Pages

Monday, March 21, 2011

ಶ್ರೀ ಸುಧಾಕರಶರ್ಮರಿಗೆ ನಮಸ್ಕಾರಗಳು, ನಿಮ್ಮ ಸಮಝಾಯಿಶಿ ಬೇಕು.

ಶ್ರೀ ಮಂಜುನಾಥಶರ್ಮರು ಅಭಿಮತದಲ್ಲಿ ಬರೆದಿರುವ ಪತ್ರವನ್ನು ಯಥಾವತ್ತಾಗಿ ಪ್ರಕಟಿಸಲಾಗಿದೆ. ಇದನ್ನು ಶರ್ಮರ ಗಮನಕ್ಕೆ ತರಲಾಗುವುದು.
----------------------------------------
ಶ್ರೀ ಮಂಜುನಾಥಶರ್ಮರೇ, 
ನಿಮ್ಮ ಮೇಲ್ ವಿಳಾಸ ಕೊಟ್ಟಿದ್ದರೆ ಚೆನ್ನಿತ್ತು. ಶ್ರೀ ಸುಧಾಕರ ಶರ್ಮರು ತುಂಬಾ ಕೆಲಸಗಳ ಒತ್ತಡದಲ್ಲಿದ್ದಾರೆ.ವೇದಸುಧೆಯನ್ನು ವಾರಕ್ಕೊಮ್ಮೆಯೂ ಇಣುಕಲು ಅವರಿಗೆ ಪುರಸೊತ್ತಿಲ್ಲವಾಗಿದೆ.ಆದರೂ ಶ್ರೀ ಶರ್ಮರಿಗೆ ದೂರವಾಣಿಮೂಲಕ ವಾದರೂ ವಿನಂತಿಸುವೆ.ಸ್ವಲ್ಪ ತಾಳ್ಮೆ ಇರಲಿ. ನಿಮ್ಮ ಸಂದೇಹಗಳು ನಿಮ್ಮೊಬ್ಬರದೇ ಅಲ್ಲ. ಹಲವರ ಅಭಿಪ್ರಾಯಗಳು ನಿಮ್ಮಿಂದ ಧ್ವನಿಸಿವೆ ಅಷ್ಟೆ.ನೂರಾರು ವರ್ಷಗಳಿಂದ ಇದೇ ಸತ್ಯವೆಂದು ನಂಬಿ ಆಚರಿಸಿಕೊಂಡು ಬಂದಿರುವ ಬಹುಪಾಲು ಎಲ್ಲರಿಗೂ  ಇಂತಹ ದ್ವಂದ್ವಗಳಿದ್ದೇ ಇದೆ. ಪರವಾಗಿಲ್ಲ. ಈ ದ್ವಂದ್ವಗಳು ನಮ್ಮ ನೆಮ್ಮದಿ ಹಾಳುಮಾಡದಂತೆ ಎಚ್ಚರವಿರಲಿ, ಅಷ್ಟೆ. ನಿಮಗೆ ಸತ್ಯವೆನಿಸಿದ ವಿಚಾರಗಳನ್ನು ನಂಬಿ ಅದರಂತೆ ನಡೆಯಿರಿ, ಅನುಮಾನವಿದ್ದ ವಿಚಾರಗಳ ಬಗ್ಗೆ ತಲೆಕೆಡಸಿಕೊಳ್ಳಬೇಡಿ. ನಿಧಾನವಾಗಿ ನಮಗೆ ಸತ್ಯದ ಅರಿವಾಗುವುದರಲ್ಲಿ ಸಂದೇಹವಿಲ್ಲ.ಸಧ್ಯಕ್ಕೆ ಒಂದು ಪುಸ್ತಕದ ಬಗ್ಗೆ ತಿಳಿಸಬಹುದು. ಪಂ|| ಸುಧಾಕರ ಚತುರ್ವೇದಿಯವರ ವೇದೋಕ್ತ ಜೀವನ ಪಥ ಓದಿ ನೋಡಿ.ಪುಸ್ತಕವು ಬೆಂಗಳೂರಿನ ಆರ್ಯ ಸಮಾಜದಲ್ಲಿ ಲಭ್ಯ.
-----------------------------
ವೇದಸುಧೆಯ ಅಭಿಮಾನಿಗಳಲ್ಲಿ  ಮನವಿ:
ಶ್ರೀ ಮಂಜುನಾಥಶರ್ಮರು ಯೋಚಿಸಬೇಕಾದ ಒಂದಿಷ್ಟು ವಿಚಾರಗಳನ್ನು ಹೊರಹಾಕಿದ್ದಾರೆ.ನಿಮ್ಮ ಮನದ ವಿಚಾರಗಳನ್ನು
 ನೀವು ಪ್ರತಿಕ್ರಿಯಿಸಿದರೆ  ಶ್ರೀ ಸುಧಾಕರ ಶರ್ಮರಿಂದ ಕಡೆಗಾದರೂ ಸಮಝಾಯಿಶಿ ಪಡೆಯಬಹುದು.
-ಹರಿಹರಪುರಶ್ರೀಧರ್
ಸಂಪಾದಕ
--------------------------------------------------------------------------------
 ಶ್ರೀ ಸುಧಾಕರಶರ್ಮರಿಗೆ ನಮಸ್ಕಾರಗಳು
ಕಳೆದ ಐದಾರು ತಿಂಗಳುಗಳಿಂದ ನಿಮ್ಮ ಧ್ವನಿಯಲ್ಲಿ ಹಲವು ಪ್ರವಚನಗಳನ್ನು ಕೇಳಿದ್ದೇನೆ. ಈ ಅವಕಾಶವನ್ನು ಕಲ್ಪಿಸಿಕೊಟ್ಟ ವೇದಸುಧೆಗೂ ಮತ್ತು ನಿಮಗೂ ಕೃತಜ್ಞತೆಗಳು.
ವೇದ ಮಂತ್ರಗಳ ಬಗ್ಗೆ ನಿಮ್ಮ ಸರಳವಾದ ವಿವರಣೆಯಿಂದ ಜೀವನ ಕ್ರಮವೇ ಒಂದು ಯಜ್ಞವಾಗಿರಬೇಕೆಂಬುದನ್ನು ನಾನು ಒಪ್ಪುತ್ತೇನೆ. ಹಲವು ಪ್ರವಚನಗಳಲ್ಲಿ ವೇದಮಂತ್ರಗಳನ್ನು ಕಲಿಯಲು ಜಾತಿಯಾಗಲೀ ಲಿಂಗವಾಗಲೀ ಆಡ್ದಬರುವುದಿಲ್ಲ ಎಂಬುದನ್ನು ಒತ್ತುಕೊಟ್ಟು ಆಧಾರಸಹಿತವಾಗಿ ಹೇಳಿದ್ದೀರಿ. ಧನ್ಯವಾದಗಳು.
ಒಂದು ಸಂದೇಹ ನನಗೆ ಕಾಡುತ್ತಿದೆ. ನನಗೆ ವೇದಮಂತ್ರಗಳನ್ನು ಸ್ವರಸಹಿತವಾಗಿ ಕಲಿಯಬೇಕೆಂಬ ಆಸೆ ಇದೆ. ಆದರೆ ನನಗೀಗಾಗಲೇ ಅರವತ್ತು ವರ್ಷ ವಯಸ್ಸು. ನಾಲ್ಕು ವೇದವನ್ನು ಸಂಪೂರ್ಣವಾಗಿ ಈ ಜನ್ಮದಲ್ಲಿ ನನಗೆ ಕಲಿಯಲು ಸಾಧ್ಯವಿಲ್ಲವೆಂಬ ಅರಿವಿದೆ. ಆದರೆ ನಾಲ್ಕೂ ವೇದಗಳನ್ನು ಅಧ್ಯಯನಮಾಡಿರುವ ಹಲವರು ನಿಮ್ಮೊಡನಿರಬಹುದು. ನೀವೂ ಕೂಡ ಅಧ್ಯಯನ ಮಾಡಿರಬಹುದು.ನಿಮ್ಮಂತವರು ಆಯ್ದ ವೇದಮಂತ್ರಗಳ ಒಂದು ಚಿಕ್ಕ ಪುಸ್ತಕವನ್ನು ನಮ್ಮಂತವರಿಗೆ ಏಕೆ ಕೊಡಬಾರದು? ಅದರಲ್ಲಿ ನಾಲ್ಕೂ ವೇದಗಳಿಂದ ಆಯ್ದ ಕೆಲವು ವೇದಮಂತ್ರಗಳನ್ನು ಮುದ್ರಿಸಿ ಅದಕ್ಕೆ ಅರ್ಥ ಮತ್ತು ವಿವರಣೆಯನ್ನು ಕೊಡಬಾರದೇಕೆ? ವೇದದ ಹೆಸರಲ್ಲಿ ಸಾವಿರ ಪುಟಗಳ ಗ್ರಂಥಗಳನ್ನು ಪ್ರಕಟಿಸಿದರೆ ಅದನ್ನು ಮನೆಯಲ್ಲಿಟ್ಟು ಪೂಜಿಸಬಹುದು ಅಷ್ಟೆ. ನೀವೇ ಹೇಳುವಂತೆ ಗ್ರಂಥಗಳಿರುವುದು ಅಧ್ಯಯನಕ್ಕೆ ಪೂಜೆ ಮಾಡಲು ಅಲ್ಲ. ಹಾಗಾದರೆ ನಿಮ್ಮಂತವರು ನಮಗೆ ದಾರಿ ತೋರಿಸಬೇಡವೇ? ಮತ್ತೊಂದು ವಿಚಾರ. ಹಲವು ಕಡೆ ನೀವು ನಮ್ಮ ಪೂರ್ವದಿಂದ ಬಂದಿರುವ ಪೂಜಾಪದ್ದತಿಯಬಗ್ಗೆ ಹಗುರವಾಗಿ ಮಾತನಾಡಿದ್ದೀರಿ. ಉಧಾಹರಣೆಗೆ ಹೇಳಬೇಕೆಂದರೆ "ಆಗಮಾರ್ಥಂತು ದೇವಾನಾಂ" ಮಂತ್ರದ ಬಗ್ಗೆ . ಎಲ್ಲ ಕಡೆ ದೇವರು ಇರುವುದು ಸತ್ಯವಾದರೂ ನಮ್ಮ ಕಾನ್ಸೆಂಟ್ರೇಶನ್ ಗೋಸ್ಕರ ಅವನನ್ನು ಒಂದು ಕಡೆ ಊಹಿಸಿಕೊಂಡರೆ ಆಗುವ ನಷ್ಟವಾದರೂ ಏನು? ನೀವು ಇನ್ನು ನೂರು ವರ್ಷ ವಾದಮಾಡಿದರೂ ನಮ್ಮಲ್ಲಿ ಚಾಲ್ತಿಯಲ್ಲಿರುವ ಪೂಜಾ ಪದ್ದತಿಯನ್ನು ನಮ್ಮಂತವರು ಬಿಡಲು ಸಾಧ್ಯವಿಲ್ಲ. ನಮಗೆ ನಿಮ್ಮ ವಿಚಾರದಲ್ಲಿ ಪ್ರೀತಿ ಇದ್ದರೂ ದೇವಾಲಯ,ದೇವರ ವಿಗ್ರಹ -ಈ ವಿಚಾರದಲ್ಲಿ ನಿಮ್ಮ ಖಂಡನೆಯನ್ನು ನಾನಲ್ಲಾ ನನ್ನಂತಹ ಯಾರೂ ಒಪ್ಪುವುದಿಲ್ಲ. ಒಂದು ವೇಳೆ ಎಲ್ಲಾ ತೊರೆದು ನಿಮ್ಮೊಡನೆ ಇರುತ್ತೇವೆಂದು ಯಾರಾದರೂ ಹೊರಟರೆ ಆ ಸಂಖ್ಯೆ ಪ್ರತಿಶತ ೧ ಕೂಡ ಆಗುವುದಿಲ್ಲ. ಆದ್ದರಿಂದ ವ್ಯರ್ಥವಾಗಿ ನೀವು ನಮ್ಮಂತವರ ಮನಸ್ಸಿಗೆ ಅಹಿತಮಾಡುವುದನ್ನು ಬಿಟ್ಟರೆ ನಿಮ್ಮ ಉಳಿದೆಲ್ಲಾ ವಿಚಾರವನ್ನೂ ಒಪ್ಪುವವರ ಸಂಖ್ಯೆ ಹೆಚ್ಚುವುದರಲ್ಲಿ ಸಂಶಯವಿಲ್ಲ. ಜಾತಿಯ ಬಗೆಗೆ ನಿಮ್ಮ ವಿವವರಣೆಯಿಂದ ಬಲು ಸಂತೋಷವಾಗಿದೆ. ಹೋಮದಲ್ಲಿ ಅನಗತ್ಯವಾಗಿ ಸುಡುವ ರೇಶ್ಮೆ ಹಾಗೂ ಇನ್ನಿತರ ಬೆಲೆ ಬಾಳುವ ವಸ್ತುಗಳ ಬಗ್ಗೆ ನಿಮ್ಮ ವಿಚಾರದಲ್ಲಿ ನನ್ನ ಒಪ್ಪಿಗೆ ಇದೆ. ಹಿಂಸೆಯ ವಿರೋಧಕ್ಕೆ ಸಮ್ಮತಿ ಇದೆ.ಆದರೆ ಸಸ್ಯಾಹಾರಿಗಳಾಗಿದ್ದರೆ ಮಾತ್ರ ಉಪನಯನ ಸಾಧ್ಯವೆಂದು ತಿಳಿಸಿದ್ದೀರಿ. ಇದೂ ಕೂಡ ಪ್ರಾಕ್ಟಿಕಲ್ ಅಲ್ಲ. ಇದರಿಂದ ಪುನ: ನೀವು ಒಂದು ವರ್ಗವನ್ನು ದೂರ ಇಡುವ ಹುನ್ನಾರ ಮಾಡಿದ್ದೀರಿ. ನನ್ನ ಮಾತಿನಲ್ಲಿ ನಿಮ್ಮ ಬಗ್ಗೆ ಮೆಚ್ಚುಗೆಯೂ ಇದೆ. ಅದೇ ವೇಳೆ ನಿಮ್ಮ ಬಗ್ಗೆ ಕನಿಕರವೂ ಇದೆ. ಕನಿಕರ ಏಕೆಂದರೆ ನಾನು ಒಪ್ಪದ ಹಲವು ವಿಚಾರ ತಿಳಿಸಿದ್ದೀನಲ್ಲಾ, ಅವುಗಳಿಂದಲೇ ನಿಮ್ಮ ಏಳ್ಗೆಗೆ ಅಡ್ಡಿಯಾಗುತ್ತವಲ್ಲಾ! ಸ್ವಲ್ಪ ಲಿಬರಲ್ ಆಗಿ ನೀವು ಯೋಚಿಸಬೇಡವೇ? ಎಲ್ಲದಕ್ಕೂ ವೇದವೇ ಅಂತಿಮ ವೆನ್ನುತ್ತೀರಿ. ಇರಲಿ. ಆದರೆ ವಿಶ್ವದ ಶಾಂತಿಗಾಗಿ ನೂರಾರು ಜನ ಮಹನೀಯರು ಅವರದೇ ಆದ ರೀತಿಯಲ್ಲಿ ಕಾಣಿಕೆ ನೀಡುತ್ತಿದ್ದಾರೆ. ಸಂಗೀತದ ಕ್ಷೇತ್ರವನ್ನೇ ತೆಗೆದುಕೊಳ್ಳಿ, ಶಾಸ್ತ್ರೀಯ ಸಂಗೀತದಿಂದ ಸಿಗುವ ನೆಮ್ಮದಿ ನನಗೆ ಸಾಕು. ನೀವು ಅದನ್ನು ಸಾಮವೇದ ಎನ್ನುತ್ತೀರೇನೋ. ಇರಲಿ. ಆದರೆ ವೇದಕ್ಕೆ ಹೊರತಾದ ಹಲವು ಸಂಗತಿಗಳು ಇಂದಿನ ಜಗತ್ತಿಗೆ ನೆಮ್ಮದಿನೀಡಬಲ್ಲವು. ಮತ್ತೊಮ್ಮೆ ಅಗತ್ಯವೆನಿಸಿದರೆ ವಿವರವಾಗಿ ಬರೆಯುವೆ. ಈಗ ಇಷ್ಟು ಸಾಕು. ನಿಮ್ಮ ಸಮಝಾಯಿಶಿ ಬೇಕು.
- ಮಂಜುನಾಥಶರ್ಮ

No comments:

Post a Comment