Pages

Wednesday, April 3, 2013

ಕುಸುಮ-2


“ಎಲ್ಲರಿಗಾಗಿ ವೇದ”
[11.11.2012 ರಂದು ಜನಮಿತ್ರ ಪತ್ರಿಕೆಯಲ್ಲಿ ಪ್ರಕಟವಾಗಿದೆ]

ವೇದದ ಉಗಮ:
ವೇದದ ಉಗಮವನ್ನು ಒಂದು ವೇದ ಮಂತ್ರವೇ ನಿರೂಪಿಸುತ್ತದೆ… ಯಜುರ್ವೇದದ 31 ನೇ ಅಧ್ಯಾಯದ 7ನೇ ಮಂತ್ರ ಹೀಗಿದೆ…

ತಸ್ಮಾತ್  ಯಜ್ಞಾತ್ ಸರ್ವಹುತ: ಋಚ: ಸಾಮಾನಿ  ಜಜ್ಞಿರೇ|
ಛಂದಾಂಸಿ ಜಜ್ಞಿರೇ ತಸ್ಮಾತ್ ಯಜುಸ್ತಸ್ಮಾದಜಾಯತಾ||

ತಸ್ಮಾತ್  ಸರ್ವಹುತ: ಯಜ್ಞಾತ್= ಆ ಸರ್ವದಾತೃವೂ, ಉಪಾಸನೀಯನೂ ಆದ ಭಗವಂತನಿಂದ
ಋಚ: ಸಾಮಾನಿ  ಜಜ್ಞಿರೇ= ಋಗ್ವೇದ ಸಾಮವೇದಗಳು ಪ್ರಕಟವಾದವು
ತಸ್ಮಾತ್ ಛಂದಾಂಸಿ ಜಜ್ಞಿರೇ =ಅವನಿಂದ ಅಥರ್ವಮಂತ್ರಗಳೂ ಪ್ರಕಟವಾದವು.
ತಸ್ಮಾತ್ ಯಜು: ಅಜಾಯತ= ಅವನಿಂದ ಯಜುರ್ವೇದವೂ ಪ್ರಕಟವಾಯ್ತು.

ಭಗವಂತನಿಂದಲೇ ನಾಲ್ಕೂ ವೇದಗಳೂ ಪ್ರಕಟವಾದವು, ಎಂಬ ಅಂಶವನ್ನು ಯಜುರ್ವೇದದ ಈ ಮಂತ್ರವು ಸ್ಪಷ್ಟಪಡಿಸುತ್ತದೆ. ಅಂದರೆ ನಾಲ್ಕೂ ವೇದಗಳು ಯಾವ ಮನುಷ್ಯನೂ ಬರೆದಿದ್ದಲ್ಲ. ಅದಾಗಲೇ ತರಂಗಗಳ    ರೂಪದಲ್ಲಿ ಪ್ರಕಟವಾಗಿದ್ದ  ವೇದ ಮಂತ್ರಗಳನ್ನು ಅನೇಕ ಋಷಿಗಳು ತಮ್ಮ ತಪೋಬಲದಿಂದ ಕಂಡುಕೊಂಡು     ಮಂತ್ರದ್ರಷ್ಟಾರರೆನಿಸಿದರು. ಇದರಿಂದ ಏನು ನಿರೂಪಿತವಾಗುತ್ತದೆಂದರೆ ಮಾನವನ ಸೃಷ್ಟಿಯಾದಾಗಲೇ ಅವನ ಬದುಕನ್ನು ರೂಪಿಸುವ ಸೂತ್ರಗಳಾದ ವೇದಮಂತ್ರಗಳು ಭಗವಂತನಿಂದ ಪ್ರಕಟವಾಗಿದ್ದವು.ನಂತರದ ದಿನಗಳಲ್ಲಿ ಋಷಿಗಳಿಗೆ ಮಂತ್ರಗಳ ದರ್ಶನವಾಯ್ತೆಂಬುದು ವೇದಗಳಿಂದಲೇ ತಿಳಿದುಬರುವ ಸಂಗತಿ.
ವೇದವು ಯಾರಿಗಾಗಿ?
ಜ್ಞಾನ ಬೇಕೆನ್ನುವ ಎಲ್ಲರಿಗಾಗಿ ವೇದವನ್ನು ಕೊ ಟ್ಟಿದ್ದೇನೆ, ಎಂಬುದು     ಭಗವಂತನ ಮಾತು. ಯಜುರ್ವೇದದ 26 ನೇ ಅಧ್ಯಾಯದ 2ನೇ ಮಂತ್ರ ಹೀಗಿದೆ…

ಯಥೇಮಾಂ ವಾಚಂ ಕಾಲ್ಯಾಣೀಂ ಆವದಾನಿ ಜನೇಭ್ಯ: |
ಬ್ರಹ್ಮರಾಜನ್ಯಾಭ್ಯಾಂ ಶೂದ್ರಾಯಚಾರ್ಯಾಯ ಚ ಸ್ವಾಯ ಚಾರಣಾಯ ಚ |
ಪ್ರಿಯೋ ದೇವಾನಾಂ ದಕ್ಷಿಣಾಯೈ ದಾತುರಿಹ ಭೂಯಾ ಸಮಯಂ
ಮೇ ಕಾಮ: ಸಮೃಧ್ಯತಾಮುಪ ಮಾದೋ ನಮತು||

ಅರ್ಥ:
ಇಹ= ಈ ಲೋಕದಲ್ಲಿ
ಯಥಾ ದೇವಾನಾಂ ದಕ್ಷಿಣಾಯೈದಾತು: ಭೂಯಾಸಮ್= ವಿದ್ವಜ್ಜನರಿಗೂ, ಉದಾರಾತ್ಮರಿಗೂ,ಆಧ್ಯಾತ್ಮಿಕ ಶಕ್ತಿಯ ದಾತೃವಾಗುವಂತೆ
ಇಮಾಂ ಕಲ್ಯಾಣೀಂ  ವಾಚಮ್ = ಈ ಕಲ್ಯಾಣಕಾರಿಯಾದ ವಾಣಿಯನ್ನು
ಜನೇಭ್ಯ: =ಮಾನವರೆಲ್ಲರ ಸಲುವಾಗಿ
ಬ್ರಹ್ಮರಾಜನ್ಯಾಭ್ಯಾಮ್=ಬ್ರಾಹ್ಮಣ-ಕ್ಷತ್ರಿಯರಿಗಾಗಿ
ಶೂದ್ರಾಯ=ಶೂದ್ರನಿಗಾಗಿ  ಚ=ಮತ್ತು
ಆರ್ಯಾಯ= ವೈಶ್ಯನ ಸಲುವಾಗಿ
ಸ್ವಾಯ=ತನ್ನವನಿಗಾಗಿ
 ಚ=ಮತ್ತು[ಅದೇ ರೀತಿಯಲ್ಲಿ]
ಅರಣಾಯ=ಬೇರೆಯವನಿಗಾಗಿ
ಆವದಾನಿ=ಉಪದೇಶಿಸುತ್ತೇನೆ.
ಅಯಂ ಮೇ ಕಾಮ:= ಈ ನನ್ನ ಕಾಮನೆಯು
ಸಮೃಧ್ಯತಾಮ್=ಸಮೃದ್ಧವಾಗಲಿ
ಅದ: = ಈ ಜಗತ್ತು
ಮಾ ಉಪ ನಮತು=ನನ್ನ ಬಳಿ ನಮ್ರವಾಗಿ ಬರಲಿ

ಭಾವಾರ್ಥ:
ಈ ಮಂತ್ರವು ಏನು ಹೇಳುತ್ತದೆ? ಈ ಲೋಕದಲ್ಲಿನ ಮಾನವರೆಲ್ಲರ ಸಲುವಾಗಿ ಉಪದೇಶಿಸುತ್ತೇನೆ. ಮಂತ್ರದಲ್ಲಿರುವ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಪದಗಳನ್ನು ಈಗಿರುವಂತೆ ಜಾತಿವಾಚಕವಾಗಿ ಬಳಸಿಲ್ಲವೆಂಬುದನ್ನು ಗಮನಿಸಬೇಕು. ಮುಂದೆ ನಾಲ್ಕು ವರ್ಣಗಳ ಪರಿಚಯವಾಗುವಾಗ  ಈ ವಿಚಾರವು ಸ್ಪಷ್ಟವಾಗುತ್ತದೆ.ಜಗತ್ತಿನ ನೆಮ್ಮದಿಗಾಗಿ ಎಲ್ಲರಿಗೆ ಎನ್ನುವಾಗ, ತನ್ನವನಿಗೆ, ಅಷ್ಟೇ ಅಲ್ಲ, ಬೇರೆಯವನಿಗೂ ಉಪದೇಶಿಸುತ್ತೇನೆ” ಎಂಬುದು ಭಗವಂತನ ಮಾತುಗಳು.ಆದ್ದರಿಂದ ವೇದವನ್ನು ಯಾವುದೇ ಒಂದು ಗುಂಪಿಗೆ ಮಾತ್ರ ಎಂದು ತಿಳಿಯಬಾರದು, ಅಷ್ಟೇ ಅಲ್ಲ ವೇದವು ಎಲ್ಲಾ ಮಾನವರಿಗಾಗಿ, ಎಂಬುದನ್ನು ಮುಂದೆ ಹಲವಾರು ಮಂತ್ರಗಳಲ್ಲಿ ಕಾಣಬಹುದು. ಅಷ್ಟೇ ಅಲ್ಲ ಅಪೇಕ್ಷೆ ಪಡುವ ಯಾರಿಗೇ ಆಗಲೀ ವೇದಬಲ್ಲವನು ವೇದವನ್ನು ಹೇಳಿಕೊಡದಿದ್ದರೆ ವೇದಬಲ್ಲವನು ತನ್ನ ಸಂಪತ್ತಿನೊಡನೆ ಮಾರಿಕೊಂಡು ಹೋಗುತ್ತಾನೆಂಬುದನ್ನೂ ಸಹ ಮುಂದಿನ ವೇದಮಂತ್ರದಲ್ಲಿ ನೋಡ   ಬಹುದಾಗಿದೆ.