Pages

Friday, November 29, 2013

ವೇದೋಕ್ತ ಜೀವನ ಪಥ-ಶಿಬಿರ

ಈಗಾಗಲೇ ಹಾಸನದಲ್ಲಿ ಒಂದು ವೇದೋಕ್ತಜೀವನ ಶಿಬಿರ ನಡೆದಿರುವುದು ಹಲವರ ಗಮನಕ್ಕೆ ಬಂದಿದೆ. ಹಲವರು ಅದರಲ್ಲಿ ಭಾಗವಹಿಸಿದ್ದಿರಿ. ಈಗ ಎರಡನೆಯ ಶಿಬಿರವನ್ನು ಚನ್ನರಾಯಪಟ್ಟಣದ ವೇದ ಭಾರತೀ ಸಂಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದೆ. ಅದರ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.ಆಸಕ್ತರಿಂದ ಅರ್ಜಿಯನ್ನು ಪಡೆಯಲು ವ್ಯವಸ್ಥಾಪಕರು ಉದ್ಧೇಶಿಸಿದ್ದಾರೆ. ಶಿಬಿರದಲ್ಲಿ ಪಾಲ್ಗೊಳ್ಲಲು ಇಚ್ಚೆ ಇರುವ ವೇದಾಭಿಮಾನಿಗಳು ಅರ್ಜಿಯನ್ನು ನೇರವಾಗಿ ವ್ಯವಸ್ಥಾಪಕರ ವಿಳಾಸಕ್ಕೆ ಕಳಿಸಬಹುದು.


ವೇದಗಳಷ್ಟು ಪ್ರಾಚೀನವೂ, ಸರ್ವಜನಾದರಣೀಯವೂ, ಶ್ರೇಷ್ಠ ಸಂಸ್ಕೃತಿಯೂ, ಶ್ರೀಮಂತ ಕಲೆಯೂ, ಅನುಪಮ ಸಾಹಿತ್ಯ ಜ್ಞಾನಭಂಡಾರಗಳು ಮತ್ತೊಂದಿಲ್ಲ. ಅಂತೆಯೇ ಹೃದಯ ವೈಶಾಲ್ಯತೆಯನ್ನು ಹೊಂದಿರುವ ಈ ಸನಾತನ ಧರ್ಮದ ವೈಭವ ಮನುಕುಲಕ್ಕೆ ನೀಡಿರುವ ಅಭೂತಪೂರ್ವ ಕೊಡುಗೆಯ ಅರಿವು ಮೂಡಿಸಲು ವೇದಪ್ರಚಾರಕರಾಗಿ, ಪರಿಚಾರಕರಾಗಿ ದೇಶದ ಉದ್ದಗಲಗಳಲ್ಲಿಯೂ ಸಂಚರಿಸಿ ದುಡಿಯುತ್ತಿರುವ ಬೆರಳೆಣಿಕೆಯ ಮಹನೀಯರಲ್ಲಿ ವೇದಾಧ್ಯಾಯೀ ಶ್ರೀಯುತ ಸುಧಾಕರಶರ್ಮಾ ಒಬ್ಬರು.  ವೇದ ಭಾಷ್ಯಕಾರರೂ, ವಿದ್ವಾಂಸರೂ,  ಸಂಶೋಧಕರೂ, ಲೇಖಕರೂ, ಸಾಹಿತಿಗಳೂ ಬಹುಭಾಷಾ ಪ್ರವಚನಕಾರರೂ ಮತ್ತು ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರವಾದ ಜಗತ್ತಿನ ಪ್ರಪ್ರಥಮ ವೇದ- ವೈದಿಕ ಧಾರಾವಾಹಿ ಹೊಸಬೆಳಕು ಎಂಬ ಖ್ಯಾತಿಯ ರುವಾರಿಗಳೂ ಆದ ಶ್ರೀಯುತ ಶರ್ಮರು ವೇದಗಳಲ್ಲಿ ಹೇಳಿರುವ ಹಾಗೂ ಮಹರ್ಷಿಗಳ ಉದಾತ್ತ ಚಿಂತನೆಯ ವಿಚಾರಗಳು ಮತ್ತು ಆಧ್ಯಾತ್ಮ ವಿದ್ಯೆಯ ವಾಸ್ತವಿಕ ಸ್ವರೂಪವನ್ನು ಅತಿ ಸುಲಭ ಮತ್ತು ಸರಳ ರೀತಿಯನ್ನು ಅನುಸರಿಸಿ ಸುಲಲಿತವಾಗಿ ಜನರಿಗೆ ತಿಳಿಸಿಕೊಡುವುದರೊಂದಿಗೆ ಅವರು ವೇದಪ್ರಣೀತ ಜೀವನವನ್ನು ನಡೆಸುವಂತಾಗಬೇಕು ಎಂಬ ಇಚ್ಛೆಯಿಂದ ಚನ್ನರಾಯಪಟ್ಟಣದಲ್ಲಿ ವೇದೋಕ್ತ ಜೀವನ ಪಥ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈ ಮೂಲಕ ಸಕಲ ವಿಚಾರಗಳಲ್ಲಿಯೂ ಜೀವನ ಪೋಷಕ ಆದರ್ಶಗಳನ್ನು ಆಕರ್ಷಣೀಯ ಮಾತುಗಳಲ್ಲಿ ಮನಮುಟ್ಟುವಂತೆ ತಿಳಿಸಿಕೊಡಲಿದ್ದಾರೆ. ಶಾಂತಿ ಮತ್ತು ಸೌಭಾಗ್ಯದ ಆನಂದಕ್ಕಾಗಿ ರೂಪಿಸಲಾದ ಈ ಪವಿತ್ರ ಸಂಕಲ್ಪವನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದ್ದಾಗಿದೆ. ವೇದಾನುಭವ ಸಂಪನ್ನರಿಂದ ನಡೆಯುತ್ತಿರುವ ಶಿಬಿರದ ಚಟುವಟಿಕೆಗಳಲ್ಲಿ ಭಾಗವಹಿಸಿ, ಮುಕ್ತ ಮನಸ್ಸಿನಿಂದ ವಿಮರ್ಶಿಸಿ ತಿಳಿಯುವವರಿಗೆ ರಸದೌತಣ. ಈ ಮಾರ್ಗದರ್ಶನ ನಾಳಿನ ಬಾಳಿಗೆ ನಂದಾದೀವಿಗೆಯಾಗಬಲ್ಲದು.

ಶಿಬಿರದ ಬಗ್ಗೆ:

ನಿತ್ಯ ಸತ್ಯ ಸಂಸ್ಕೃತಿ ವಿಚಾರಗಳ ಅರಿವಿನಲ್ಲಿ ವ್ಯವಹರಿಸುವುದಕ್ಕೆ ಒತ್ತಡ ರಹಿತ ಸುಲಭ ಸೂತ್ರಗಳ ಪರಿಚಯ.    ವಿಮರ್ಶೆ ಮಾಡಿ  ಸತ್ಯ, ಸತ್ವ ಕಂಡರೆ ಮಾತ್ರ ಸ್ವೀಕರಿಸಿ.ಪುರುಷ-ಮಹಿಳೆಯರು ಎಂಬ ಭೇದವಿಲ್ಲ, ವಯಸ್ಸಿನ ಮಿತಿಯಿಲ್ಲ. ವೇದ ಮಂತ್ರಗಳು ತಿಳಿದಿರಬೇಕೆಂದಿಲ್ಲ. ಕಟುವಾದ ನಿಯಮಗಳಾವುದೂ ಇಲ್ಲ.ಕಾರ್ಯಕ್ರಮದ ಸ್ಥಳದಲ್ಲಿ ವೇದ ಸಾಹಿತ್ಯ ಕೃತಿಗಳ ಮಾರಾಟ ವ್ಯವಸ್ಥೆ ಇರುತ್ತದೆ.ವೇದದ ಬಗ್ಗೆ ಸಾಮಾನ್ಯ ಅರಿವು ಮತ್ತು ಆಸಕ್ತಿ ಇರುವ ೫೦ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ. ಸರಳವಾದ ಊಟೋಪಚಾರದ ವ್ಯವಸ್ಥೆ ಇರುತ್ತದೆ.

ಅರ್ಜಿ ಪಡೆಯಲು ಕೆಳಗಿನ ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸಿ:
   
9980813162/9448033813/9448868537
ಇ-ಮೇಲ್: vedasudhe@gmail.com

ಅಂಚೆ ವಿಳಾಸ:
ವ್ಯವಸ್ಥಾಪಕರು
ವೇದಭಾರತೀ ಸಂಪ್ರತಿಷ್ಠಾನ
ಶಾಖೆ, ಚನ್ನರಾಯಪಟ್ಟಣ
-------------------------------------------------------------------------------------------

ಪ್ರವೇಶ ಅರ್ಜಿ


ವೇದಭಾರತಿ ಸಂಪ್ರತಿಷ್ಠಾನ
ಜಾಗೃತಿ ಟ್ರಸ್ಟ್ ಕಾರ್ಯಾಲಯ
ಕೋಟೆ, ಚನ್ನರಾಯಪಟ್ಟಣ-೫೭೩೧೧೬

ವೇದೋಕ್ತ ಜೀವನ ಪಥದ
ಶಿಬಿರ

ಮಾನ್ಯರೇ,
ಮುಂಬರುವ ೨೦೧೪ನೇ ಏಪ್ರಿಲ್ ತಿಂಗಳಲ್ಲಿ ಕೈಗೊಂಡಿರುವ ಜೀವನ ಪೋಷಕ ಆದರ್ಶಗಳನ್ನೊಳಗೊಂಡಿರುವ ಕಾರ್ಯಕ್ರಮದ ಧ್ಯೇಯೊದ್ದೇಶಗಳನ್ನು ನಾನು ಮನಸಾರೆ ಒಪ್ಪಿ ಈ ಮೂಲಕ ಸತ್ಯ ಜೀವನ ನಡೆಸಲು ಅದರ ಅರ್ಥ ಮತ್ತು ಉದ್ದೇಶವನ್ನು ಪಡೆಯಲಿಚ್ಚಿಸುತ್ತೇನೆ.  ತಾವು ನನ್ನನ್ನು ಶಿಬಿರಾರ್ಥಿಯಾಗಿ ಸ್ವೀಕರಿಸಬೇಕೆಂದು ಪ್ರಾರ್ಥನೆ.


ನನ್ನ ವಿಳಾಸ: ದೂರವಾಣಿ ಸಂಖ್ಯೆ:
_________________ ಸ್ಥಿರ : ________________
_________________ ಸಂಚಾರಿ:
_________________

ಸಹಿ/-

Monday, November 11, 2013

ಧರೆ ಹತ್ತಿ ಉರಿದೊಡೆ . . .?

ಬೈಬಲ್ಲು ಹೇಳುವುದು ಜಗ ಜೀವ ದೇವ
ಕುರಾನು ಸಾರುವುದು ಜಗ ಜೀವ ದೇವ |
ಸಕಲ ಮತಗಳ ಸಾರ ಜಗ ಜೀವ ದೇವ
ಒಂದಲದೆ ಹಲವುಂಟೆ ಕಾಣೆ ಮೂಢ ||
     ಜಗತ್ತು, ಜೀವ ಮತ್ತು ದೇವ - ಈ ಮೂರು ಅಂಶಗಳ ಸುತ್ತಲೇ ಬಹುತೇಕ ಎಲ್ಲಾ ಜಿಜ್ಞಾಸೆಗಳು, ಚರ್ಚೆಗಳು, ಸಿದ್ಧಾಂತಗಳು ಸುತ್ತುತ್ತಿರುತ್ತವೆ. ಈ ಮೂರು ಅಂಶಗಳ ಕುರಿತು ವಿವಿಧ ಸಿದ್ಧಾಂತಗಳು ವಿವಿಧ ಧರ್ಮಗ್ರಂಥಗಳಾದವು, ಅದಕ್ಕನುಸಾರವಾಗಿ ಜಾತಿ, ಮತಗಳು, ಪಂಥಗಳು ಉದಯಿಸಿದವು. ನಮ್ಮ ವಿಚಾರ, ಸಿದ್ಧಾಂತಗಳನ್ನು ಎಲ್ಲರೂ ಒಪ್ಪಬೇಕು ಅನ್ನುವವರು, ನಮ್ಮದೇ ಸರಿ ಅನ್ನುವವರು. ಅದಕ್ಕಾಗಿ ಸಂಘರ್ಷಗಳು, ರಕ್ತಪಾತಗಳು ಹಿಂದಿನಕಾಲದಿಂದಲೂ ನಡೆದುಕೊಂಡು ಬರುತ್ತಿದ್ದು, ಈಗಲೂ ಮುಂದುವರೆಯುತ್ತಿವೆ. ಈ ಮೂರು ಅಂಶಗಳ ಪೈಕಿ ಜೀವಾತ್ಮ ಮತ್ತು ಪರಮಾತ್ಮರ ಬಗ್ಗೆ ಚರ್ಚೆಯಾದಷ್ಟು ಜಡಜಗತ್ತಿನ ಬಗ್ಗೆ ಹೆಚ್ಚು ಚರ್ಚೆಯಾದಂತಿಲ್ಲ. ಈ ಬಗ್ಗೆ ಈ ಇಲ್ಲಿ ಚರ್ಚಿಸೋಣ.
     ನಾವು ಪ್ರಕೃತಿ ಎಂದು ಕರೆಯುವ ಈ ಜಡಜಗತ್ತು ಸೃಷ್ಟಿಯಾದುದಾದರೂ ಹೇಗೆ? ವ್ಶೆಜ್ಞಾನಿಕವಾಗಿ ಹೇಳುವುದಾದರೆ ಸುಖಾಸುಮ್ಮನೆ ಶೂನ್ಯದಿಂದ ಯಾವುದೇ ಸೃಷ್ಟಿ ಸಾಧ್ಯವೇ ಇಲ್ಲ. ಇರುವುದನ್ನು ರೂಪಾಂತರ ಮಾಡಿ ಇನ್ನೊಂದು ರೂಪಕ್ಕೆ ತರಬಹುದಷ್ಟೇ. ದೇವರು ಈ ಜಗತ್ತಿನ ಜನಕನೆಂದು ಧರ್ಮಗ್ರಂಥಗಳು ಹೇಳುತ್ತವೆ. ಆದರೆ ಯಾವುದರಿಂದ ಸೃಷ್ಟಿಸಿದ? ಏಕೆ ಸೃಷ್ಟಿಸಿದ? ಹೇಗೆ ಸೃಷ್ಟಿಸಿದ?  ತರ್ಕಬದ್ಧವಾಗಿ ನೋಡಿದರೆ ಈ ಜಡಜಗತ್ತಿನ ಸೃಷ್ಟಿ ಶೂನ್ಯದಿಂದಂತೂ ಆಗಿರಲಾರದು. ದೇವರ ಸೃಷ್ಟಿ  ಶೂನ್ಯದಿಂದ ಸೃಷ್ಟಿಸಿದ ಎಂದು ವಾದದ ಸಲುವಾಗಿ ಒಪ್ಪಿಕೊಂಡರೂ, ಪ್ರಶ್ನೆ ಉದ್ಭವಿಸುತ್ತದೆ. ದೇವರು ಶೂನ್ಯದಿಂದ ಏನು ಬೇಕಾದರೂ ಸೃಷ್ಟಿಸಬಹುದಾದರೆ ಇನ್ನೊಬ್ಬ ತನ್ನಷ್ಟೇ ಅಥವ ತನಗಿಂತ ಬಲಿಷ್ಠ ದೇವರನ್ನು ಸೃಷ್ಟಿಸಬಲ್ಲನೇ ಎಂದರೆ ಉತ್ತರ ಕೊಡುವುದು ಕಷ್ಟ. ಒಂದು ಕಟ್ಟಡವನ್ನು ಯಾವುದೇ ವಸ್ತುಗಳ ಸಹಾಯವಿಲ್ಲದೆ ನಿರ್ಮಿಸಲು ಸಾಧ್ಯವಿದೆಯೇ? ಅದಕ್ಕೆ ಇಟ್ಟಿಗೆ, ಕಲ್ಲು, ಸಿಮೆಂಟು, ಮರಳು, ಕಬ್ಬಿಣ, ಮುಂತಾದವು ಇರಲೇಬೇಕು. ಕಟ್ಟಡದಲ್ಲಿರುವ ವಸ್ತುಗಳು ಮೊದಲೂ ಇದ್ದವು, ಈಗಲೂ ಇದ್ದಾವೆ, ಆದರೆ ಬೇರೆ ಬೇರೆ ರೂಪಗಳಲ್ಲಿ! ಕಟ್ಟಡ ಬಿದ್ದು ಹೋದರೂ, ನಾಶವಾದರೂ, ಅದರಲ್ಲಿ ಬಳಕೆಯಾದ ವಸ್ತುಗಳು ಮುಂದೂ ಸಹ ಒಂದಲ್ಲಾ ಒಂದು ರೀತಿಯಲ್ಲಿ ಯಾವಾಗಲೂ ಇರುತ್ತವೆ. ಹೀಗೆಯೇ ಈ ಜಗತ್ತೂ ಸಹ ಮೊದಲೂ ಇತ್ತು, ಈಗಲೂ ಇದೆ, ಆದರೆ ಬೇರೆ ರೂಪಾಂತರಗಳಲ್ಲಿ ಎನ್ನವುದು ಹೆಚ್ಚು ಸಮಂಜಸ ವಾದವಾಗುತ್ತದೆ. ಜಗತ್ತಿನ ಸೃಷ್ಟಿ,  ಸ್ಥಿತಿ, ಲಯಗಳಿಗೆ ಸಾಕ್ಷೀಭೂತನಾಗಿದ್ದು ಈ ಕ್ರಿಯೆ ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳುವವನು ಭಗವಂತನೆನ್ನಬಹುದು. 
     ಮೊದಲೇ ಪ್ರಸ್ತಾಪಿಸಿದಂತೆ ಮೂರು ಅಂಶಗಳು, ಜಗತ್ತು ಅರ್ಥಾತ್ ಪ್ರಕೃತಿ, ಜೀವ ಮತ್ತು ದೇವ, ಇವುಗಳ ಅಸ್ತಿತ್ವದ ರೀತಿ ತರ್ಕಿಸುವವರಿಗೆ, ಜಿಜ್ಞಾಸೆ ಮಾಡುವವರಿಗೆ ಬಹು ದೊಡ್ಡ ಆಯಾಮವನ್ನು ಒದಗಿಸುತ್ತದೆ. ದೇವರು ಎಂಬ ಶಕ್ತಿ ಎಲ್ಲವನ್ನೂ ನಿಯಂತ್ರಿಸುತ್ತದೆ, ಅದು ಗೋಚರವೋ, ಅಗೋಚರವೋ, ಆಕಾರವೋ, ನಿರಕಾರವೋ, ಏನೋ ಒಂದು ಎಂಬುದನ್ನು ಬಹುತೇಕರು ಒಪ್ಪುತ್ತಾರೆ. ದೇವರ ಅಸ್ತಿತ್ವವನ್ನು ನಂಬದ ನಾಸ್ತಿಕರೂ ಸಹ ಅಗೋಚರ ನಿಯಂತ್ರಕ ಶಕ್ತಿಯ ಬಗ್ಗೆ ಒಪ್ಪುತ್ತಾರೆ. ಹಾಗಾದರೆ ಅಂತಹದೊಂದು ಇದೆ, ಅದು ಅನಂತ ಮತ್ತು ಅನೂಹ್ಯ, ಅದಕ್ಕೆ ಹುಟ್ಟು ಸಾವುಗಳಿಲ್ಲವೆಂದು ಒಪ್ಪಬಹುದು. ಹಾಗೆಯೇ ಜೀವದ ಅಸ್ತಿತ್ವದ ಬಗ್ಗೆ ಸಹ ಹಿಂದೆ ಚರ್ಚಿಸಲಾಗಿದೆ. (ಲೇಖನ: ಹುಟ್ಟಿದರು ಎನಲವರು ಸತ್ತಿರಲೇ ಇಲ್ಲ!) ಈಗ ಜಡ ಪ್ರಕೃತಿಯ ಬಗ್ಗೆ ಹೇಳುವುದಾದರೆ ಮೇಲೆ ತಿಳಿಸಿದಂತೆ ಅದು ಒಂದಲ್ಲಾ ಒಂದು ರೀತಿಯಲ್ಲಿ ಇದ್ದೇ ಇರುತ್ತದೆ ಎಂಬುದನ್ನು ನಾವು ವ್ಶೆಜ್ಞಾನಿಕ ದೃಷ್ಟಿಯಿಂದ ಯೋಚಿಸಿದರೂ ಒಪ್ಪಲೇಬೇಕಾದ ಸಂಗತಿ. ಹೀಗೆ ಜಗತ್ತು, ಜೀವ ಮತ್ತು ದೇವ ಈ ಮೂರೂ ಸಂಗತಿಗಳು ಶಾಶ್ವತ, ಅನಂತವೆಂಬ ವಾದ ಅತ್ಯಂತ ಸಮಂಜಸವಾಗಿ ತೋರುತ್ತದೆ. ಶೂನ್ಯದಿಂದ ಏನೂ ಸೃಷ್ಟಿಸಲು ಸಾಧ್ಯವಿಲ್ಲವೆನ್ನುವುದನ್ನು ಒಪ್ಮ್ಪವುದಾದರೆ, ಜಡ ಪ್ರಕೃತಿಯಿಲ್ಲದಿದ್ದರೆ ಸ್ವತಃ ದೇವರೂ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲವೆಂದು ಒಪ್ಪಲೇಬೇಕಾಗುತ್ತದೆ. ಹಾಗಾಗಿ ಈ ಜಗತ್ತು ಮೊದಲಿನಿಂದಲೂ ಇತ್ತು, ಮುಂದೂ ಇರುತ್ತದೆ, ಎಂದೆಂದೂ ಇರುತ್ತದೆ, ಅದು ಜೀವ ಹಾಗೂ ದೇವರಂತೆ ಅನಂತ, ಶಾಶ್ವತ ಎಂದು ತಿಳಿಯಬೇಕಾಗುತ್ತದೆ. 
     ಇಂತಹ ಶಾಶ್ವತವಾದ ಜಗತ್ತಿನ ರಚನೆಯ ವಿಚಾರದಲ್ಲಿ ಋಗ್ವೇದ ಬೆಳಕು ಚೆಲ್ಲಿರುವುದು ಹೀಗೆ:
ನಾಸದಾಸೀನ್ನೋ ಸದಾಸೀತ್ ತದಾನೀಂ ನಾಸೀದ್ರಜೋ ನೋ ವ್ಯೋಮಾ ಪರೋ ಯತ್ |
ಕಿಮಾವರೀವಃ ಕುಹ ಕಸ್ಯ ಶರ್ಮನ್ನಂಭಃ ಕಿಮಾಸೀದ್ಗಹನಂ ಗಭೀರಮ್ || (ಋಕ್. ೧೦.೧೨೯.೧)
     ಸೃಷ್ಟಿಯ ಮುನ್ನ ಶೂನ್ಯವಿರಲಿಲ್ಲ, ಈ ಲೋಕವಿರಲಿಲ್ಲ ಮತ್ತು ಆಕಾಶವೂ ಇರಲಿಲ್ಲ. ಆದರೆ ಎಲ್ಲವನ್ನೂ ಆವರಿಸುವ ಗಂಭೀರ ಮತ್ತು ಗಹನವಾದ ಯಾವುದೋ ಒಂದು ತತ್ವ ಅಥವ ಪದಾರ್ಥ ದೇವರ ಆಶ್ರಯದಲ್ಲಿತ್ತು ಎಂದು ಈ ಮಂತ್ರದ ಅರ್ಥವಾಗಿದ್ದು, ಜಡ ಪ್ರಕೃತಿಯ ಮೂಲ ಅಸ್ತಿತ್ವದ ಬಗ್ಗೆ ಹೇಳುತ್ತದೆ.
ಇನ್ನೊಂದು ಮಂತ್ರ ಹೇಳುತ್ತದೆ:
ನ ಮೃತ್ಯುರಾಸೀದಮೃತಂ ನ ತರ್ಹಿ ನ ರಾತ್ರ್ಯಾ ಅಹ್ನ ಆಸೀತ್ ಪ್ರಕೇತಃ |
ಅನೀದವಾತಂ ಸ್ವಧಯಾ ತದೇಕಂ ತಸ್ಮಾದ್ಧಾನ್ಯನ್ನ ಪರಃ ಕಿಂ ಚನಾಸ || (ಋಕ್. ೧೦.೧೨೯.೨)
    ಸಾವು ಇರಲಿಲ್ಲ, ಹಾಗಾಗಿ ಅಮರತ್ವವಿರಲಿಲ್ಲ, ರಾತ್ರಿ, ಹಗಲುಗಳು ಇರಲಿಲ್ಲ. ಆ ಒಂದು ತತ್ವ ಮಾತ್ರ ತನ್ನ ಬಲದಿಂದ ಗಾಳಿಯಿಲ್ಲದಿದ್ದರೂ ಪ್ರಾಣದಾಯಿಯಾಗಿತ್ತು, ಅದನ್ನು ಬಿಟ್ಟು ಬೇರೇನೂ ಇರಲಿಲ್ಲ ಎಂದು ಈ ಮಂತ್ರದ ಅರ್ಥ. ಪ್ರಳಯ, ಇತ್ಯಾದಿ ಕಾರಣಗಳಿಂದ ಜೀವಜಗತ್ತಿನ ಸರ್ವನಾಶವಾದರೆ ಜಗತ್ತಿನ ಸ್ಥಿತಿ ಹೀಗೆಯೇ ಇದ್ದಿರಬಹುದೇನೋ! ಆ ಸ್ಥಿತಿ ಹೇಗಿರಬಹುದು ಎಂದು ತಿಳಿಸುವ ಇನ್ನೊಂದು ಮಂತ್ರವಿದು:
ತಮ ಆಸೀತ್ ತಮಸಾ ಗೂಳ್ಹಮಗ್ರೇs ಪ್ರಕೇತಂ ಸಲಿಲಂ ಸರ್ವಮಾ ಇದಮ್ |
ತುಚ್ಛ್ಯೇನಾಭ್ಯವಿಹಿತಂ ಯದಾಸೀತ್ ತಪಸಸ್ತನ್ಮ ಹಿನಾಜಾಯತೈಕಮ್ || (ಋಕ್.೧೦.೧೨೯.೩)
     ಈ ಮೊದಲು ಇವೆಲ್ಲವೂ ರೂಪ ಲಕ್ಷಣಗಳಿಲ್ಲದೆ, ರಹಸ್ಯಮಯ ಅಂಧಕಾರದಲ್ಲಿ ದ್ರವರೂಪದಲ್ಲಿ (ಹರಿಯುವ ರೀತಿಯಲ್ಲಿ) ಇದ್ದಿತು. ದೇವನ ಕೃಪೆಯಿಂದ ಅದು ಒಂದಾಯಿತು, ಅರ್ಥಾತ್ ಹೊಸ ಸೃಷ್ಟಿಯಾಯಿತು. ಅಥರ್ವವೇದದ ಮಂತ್ರ ಹೇಳುತ್ತದೆ:
ಏಷಾ ಸನತ್ನೀ ಸನಮೇವ ಜಾತೈಷಾ ಪುರಾಣೀ ಪರಿ ಸರ್ವಂ ಬಭೂವ |
ಮಹೀ ದೇವ್ಯುಷಸೋ ವಿಭಾತೀ ಸೈಕೇನೈಕೇನ ಮಿಷತಾ ವಿ ಚಷ್ಟೇ || (ಅಥರ್ವ. ೧೦.೮.೩೦)
     ಅನಾದಿ ಕಾಲದಿಂದಲೇ ಇರುವ ಈ ಪ್ರಕೃತಿ ಸನಾತನವಾಗಿದ್ದು, ಎಲ್ಲಕ್ಕಿಂತಲೂ ಮೊದಲು ಇದ್ದುದಾಗಿದ್ದು, ದೇವರ ಇಚ್ಛೆಯಂತೆ ವಿವಿಧ ರೂಪಗಳಲ್ಲಿ ಪ್ರಕಟವಾಗುತ್ತದೆ, ಪ್ರತಿ ಜೀವಿಯ ಮೂಲಕವೂ ವ್ಯಕ್ತವಾಗುತ್ತದೆ. ಈ ಮಂತ್ರ ಜೀವಿಗಳ ಅಸ್ತಿತ್ವದ ಬಗ್ಗೆಯೂ ಬೆಳಕು ಚೆಲ್ಲಿದೆ. 
     ಸೃಷ್ಟಿ, ಸ್ಥಿತಿ. ಲಯಗಳು ಜಗದ ನಿಯಮ. ಸೃಷ್ಟಿಯಾಗುತ್ತಿರುತ್ತದೆ, ಇರುತ್ತದೆ, ನಾಶವಾಗುತ್ತದೆ - ಈ ಚಕ್ರ ನಿರಂತರವಾಗಿ ಸುತ್ತುತ್ತಿರುತ್ತದೆ. ಇನ್ನು ಜೀವಿಗಳ ಅಸ್ತಿತ್ವಕ್ಕೂ ಪ್ರಕೃತಿ ಇರಲೇಬೇಕು. ಈ ದೇಹ ಪಂಚಭೂತಗಳಿಂದ -ನೆಲ, ಜಲ, ಆಕಾಶ, ವಾಯು, ಅಗ್ನಿ- ಆದುದು ಎಂಬುದು ಸರ್ವವಿದಿತ. ಈ ಪಂಚಭೂತಗಳಿಂದ ಸೃಷ್ಟಿಯಾದ ದೇಹದಲ್ಲಿರುವ ಜೀವದಿಂದ ಆ ದೇಹಕ್ಕೆ ಅರ್ಥ ಬರುತ್ತದೆ. ಸತ್ತಾಗ ದೇಹ ಪಂಚಭೂತಗಳಲ್ಲಿ ಲೀನವಾಗುತ್ತದೆ, ಅದರೊಳಗಿನ ಜೀವಾತ್ಮ ಇನ್ನೊಂದು ರೂಪದಲ್ಲಿ ಅಸ್ತಿತ್ವ ಹೊಂದುತ್ತದೆ. ಪ್ರತಿ ಮಾನವನೂ ಮೂರು ರೀತಿಯ ಋಣಗಳನ್ನು-ದೇವಋಣ, ಪಿತೃಋಣ ಮತ್ತು ಆಚಾರ್ಯಋಣ- ತೀರಿಸಬೇಕೆಂದು ಹೇಳುತ್ತಾರೆ. ಈ ದೇವಋಣವನ್ನು ತೀರಿಸುವುದಾದರೂ ಹೇಗೆ? ನಮಗೆ ಗೊತ್ತಿಲ್ಲದ, ತಿಳಿಯಲಾಗದ, ಅನಾದಿ, ಅನಂತ ದೇವರ ಋಣವನ್ನು ತೀರಿಸುವುದಾದರೂ ಹೇಗೆ? ಯಾವುದಾದರೂ ದೇವಸ್ಥಾನಕ್ಕೆ, ಚರ್ಚಿಗೆ, ಮಸೀದಿಗೆ ಹೋಗಿ ಪ್ರಾರ್ಥನೆ ಸಲ್ಲಿಸುವುದರಿಂದ, ಹರಕೆ ಕಟ್ಟಿಕೊಂಡು ತೀರಿಸುವುದರಿಂದ, ವಜ್ರದ ಕಿರೀಟ, ಚಿನ್ನದ ರಥ ಮಾಡಿಸಿಕೊಡುವುದರಿಂದ, ದೇವರದೇ ಸೃಷ್ಟಿಯಾದ ಹಣ್ಣು, ಕಾಯಿಗಳನ್ನು ನೈವೇದ್ಯವಾಗಿ ಅರ್ಪಿಸುವುದರಿಂದಷ್ಟೇ ದೇವಋಣ ತೀರುವುದೇ? ವಿಚಾರ ಮಾಡಬೇಕಾದ ಸಂಗತಿಯಿದಲ್ಲವೇ?

ಸಾಲವನು ಪಡೆದಿಹೆವು ಋಣಿಗಳಾಗಿಹೆವು 
ಶರೀರವಿತ್ತ ದೇವಗೆ ಹೆತ್ತರ್ಗೆ ಹೊತ್ತರ್ಗೆ |
ದಾರಿ ತೋರುವ ಗುರು ಹಿರಿಯರೆಲ್ಲರಿಗೆ
ಸಾಲವನು ತೀರಿಸದೆ ಮುಕ್ತಿಯುಂಟೆ ಮೂಢ ||

     ನಿಜ, ಋಣಮುಕ್ತರಾಗದೆ ನಮಗೆ ಮುಕ್ತಿಯಿಲ್ಲ. ಪಂಚಭೂತಗಳಿಂದ, ಅರ್ಥಾತ್ ಪ್ರಕೃತಿಯಿಂದ, ಶರೀರ ಸೃಷ್ಟಿಯಾಗಿದ್ದು, ಪ್ರಕೃತಿಯಿಲ್ಲದಿದ್ದರೆ ಜೀವಗಳ ಉಗಮಕ್ಕೆ ಅವಕಾಶವೆಲ್ಲಿರುತ್ತಿತ್ತು? ಆದ್ದರಿಂದ ನಿಜವಾಗಿ ದೇವಋಣವನ್ನು ತೀರಿಸುವುದೆಂದರೆ ಪ್ರಕೃತಿಯ ರಕ್ಷಣೆಗೆ ನಮ್ಮ ಕೈಯಲ್ಲಾಗುವ ಕಾರ್ಯಗಳನ್ನು ಮಾಡುವುದು. ಪ್ರಕೃತಿಯನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದನ್ನು ಹಾಳುಗೆಡವಿದರೆ ನಾಶವಾಗುವವರು ನಾವೇನೇ! ಇದೇ ನಮ್ಮ ಧರ್ಮ, ನಿಜವಾಗಿ ಪಾಲಿಸಬೇಕಾಗಿರುವ ಧರ್ಮ. ಆದರೆ, ಇಂದೇನಾಗುತ್ತಿದೆ? ಭೂದಾಹ ಅರಣ್ಯಗಳನ್ನು, ಅರಣ್ಯವನ್ನು ಆಶ್ರಯಿಸಿರುವ ಜೀವಸಂಕುಲವನ್ನು ನಾಶಮಾಡುತ್ತಿದೆ. ಅಂತರ್ಜಲವನ್ನು ನಮ್ಮ ದಾಹವನ್ನು ತಣಿಸಲು ಮಿತಿಮೀರಿ ಹೀರಲಾಗುತ್ತಿದೆ; ಅಂತರ್ಜಲದ ಮೂಲಗಳಾದ ಕೆರೆಕಟ್ಟೆಗಳನ್ನು ಮುಚ್ಚಲಾಗಿದೆ. ವಾಯುಮಾಲಿನ್ಯವನ್ನು ಎಗ್ಗಿಲ್ಲದೆ ಮಾಡುತ್ತಾ ಜೀವರಕ್ಷಕ ಓಜೋನ್ ಕವಚವನ್ನು ಛಿದ್ರಗೊಳಿಸಲಾಗುತ್ತಿದೆ. ಹೇಳತೀರದಷ್ಟು ಜಲಮಾಲಿನ್ಯ ಮಾಡಿ ಅನೇಕ ರೋಗ-ರುಜಿನಗಳಿಗೆ ಕಾರಣಕರ್ತರು ನಾವೇ ಆಗಿದ್ದೇವೆ. ಹೀಗೆ ಪ್ರಕೃತಿಯನ್ನು ನಾಶ ಮಾಡುತ್ತಾ ನಮ್ಮ ಗೋರಿಯನ್ನು ನಾವೇ ತೋಡಿಕೊಳ್ಳುತ್ತಿದ್ದೇವೆ. ಧರೆ ಹತ್ತಿ ಉರಿದೊಡೆ ನಿಲಲಹುದೆ? ಭೂಮಿಯ ಸಮತೋಲನ ತಪ್ಪಿ ಪ್ರಳಯವಾಗಲು ಇದಕ್ಕಿಂತ ಹೆಚ್ಚಿನ ಕಾರಣಗಳು ಬೇಕಿಲ್ಲ. ನಾವು ಪ್ರಕೃತಿಯ ಸಮತೋಲನ ಕಾಪಾಡಲು ಶ್ರಮಿಸಬೇಕು. ನೆಲ, ಜಲ, ವಾಯುಗಳನ್ನು ಸಂರಕ್ಷಿಸಲು ನಾವು ಸಂಕಲ್ಪಿಸಬೇಕು; ಕನಿಷ್ಠ ಪಕ್ಷ ನಮ್ಮ ಮಕ್ಕಳು, ಮೊಮ್ಮಕ್ಕಳ ದೃಷ್ಟಿಯಿಂದಾದರೂ ಈ ಭೂಮಿಯನ್ನು ಕಾಪಾಡಬೇಕಾದುದು, ಯಾವ ಪ್ರಕೃತಿಯಿಂದ ನಮಗೆ ಅರ್ಥ ಬಂದಿದೆಯೋ, ನಾವು ಇದ್ದೇವೆಯೋ, ಆ ನಮ್ಮೆಲ್ಲರ ಆದ್ಯ ಕರ್ತವ್ಯ. ನಿಜವಾಗಿ ತೀರಿಸಬೇಕಾಗಿರುವ ದೇವಋಣವೆಂದರೆ ಇದೇ ಹೊರತು ಮತ್ತೊಂದಲ್ಲ. 
     ನೋಡುವ ಕಣ್ಣುಗಳಿದ್ದರೆ, ಕೇಳುವ ಕಿವಿಗಳಿದ್ದರೆ ಅತ್ಯಂತ ಕ್ಷಮಾಶೀಲ ಪ್ರಕೃತಿ ತನ್ನ ಮೇಲೆ ಮಾನವನಿಂದ  ಆದ, ಆಗುತ್ತಿರುವ ಅತ್ಯಾಚಾರಗಳಿಗಾಗಿ ರೋದಿಸುತ್ತಿರುವುದು ಕಾಣುತ್ತದೆ, ಕೇಳುತ್ತದೆ. ಆದರೆ ಆ ರೋದನ ತನಗಾಗಿ ಅಲ್ಲ, ತನ್ನನ್ನು ಆಶ್ರಯಿಸಿರುವ ಜೀವಸಂಕುಲಕ್ಕಾಗಿ!
-ಕ.ವೆಂ.ನಾಗರಾಜ್


[ಬಳಸಿರುವ ಚಿತ್ರ ಅಂತರ್ಜಾಲದಿಂದ ಹೆಕ್ಕಿದ್ದು.]