Pages

Sunday, March 29, 2015

ಜೀವನವೇದ-2


ಸಂಮೃದ್ಧ ಮನೆ :                                                  
ಒಂದು ಸಂಮೃದ್ಧವಾದ ಮನೆ ಅಂದರೆ ಹೇಗಿರಬೇಕು? ಮನೆಯ ಯಜಮಾನ ಹೇಗಿರಬೇಕು? ಎಂಬ ವಿಚಾರವನ್ನು  ಅಥರ್ವಣ ವೇದದಲ್ಲಿನ ಒಂದು ಮಂತ್ರದಲ್ಲಿ ಹೀಗೆ ಹೇಳಿದೆ.

ಇಮೇ ಗೃಹಾ ಮಯೋಭುವ ಊರ್ಜಸ್ವಂತ: ಪಯಸ್ವಂತ:|
ಪೂರ್ಣಾ ವಾಮೇನ ತಿಷ್ಠಂತಸ್ತೇ ನೋ ಜಾನಂತ್ವಾಯತ: ||

[ಅಥರ್ವಣವೇದದ ೭ನೇ ಕಾಂಡ ೬೦ನೇ ಸೂಕ್ತ ೨ನೇ ಮಂತ್ರ]

 ಈ ಮಂತ್ರದ ಅರ್ಥವೇನೆಂದರೆ ನಮ್ಮ ಮನೆಗಳು ಆಹಾರಧಾನ್ಯಗಳಿಂದಲೂ ಹಾಲು ಮೊಸರಿನಿಂದಲೂ ತುಂಬಿದ್ದು, ಎಲ್ಲರಿಗೂ ಈ ಮನೆಯಲ್ಲಿ ಸುಖಶಾಂತಿ ನೆಮ್ಮದಿ ಸಿಗುವಂತಾಗಲೀ.
ಈ ಮಂತ್ರವನ್ನು ಹೇಗೆ ಅರ್ಥಮಾಡಿಕೊಳ್ಳಬೇಕು? ಒಂದು ಗೌರವಯುತ ಗೃಹವೆಂದರೆ ಆ ಮನೆಯಲ್ಲಿ ಆಹಾರಧಾನ್ಯದ ಸಂಗ್ರಹವಿರಬೇಕು. ಆಹಾರಧಾನ್ಯದ ಸಂಗ್ರಹವಿರಬೇಕೆಂದರೆ ಆ ಮನೆಯೊಡೆಯ ಆಹಾರಧಾನ್ಯವನ್ನು ಸಂಮೃದ್ಧವಾಗಿ ಬೆಳೆದಿರಬೇಕು. ಹಾಲು ಮೊಸರು ಸದಾಕಾಲವಿರುವಂತೆ ಹಸುಕರುಗಳನ್ನು ಸಾಕಿಕೊಂಡಿರಬೇಕು. ಮನೆಗೆ ಅತಿಥಿಗಳು ಸಂತೋಷದಿಂದ ಬಂದುಹೋಗುವಂತಿರಬೇಕು. ಮನೆಯಲ್ಲಿ ಸುಖಶಾಂತಿ ನೆಮ್ಮದಿ ನೆಲಸಿರಬೇಕು.
ಇಂದಿನ ಕಾಲಕ್ಕೆ ನಾವು ಈ ವೇದಮಂತ್ರವನ್ನು ಹೇಗೆ ಅರ್ಥಮಾಡಿಕೊಳ್ಳಬೇಕು? ಒಂದು ಸಂಮೃದ್ಧವಾದ ಮನೆ ಅಂದರೆ ಮನೆಯ ಯಜಮಾನನು ಸತ್ಯಮಾರ್ಗದಲ್ಲಿ ದುಡಿದು ಸಂಪತ್ತನ್ನು ಗಳಿಸಿರಬೇಕು. ಆ ಸಂಪತ್ತಿನಿಂದ ಮನೆಗೆ ಬಂದ ಅತಿಥಿಗಳ ಸತ್ಕಾರವು ಚೆನ್ನಾಗಿ ನಡೆಯುತ್ತಿರಬೇಕು. ಅದು ಸುಸಂಕೃತ ಮನೆಯಾಗಿದ್ದು  ಮನೆಯಲ್ಲಿ ಯಾವಾಗಲೂ ಸಂತಸದ ವಾತಾವರಣ ನೆಲಸಿರಬೇಕು.‘

ಮನೆಯ ಯಜಮಾನ ಹೇಗಿರಬೇಕು?

ಊರ್ಜಂ ಬಿಭ್ರದ್ವಸುವನಿಃ ಸುಮೇಧಾ ಅಘೋರೇಣ ಚಕ್ಷುಷಾ ಮಿತ್ರಿಯೇಣ|
ಗೃಹಾನೈಮಿ ಸುಮನಾ ವಂದಮಾನೋ  ರಮಧ್ವಂ ಮಾ ಬಿಭೀತ ಮತ್||

[ಅಥರ್ವಣದ ೭ನೇ ಕಾಂಡದ ೬೦ನೇ ಸೂಕ್ತದ ೧ನೇ ಮಂತ್ರ]

 ಈ ಮಂತ್ರದ ಅರ್ಥ ಹೀಗಿದೆ. ಮನೆಯ ಯಜಮಾನನು ಶಕ್ತಿವಂತನಾಗಿರಬೇಕು, ಧನಾರ್ಜನೆ ಮಾಡುತ್ತಿರಬೇಕು, ಮೇಧಾವಂತನಾಗಿರಬೇಕು, ಮನೆಯ ಸದಸ್ಯರೊಡನೆ ಕ್ರೋಧರಹಿತನೂ, ಸ್ನೇಹಪೂರ್ಣ ಕಣ್ಣುಗಳಿಂದ ನೋಡುವವನೂ, ಸುಪ್ರಸನ್ನ ಮನಸ್ಸುಳ್ಳವನೂ, ಎಲ್ಲರಿಂದ ಪ್ರಶಂಸಿಸಲ್ಪಡುವವನೂ ಆಗಿದ್ದು ಎಲ್ಲರೊಡನೆ ಆನಂದದಿಂದ ಪ್ರಸನ್ನನಾಗಿರಬೇಕು.

ಈ ಮಂತ್ರದ ಒಂದೊಂದೂ ಶಬ್ಧಗಳೂ ಅತ್ಯಂತ ಮಹತ್ವ ಉಳ್ಳವುಗಳೇ ಆಗಿವೆ. ಈ ಮಂತ್ರದ ಒಂದೊಂದೇ ಶಬ್ಧದ ಬಗ್ಗೆ ವಿಚಾರ ಮಾಡೋಣ. ಮನೆಯ ಯಜಮಾನನಿಗಿರಬೇಕಾದ ಪ್ರಥಮ ಅರ್ಹತೆ ಎಂದರೆ.. . . . . .

ಊರ್ಜಂ ಬಿಭ್ರತ್ :

ಊರ್ಜಮ್ ಎಂದರೆ ಪ್ರಾಣಬಲ ಅಥವಾ ಶಕ್ತಿ, ಬಿಭ್ರತ್ ಅಂದರೆ ಧಾರಣೆ ಮಾಡು. ಅಂದರೆ ಮನೆಯ ಯಜಮಾನನು ಶಕ್ತಿಯನ್ನು ಹೊಂದಿದವನಾಗಿರಬೇಕು. ಮನೆಯ ಯಜಮಾನನು ಶಕ್ತಿಶಾಲಿಯಾಗಿದ್ದರೆ ಅವನಲ್ಲಿ ಯಾರ ಬಗ್ಗೆಯೂ ದ್ವೇಷ,ಅಸೂಯೆ, ಮಾತ್ಸರ್ಯ ಭಾವನೆಗಳಿರದೆ ಎಲ್ಲರೊಡನೆ  ಪವಿತ್ರವಾದ ಪ್ರೇಮಭಾವ ಇದ್ದು ಕುಟುಂಬವು ಸಂತಸದಿಂದ ಇರುತ್ತದೆ. ಯಜಮಾನನೇನಾದರೂ ಶಕ್ತಿಹೀನನಾಗಿದ್ದರೆ ಸಣ್ಣ ಸಣ್ಣ ವಿಷಯಗಳಿಗೂ ಎಲ್ಲರ ಮೇಲೆ ಕೋಪ ಮಾಡಿಕೊಂಡು ರೇಗಾಡುತ್ತಾ  ಕುಟುಂಬದ ನೆಮ್ಮದಿಯು ಹಾಳಾಗುತ್ತದೆ. ಆದ್ದರಿಂದ ಗೃಹಸ್ಥನು ತನ್ನ ಶರೀರ ಮತ್ತು  ಇಂದ್ರಿಯಗಳನ್ನು ಶಕ್ತಿಯುತವಾಗಿ ಇಟ್ಟುಕೊಳ್ಳಬೇಕೆಂಬುದು ವೇದದ ಆಶಯ. ಯಜಮಾನನಿಗಿರಬೇಕಾದ ಎರಡನೆಯ ಅರ್ಹತೆ ಎಂದರೆ. . . . .  .
ವಸುವನೀ
ವಸುವನೀ ಎಂದರೆ ಉತ್ತಮ ಮಾರ್ಗದಲ್ಲಿ ಧರ್ಮದಿಂದ ಧನವನ್ನು ಸಂಪಾದಿಸುವವರು ಎಂದು ಅರ್ಥ. ವಾಮಮಾರ್ಗದಲ್ಲಿ ಎಂದೂ ಹಣವನ್ನು  ಸಂಪಾದಿಸ ಕೂಡದು. ಇದು ವೇದದ ಆದೇಶ.
ಯಜುರ್ವೇದದ ೪೦ನೇ ಅಧ್ಯಾಯದ ೧೬ ನೇ ಮಂತ್ರದಲ್ಲಿ ಸಂಪತ್ತನ್ನು ಯಾವ ಮಾರ್ಗದಲ್ಲಿ ಗಳಿಸಬೇಕೆಂಬುದನ್ನು ತಿಳಿಸುತ್ತದೆ.ಆಮಂತ್ರದ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮಾಡೋಣ.

ಅಗ್ನೇ ನಯ ಸುಪಥಾ ರಾಯೇ ಅಸ್ಮಾನ್ ವಿಶ್ವಾನಿ ದೇವ ವಯುನಾನಿ ವಿದ್ವಾನ್ |
ಯುಯೂಧ್ಯಸ್ಮಜ್ಜುಹುರಾಣಮೇನೋ ಭೂಯಿಷ್ಠಾಂ ತೇ ನಮ ಉಕ್ತಿಂ ವಿಧೇಮ ||

ಅರ್ಥ
ದೇವ = ದಿವ್ಯ ಸ್ವರೂಪನೇ
ಅಗ್ನೇ = ಪ್ರಕಾಶಮಯ ಭಗವಾನ್
ತೇ = ನಿನಗೆ
ಭೂಯಿಷ್ಠಾಮ್ = ಅತ್ಯಧಿಕವಾಗಿ
ನಮ ಉಕ್ತಿಂ ವಿಧೇಮ = ಸತ್ಕಾರಪೂರ್ವಕವಾಗಿ ನಮಸ್ಕರಿಸುತ್ತೇವೆ.
ವಿದ್ವಾನ್ = ಸರ್ವಜ್ಞನಾದ ನೀನು
ಅಸ್ಮತ್ = ನಮ್ಮಿಂದ
ಜುಹುರಾಣಮ್ = ಕುಟಿಲತೆಯನ್ನು
ಏನ: = ಪಾಪವನ್ನು
ಯುಯೋಧಿ = ಬೇರೆ ಮಾಡು
ಅಸ್ಮಾನ್ = ನಮ್ಮನ್ನು
ರಾಯೇ = ಸುಖಕ್ಕಾಗಿ
ಸುಪಥಾ = ಒಳ್ಳೆಯ ಮಾರ್ಗದಲ್ಲಿ ನಡೆಸು
ವಿಶ್ವಾನಿ ವಯುನಾನಿ = ನಮಗೆ ಸಕಲ ಪ್ರಶಸ್ತ ಜ್ಞಾನಗಳನ್ನು
ನಯ: = ಲಭಿಸುವಂತೆ ಮಾಡು

ಈ ಮಂತ್ರದ ಸಾರವೇನು?
ಜ್ಞಾನದಾತನಾದ ಪ್ರಭುವೇ, ನಮ್ಮಿಂದ ಕುಟಿಲತೆಯನ್ನೂ, ಪಾಪಾಚರಣೆಯನ್ನೂ ದೂರಮಾಡು.ನಮ್ಮನ್ನು ಸನ್ಮಾರ್ಗದಲ್ಲಿ ನಡೆಸುತ್ತಾ, ಸನ್ಮಾರ್ಗದಲ್ಲಿ ಸಂಪತ್ತನ್ನು ಗಳಿಸುವಂತೆಮಾಡು. ನಮ್ಮ ಕಲ್ಯಾಣಕ್ಕಾಗಿ ನಿನಗೆ ಅತ್ಯಧಿಕ ನಮಸ್ಕಾರಗಳನ್ನು ಮಾಡುತ್ತೇನೆ.
ಈ ಮಂತ್ರದಲ್ಲಿ ಒಂದು ಶಬ್ಧಪ್ರಯೋಗವಾಗಿದೆ. ಅದು ರಾಯೇ  ಅಂದರೆ ನಮ್ಮ ಸುಖಕ್ಕಾಗಿ ಸಂಪತ್ತನ್ನು ಗಳಿಸಬೇಕೆಂಬುದೇ ವೇದದ ಆಶಯ. ಆದರೆ ಸಂಪತ್ತನ್ನು ಗಳಿಸುವಾಗ ಸನ್ಮಾರ್ಗದಲ್ಲಿ ಗಳಿಸಲು ದಾರಿಮಾಡಿಕೊಡು, ಎಂಬುದು ದೇವರಲ್ಲಿ  ನಮ್ಮ ಪ್ರಾರ್ಥನೆ. ಇದರಿಂದ ಏನು ಅರ್ಥವಾಗುತ್ತದೆ ಎಂದರೆ  ವೇದವು ಕೇವಲ ವೈರಾಗ್ಯವನ್ನು ಹೇಳುವುದಿಲ್ಲ.ಜೀವನದಲ್ಲಿ ಸುಖವಾಗಿರಿ. ಆದರೆ ಸುಖವಾಗಿರಲು ಅಗತ್ಯವಾದ ಹಣವನ್ನು ಸಂಪಾದಿಸಲು ವಾಮ ಮಾರ್ಗಹಿಡಿಯಬೇಡಿ. ಸನ್ಮಾರ್ಗದಲ್ಲಿ ಧನಾರ್ಜನೆ ಮಾಡಿ, ಜೀವನದಲ್ಲಿ ಸುಖವಾಗಿರಿ, ಎಂಬುದು ವೇದದ ಆಶಯ.
ಹಣವನ್ನು ಹೇಗೆ ಸಂಪಾದಿಸಬೇಕು? ಯಾರಿಗೂ ಕಷ್ಟವನ್ನು ಕೊಡದೆ, ದುರ್ಜನರಿಗೆ ತಲೆಬಾಗದೆ, ಸನ್ಮಾರ್ಗವನ್ನು ಬಿಡದೆ, ಸ್ವಲ್ಪ ದುಡಿದರೂ ಅದೇ ಬಹಳವೆಂದು ದುಡಿದ ಸಂಪಾದನೆಯೇ ಶ್ರೇಷ್ಠ ಎನ್ನುತ್ತದೆ ಮತ್ತೊಂದು ಸುಭಾಷಿತ.
ವಸುವನೀ ಪದದ ಬಗ್ಗೆ ವಿಮರ್ಶೆ ಮಾಡುತ್ತಿದ್ದೆವಲ್ಲವೇ? ವಸು ಎಂಬ ಪದಕ್ಕೆ ಯೋಗ್ಯ ಜೀವನವೆಂದೂ ಅರ್ಥವಿದೆ. ನಾವು ಎಷ್ಟು ಹಣ ಸಂಪಾದಿಸುತ್ತೇವೆಂಬುದಕ್ಕಿಂತ ಎಷ್ಟು ಸರಳವಾಗಿ ಕಡಿಮೆ ಖರ್ಚಿನಲ್ಲಿ ಜೀವನ ಮಾಡುತ್ತೇವೆಂಬುದೂ ಗಣನೆಗೆ ಬರುತ್ತದೆ. ಆದ್ದರಿಂದ ನೆಮ್ಮದಿಯ ಜೀವನಕ್ಕೆ ಹೆಚ್ಚು ಸಂಪಾದನೆ ಬೇಕೆಂದೇನೂ ಅಲ್ಲ, ಆದರೆ ದುಡಿಮೆಯನ್ನು ವ್ಯವಸ್ಥಿತವಾಗಿ ಖರ್ಚು ಮಾಡುತ್ತಾ ಸಂಸಾರ ಮಾಡುವವನನ್ನೂ ವಸುವನೀ ಎನ್ನಬಹುದು.
ಇನ್ನೊಂದು ಬಹಳ ಸತ್ಯವಾದ ವಿಚಾರವೆಂದರೆ ಮಿತವಾಗಿ ಹಣವನ್ನು ಬಳಸುವುದರಿಂದ ವಿಲಾಸೀ ಜೀವನಕ್ಕೆ ಅವಕಾಶವೇ ಇರುವುದಿಲ್ಲ. ಆಗ ಸಹಜವಾಗಿ ಯಾವ ರೋಗದ ಭಯ ಇರುವುದಿಲ್ಲ.ನ್ಯಾಯಮಾರ್ಗದಲ್ಲಿ ದುಡಿಯುವವನಿಗೆ ಭೋಗದ ಪ್ರಶ್ನೆಯೇ ಇಲ್ಲ. ಆಗ ರೋಗದ ಭಯವೆಲ್ಲಿ?