Pages

Tuesday, August 30, 2011


ಚಿಕ್ಕ ಇಲಿಯ ಬೆನ್ನನೇರಿ !

[ಎಲ್ಲಾ ಓದುಗ, ಸ್ನೇಹಿತ, ಬಂಧು-ಮಿತ್ರ-ಹಿತೈಷಿಗಳಿಗೂ ಸೇರಿದಂತೇ ಸಮಸ್ತರಿಗೂ ಸ್ವರ್ಣಗೌರೀ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.]
ಚಿಕ್ಕ ಇಲಿಯ ಬೆನ್ನನೇರಿ ದೊಡ್ಡಹೊಟ್ಟೆ ಬೆನಕರಾಯ
ಸಿಕ್ಕ ಸಿಕ್ಕ ಭಕ್ತರುಗಳ ಮನೆಗೆ ಧಾವಿಸಿ
ಅಕ್ಕರೆಯಿಂದವರು ಕೊಟ್ಟ ಚಕ್ಕುಲಿಗಳ ಮೆದ್ದು ಮತ್ತೆ
ಚೊಕ್ಕಗೊಳಿಸಿ ಮೋದಕಗಳ ತಿಂದು ವಿರಮಿಸಿ !

ಡರ್ರೆನ್ನುತ ತೇಗಿದಾಗ ಆಗಿಹೋಯ್ತು ರಾತ್ರಿ ಅಲ್ಲಿ
ಸರ್ರನೆದ್ದು ಹೊರಟುಬಿಟ್ಟ ತನ್ನ ಮನೆಕಡೆ
ಗರ್ರೆನ್ನುತ ತಿರುಗಿ ತಿರುಗಿ ಬಿದ್ದುಬಿಡ್ತು ಮೂಷಿಕಣ್ಣ
ಕರ್ರಗಿರುವ ಬಾನಿನಲ್ಲಿ ಚಂದ್ರ ಹಲ್ಬಿಡೆ !

ಬಿದ್ದ ಚಣದಿ ಹೊಟ್ಟೆಯೊಡೆದು ಬೆನವಗಾಯ್ತು ಕಷ್ಟಕಾಲ
ಎದ್ದುಬಿದ್ದು ಹುಡುಕಿ ನಡೆದ ಸೊಂಟಬಂಧಿಯ
ಕದ್ದು ನೋಡಿ ನಗುತಲಿದ್ದ ಮೋಡಸರಿಸಿ ಚಂದಿರಾಮ
ಕ್ರುದ್ಧನಾದ ವಿಘ್ನರಾಜ ಕಂಡು ಸಂದಿಯ !

ನಕ್ಕ ಶಶಿಯ ಸೊಕ್ಕ ಮುರಿಯೆ ಗಣಪ ಬಿಸುಟ ಮುರಿದು ಹಲ್ಲ
ಹೆಕ್ಕಿ ಹರೆಯುತಿದ್ದ ಹಾವ ಹೊಟ್ಟೆ ಕಟ್ಟುತ
ಹಕ್ಕಿಗಧಿಕ ವೇಗದಲ್ಲಿ ಸಾಗುವಾಗ ಹಾದಿಯಲ್ಲಿ
ಬಿಕ್ಕುತಳುವ ತಂಗದಿರನ ಬೆನ್ನ ತಟ್ಟುತ

ವಿಕಟನಿತ್ತ ಶಾಪವನ್ನು ಮರಳಿ ಪಡೆದು ಹರಸುವಂತೆ
ನಿಕಟನಪ್ಪೆನೆನುತ ಬೇಡಿದಾ ಶಶಾಂಕನು
ಪ್ರಕಟಗೊಳುವ ನಿನ್ನ ನೋಡೆ ಭಾದ್ರಪದದ ಚೌತಿಯಲ್ಲಿ
ಮುಕುಟ ಮಸಿಯ ಛಾಯೆಪಡೆಯಲೆಂದ ಸುಮುಖನು

ಅಮ್ಮ ಹಾಲ ಕರೆಯುವಾಗ ನಮ್ಮಕೃಷ್ಣ ಚೊಂಬಿನಲ್ಲಿ
ಸುಮ್ಮನಾಡಿ ನೋಡುತಿದ್ದ ಚಂದ್ರ ಬಿಂಬವ
ಒಮ್ಮೆ ಮಣಿಯು ಕಳೆಯಲಾಗಿ ಕದ್ದ ಕಳ್ಳ ಗೊಲ್ಲನೆಂದು
ಚಿಮ್ಮಿ ಹರಿದ ಸುದ್ದಿ ತಂತು ಹರಿಗಗೌರವ

ಮುರಳಿ ತೆರಳಿ ಕಾಡಿನೆಡೆಗೆ ಬಡಿದು ಜಾಂಬವಂತನನ್ನು
ಕೆರಳಿ ಪಡೆದ ಮಣಿಯನಲ್ಲಿ ವಿಷಯವರಿಯುತ
ತರಳಗೆರಗಿ ಜಾಂಬವಂತ ಪರಿಪರಿಯಲಿ ಪ್ರಾರ್ಥಿಸಲ್ಕೆ
ಕರುಳುಮಿಡಿದು ಜಾಂಬವತಿಯ ಕೈಯ್ಯ ಹಿಡಿಯುತ

ಮಣಿಯ ಕಂಡು ಊರಮಂದಿ ಹುರುಪುಗೊಂಡು ಹಾರಿಕುಣಿದು
ಕಣಿವೆಯೆಲ್ಲ ಮಾರ್ದನಿಸಿತು ಕೃಷ್ಣಜಯಜಯ
ಹೊಣೆಯನಿತ್ತನಾ ಗಣೇಶ ಕೇಳಿದವಗೆ ಮಣಿಯಕಥೆಯ
ಋಣದಿ ಮುಕ್ತಿ ದೋಷವಿಲ್ಲ ಎಲ್ಲ ಸುಖಮಯ
---ವಿ.ಆರ್.ಭಟ್

No comments:

Post a Comment