ಬೇಯಿಸಿದ ಆಹಾರವು ಆರೋಗ್ಯದಾಯಕವಾಗಿರುತ್ತದೆ. ಹಾಗಲ್ಲದೆ ಕುಕ್ಕರ್ ನಲ್ಲಿ ಬೇಯಿಸಿದ ತರಕಾರಿ, ಬೇಳೆ ಕಾಳುಗಳು, ಅಕ್ಕಿ ಕೂಡ ಸಹಜವಾಗಿ ಬೇಯದೆ ಅತ್ಯಂತ ಕಡಿಮೆ ಸಮಯದಲ್ಲಿ ಬೆಂದಂತಾಗಿ ಗಾಳಿ, ಬೆಳಕು ಇಲ್ಲದೆ  ಅದರ ಪೌಷ್ಟಿಕಾಂಶವೆಲ್ಲವೂ ನಾಶವಾಗಿರುತ್ತದೆ. ನಾವು ನಿತ್ಯವೂ ಇದೇ ಆಹಾರವನ್ನು ಸೇವಿಸುತ್ತೇವೆ,ಅಲ್ಲವೇ?
 ಹೀಗಿರುವಾಗ ಭಗವಂತನು ಕರುಣಿಸಿದ ಪುಷ್ಠಿದಾಯಕ ಆಹಾರವನ್ನು ಹಾಳುಗೆಡವಿದವರು ನಾವೇ ಅಲ್ಲವೇ? ಇನ್ನು ನಾವು ತಿನ್ನುವ ತರಕಾರಿ, ಹಣ್ಣು ಹಂಪಲು, ಎಲ್ಲವೂ ವಿಷಯುಕ್ತ. ಮನುಷ್ಯನ ದುರಾಸೆಯ ಫಲವಾಗಿ ರಾಸಾಯನಿಕ ಗೊಬ್ಬರಗಳನ್ನು ಉಪಯೋಗಿಸುವುದಲ್ಲದೆ, ಕ್ರಿಮಿಗಳು ಬಾರದಂತೆ ಕ್ರಿಮಿನಾಶಕಗಳ ಸಿಂಪಡಿಸುವುದರಿಂದ ಹಣ್ಣು ತರಕಾರಿಗಳ ಮೂಲಕ ನಾವು ವಿಷವನ್ನೇ ಸೇವಿಸುತ್ತೇವೆ.

 ಇಂದಿನ ಪೀಳಿಗೆಗೆ   ನಾಡ  ಹಸುವಿನ ಹಾಲಿನ ರುಚಿಯೇ ಗೊತ್ತಿಲ್ಲದಿರಬಹುದು. ನಮ್ಮ ದೇಶದಲ್ಲಿ ಗೋವನ್ನು ಪ್ರತ್ಯಕ್ಷ ದೇವತೆಯಂತೆ ಕಾಣುತ್ತಿದ್ದೆವು. ಕಾರಣವೂ ಇತ್ತು. ಮನೆಮಂದಿಗೆಲ್ಲಾ ಹಾಲು, ಮೊಸರು, ಬೆಣ್ಣೆ , ತುಪ್ಪವು ಹಸುವಿನಿಂದ ದೊರಕುತ್ತಿದ್ದರೆ ಎತ್ತು ಕೃಷಿಗೆ ಸಹಕಾರಿ ಯಾಗಿತ್ತು. ದನಗಳ ಸಗಣಿಯೇ ಬೆಳೆಗೆ ಗೊಬ್ಬರವಾಗಿತ್ತು. ಇದೆಲ್ಲಾ ಆ ಭಗವಂತನ ಕೃಪೆಯಲ್ಲವೇ? ಆದರೆ ನಮ್ಮ ದುರಾಸೆಯ ಪರಿಣಾಮವಾಗಿ ನಾಡಹಸುಗಳ ಸಂತತಿ ಕ್ಷೀಣಿಸಲು ನಾವೇ ಕಾರಣರಾದೆವು.ಅಲ್ಲವೇ?

ಮಂತ್ರದಲ್ಲಿ ಹೇಳಿರುವ ಮತ್ತೊಂದು ಅಂಶವೆಂದರೆ ಹೇ ಭಗವಂತಾ, ನಮಗೆ ಆರೋಗ್ಯಯುತವಾದ ಆಹಾರವನ್ನು ನೀಡಿರುವ ಅನ್ನದಾತನನ್ನು ಕಾಪಾಡು. ಅನ್ನದಾತನೆಂದರೆ ಯಾರು? ಭಗವಂತನೇ? ಅವನನ್ನೇ ಅವನು ಕಾಪಾಡಿಕೊಳ್ಳಬೇಕೇ? ಇಲ್ಲ, ಪ್ರತ್ಯಕ್ಷವಾಗಿ ನಮಗೆ ಅನ್ನವನ್ನು ನೀಡುವ ನಿಜವಾದ ಅನ್ನದಾತನೆಂದರೆ ರೈತ. ಆ ರೈತನ ಸ್ಥಿತಿ ಇಂದು ಹೇಗಾಗಿದೆ, ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ರೈತ ಬೆಳೆವ ಬೆಳೆಗೆ ಸೂಕ್ತಬೆಲೆ ಸಿಗದೆ ಆತ್ಮಹತ್ಯೆ    ಮಾಡಿಕೊಳ್ಳುವ ಪರಿಸ್ಥಿತಿ! ಆದರೆ ನಮ್ಮ ಋಷಿಮುನಿಗಳ ಚಿಂತನೆ ಎಂದರೆ ನಮಗೆ ಅನ್ನ ಕೊಡುವ ರೈತನು ಸಂತೋಷವಾಗಿರಬೇಕು. ನಮ್ಮ ಋಷಿಮುನಿಗಳ ಚಿಂತನೆ ನಮ್ಮ ಜನರಿಗೆ ನಮ್ಮನ್ನು ಆಳುವವರಿಗೆ ಅರ್ಥವಾಗಬೇಕಲ್ಲವೇ?